ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶನಿವಾರ, ಜುಲೈ 17, 2010

ಎಂತು ಅರ್ಚಿಸಲಿ?


ನಿನ್ನನೆಂತು ಅರ್ಚಿಸಲಿ, ಹೇ ದೇವಾ|
ಸತ್ಪಥವ ತೋರಿ ತಣಿಸೆನ್ನ ಮನವಾ|| 

ಸರ್ವವ್ಯಾಪಕ ಸರ್ವಾಂತರ್ಯಾಮಿ ನೀನು|
ಗಂಟಾನಾದವ ಮಾಡಿ ಬಾ ಎನ್ನಲೇನು?||


ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ನೀನು|
ಕಿರುಪೀಠವ ತೋರಿ ಕುಳ್ಳಿರಿಸಲೇನು?||


ದಿವ್ಯ ಚೇತನ ಪರಿಶುದ್ಧ ಪರಮಾತ್ಮ ನೀನು|
ಅಭಿಷೇಕವ ಮಾಡಿ ಕೊಳೆ ತೊಳೆಯಲೇನು?||

ಸಕಲ ಚರಾಚರ ಸೃಷ್ಟಿಕರ್ತ ನೀನಲ್ಲವೇನು?|
ನಿನ್ನ ಸೃಷ್ಟಿಯ ಹೂವ ನಿನಗೆಂತು ಕೊಟ್ಟೇನು?||


ಅನೂಹ್ಯ ಅನಂತ ಅಭೋಕ್ತ ಅಚ್ಯುತ ನೀನು|
ನಿನಗೆ ನೈವೇದ್ಯವೆನೆ ಕೊಡಬಹುದು ನಾನೇನು?||


ಸಕಲ ಜೀವರಿಗೆ ನೆಲೆ ಕೊಟ್ಟ ಧೀಮಂತ ನೀನು|
ನಿನಗೊಂದು ಗುಡಿ ಕಟ್ಟಿ ನೆಲೆಗೊಳಿಸಲೇನು?||


ರೂಢಿರಾಡಿಯಲಿ ಮುಳುಗಿ ಇರಲಾರೆ ನಾನು|
ಹೊರಬರುವ ದಾರಿಯನು ತೋರುವೆಯ ನೀನು?||


ನಿನ್ನನೆಂತು ಅರ್ಚಿಸಲಿ, ಹೇ ದೇವಾ|
ಸತ್ಪಥವ ತೋರಿ ತಣಿಸೆನ್ನ ಮನವಾ||

-ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು: