ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ನವೆಂಬರ್ 24, 2010

ಮೂಢ ಉವಾಚ -28: ದೇಹ-2

ಹಿಂದೆ ಇರಲಿಲ್ಲ ಮುಂದೆ ಇರದೀ ದೇಹ
ಈಗಿರುವ ದೇಹಕರ್ಥ ಬಂದುದಾದರೂ ಹೇಗೆ?|
ಶುದ್ಧ ಬುದ್ಧಿಯಲಿ ನೋಡೆ ತಿಳಿಯುವುದು ನಿನಗೆ
ಅಂತರಾತ್ಮನ ಕರೆಯು ಕೇಳಿಪುದು ಮೂಢ||


ಪ್ರಾಣವಿದ್ದರೆ ತ್ರಾಣ ಪ್ರಾಣದಿಂದಲೆ ನೀನು
ಪ್ರಾಣವಿರದಿರೆ ದೇಹಕರ್ಥವಿಹುದೇನು?|
ನಿನಗರ್ಥ ನೀಡಿರುವ ಜೀವಾತ್ಮ ನೀನಲ್ಲದೆ
ತನುವು ನೀನಲ್ಲವೆಂಬುದರಿಯೋ ಮೂಢ||


ತನುವು ನೀನಲ್ಲವೆನೆ ಯಾವುದದು ನಿನದು?
ಆ ಜಾತಿ ಈ ಜಾತಿ ನಿನದಾವುದದು ಜಾತಿ?|
ಬಸವಳಿಯದಿರಳಿವ ದೇಹದಭಿಮಾನದಲಿ
ಜೀವರಹಸ್ಯವನರಿತವನೆ ಜ್ಞಾನಿ ಮೂಢ||


ಪರಮಾತ್ಮ ರಚಿಸಿಹನು ನವರಸದರಮನೆಯ
ನಡೆದಾಡುವೀ ಮಹಲಿನರಸನೆ ಜೀವಾತ್ಮ|
ಬುದ್ಧಿಯದು ಮಂತ್ರಿ ಮನವು ಸೇನಾಧಿಪತಿ
ಇಂದ್ರಿಯಗಳು ಕಾವಲಿಗಿಹವು ಮೂಢ||
****************
-ಕವಿನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ