ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ನವೆಂಬರ್ 10, 2010

ಮೂಢ ಉವಾಚ -22

                    ಭಯ
ಕೆಡುಕಾಗುವ ಭಯ ಕೆಡುಕ ತಡೆದೀತು
ರೋಗದ ಭಯ ಚಪಲತೆಯ ತಡೆದೀತು|
ಶಿಕ್ಷೆಯ ಭಯವದು ವ್ಯವಸ್ಥೆ ಉಳಿಸೀತು
ಗುಣ ರಕ್ಷಕ ಭಯಕೆ ಜಯವಿರಲಿ ಮೂಢ||


ನರಕದ ಭಯ ಉಳಿಸೀತು ಸ್ವರ್ಗವ
ಭಯವಿರೆ ಮಾನವ ಇಲ್ಲದಿರೆ ದಾನವ|
ಭಯದಿಂ ವ್ಯಷ್ಟಿ ಸಮಷ್ಟಿಗೆ ಕ್ಷೇಮಭಾವ
ಲೋಕಹಿತ ಕಾರಕವು ಭಯವೆ ಮೂಢ||

               ಗೊಂದಲ
ಮನದಲ್ಲಿ ಒಂದು ಹೇಳುವುದು ಮತ್ತೊಂದು
ಹೇಳಿದ್ದು ಒಂದು ಮಾಡುವುದು ಮತ್ತೊಂದು|
ಒಂದನಿನ್ನೊಂದು ನುಂಗಿರಲು ಗೊಂದಲವು
ನೆಮ್ಮದಿಯ ನುಂಗುವುದು ಮೂಢ||

                ನಿಜವೈರಿ
ನಿಜವೈರಿ ಹೊರಗಿಲ್ಲ ನಮ್ಮೊಳಗೆ ಇಹನು
ಉಸಿರು ನಿಲ್ಲುವವರೆಗೆ ಕಾಡುವವನಿವನು|
ಧೃಢಚಿತ್ತ ಸಮಚಿತ್ತಗಳಾಯುಧವ ಮಾಡಿ
ಒಳವೈರಿಯನು ಅಟ್ಟಿಬಿಡು ಮೂಢ||

****************
-ಕವಿನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ