ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶನಿವಾರ, ನವೆಂಬರ್ 6, 2010

ಮೂಢ ಉವಾಚ -21: ಭಯ

ಭಯದ ಮಹಿಮೆಯನರಿಯದವರಾರಿಹರು?
ಭಯವಿಲ್ಲದಾ ಜೀವಿಯದಾವದಿರಬಹುದು?|
ನಿಶಾಭಯ ಏಕಾಂತಭಯ ಅಭದ್ರತೆಯ ಭಯ
ಭಯದಿಂದ ಮೂಡಿಹನೆ ಭಗವಂತ ಮೂಢ||

ಭೋಗಿಯಾದವಗೆ ರೋಗಿಯಾಗುವ ಭಯ
ರೋಗಿಯಾದವಗೆ ಸಾವು ಬಂದೆರಗುವ ಭಯ|
ಅಭಿಮಾನಧನನಿಗೆ ಮಾನಹಾನಿಯ ಭಯ
ಭಯದ ಕಲ್ಪನೆಯೇ ಭಯಾನಕವು ಮೂಢ||

ಸತ್ಕುಲಜಾತನಿಗೆ ಹೆಸರು ಕೆಡುವ ಭಯ
ಧನವಿರಲು ಚೋರಭಯ ಮೇಣ್ ರಾಜಭಯ|
ಸಜ್ಜನರಿಂಗೆ ಕುಜನರು ಕಾಡುವ ಭಯ
ಭಯ ಭಯ ಭಯಮಯವೀ ಲೋಕ ಮೂಢ||

ಸಿರಿವಂತನಿಗೆ ದಾರಿದ್ರ್ಯ ಬಂದೀತೆಂಬ ಭಯ
ಬಲಶಾಲಿಯಾದವಗೆ ಶತ್ರು ಸಂಚಿನ ಭಯ|
ಮೇಲೇರಿದವಗೆ ಕೆಳಗೆ ಬಿದ್ದೇನೆಂಬ ಭಯ
ಭಯಮುಕ್ತನವನೊಬ್ಬನೇ ವಿರಾಗಿ ಮೂಢ||
*************
-ಕವಿನಾಗರಾಜ್.

2 ಕಾಮೆಂಟ್‌ಗಳು:

  1. [ಭಯದಿಂದ ಮೂಡಿಹನೆ ಭಗವಂತ ಮೂಢ]
    ಭಯದಿಂದ ಭಗವಂತನು ಮೂಡಿಹನೆ? ಎಂದು ಪ್ರಶ್ನೆ ಎಸೆದಿರುವುದರಿಂದ ಉತ್ತರ ಓದುಗರಿಗೆ ಬಿಟ್ಟಿದ್ದು. ನನ್ನ ಅಭಿಪ್ರಾಯದಲ್ಲಿ ಭಯದಿಂದ ಭಗವಂತನು ಮೂಡಿದರೆ ಆ ಭಗವಂತನು ನನಗೆ ಬೇಡ.ಆದರೆ ಸಾಮಾನ್ಯವಾಗಿ ಜನರು ಭಯದಿಂದಲೇ ಭಗವಂತನ ಪೂಜಿಸುತ್ತಾರೆ ಕುರುಡಾಗಿ.

    ಪ್ರತ್ಯುತ್ತರಅಳಿಸಿ