ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಮಾರ್ಚ್ 30, 2011

ಮೂಢ ಉವಾಚ -47

ಹಸಿವು
ಹಸಿವ ತಣಿಸಲು ಹೆಣಗುವರು ನರರು
ಏನೆಲ್ಲ ಮಾಡುವರು ಜೀವ ಸವೆಸುವರು |
ಆ ಪರಿಯ ಕಳಕಳಿ ಕಲಿಕೆಯಲಿ ಬರಲಿ
ಒಳಿತು ಬಯಸುವುದರಲಿರಲಿ ಮೂಢ ||


ಪರಮಾತ್ಮನೆಂಬುವನು ಎಲ್ಲಿಹನು ಕೇಳಿ
ದೇವಭಕ್ತರೆ ಹೇಳಿ ಅರಿತವರೆ ತಿಳಿ ಹೇಳಿ |
ದೇವನಿರದಿಹನೆ ಜೀವಿಗಳ ಉದರದಲಿ
ಹಸಿವಿನಿಂದಲೆ ಇಹನು ದೇವ ಮೂಢ ||

ಅಂಗವಿಕಲ
ಕಾಮಿಗೆ ಕಣ್ಣಿಲ್ಲ ಕ್ರೋಧಿಗೆ ತಲೆಯಿಲ್ಲ
ಮದಕೆ ಮೆದುಳಿಲ್ಲ ಮೋಹದ ಕಿವಿಮಂದ |
ಲೋಭಿಯ ಕೈಮೊಟಕು ಮತ್ಸರಿ ರೋಗಿಷ್ಟ
ಅಂವಿಕಲನಾಗದಿರೆಲೋ ಮೂಢ ||


ಕೋಪದ ಫಲ
ಕೋಪದಿಂದ ಜನಿಪುದಲ್ತೆ ಅವಿವೇಕ
ಅವಿವೇಕದಿಂದಲ್ತೆ ವಿವೇಚನೆಯು ಮಾಯ |
ವಿವೇಕಮರೆಯಾಗೆ ಬುದ್ಧಿಯೇ ನಾಶ
ಬುದ್ಧಿಯಿರದಿದ್ದೇನು ಫಲ ಮೂಢ ||
******************
-ಕ.ವೆಂ.ನಾಗರಾಜ್.

ಭಾನುವಾರ, ಮಾರ್ಚ್ 27, 2011

ಮೂಢ ಉವಾಚ -46 : ವಿವೇಕವಾಣಿ

ಛಲ
ಗುರಿಯ ಅರಿವಿರಲು ಅಡಿಯಿಟ್ಟು ಮುಂದೆನಡೆ
ತಪ್ಪಿರಲು ತಿದ್ದಿ ನಡೆ ಒಪ್ಪಿರಲು ಸಾಗಿ ನಡೆ |
ಛಲಬಿಡದೆ ನಡೆ ಮುಂದೆ ಅಡೆತಡೆಯ ಲೆಕ್ಕಿಸದೆ
ಹಂಬಲದ ಹಕ್ಕಿಗೆ ಬೆಂಬಲವೆ ರೆಕ್ಕೆ ಮೂಢ ||


ದುರ್ಬಲತೆ
ನಿನ್ನ ಬಲದಲೆ ನಿಲ್ಲು ನಿನ್ನ ಬಲದಲೆ ಸಾಯು
ಇರುವುದಾದರೆ ಪಾಪ ದುರ್ಬಲತೆಯೊಂದೆ |
ದುರ್ಬಲತೆ ಪಾಪ ದುರ್ಬಲತೆಯೇ ಸಾವು
ವಿವೇಕವಾಣಿಯಿದು ನೆನಪಿರಲಿ ಮೂಢ ||


ಹೆದರಿಕೆ
ಹೆದರದಿರೆ ಅಳುಕದಿರೆ ಅದ್ಭುತವ ಮಾಡುವೆ
ನೀನೊಬ್ಬ ಸೊನ್ನೆ ಹೆದರಿದ ಮರುಕ್ಷಣವೆ |
ಅಂಜುವವ ಹಿಂಜರಿವ ಅಂಜದವ ಮುನ್ನಡೆವ
ಅಂಜದವ ಅಳುಕದವ ನಾಯಕನು ಮೂಢ ||

ಸುಖ
ದೇಹ ದೇಹದ ಬೆಸುಗೆಯೆನಿಸುವುದು ಕಾಮ
ಹೃದಯಗಳ ಮಿಲನದಿಂದರಳುವುದು ಪ್ರೇಮ |
ಆತ್ಮ ಆತ್ಮಗಳೊಂದಾಗೆ ಆತ್ಮಾಮೃತಾನಂದ
ಅಂತರಂಗದ ಸುಖವೆ ಸುಖವು ಮೂಢ ||
**********************
-ಕ.ವೆಂ.ನಾಗರಾಜ್.

ಶುಕ್ರವಾರ, ಮಾರ್ಚ್ 25, 2011

ಪಂ. ಸುಧಾಕರ ಚತುರ್ವೇದಿಯವರ ವಿಚಾರ: ದೇವರು ಅನುಭವಗಮ್ಯ

 


 ಪಂ. ಸುಧಾಕರ ಚತುರ್ವೇದಿಯವರು


                               

                               

     ಪಂ.ಸುಧಾಕರ ಚತುರ್ವೇದಿಯವರು ೧೮೯೭ರ ರಾಮನವಮಿಯಂದು ಬೆಂಗಳೂರಿನ ಬಳೇಪೇಟೆಯಲ್ಲಿ ಜನಿಸಿ, ೧೩ನೆಯ ವಯಸ್ಸಿನಲ್ಲಿ ಉತ್ತರ ಭಾರತದ ಪ್ರಸಿದ್ಧ ಕಾಂಗಡಿ ಗುರುಕುಲಕ್ಕೆ ಸೇರಿ ನಾಲ್ಕು ವೇದಗಳನ್ನು ಅಧ್ಯಯನ ಮಾಡಿ ನಿಜ ಅರ್ಥದಲ್ಲಿ ’ಚತುರ್ವೇದಿ’ಯಾದವರು. ಗಾಂಧೀಜಿಯವರ ಒಡನಾಡಿಯಾಗಿದ್ದವರು. ಸ್ವಾತಂತ್ರ್ಯಚಳುವಳಿಯಲ್ಲಿ ಸಕ್ರಿಯವಾಗಿ ಭಾಗಿಯಾಗಿ ೧೩ ವರ್ಷಗಳಿಗೂ ಹೆಚ್ಚುಕಾಲ ಸೆರೆವಾಸ ಅನುಭವಿಸಿದವರು. ಜಲಿಯನ್‌ವಾಲಾಬಾಗ್ ಹತ್ಯಾಕಾಂಡದ ಸಾಕ್ಷಿಯಾಗಿದ್ದವರು, ಗಾಂಧೀಜಿಯವರ ಸೂಚನೆಯಂತೆ ಅಲ್ಲಿ ಹತ್ಯೆಯಾದವರ ಸಾಮೂಹಿಕ ಶವಸಂಸ್ಕಾರ ಮಾಡಿದವರು. ಕ್ರಾಂತಿಕಾರಿ ಭಗತ್‌ಸಿಂಗರ ಗುರುವಾಗಿದ್ದವರು. ಅವರು ಹಿಂದೊಮ್ಮೆ ’ವಿಜಯ ಕರ್ನಾಟಕ’ ಪತ್ರಿಕೆಗೆ ಸಂದರ್ಶನದಲ್ಲಿ ಹೇಳಿದ್ದು: "ನಾನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲು ಪ್ರೋತ್ಸಾಹ ಸ್ವಾಮಿ ಶ್ರದ್ಧಾನಂದರದಾದರೂ ಆಂತರಿಕವಾಗಿ ವೇದಗಳೇ ಪ್ರೇರಣೆ. ’ಅಧೀನಾಃ ಸ್ಯಾಮ ಶರದಃ ಶತಂ, ಭೂಯಶ್ಚ ಶರದಃ ಶತಾತ್’ - ನೂರು ವರ್ಷಕ್ಕೂ ಹೆಚ್ಚುಕಾಲ ಸ್ವಾತಂತ್ರ್ಯದಿಂದ ಬಾಳೋಣ ಎಂಬ ಅರ್ಥದ ಸಾಲು ಸಂಗ್ರಾಮಕ್ಕೆ ಕರೆತಂದಿತು. ಭಾರತೀಯರಿಗೆ ಗೌರವ ಕೊಡದೆ ಅವರು ಕೀಳಾಗಿ ಕಾಣುತ್ತಿದ್ದುದು ನಾವೆಲ್ಲಾ ಚಳುವಳಿಗೆ ಧುಮುಕಲು ಪ್ರೇರಣೆಯಾಯಿತು". ಬರಲಿರುವ ರಾಮನವಮಿಗೆ ೧೧೫ ವರ್ಷಗಳಿಗೆ ಕಾಲಿರಿಸಲಿರುವ ಇವರು ಬೆಂಗಳೂರಿನ ಜಯನಗರದ ೫ನೆಯ ಬ್ಲಾಕಿನಲ್ಲಿ ಶ್ರೀ ಕೃಷ್ಣಸೇವಾಶ್ರಮದ ಆಸ್ಪತ್ರೆಯ ಎದುರು ಸಾಲಿನಲ್ಲಿರುವ ಮನೆಯೊಂದರಲ್ಲಿ ವಾಸವಿದ್ದಾರೆ. ಪ್ರತಿ ಶನಿವಾರ ಸಾಯಂಕಾಲ ಇವರ ಮನೆಯಲ್ಲಿ ಸತ್ಸಂಗ ಇದ್ದು ಆಸಕ್ತರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಕಳೆದ ೧೯-೦೩-೨೦೧೧ರಂದು ನನ್ನ ಪತ್ನಿ ಮತ್ತು ಮಗನೊಂದಿಗೆ ಅಂತಹ ಒಂದು ಸತ್ಸಂಗದಲ್ಲಿ ಪಾಲುಗೊಂಡದ್ದು ನನ್ನ ಪುಣ್ಯವಿಶೇಷ.



     ಸರಿಯಾಗಿ ಸಾಯಂಕಾಲ ೫-೩೦ಕ್ಕೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ (೫-೨೫ರಲ್ಲಿ ಸಮಯ ವಿಚಾರಿಸಿದ ಅವರು, ಇನ್ನೂ ೫ ನಿಮಿಷವಿದೆ ಎಂದು ಹೇಳಿದ್ದರು) ಮೊದಲಿಗೆ ಸುಮಾರು ೧೫-೨೦ ನಿಮಿಷಗಳ ಕಾಲ ಬಂದಿದ್ದ ಮಹಿಳೆಯರ ಪೈಕಿ ನಾಲ್ವರು ಭಾಗವಹಿಸಿದ ಅಗ್ನಿಹೋತ್ರಕ್ಕೆ ನಾವು ಸಾಕ್ಷಿಯಾದೆವು. ನಂತರದಲ್ಲಿ ಸುಮಾರು ೪೫-೫೦ ನಿಮಿಷಗಳ ಕಾಲ ಪಂ. ಸುಧಾಕರ ಚತುರ್ವೇದಿಯವರು ಬಂದಿದ್ದವರಿಗೆ ತಮ್ಮ ವಿಚಾರಗಳನ್ನು ಮುಂದಿಟ್ಟರು. ವಯೋಮಾನದ ಕಾರಣ ಕೆಲವು ಪದಗಳು ಅಸ್ಪಷ್ಟವೆಂದೆನಿಸಿದರೂ ಗಮನವಿರಿಸಿದರೆ ಅರ್ಥವಾಗುತ್ತಿತ್ತು. ಅವರು ತಿಳಿಸಿದ ಸಂಗತಿಗಳನ್ನು ನಿಮ್ಮೊಡನೆ ಹಂಚಿಕೊಳ್ಳಬಯಸಿ ಈ ಲೇಖನ. ಅವರ ಅಂದಿನ ವಿಚಾರದ ತುಣುಕುಗಳು, ಇದೋ ನಿಮ್ಮ ಮುಂದೆ:



                               

ವಿಚಾರ ಮಾಡೋಣ
     ನಾಲಿಗೆ ಎರಡು ಅಲಗಿನ ಕತ್ತಿಯಿದ್ದಂತೆ. ಆಡುವ ಮಾತಿನಲ್ಲಿ ನಿಯಂತ್ರಣವಿರಬೇಕು. ಇಲ್ಲದಿದ್ದರೆ ಅದು ಇತರರನ್ನು ಮಾತ್ರವಲ್ಲದೆ ಆಡಿದವರನ್ನೂ ಘಾತಿಸುತ್ತದೆ. ಪಿಪ್ಪಲಾದ ಎಂಬ ಋಷಿಗೆ ಆ ಹೆಸರು ಬಂದದ್ದು ಆತ ಕೆಳಗೆ ಬಿದ್ದಿದ್ದ ಫಲವನ್ನು ಮಾತ್ರ ತಿನ್ನುತ್ತಿದ್ದರಿಂದ. ಗೌತಮನಿಗೆ ಅಕ್ಷಪಾದ -ಅಂದರೆ ಕಾಲಿನಲ್ಲಿ ಕಣ್ಣಿದ್ದವನು- ಎಂಬ ಹೆಸರೂ ಇತ್ತು. ಆತ ನಡೆದಾಡುವಾಗ ಯಾವುದೇ ಕ್ರಿಮಿ, ಕೀಟಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತಿದ್ದ. ಅವರುಗಳು ಅಷ್ಟರಮಟ್ಟಿಗೆ ಇತರರನ್ನು ನೋಯಿಸಬಾರದೆಂಬ ಮನೋಭಾವ ಹೊಂದಿದ್ದರು. ಮಾತು ಅನ್ನುವುದು ಬಾಣವಿದ್ದಂತೆ. ಆಡಿದ ಮೇಲೆ ಮುಗಿಯಿತು. ಬಾಣ ತನ್ನ ಗುರಿಯನ್ನು ಛೇದಿಸುವಂತೆ ಪಾಪವನ್ನು ದೂರ ಮಾಡುವಂತಿರಬೇಕು, ಇತರರನ್ನು ಚುಚ್ಚುವಂತಿರಬಾರದು. ಮನಸ್ಸಿಗೆ ಹಿತ, ಸಂತೋಷ ತರಬೇಕು. ನಮಗೆ ಕೆಟ್ಟದಾದಾಗ, ತೊಂದರೆಯಾದಾಗ ಪರಮಾತ್ಮನನ್ನು ದೂಷಿಸುವುದು ಸರಿಯಲ್ಲ. ನಮಗೆ ಕೆಟ್ಟದಾಗಲು ಕಾರಣ ನಮ್ಮ ತಪ್ಪೇ ಹೊರತು ಪರಮಾತ್ಮನದಲ್ಲ ಎಂಬುದನ್ನು ಅರಿಯಬೇಕು. ನಮಗೆ ಕಷ್ಟವನ್ನು ಎದುರಿಸಲು ಶಕ್ತಿ ಕೊಡು ಎಂದು ಪ್ರಾರ್ಥಿಸಬೇಕೇ ಹೊರತು ಅವನನ್ನು ಬಯ್ಯಬಾರದು. ನಾವು ಹೊಗಳಿದರೂ ಅಷ್ಟೆ, ತೆಗಳಿದರೂ ಅಷ್ಟೆ, ಪರಮಾತ್ಮ ಪರಮಾತ್ಮನೇ. ಅವನು ನಿರ್ಲಿಪ್ತ. ಹೊಗಳುತ್ತಾರೆಂದು ಒಳ್ಳೆಯದು ಮಾಡುತ್ತಾನೆ, ತೆಗಳುತ್ತಾರೆಂದು ಕೆಟ್ಟದು ಮಾಡುತ್ತಾನೆ ಎಂದು ಭಾವಿಸುವುದು ಮೂರ್ಖತನ. ಎಲ್ಲಿ ನ್ಯಾಯ, ಸತ್ಯ, ಧರ್ಮ ಇರುತ್ತದೋ ಅಲ್ಲಿ ಭಗವಂತನಿರುತ್ತಾನೆ. ಇದರ ಅರಿವಾದರೆ ಪಾಪ ಮಾಡಲು ಧೈರ್ಯ ಬರುವುದಿಲ್ಲ.
ಭಗವಂತ ಸರ್ವಶಕ್ತ, ಸರ್ವವ್ಯಾಪಕ, ನಿರಾಕಾರ. ಯಜುರ್ವೇದದ ಈ ಮಂತ್ರ ಕೇಳಿ:
ತದೇಜತಿ ತನ್ಮೈಜತಿ ತದ್ದೂರೇ ತದ್ವಂತಿಕೇ|
ತದಂತರಸ್ಯ ಸರ್ವಸ್ಯ ತದು ಸರ್ವಸ್ಯಾಸ್ಯ ಬಾಹ್ಯತಃ||
     [ತತ್ ಏಜತಿ] ಅದು ವಿಶ್ವಕ್ಕೆ ಗತಿ ನೀಡುತ್ತದೆ. [ತತ್ ನ ಏಜತಿ] ಅದು ಸ್ವತಃ ಚಲಿಸುವುದಿಲ್ಲ. [ತತ್ ದೂರೇ] ಅದು ದೂರದಲ್ಲಿದೆ. [ತತ್ ಉ ಅಂತಿಕೇ] ಅದೇ ಹತ್ತಿರದಲ್ಲಿಯೂ ಇದೆ. [ತತ್ ಅಸ್ಮ ಸರ್ವಸ್ಯ ಅಂತಃ] ಅದು ಇದೆಲ್ಲದರ ಒಳಗೂ ಇದೆ. [ತತ್ ಉ ಅಸ್ಯ ಸರ್ವಸ್ಯ ಬಾಹ್ಯತಃ] ಅದೇ ಇದೆಲ್ಲದರ ಹೊರಗೂ ಇದೆ. ಈ ಮಂತ್ರ ವಿಶ್ವಕ್ಕೆಲ್ಲಾ ಚಲನೆ ನೀಡುವ, ತಾನು ಮಾತ್ರ ಚಲಿಸದೆ ಧ್ರುವವಾಗಿ ನಿಂತಿರುವ, ಎಲ್ಲಾಕಡೆ ವ್ಯಾಪಿಸಿರುವ ಚೇತನಶಕ್ತಿಯನ್ನು ವರ್ಣಿಸುತ್ತದೆ. ಎಲ್ಲರ ಅಂತರ್ಯದಲ್ಲಿಯೂ ಇದೆ; ಎಲ್ಲರಿಗಿಂತ ಬಹು ದೂರದಲ್ಲಿಯೂ ಇದೆ; ವಿಶ್ವದೊಳಗೂ ಇದೆ; ವಿಶ್ವದಿಂದ ಹೊರಕ್ಕೂ ಹರಡಿದೆ. ಆ ಅನಂತ ಚೇತನ, ಸರ್ವಥಾ ನಿರಾಕಾರವೇ ಆಗಿರಬೇಕು. ನಿಜವಾಗಿ ಅದಿರುವುದು ಹಾಗೆಯೇ.
     ದಿಕ್ಕುಗಳು ಎನ್ನುವುದು ಸ್ಥಳ ಗುರುತಿಸುವುದು, ದಿಸೆ ತೋರಿಸುವ ಸಲುವಾಗಿ ನಮ್ಮ ಅನುಕೂಲಕ್ಕಾಗಿ ಮಾಡಿಕೊಂಡದ್ದೇ ಹೊರತು ಮತ್ತೇನಲ್ಲ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ, ಪಶ್ಚಿಮದಲ್ಲಿ ಮುಳುಗುತ್ತಾನೆ ಎಂಬುದು ಒಂದು ಅರ್ಥದಲ್ಲಿ ಸರಿಯಿರಬಹುದು. ಆ ಸೂರ್ಯನೂ ಸಹ ತನ್ನ ಚಲನೆಯ ಪಥವನ್ನು ಬದಲಿಸುತ್ತಾನೆ. ಬಳಕೆಯಲ್ಲಿ ನಾವು ಪೂರ್ವ, ಪಶ್ಚಿಮ, ಇತ್ಯಾದಿ ಎಂಟು ದಿಕ್ಕುಗಳನ್ನು ಬಳಸುತ್ತೇವೆ. ನಮಗೆ ಪೂರ್ವವೆನಿಸುವ ಒಂದು ಸ್ಥಳ ಇನ್ನೊಬ್ಬರಿಗೆ ಪಶ್ಚಿಮವಾಗಬಹುದು. ವಾಸ್ತವವಾಗಿ ನಮ್ಮ ಸುತ್ತಲೂ ಇರುವ ೩೬೦ ಡಿಗ್ರಿ ಪ್ರದೇಶದ ಒಂದೊಂದು ಡಿಗ್ರಿಯೂ ಒಂದೊಂದು ದಿಕ್ಕು. ಈಗ ಹೇಳಲಾಗುತ್ತಿರುವ ಜ್ಯೋತಿಷ್ಯ ಎಂಬುದಕ್ಕೆ ಅರ್ಥವಿಲ್ಲ. ಬ್ರಹ್ಮಾಂಡದ ಸೃಷ್ಟಿ ಕೇವಲ ಮಾನಸಿಕ ಕಲ್ಪನೆಯಲ್ಲ, ಒಂದು ನಿರಾಕರಿಸಲಾರದ ಸತ್ಯ. ವಿಜ್ಞಾನವಾದ, ಮಾಯಾವಾದ ಯಾವ ವಾದವನ್ನೇ ಮುಂದೊಡ್ಡಿದರೂ ಕೂಡ, ಜನರನ್ನು ಭ್ರಾಂತಿಗೆ ಸಿಕ್ಕಿಸಬಹುದೇ ಹೊರತು, ಜಗತ್ತಿಲ್ಲ ಎಂದು ಹೇಳಲಾಗುವುದಿಲ್ಲ. ಜಗತ್ತಿಲ್ಲ ಎನ್ನುವುದಾದರೆ ಹಾಗೆ ಹೇಳುವವನು ಎಲ್ಲಿ ಉಳಿದಾನು? ಕೇಳುವವನು ಯಾವನಿದ್ದಾನು? ಜಗತ್ತಿದೆ, ನಿಜವಾಗಿಯೂ ಇದೆ. ಭೌತವಿಜ್ಞಾನದ ಸಹಾಯದಿಂದ ಈ ಜಗತ್ತಿನ ಪ್ರತಿಯೊಂದು ಪರಮಾಣುವನ್ನೂ ಪ್ರತ್ಯೇಕಿಸಿ ನೋಡಬಹುದು. ಈ ವಿಶ್ವ ಜಡಪರಮಾಣುಗಳ ಸಂಘಾತದಿಂದ ರೂಪುಗೊಂಡುದು. ಸ್ವತಃ ಅವುಗಳೇ ನಿಯಮಪೂರ್ವಕವಾಗಿ ಒಟ್ಟುಗೂಡಿ ಈ ವಿಶ್ವವಾಗುವ ಶಕ್ತಿಯಿಲ್ಲ. ಅವುಗಳಲ್ಲಿ ನಿಯಮಪಾಲನೆ ಮಾಡಲು ಬೇಕಾದ ಜ್ಞಾನವಿಲ್ಲ. ಆದುದರಿಂದ ಈ ವಿಶ್ವದ ರಚಯಿತೃವಾದ ಯಾವುದೋ ಒಂದು ಶಕ್ತಿಯಿದೆ. ಕೇವಲ ಒಂದು ಭೂಮಿಯಲ್ಲ, ಒಂದು ಚಂದ್ರನಲ್ಲ, ಒಂದು ಸೂರ್ಯನೂ ಅಲ್ಲ, ಆ ಸೂರ್ಯನಿಗಿಂತಲೂ ಲಕ್ಷಾಂತರ ಪಾಲು ದೊಡ್ಡದಾಗಿದ್ದು, ಅನಂತ ಆಕಾಶದಲ್ಲಿ ಊಹಿಸಲಾಗದಷ್ಟು ದೂರದವರೆಗೆ ಹರಡಿಕೊಂಡು ಮೆರೆಯುತ್ತಿರುವ, ಎಣಿಕೆಗೆ ಸಿಕ್ಕದಂತಿರುವ ನಕ್ಷತ್ರಗಳ ಬೃಹತ್ಸಮೂಹವಿದೆ. ಇವನ್ನೆಲ್ಲಾ ರಚಿಸುವ ಸಾಮರ್ಥ್ಯ ಏಕದೇಶೀಯವಾದ, ಅಂದರೆ ಎಲ್ಲೋ ಒಂದು ಕಡೆ ಮಾತ್ರವಿರುವ ವ್ಯಕ್ತಿಗೆ ಅಥವಾ ಶಕ್ತಿಗೆ ಸಾಧ್ಯವಿಲ್ಲ. ಈ ವಿಶ್ವಬ್ರಹ್ಮಾಂಡ, ಕೇವಲ ಆಕಸ್ಮಿಕವಾಗಿ ಇರುವಿಕೆಗೆ ಬಂದಿದೆ ಎಂದು ಯಾವ ಬುದ್ಧಿಶಾಲಿಯೂ ತರ್ಕಿಸಲಾರನು. ಹೀಗೆ ಆಲೋಚನೆ ಮಾಡಿದಾಗ ಪ್ರತಿಯೊಬ್ಬ ವಿಚಾರಶೀಲನೂ ಈ ಅನಂತದಂತೆ ಗೋಚರಿಸುವ ವಿಶ್ವದ ಕರ್ತೃವಾದ ಯಾವುದೋ ಒಂದು ಸರ್ವವ್ಯಾಪಕ, ಜ್ಞಾನಮಯೀ ಶಕ್ತಿ ಇದ್ದೇ ಇದೆ ಎಂದು ಒಪ್ಪಲೇಬೇಕಾಗುತ್ತದೆ. ಅವನೇ ಭಗವಂತ. ಈ ವಿಶಾಲ ಬ್ರಹ್ಮಾಂಡವನ್ನು ಆ ಪರಮಾತ್ಮ ಇದ್ದಲ್ಲೇ ಇದ್ದು ನಿಯಂತ್ರಿಸುತ್ತಿದ್ದಾನೆ. ಇದನ್ನು ಅರಿಯದಿದ್ದರೆ ಅವನಿಗೆ ನಷ್ಟವೇನೂ ಇಲ್ಲ. ನಾನು ಎಷ್ಟೋ ವಿದ್ವಾಂಸರನ್ನು ನಕ್ಷತ್ರಗಳು ಎಷ್ಟಿವೆ ಎಂಬುದು ಗೊತ್ತೇ? ಎಂದು ಪ್ರಶ್ನಿಸಿದ್ದೇನೆ. ಯಾರಿಗೂ ಉತ್ತರಿಸಲು ಆಗಿಲ್ಲ. ಸರ್ ಸಿ.ವಿ. ರಾಮನ್‌ರವರನ್ನೂ ಕೇಳಿದ್ದೆ. ಅವರು 'ಪೋಯಾ, ಪೋಯಾ! ನಾನು ಸಣ್ಣವನು, ಇಷ್ಟು ದೊಡ್ಡ ಬ್ರಹ್ಮಾಂಡವನ್ನು ಅರಿಯುವ, ಅಳೆಯುವ ಶಕ್ತಿ ನನ್ನಂತಹವರಿಗೆ ಎಲ್ಲಿ ಬರಬೇಕು' ಎಂದು ಹೇಳಿದ್ದರು.
     ಭಗವಂತನ ಪ್ರಾರ್ಥನೆ, ಪೂಜೆಯನ್ನು ಯಾಂತ್ರಿಕವಾಗಿ ಮಾಡಿದರೆ ಫಲವಿಲ್ಲ. ನಮ್ಮ ಪ್ರಾರ್ಥನೆ ಮಾಡುವ ಮಂತ್ರದ ಅರ್ಥದ ಮನನ ಮಾಡಿಕೊಂಡು ಅಳವಡಿಸಿಕೊಂಡರೆ ಮಾತ್ರ ಅದರಲ್ಲಿ ಅರ್ಥವಿರುತ್ತದೆ. ಇಲ್ಲದಿದ್ದರೆ ಅದು ಕೇವಲ ನಾಲಿಗೆಗೆ ವ್ಯಾಯಾಮ ಅಷ್ಟೆ. ನಾವು ಈಗ ಅಗ್ನಿಹೋತ್ರ ಮಾಡುವಾಗ ಮೂರು ಸಲ ಗಾಯತ್ರಿ ಮಂತ್ರದ ಉಚ್ಛಾರ ಮಾಡಿದೆವು ಅದರ ಅರ್ಥ ನಮ್ಮ ಅರಿವಿಗೆ ಬಂತೇ, ನಮ್ಮ ಮನಸ್ಸನ್ನು ತಟ್ಟಿತೇ ಎಂಬುದನ್ನು ಅರಿಯೋಣ. ಇಲ್ಲದಿದ್ದರೆ ಸಾವಿರ ಸಲ ಗಾಯತ್ರಿ ಮಂತ್ರ ಹೇಳಿದರೂ ಫಲ ಮಾತ್ರ ಶೂನ್ಯ. ಸ್ನಾನ ಮಾಡಿದರೆ ದೇಹದ ಕೊಳಕು ಹೋಗುತ್ತದೆ. ಆತ್ಮಕ್ಕೆ ಅಂಟಿದ ಕೊಳಕು ಹೋಗಬೇಕೆಂದರೆ ಸತ್ಕರ್ಮದಿಂದ ಮಾತ್ರ ಸಾಧ್ಯ.
     ಬ್ರಹ್ಮಚರ್ಯ ಎಂದರೆ ಮದುವೆಯಾಗದಿರುವವರು ಎಂದು ಅರ್ಥವಲ್ಲ. ಬ್ರಹ್ಮನಲ್ಲಿ ಸಂಚಾರ ಮಾಡುವ ಶಕ್ತಿಯಿರುವವನು ಎಂದು ಅರ್ಥ. ಈ ಮನುಷ್ಯ ಜನ್ಮ ದೊಡ್ಡದು. ಅದನ್ನು ಭೌತಿಕ ಸುಖಭೋಗಕ್ಕಾಗಿ ಮಾತ್ರ ಎಳಸದೆ ಈ ಜನ್ಮದ ಅರ್ಥ ತಿಳಿದು ಸತ್ಕರ್ಮಕ್ಕಾಗಿ ಬಳಸಬೇಕು. ಹಾಗೆ ಮಾಡದಿದ್ದರೆ ನಂತರದಲ್ಲಿ ಮತ್ತೆ ಇನ್ನು ಯಾವಾಗಲೋ ಮನುಷ್ಯ ಸಿಕ್ಕುವುದು! ಮನುಷ್ಯಜನ್ಮ ಎಷ್ಟೋ ಜನ್ಮಗಳನ್ನು ದಾಟಿಬಂದ ನಂತರ ಸಿಕ್ಕಿದೆ. ಇದನ್ನು ಸಾರ್ಥಕಪಡಿಸಿಕೊಳ್ಳಬೇಕು. ನಿಜವಾದ ಅರ್ಥದಲ್ಲಿ ಬ್ರಹ್ಮಚಾರಿಗಳಾಗಬೇಕಾದುದು ಮನುಷ್ಯಜನ್ಮದ ಉದ್ದೇಶ. ಯಾರೋ ಹೇಳುತ್ತಿದ್ದರು,'ಲಕ್ಷಾಂತರ ಜನ್ಮಗಳ ನಂತರ ಮನುಷ್ಯನಾಗಿ ಹುಟ್ಟಿದ್ದೇವೆ, ಪುನಃ ಕೆಳಗೆ ಹೋಗುತ್ತೇವೆಯೇ? ಮೇಲೆ ಹತ್ತಿ ಬಂದಿದ್ದೇವೆ, ಕೆಳಗೆ ಇಳಿಯುತ್ತೇವೆಯೇ?' ಸರಿಯಾಗಿ ಮನುಷ್ಯನಂತೆ ನಡೆಯದಿದ್ದರೆ ಮನುಷ್ಯರಾಗೇ ಹುಟ್ಟುತ್ತೇವೆಂದು ಹೇಳಲಾಗುವುದಿಲ್ಲ. ನಾವು ಮಾಡಿದ ಕರ್ಮವನ್ನು ನಾವು ಭೋಗಿಸಲೇಬೇಕು. ಇದು ಭಗವಂತನ ನಿಯಮ. ನಾನು ಬಹಳಷ್ಟು ಸನ್ಯಾಸಿಗಳನ್ನು ನೋಡಿದ್ದೇನೆ - ಕಾವಿ ಬಟ್ಟೆ ಸನ್ಯಾಸಿಗಳು, ಬಿಳಿ ಬಟ್ಟೆ ಸನ್ಯಾಸಿಗಳು, ಹಳದಿ ಬಟ್ಟೆ ಸನ್ಯಾಸಿಗಳು, ಕಪ್ಪು ಬಟ್ಟೆ ಸನ್ಯಾಸಿಗಳು, ಹೀಗೆ. ಸನ್ಯಾಸಿಗಳು ಎಂದರೆ ಎಲ್ಲವನ್ನೂ ಬಿಟ್ಟವರು, ಅವರೇನು ಬಿಟ್ಟಿದ್ದಾರೆ? ಹಸಿವಾದಾಗ 'ಭವತಿ ಭಿಕ್ಷಾಂದೇಹಿ'ಅನ್ನುತ್ತಾರೆ, ಛಳಿಯಾದಾಗ ಬೆಚ್ಚಗೆ ಹೊದ್ದುಕೊಳ್ಳುತ್ತಾರೆ! ಸನ್ಯಾಸಿಗಳೆಂದರೆ ಭೌತಿಕ ಸುಖ ಭೋಗಗಳನ್ನು ತ್ಯಾಗ ಮಾಡಿದವರು, ಪರಮಾತ್ಮನ ಕುರಿತು ಧ್ಯಾನದಲ್ಲಿ ತೊಡಗಿಕೊಂಡವರು ಎನ್ನುತ್ತಾರೆ. ಅಂತಹ ನಿಜವಾದ ಸನ್ಯಾಸಿಗಳು ಎಷ್ಟು ಜನ ಇದ್ದಾರೆ? ಸ್ವಾಮಿ ಶ್ರದ್ಧಾನಂದರು ಹಾಸ್ಯವಾಗಿ ಹೇಳುತ್ತಿದ್ದರು - 'ದೇಶಕ್ಕೆ ಸ್ವಾತಂತ್ರ್ಯ ಬಂದು ನಾನು ಪ್ರಧಾನ ಮಂತ್ರಿಯಾದರೆ ಮಾಡುವ ಮೊದಲ ಕೆಲಸವೆಂದರೆ ಸಾಧು-ಸಂತರೆನಿಸಿಕೊಂಡವರನ್ನೆಲ್ಲಾ ಹಿಡಿದು ಮಿಲಿಟರಿಗೆ ಸೇರಿಸಿಬಿಡುತ್ತಿದ್ದೆ! ಮೊದಲೇ ಬಡ ದೇಶ, ಒಂದಿಷ್ಟು ಭಿಕ್ಷುಕರು ಕಡಿಮೆಯಾಗಲಿ!'
     ಪರಮಾತ್ಮನ ಸಾಕ್ಷಾತ್ಕಾರವಾಯಿತು ಎಂದು ಹೇಳುವವರನ್ನು ನೋಡಿದ್ದೇನೆ - ಅವರು ಕಂಡೆವೆಂದು ಹೇಳುವ ಪರಮಾತ್ಮ ಅಂದರೆ ಮೂರು ಕಣ್ಣಿನ ಶಿವ, ನಾಲ್ಕು ತಲೆಯ ಬ್ರಹ್ಮ, ಹೀಗೆ. ಇದೆಲ್ಲಾ ಬುರುಡೆ. ನಿರಾಕಾರ ಪರಮಾತ್ಮ ಎಂದೂ ಸಾಕಾರನಾಗಿರಲಿಲ್ಲ, ಆಗುವುದೂ ಇಲ್ಲ. ಕೃಷ್ಣನನ್ನು ವಿಷ್ಣುವಿನ ಅವತಾರ ಅನ್ನುತ್ತಾರೆ. ಅವತಾರ ಎಂದರೆ ಮೇಲಿನಿಂದ ಕೆಳಗೆ ಅವತರಿಸಿದವನು ಎಂದು. ಆ ಪರಮಾತ್ಮ ಮೇಲಿನಿಂದ ಕೆಳಗೆ ಇಳಿದು ಬಂದನೆಂದರೆ ಆತ ಮೊದಲು ಕೆಳಗೆ ಇರಲಿಲ್ಲವೇ? ಕೌಸಲ್ಯೆಯ ಮಗನಾಗಿ ಪರಮಾತ್ಮ ರಾಮನ ಅವತಾರದಲ್ಲಿ ಬಂದನೆಂದರೆ ಅದಕ್ಕೂ ಮೊದಲು ಭೂಮಿಯಲ್ಲಿ ದೇವರಿರಲಿಲ್ಲವೆ? ಸಾಕ್ಷಾತ್ಕಾರ ಎನ್ನುವ ಪದವನ್ನೇ ನಾನು ಬಳಸಲು ಇಚ್ಛಿಸುವುದಿಲ್ಲ. ಪರಮಾತ್ಮ ಎಂದೂ ಸಾಕಾರ ರೂಪಿ ಅಲ್ಲವೇ ಅಲ್ಲ, ಸಾಕಾರನೆಂದಾಕ್ಷಣ ಸರ್ವಶಕ್ತ, ಸರ್ವವ್ಯಾಪಕ ಭಗವಂತನನ್ನು ಮಿತಿಗೊಳಿಸಿದಂತೆ! ಆತ ಅನುಭವಗಮ್ಯನೇ ಹೊರತು ಕಣ್ಣಿನಿಂದ ಕಾಣಲಾಗುವುದಿಲ್ಲ. ಹೃದಯದಲ್ಲಿ ಕಾಣಬೇಕು, ಅನುಭವಿಸಬೇಕು! ಪರಮಾತ್ಮ ರಾಮನೆಂದರೆ ಹೃದಯದಲ್ಲಿ ನೆಲೆಸಿರುವ, ರಮಿಸುವ ಭಗವಂತನೇ ಹೊರತು ಕೌಸಲ್ಯಾಸುತನೆಂದಲ್ಲ. ರುದ್ರನೆಂದರೆ ಲಯಕಾರಕನೆಂದು ಬಿಂಬಿಸಲ್ಪಟ್ಟವನಲ್ಲ, ಪರರ ಸಂಕಷ್ಟಗಳನ್ನು ಕಂಡು ಕಣ್ಣೀರು ಸುರಿಸುವವನು, ಪರಿಹರಿಸಲು ಸಹಕರಿಸುವವನು! ಸ್ವರ್ಗ, ನರಕ ಅನ್ನುವುದು ಬೇರೆ ಇಲ್ಲ. ಇಲ್ಲೇ ಇದೆ. ಸ್ವರ್ಗ ಅಂದರೆ ಮೇಲೇರುವುದು, ನರಕ ಅಂದರೆ ಕೆಳಕ್ಕೆ ಇಳಿಯುವುದು. ನಮ್ಮ ನಡವಳಿಕೆಗಳು ಸರಿಯಿದ್ದರೆ, ಸತ್ಕರ್ಮ ಮಾಡಿದರೆ ನಾವು ಸ್ವರ್ಗ ಕಾಣುತ್ತೇವೆ, ಇಲ್ಲದಿದ್ದರೆ ಕೆಳಗೆ ಬೀಳುತ್ತೇವೆ. ನನ್ನನ್ನು ನಾಸ್ತಿಕನೆಂದು ದೂರುವವರೂ ಇದ್ದಾರೆ. ಆಸ್ತಿಕರೆಂದರೆ ಯಾರು, ನಾಸ್ತಿಕರು ಯಾರು? ಅರ್ಥರಹಿತ ಸಂಪ್ರದಾಯಗಳು, ಆಚರಣೆಗಳನ್ನು ಪೋಷಿಸುವ ಆಸ್ತಿಕರೆನಿಸಿಕೊಳ್ಳುವವರಿಗಿಂತ ನಾಸ್ತಿಕರೇ ಮೇಲು! ಜ್ಞಾನಿಗಳಾದವರು ವಿಚಾರ ತಿಳಿದವರಾಗಿದ್ದು ಯಾರು ಏನೇ ಹೇಳಿದರೂ ತಪ್ಪುದಾರಿಗೆ ಎಳೆಯಲ್ಪಡುವುದಿಲ್ಲ. ಆದರೆ ತಿಳುವಳಿಕೆ ಕಡಿಮೆಯಿದ್ದವರನ್ನು ದಾರಿ ತಪ್ಪಿಸುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಕ್ಷಮಿಸಬೇಕು, ನಾನು ಆಡಿದ ಮಾತುಗಳು ಕಟುವಾಗಿ ಕಾಣಬಹುದು, ಆದರೆ ಸತ್ಯ ಸತ್ಯವೇ. ನಾನು ಯಾರನ್ನೂ ನೋಯಿಸಲು ಉದ್ದೇಶಿಸಿಲ್ಲ, ಕೆಟ್ಟ ಭಾವನೆಯಿಂದ ಮಾತನಾಡಿಲ್ಲ, ಪಂಡಿತನೆಂದು ಭಾವಿಸಿ ಆಡಿಲ್ಲ. ಒಳ್ಳೆಯ ವಿಚಾರ ಮಾಡೋಣ, ವಿಮರ್ಶೆ ಮಾಡೋಣ, ಒಳ್ಳೆಯ ದಾರಿಯಲ್ಲಿ ನಡೆಯೋಣ!
-0-0-0-0-0-

ಸೋಮವಾರ, ಮಾರ್ಚ್ 14, 2011

ಭಗತ್ ಸಿಂಗನ ಕುರಿತ ಚಿತ್ರ 'ಶಹೀದ್' ಚಿತ್ರದಲ್ಲಿನ ಮನತಟ್ಟುವ ಗೀತೆ


The song which has touched my heart:

Watan Ki Raah Mein lyrics by Mohammad Rafi


Watan ki raah mein watan ke naujawan shaheed ho
pukaarte hain ye zameen-o-aasmaan shaheed ho

shaheed teri maut hi tere vatan ki zindagi
tere lahu se jaag uthegi is chaman mein zindagi
khilenge phool us jagah ki tu jahaan shaheed ho,
watan ki ...

ghulam uth watan ke dushmano se intaqaam le
in apne donon baajuon se khanjaron ka kaam le
chaman ke vaaste chaman ke baagbaan shaheed ho,
watan ki ...

pahaad tak bhi kaanpane lage tere junoon se
tu aasmaan pe inqalaab likh de apane khoon se
zameen nahi tera watan hai aasmaan shaheed ho,
watan ki ...

watan ki laaj jisko thi ajeez apani jaan se
wo naujavaan ja raha hai aaj kitani shaan se
is ek jawaan ki khaak par har ik jawaan shaheed ho
watan ki ...

hai kaun khushanaseeb maan ki jiska ye chiraag hai
wo khushanaseeb hai kahaan ye jisake sar ka taaj hai
amar wo desh kyon na ho ki tu jahaan shaheed ho,
watan ki ...




ಗುರುವಾರ, ಮಾರ್ಚ್ 10, 2011

ಮೂಢ ಉವಾಚ -45

ವರಸುತ
ಮಾತಿನಲಿ ವಿಷಯ ಭಾಷೆಯಲಿ ಭಾವ
ಅನುಭವದಿ ಪಾಂಡಿತ್ಯ ಮೇಳವಿಸಿ |
ಕೇಳುಗರಹುದಹುದೆನುವ ಮಾತುಗಾರ
ಸರಸತಿಯ ವರಸುತನು ಮೂಢ ||


ಉದ್ಧಾರ
ನಿನಗೆ ನೀನೆ ಬಂಧು ನಿನಗೆ ನೀನೆ ಶತ್ರು
ಪರರು ಮಾಡುವುದೇನು ನಿನದೆ ತಪ್ಪಿರಲು |
ಉನ್ನತಿಗೆ ಹಂಬಲಿಸು ಅವನತಿಯ ಕಾಣದಿರು
ನಿನ್ನುದ್ಧಾರ ನಿನ್ನಿಂದಲೇ ಮೂಢ ||


ಗುರಿ
ದಾರಿ ಸುಂದರವಿರಲು ಗುರಿಯ ಚಿಂತ್ಯಾಕೆ
ಗುರಿಯು ಸುಂದರವಿರಲು ದಾರಿ ಚಿಂತ್ಯಾಕೆ |
ಕಲ್ಲಿರಲಿ ಮುಳ್ಳಿರಲಿ ಹೂವು ಹಾಸಿರಲಿ
ರೀತಿ ಸುಂದರವಿರೆ ಯಶ ನಿನದೆ ಮೂಢ ||


ಮುಖವಾಡ
ಶ್ವೇತವಸನಧಾರಿಯ ಒಳಗು ಕಪ್ಪಿರಬಹುದು
ಹಂದರವಿದ್ದೀತು ಮನ ದೇಹ ಸುಂದರವಿದ್ದು |
ಕಾಣುವುದು ಒಂದು ಕಾಣದಿಹದಿನ್ನೊಂದು
ಮುಖವಾಡ ಧರಿಸಿಹರು ನರರು ಮೂಢ ||
*******************
-ಕ.ವೆಂ.ನಾಗರಾಜ್.

ಬುಧವಾರ, ಮಾರ್ಚ್ 9, 2011

ಸೇವಾ ಪುರಾಣ -33: ಹೀಗೊಂದು ವರ್ಗಾವಣೆ

ಹೊಳೆನರಸಿಪುರದ ರಾಜಕೀಯ
     ಹಾಸನದಲ್ಲಿ ಅದರಲ್ಲೂ ವಿಶೇಷವಾಗಿ ಹೊಳೆನರಸಿಪುರದಲ್ಲಿ ರಾಜಕೀಯ ಜನಜೀವನದಲ್ಲಿ ಹಾಸುಹೊಕ್ಕಾಗಿಬಿಟ್ಟಿದೆ. ಇಷ್ಟವಿರಲಿ, ಇಲ್ಲದಿರಲಿ ರಾಜಕೀಯ ದೈನಂದಿನ ಜೀವನದ ಮೇಲೂ ಪ್ರಭಾವ ಬೀರಿರುವುದು, ಬೀರುತ್ತಿರುವುದು, ಬೀರುವುದು ಸಾಮಾನ್ಯವಾಗಿದೆ. ನಾನು ಈಗ ಹೇಳಹೊರಟಿರುವುದು ಇಂದಿನ ಸ್ಥಿತಿಯಲ್ಲ, ೨೮ ವರ್ಷಗಳ ಹಿಂದಿನ ಸ್ಥಿತಿ. ನಾಲ್ಕು ವರ್ಷಗಳು ಹೊಳೆನರಸಿಪುರದ ತಾಲ್ಲೂಕು ಆಡಳಿತ ಶಿರಸ್ತೇದಾರನಾಗಿ ಮತ್ತು ಎರಡು ವರ್ಷಗಳು ಹಳ್ಳಿಮೈಸೂರು ಉಪತಹಸೀಲ್ದಾರನಾಗಿ ಕೆಲಸ ನಿರ್ವಹಿಸಿದ್ದೆ. ಮೊದಲ ಎರಡು ವರ್ಷಗಳು ಜಿಲ್ಲೆಯ ರಾಜಕೀಯ ಶಕ್ತಿಕೇಂದ್ರಗಳಾಗಿದ್ದ ಪುಟ್ಟಸ್ವಾಮಿಗೌಡರು ಮತ್ತು ದೇವೇಗೌಡರು ಒಂದಾಗಿದ್ದ ಕಾಲ, ನಂತರದ ಎರಡು ವರ್ಷಗಳು ಅವರವರಲ್ಲಿ ಮುಸುಕಿನ ಯುದ್ಧ ನಡೆದ ಕಾಲ ಮತ್ತು ಕೊನೆಯ ಎರಡು ವರ್ಷಗಳು ಅವರು ಬದ್ಧವೈರಿಗಳಾಗಿ ಪರಿವರ್ತಿತರಾದ ಕಾಲ. 'ಕೋಣಗಳೆರಡುಂ ಹೋರೆ ಗಿಡಕೆ ಮಿತ್ತು' ಎಂಬಂತೆ ಜನರ ಸ್ಥಿತಿಯಾಗಿತ್ತು. ಬದಲಾದ ರಾಜಕೀಯದ ಪರಿಸ್ಥಿತಿಯಲ್ಲಿ ಕುಟುಂಬದ ಸದಸ್ಯರುಗಳು, ಸೋದರರು, ಬಂಧುಗಳ ನಡುವೆ ಸಹ ಬಿರುಕು ಮೂಡಿತ್ತು ಎಂದರೆ ಅದು ಉತ್ಪ್ರೇಕ್ಷೆಯಂತೂ ಅಲ್ಲ. ಅಧಿಕಾರಿಗಳು ಮತ್ತು ನೌಕರರ ಸ್ಥಿತಿ ಅನುಭವಿಸಿದವರಿಗೇ ಗೊತ್ತು. ವಿವಾಹ ಸಂಬಂಧಗಳನ್ನು ಮಾಡುವಾಗ ಸಹ ಸಂಬಂಧಿಸಿದವರ ರಾಜಕೀಯ ಬದ್ಧತೆ/ನಿಲುವುಗಳೂ ಪಾತ್ರ ವಹಿಸುತ್ತಿದ್ದವು ಎಂದರೆ ಪರಿಸ್ಥಿತಿ ಊಹಿಸಿಕೊಳ್ಳಬಹುದು.

     ರಾಜಕೀಯವೆಂದರೆ ಜನರ ಸೇವೆ ಮಾಡುವುದು ಎಂದರೆ ಇಂದು ಯಾರೂ ನಂಬುವುದಿಲ್ಲ. ರಾಜಕೀಯ ಮಾಡುವುದೆಂದರೆ ತಮ್ಮ ಬೇಳೆ ಬೇಯಿಸಿಕೊಳ್ಳುವುದು ಎಂದೇ ಅರ್ಥ. ರಾಜಕೀಯ ಎಷ್ಟು ಹೆಮ್ಮರವಾಗಿ ಬೆಳೆದಿದೆಯೆಂದರೆ ಅದು ಇಲ್ಲದ ಕ್ಷೇತ್ರವೇ -ಸಾಹಿತ್ಯ, ಧಾರ್ಮಿಕ, ಶೈಕ್ಷಣಿಕ, ದೈನಂದಿನ ಚಟುವಟಿಕೆ, ದೇಶದ ರಕ್ಷಣೆ, ಇತ್ಯಾದಿ ಎಲ್ಲವೂ ಸೇರಿದಂತೆ - ಇಲ್ಲ. ರಾಜಕೀಯದ ಪರಮಗುರಿಯೆಂದರೆ ಅಧಿಕಾರ ಪಡೆಯುವುದು, ಅದನ್ನು ಸಾಧಿಸಲು ಏನು ಬೇಕಾದರೂ ಮಾಡುವುದು! ಅಧಿಕಾರ ಏಕೆ ಬೇಕು? ಜನರ ಸೇವೆ ಮಾಡುವ ಸಲುವಾಗಿ ಎಂದು ತಿಳಿಯುವವರು ಮುಗ್ಧರೇ ಸರಿ! ಅಧಿಕಾರವೇ ಪರಮಗುರಿಯಾದ ರಾಜಕೀಯದಲ್ಲಿ ತಮಗೆ ಅನುಕೂಲವಾದ ವಾತಾವರಣ ನಿರ್ಮಾಣಕ್ಕೆ ಹೆಣಗುತ್ತಿರುವ, ಅದಕ್ಕಾಗಿ ದಿನದ ಇಪ್ಪತ್ತನಾಲ್ಕು ಗಂಟೆಗಳೂ ಸಾಕಾಗದ ರಾಜಕೀಯ ಧುರೀಣರುಗಳು ನಮ್ಮ ಕಣ್ಣ ಮುಂದೆಯೇ ಇದ್ದಾರೆ. ಅವರುಗಳ ಮೊದಲ ಕಣ್ಣು ಸರ್ಕಾರಿ ಅಧಿಕಾರಿಗಳು, ನೌಕರರ ಮೇಲೆ. ತಮಗೆ ಬೇಕಾದ ನೌಕರರನ್ನು, ಅದರಲ್ಲೂ ತಮ್ಮ ಜಾತಿಯವರನ್ನು ತಮ್ಮ ಕ್ಷೇತ್ರದಲ್ಲಿರುವಂತೆ ನೋಡಿಕೊಳ್ಳುವುದು ಅವರ ಆದ್ಯತೆ. ತಮ್ಮ ಮಾತು ಕೇಳದ ಅಧಿಕಾರಿಗಳು, ನೌಕರರನ್ನು ಹೆದರಿಸುವುದು, ಕಿರುಕುಳ ಕೊಡುವುದು, ಗೂಬೆ ಕೂರಿಸುವುದು, ತಾವಾಗಿಯೇ ವರ್ಗ ಮಾಡಿಸಿಕೊಂಡು ಹೋಗುವಂತೆ ಮಾಡುವುದು ಅವರಿಗೆ ಕಷ್ಟವೇನಲ್ಲ. ಹಾಗೆ ಮಾಡಿ ಉಳಿದವರ ಮೇಲೆ ಹೆಚ್ಚಿನ ನಿಯಂತ್ರಣ ಪಡೆಯುತ್ತಾರೆ. ಹೊಳೆನರಸಿಪುರದಲ್ಲಿ ಅಧಿಕಾರಿಗಳು, ನೌಕರರ ಮಾತುಗಳು, ಕೆಲಸಗಳ ಬಗ್ಗೆ ರಾಜಕೀಯ ಧುರೀಣರಿಗೆ ವರದಿ ಕೊಡುವ, ಚಾಡಿ ಹೇಳುವ ನೌಕರರ ಒಂದು ಸಮೂಹವೇ ಇತ್ತು. ಇದಕ್ಕೆ ಕಾರಣವೆಂದರೆ ತಾವು ನಿಷ್ಠರೆಂದು ತೋರಿಸಿಕೊಳ್ಳುವುದು, ತಮಗೆ ತೊಂದರೆಯಾಗದಿರುವಂತೆ ನೋಡಿಕೊಳ್ಳುವುದು, ತಾವು ಹೆಚ್ಚಿನ ಅನುಕೂಲ ಪಡೆಯುವುದೇ ಆಗಿತ್ತು. ಅಂತಹ ನಿಷ್ಠೆಯ ಪರಾಕಾಷ್ಠತೆಯನ್ನು ಅಲ್ಲಿ ನಾನು ಕಂಡಿದ್ದೆ. ಉದಾಹರಣೆಗೆ ಹೇಳಬೇಕೆಂದರೆ, ಪ್ರತಿದಿನ ಬೆಳಿಗ್ಗೆ ಸುಮಾರು ೭ ಗಂಟೆಯ ಸುಮಾರಿಗೆ ಇಲಾಖೆಯೊಂದರ ೩-೪ ಲಾರಿಗಳು ಪಟ್ಟಣದ ವೃತ್ತದ ಬಳಿ ನಿಲ್ಲುತ್ತಿದ್ದವು. ಆ ಲಾರಿಗಳಲ್ಲಿ ಜನರುಗಳನ್ನು ಹತ್ತಿಸಿಕೊಂಡು ಧುರೀಣರ ಜಮೀನುಗಳ ಬಳಿಗೆ ಬಿಟ್ಟು ಬರಲಾಗುತ್ತಿತ್ತು. ಸಾಯಂಕಾಲ ಕೆಲಸ ಮುಗಿಸಿದ ನಂತರ ವಾಪಸು ಕರೆತರುತ್ತಿದ್ದವು. ಆ ರೀತಿ ಹತ್ತುತ್ತಿದ್ದ ಜನರ ಪೈಕಿ ಕೆಲವರು ಸರ್ಕಾರಿ ನೌಕರರೂ (ಶಿಕ್ಷಕರೂ ಸೇರಿ) ಇದ್ದುದನ್ನು ಗಮನಿಸಿದ್ದೇನೆ. ಅವರುಗಳು ತಾವೂ ಕೆಲಸ ಮಾಡಿದ್ದೇವೆಂದು ತೋರಿಸಿಕೊಂಡು ಧುರೀಣರ ಮುಂದೆ ನಿಷ್ಠ ಸೇವಕರಂತೆ ಕೈಕಟ್ಟಿ ನಿಲ್ಲುತ್ತಿದ್ದುದನ್ನು ಕಂಡಿದ್ದೇನೆ. ಧುರೀಣರ ಹಿಂಬಾಲಕರಾಗಿ ಕೆಲಸ ಮಾಡುತ್ತಿದ್ದ ಸರ್ಕಾರಿ ನೌಕರರ ಸರ್ಕಾರಿ ಕೆಲಸಕಾರ್ಯಗಳಲ್ಲಿ ಏನಾದರೂ ಅಡಚಣೆಯಾದರೆ, ಲೋಪವಾದರೆ ಮೇಲಾಧಿಕಾರಿಗಳು ವಿಚಾರಿಸುವ ಧೈರ್ಯ ಮಾಡುತ್ತಿರಲಿಲ್ಲ. ಬದಲಾಗಿ ಅಧಿಕಾರಿಗಳೇ ತಮಗೆ ಅನುಕೂಲ ಮಾಡಿಸಿಕೊಳ್ಳಲು ಇಂತಹ ಮಧ್ಯವರ್ತಿ ನೌಕರರ ಸಹಾಯವನ್ನೇ ಬಯಸುತ್ತಿದ್ದುದು ವಿಪರ್ಯಾಸ. ಶಾಲೆಯ ಮುಖವನ್ನೇ ಸರಿಯಾಗಿ ನೋಡದಿದ್ದ ಶಿಕ್ಷಕರೊಬ್ಬರನ್ನು ಆದರ್ಶ ಶಿಕ್ಷಕರೆಂದು ಸನ್ಮಾನಿಸಲಾಗಿತ್ತು.

ಹೀಗೊಂದು ವರ್ಗಾವಣೆ
     ಇದು ಸುಮಾರು ಇಪ್ಪತ್ತೈದು ವರ್ಷಗಳ ಹಿಂದಿನ ಘಟನೆಯಾದರೂ ನನ್ನ ನೆನಪಿನಲ್ಲಿ ಉಳಿದಿದೆ. ನಾನಾಗ ಹೊಳೆನರಸಿಪುರದಲ್ಲಿ ಉಪತಹಸೀಲ್ದಾರನಾಗಿದ್ದೆ. ಆಗ ಕ್ಷೇತ್ರಾಭಿವೃದ್ಧಿ ಅಧಿಕಾರಿ ಕಛೇರಿ ಮತ್ತು ತಾಲ್ಲೂಕು ಅಭಿವೃದ್ಧಿ ಮಂಡಳಿ ಇತ್ತು. ಈಗ ರಾಜ್ಯ ಮಟ್ಟದ ನಾಯಕರಾಗಿರುವವರು ಆಗ ತಾಲ್ಲೂಕು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. ತಿಂಗಳಿಗೆ ಒಮ್ಮೆ ನಡೆಯುವ ತಾಲ್ಲೂಕು ಅಭಿವೃದ್ಧಿ ಮಂಡಳಿ ಸಭೆಗೆ ನಾನು ಹಾಜರಾಗುತ್ತಿದ್ದೆ. ಒಮ್ಮೆ ಸಭೆ ನಡೆಯುವ ೧೫ ನಿಮಿಷಗಳ ಮುಂಚೆ ಸಭೆ ನಡೆಯುವ ಸಭಾಂಗಣದಲ್ಲಿ ಕುಳಿತಿದ್ದೆ. ಅಧ್ಯಕ್ಷರು ಅರ್ಧ ಘಂಟೆ ತಡವಾಗಿ ಬಂದರು. ಸಬಾಂಗಣಕ್ಕೆ ಬರುವ ಮುನ್ನ ಅಧ್ಯಕ್ಷರು ಅವರ ಕೊಠಡಿಯಲ್ಲಿ ಕುಳಿತು ಕೆಲಕಾಲ ಸಮಾಲೋಚಿಸಿ ಸಭೆಗೆ ಬರುತ್ತಿದ್ದರು. ಆ ಸಮಯದಲ್ಲಿ ಅವರ ಕೊಠಡಿಯ ಹೊರಗೆ ಕ್ಷೇತ್ರಾಭಿವೃದ್ಧಿ ಅಧಿಕಾರಿಯ ಜವಾನ ನಾರಾಯಣ (ಹೆಸರು ಬದಲಿಸಿದೆ) ಗಟ್ಟಿ ಧ್ವನಿಯಲ್ಲಿ ಕೂಗಾಡುತ್ತಿದ್ದ. ಇನ್ನೊಬ್ಬ ಜವಾನ ರಂಗೇಗೌಡ ಅವನನ್ನು ಸುಮ್ಮನಿರಿಸುತ್ತಿದ್ದ. ಅವರ ನಡುವಿನ ಸಂಭಾಷಣೆ ಹೀಗಿತ್ತು:

ರಂಗೇಗೌಡ: ಏ ಸುಮ್ಮನಿರೋ. ಒಳಗಡೆ ಅಧ್ಯಕ್ಷರು ಅವ್ರೆ.
ನಾರಾಯಣ: ಇದ್ದರೆ ಇರಲಿ ಬಿಡೋ, ಅವರೇನು ದ್ಯಾವರಾ?
ರಂ: ಏನು ಕುಡಕೊಂಡು ಬಂದಿದೀಯಾ? ಸ್ವಲ್ಪ ನಿಧಾನಕ್ಕೆ ಮಾತಾಡು. ಅವರಿಗೆ ಕೇಳುತ್ತೆ.
ನಾ: ಕುಡಿಯಾಕೆ ನೀನು ದುಡ್ ಕೊಟ್ಟಿದ್ಯಾ? ಕೇಳಿದ್ರೆ ಕೇಳ್ಲಿ ಬುಡು. ನಾನೇನು ಆಡಬಾರದ್ದು ಮಾತಾಡ್ತಿದೀನಾ?
ರಂ: ಸುಮ್ಕಿರ್ಲಾ. ಆಮ್ಯಾಕೆ ಎಡವಟ್ಟಾಯ್ತದೆ.
ನಾ: ಏನ್ಲಾ ಆಯ್ತದೆ? ನರ್ಸೀಪುರದಲ್ಲಿ ಬರೀ ಅಪ್ಪ ಮಕ್ಕಳದೇ ದರಬಾರು. ಎಲ್ಲಾ ಅವರು ಏಳ್ದಾಗೇ ನಡೀಬೇಕು.ಬಡವರ ಕಸ್ಟ ಯಾವ ನನ್ಮಗ ಕೇಳ್ತಾನೆ?
ರಂ: ಬ್ಯಾಡ ಸುಮ್ಕಿರ್ಲಾ. ಯಾಕೋ ನಿಂಗೆ ಗಾಸಾರ ಸರಿ ಇರಾಂಗ್ ಕಾಣಾಕಿಲ್ಲ.
ನಾ: ಏನ್ ಮಾಡ್ತಾರ್ಲಾ? ಟ್ರಾನ್ ಫರ್ ಮಾಡ್ತಾರೇನ್ಲಾ? ಮಾಡ್ಲಿ ಬುಡ್ಲಾ? ಅದಕ್ಕೆಲ್ಲಾ ನಾ ಯದರಾಕಿಲ್ಲ. ಆಸನ ಬುಟ್ ಯಲ್ಲಿಗಾದರೂ ಟ್ರಾನ್‌ಫರ್ ಮಾಡ್ಲಿ. ಓಗ್ತೀನ್ ಕಣ್ಲಾ.

     ಒಳಗಡೆ ಅಧ್ಯಕ್ಷರು ಅಧಿಕಾರಿಗಳೊಂದಿಗೆ ಸಮಾಲೋಚಿಸುವುದನ್ನು ಬಿಟ್ಟು ಅವರ ಮಾತುಗಳನ್ನೇ ಕೇಳಿಸಿಕೊಳ್ಳುತ್ತಿದ್ದರು. ಬಿ.ಡಿ.ಓ.ರವರು ’ನಾರಾಯಣ ಒಳ್ಳೆಯವನೇ. ಯಾವತ್ತೂ ಹೀಗಾಡಿರಲಿಲ್ಲ. ಕುಡಕೊಂಡು ಬಂದಿದ್ದಾನೋ ಏನೋ’ ಎಂದು ಸ್ವಗತದಂತೆ ಹೇಳಿದರು. ಆಮೇಲೆ ಅವರೇ ಹೊರಬಂದು ನಾರಾಯಣನನ್ನು ಗದರಿಸಿ ಕಳಿಸಿದರು. ಆಗಲೂ ನಾರಾಯಣ "ಏನಾಯ್ತದೆ ಆಗ್ಲಿ ಬುಡಿ ಸಾರ್. ಟ್ರಾನ್‌ಫರ್ ಮಾಡಿದ್ರೆ ಮಾಡ್ಲಿ. ಆಸನ ಬುಟ್ ಎಲ್ ಆಕ್ತಾರೆ ಆಕ್ಲಿ, ಓಯ್ತೀನಿ" ಎನ್ನುತ್ತಲೇ ಅಲ್ಲಿಂದ ಜಾಗ ಖಾಲಿ ಮಾಡಿದ.

     ಅಧ್ಯಕ್ಷರಿಗೂ ಅಂದು ಮೂಡಿರಲಿಲ್ಲ. ಸಭೆ ಬೇಗ ಮುಕ್ತಾಯ ಕಂಡಿತು. ಸಭೆ ಮುಗಿದ ತಕ್ಷಣ ಅಧ್ಯಕ್ಷರು ಹಾಸನಕ್ಕೆ ಹೊರಟರು. ಮಧ್ಯಾಹ್ನ ನಾಲ್ಕು ಘಂಟೆ ವೇಳೆಗೆ ವಾಪಸು ಬರುವಾಗ ನಾರಾಯಣನನ್ನು ಹಾಸನಕ್ಕೆ ವರ್ಗಾವಣೆ ಮಾಡಿದ ಆದೇಶವನ್ನು ಕೈಲಿ ಹಿಡಿದುಕೊಂಡೇ ಬಂದಿದ್ದರು. ಬಿ.ಡಿ.ಓ.ರಿಗೆ ಹೇಳಿ ನಾರಾಯಣನನ್ನು ಆ ಕೂಡಲೇ ಕಛೇರಿಯಿಂದ ರಿಲೀವ್ ಮಾಡಿಸಿದರು. ಮರುದಿನ ಹಾಸನದ ಕಛೇರಿಯಲ್ಲಿ ಡ್ಯೂಟಿ ರಿಪೋರ್ಟು ಮಾಡಿಕೊಂಡು ಸಾಯಂಕಾಲ ಹೊಳೆನರಸೀಪುರಕ್ಕೆ ಬಂದ ನಾರಾಯಣ ಸೀದಾ ಅಧ್ಯಕ್ಷರ ಮನೆಗೆ ಹೋದ. ಅವರಿಗೆ ಅಡ್ಡಬಿದ್ದು "ಬುದ್ಧೀ, ತ್ಯಪ್ ತಿಳಿಬ್ಯಾಡಿ. ನಾನ್ ನಿಮ್ ಸಿಸ್ಯ. ಬಡವ. ನೆನ್ನೆ ನಾನು ಕುಡಿದಿರಲಿಲ್ಲ ಬುದ್ಧೀ. ನಂಗೆ ಆಸನಕ್ಕೇ ಟ್ರಾನ್‌ಫರ್ ಬ್ಯಾಕಾಗಿತ್ತು ಬುದ್ಧೀ. ನನ್ನ ಎಂಡ್ರಿಗೆ ಉಸಾರಿಲ್ಲ. ಆಪ್ಲೇಸನ್ ಆಗಬ್ಯಾಕು. ಅದ್ಕೇ ಇಂಗ್ಮಾಡ್ದೆ. ನನ್ನ ತ್ಯಪ್ ಒಟ್ಟೆಗಾಕ್ಕಳಿ ಬುದ್ಧೀ" ಎಂದು ಹೇಳಿದಾಗ ಅಧ್ಯಕ್ಷರು ಸುಸ್ತು. "ಎಲಾ ಇವ್ನಾ!" ಅಂದುಕೊಂಡು ಸುಮ್ಕಾದರು.

ಸೋಮವಾರ, ಮಾರ್ಚ್ 7, 2011

ಮೂಢ ಉವಾಚ -44 : ಸಮರಸತೆ

ದಾಂಪತ್ಯವಿರೆ ಅನುರೂಪ ಮನೆಯು ಸ್ವರ್ಗ
ಗುರು ಶಿಷ್ಯ ಪ್ರೇಮದಿಂ ಮನುಕುಲವು ಧನ್ಯ |
ಶಬ್ದಗಳ ಜೋಡಿಸಲು ರಸಭಾವದನುರೂಪ
ಒಡಮೂಡುವುದುತ್ತಮ ಕಾವ್ಯ ಮೂಢ ||


ಎಣಿಸದಲೆ ಅವ ಕೀಳು ಇವ ಮೇಲು
ಬಡವ ಸಿರಿವಂತರೆನೆ ತರತಮವು ಇಲ್ಲ |
ನೋವು ನಲಿವಿನಲಿ ಉಳಿಸಿ ಸಮಚಿತ್ತ
ಬಲ್ಲಿದರು ಬಾಳುವರು ಕಾಣು ಮೂಢ ||


ಪತಿಗೆ ಹಿತವಾಗಿ ಸತಿ ಬಾಳಬೇಕು
ಸತಿಗೆ ಹಿತವಾಗಿ ಪತಿ ಬಾಳಬೇಕು |
ನಾನತ್ವ ಅಹಮಿಕೆ ಬದಿಯಲಿಡಬೇಕು
ಸಮರಸತೆ ಇರುವಲ್ಲಿ ಸಂಸಾರ ಮೂಢ ||


ಪರಮಾತ್ಮ ನೀಡಿಹನು ಪರಮ ಸಂಪತ್ತು
ವಿವೇಚಿಪ ಶಕ್ತಿಯಿದೆ ಮನಸಿನ ಬಲವಿದೆ |
ನಿನಗೆ ನೀನೆ ಮಿತ್ರ ಸರಿಯಾಗಿ ಬಳಸಿದೊಡೆ
ಇಲ್ಲದೊಡೆ ನಿನಗೆ ನೀನೆ ಶತ್ರು ಮೂಢ ||
****************
-ಕ.ವೆಂ.ನಾಗರಾಜ್.