ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶನಿವಾರ, ಫೆಬ್ರವರಿ 9, 2013

ಸಮಾನತೆ, ವಿಶ್ವಭ್ರಾತೃತ್ವ ಮತ್ತು ನಾವು



     "ನನಗೆ ಒಂದು ಕನಸು ಇದೆ. ಅದೆಂದರೆ ನನ್ನ ನಾಲ್ಕು ಮಕ್ಕಳು ಒಂದು ದಿನ ಅವರ ಬಣ್ಣಗಳಿಂದಲ್ಲದೆ ಅವರ ಗುಣಗಳಿಂದ ಗುರುತಿಸಲ್ಪಡುವ ದೇಶದಲ್ಲಿ ಬಾಳುತ್ತಾರೆ ಅನ್ನುವುದು" - ಇದು ಅಮೆರಿಕಾದ ದಿ. ಮಾರ್ಟಿನ್ ಲೂಥರ್ ಕಿಂಗ್ ರವರ ಉದ್ಗಾರ. ಇದು ಸಮಾನತೆಯನ್ನು ಬಯಸಿದ, ಅಲ್ಲಿ ಪ್ರಚಲಿತವಿದ್ದ ಕಪ್ಪು-ಬಿಳಿ ಜನಾಂಗ ದ್ವೇಷದ ವಿರುದ್ಧ ಹೋರಾಡಿದ್ದ ವ್ಯಕ್ತಿಯ ಕನಸು. ಸಮಾನತೆ ಅನ್ನುವ ಕಲ್ಪನೆ ಯಾವುದೇ ಆದರ್ಶಮಾನವನ ಗುರಿ. ಸಮಾನತೆ ಅಂದರೇನು ಅನ್ನುವುದಕ್ಕೆ ವಿವರಣೆ ನೀಡುವುದು ಕಷ್ಟವೇ ಸರಿ. ಸರಿಸಮ ಎಂಬುದು ನಿಘಂಟಿನ ಅರ್ಥ. ವ್ಯಾವಹಾರಿಕ ಜಗತ್ತಿನಲ್ಲಿ ಸಮಾನತೆಯ ಕಲ್ಪನೆಯ ಸಾಕಾರ ಹೇಗೆ ಎಂಬುದರ ಕುರಿತು ಚಿಂತಿಸಬೇಕಿದೆ. ಭಾರತದ ಸಂವಿಧಾನದಲ್ಲಿ ದೇಶದ ನಾಗರಿಕರಲ್ಲಿ ಜಾತಿ, ಮತ, ಲಿಂಗ, ಭಾಷೆ - ಇಂತಹ ಯಾವುದೇ ಕಾರಣದಿಂದ ಭೇದ ಕೂಡದು, ಎಲ್ಲರಿಗೂ ಸಮಾನವಾದ ಹಕ್ಕು ಇದೆ ಎಂದಿದೆ. ಆದರೆ ಇಲ್ಲಿ ಜಾತಿಯ ಹೆಸರಿನಲ್ಲಿ, ಮತದ ಹೆಸರಿನಲ್ಲಿ, ಲಿಂಗದ ಹೆಸರಿನಲ್ಲಿ, ಭಾಷೆಯ ಹೆಸರಿನಲ್ಲಿ ಭೇದ ಭಾವ ತಾಂಡವವಾಡುತ್ತಿರುವುದು ದುರ್ದೈವ. ಯಾರು ಈ ಸಮಾನತೆಯನ್ನು ಸಾಧಿಸಬೇಕಿದೆಯೋ ಆ ಆಳುವ ಸ್ಥಾನದಲ್ಲಿರುವ ಜನಪ್ರತಿನಿಧಿಗಳೇ ಇಂತಹ ಭೇದ ಭಾವಗಳನ್ನು ಉಳಿಸಿ, ಪೋಷಿಸಿಕೊಂಡು ಬರುತ್ತಿರುವುದು ಘೋರ ಸತ್ಯ. 
     ವ್ಯಾವಹಾರಿಕವಾಗಿ ಸಮಾನತೆ ಅನ್ನುವುದು ಹೇಳುವಷ್ಟು ಸುಲಭವಲ್ಲ. ಸಮಾನತೆಯೆಂದರೆ ಒಬ್ಬ ಹೆಸರಾಂತ ಜಟ್ಟಿ/ಕುಸ್ತಿಪಟುವನ್ನು, ಒಬ್ಬ ಬಡಕಲು ದೇಹದವನನ್ನು ಮತ್ತು ಅನಾರೋಗ್ಯಪೀಡಿತನನ್ನು ಸಮಾನ ಬಲಶಾಲಿ ಎಂದು ಒಪ್ಪಿಕೊಳ್ಳಬೇಕೆಂದು ವಾದಿಸುವುದಲ್ಲ. ಒಬ್ಬ ವಿದ್ವಾಂಸನನ್ನೂ, ಓದು ತಲೆಗೆ ಹತ್ತದವನನ್ನೂ ಮತ್ತು ಮಾನಸಿಕ ವಿಕಲ್ಪನನ್ನು ಸಮಾನ ಜ್ಞಾನಿಗಳೆಂದು ಪರಿಗಣಿಸುವುದಲ್ಲ. ಜಾತಿಯ ಆಧಾರದಲ್ಲಿ ಒಬ್ಬರು ಶೇ. 50ರಷ್ಟು ಅಂಕ ಪಡೆದವರೂ, ಶೇ. 60 ಅಂಕ ಪಡೆದ ಇತರರಿಗೆ ಸಮ ಎಂದು ಪರಿಗಣಿಸುವುದರಲ್ಲಿ ಸಮಾನತೆ ಬರುವುದಿಲ್ಲ. 100  ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ 100 ಮೀ. ಓಡಿದವನನ್ನೂ, 80-90 ಮೀ. ಓಡಿದವರನ್ನೂ ಸಮರೆಂದು ಪರಿಗಣಿಸುವುದಲ್ಲ. ಬದಲಾಗಿ ಅಶಕ್ತರು, ಹಿಂದುಳಿದವರು ಎಂದು ಪರಿಗಣಿಸಲ್ಪಟ್ಟವರಿಗೆ ಅಗತ್ಯದ ಎಲ್ಲಾ ಅನುಕೂಲ, ಸೌಲಭ್ಯಗಳನ್ನು ಕಲ್ಪಿಸಿ ಅವರು ಮುಂದೆ ಬರಲು ಅವಕಾಶ ಕಲ್ಪಿಸುವುದರಲ್ಲಿ ಸಮಾನತೆ ಕಾಣಬೇಕು. ಎಲ್ಲರೂ ಒಂದೇ ಎತ್ತರದವರಾಗಬೇಕೆಂದು ಕೆಲವರ ತಲೆ, ಕಾಲುಗಳನ್ನು ಕತ್ತರಿಸುವುದು ಸಮಾನತೆಯಾಗಲಾರದು. ಅದು ಪ್ರಗತಿಯ ಲಕ್ಷಣವಲ್ಲ. ಸಮಾನತೆಯೆಂದರೆ ವಿವಿಧ ವಿಷಯಗಳನ್ನೆಲ್ಲಾ ಸಮಾನ ರೀತಿಯಲ್ಲಿ ನೋಡುವುದಲ್ಲ, ವಿವಿಧ ವಿಷಯಗಳನ್ನು ವಿವಿಧ ದೃಷ್ಟಿಯಿಂದ ನೋಡುವುದು. ಸಮಾನ ಅವಕಾಶಗಳಿಂದ ಯಾರೂ ವಂಚಿತರಾಗದೆ ಇರುವಂತೆ ನೋಡಿಕೊಳ್ಳುವುದರಲ್ಲಿ ಸಮಾನತೆಯಿದೆ. ಈ ಜಗತ್ತಿನಲ್ಲಿ ಎಲ್ಲಾ ರೀತಿಯ ಜನರಿರುತ್ತಾರೆ. ಎಲ್ಲರೂ ಒಂದೇ ರೀತಿಯಲ್ಲಿ ಇರಲು, ಅಂದರೆ ಆರೋಗ್ಯವಂತರಾಗಿರಲು, ಬಲಶಾಲಿಗಳಾಗಿರಲು, ಜ್ಞಾನಿಗಳಾಗಿರಲು, ಅಂಗವೈಕಲ್ಯತೆಯಿಲ್ಲದಿರಲು, ಒಂದೇ ಜಾತಿ/ಧರ್ಮದವರಾಗಿರಲು, ಒಂದೇ ವಿಚಾರ ಹೊಂದಿದವರೂ ಆಗಲು -ನಾವು, ನೀವು ಇಷ್ಟಪಟ್ಟರೂ- ಸಾಧ್ಯವಿದೆಯೇ? ಹೀಗಿರುವಾಗ ನಿಜವಾದ ಸಮಾನತೆಯೆಂದರೆ, ವ್ಯವಹರಿಸುವಾಗ ಪಕ್ಷಪಾತ, ದುರಾಗ್ರಹ, ಅಭಿಮಾನಗಳಿಗೆ ಅವಕಾಶ ಕೊಡದೆ ಪ್ರತಿಯೊಬ್ಬರೂ ತಾವು ಇಷ್ಟಪಡುವ, ಇರಬಯಸುವ ರೀತಿಯಲ್ಲಿ ಬಾಳಲು, ಬದುಕಲು ಸಹಕರಿಸುವುದು ಅನ್ನಬಹುದಷ್ಟೆ. ದೇವರ ಮುಂದೆ ಎಲ್ಲರೂ ಸಮಾನರು ಎಂಬುದನ್ನು ಅರಿಯಬೇಕಿದೆ. ಇಲ್ಲಿ ದೇವರು ಎಂಬ ಪದವನ್ನು ಯಾವುದೇ ಜಾತಿ/ಮತಗಳವರ ದೇವರು ಎಂಬರ್ಥದಲ್ಲಿ ಬಳಸಿಲ್ಲ. ಜಾತಿಗೊಬ್ಬ ದೇವರು, ಮತಕ್ಕೊಬ್ಬ ದೇವರು ಎನ್ನುವುದು, ಅವರ ದೇವರನ್ನು ಇವರು, ಇವರ ದೇವರನ್ನು ಅವರು ನಿಂದಿಸುವ ಮನೋಭಾವಗಳು ಮಾನವನ ಸಂಕುಚಿತ ಭಾವನೆಯನ್ನು ತೋರಿಸುತ್ತದೆ. ಈ ರೀತಿಯ ತಾರತಮ್ಯವೆಸಗದ ಮನೋಭಾವನೆ ಬೆಳೆಸಿಕೊಂಡವರು ಮಾತ್ರ ಕೇವಲ ಮಾನವರಲ್ಲಿ ಮಾತ್ರವಲ್ಲ ಜಗತ್ತಿನ ಎಲ್ಲಾ ಜೀವಿಗಳ ಕುರಿತು ಅಕ್ಕರೆ, ಅಕರಾಸ್ತೆ ಹೊಂದುತ್ತಾರೆ. ಪ್ರಪಂಚದಲ್ಲಿ ಒಂದೇ ಒಂದು ವಿಚಾರದಲ್ಲಿ ಮಾತ್ರ ಸಮಾನತೆಯಿದೆ. ಎಲ್ಲರೂ ಕೊನೆಗೆ ಸಾಯುತ್ತಾರೆ ಅನ್ನುವುದೇ ಆ ಸಮಾನತೆ. ಸಾವಿನಲ್ಲಿ ಮಾತ್ರ ಎಲ್ಲರೂ ಸಮಾನರು.
     ಸಮಾನತೆಯ ಇನ್ನೊಂದು ಆಯಾಮವನ್ನೂ ಗಮನಿಸಬೇಕು. ಅದು ಪ್ರಗತಿಗೆ ಅಡ್ಡಿಯಾಗಬಾರದು. ಎಲ್ಲರೂ ಯಾವುದಾದರೂ ಒಂದು ಸಂಗತಿಗೆ ಸಂಬಂಧಿಸಿದಂತೆ ಸಮಾನರಾದರು ಎಂದಿಟ್ಟುಕೊಳ್ಳೋಣ. ಮುಂದೆ? ಎಲ್ಲರೂ ಅಲ್ಲಿಯೇ ಉಳಿದುಬಿಡಬೇಕೇ? ಇರುವ ಸ್ಥಿತಿಗಿಂತ ಯಾರೂ ಮುಂದೆ ಹೋಗಬಾರದು ಎಂದರೆ ಪ್ರಗತಿ ಹೇಗೆ ಸಾಧ್ಯವಾದೀತು? ಮುಂದೆ ಹೋಗಲೇಬೇಕು. ಹಾಗೆ ಮುಂದೆ ಹೋಗುವಾಗ ಹಿಂದಿರುವವರನ್ನೂ ಜೊತೆಗೆ ಕರೆದೊಯ್ಯುವ ಮನಸ್ಸು ಮಾಡಬೇಕು. ಮುಂದೆ ಇರುವರನ್ನು ಸಮೀಪಿಸಿ ಅವರೊಡನೆ ಸಮರಾಗುವ ಪ್ರಯತ್ನ ಮಾಡಬೇಕು. ಮತ್ತೆ ಮುಂದುವರೆಯಬೇಕು. ಎಲ್ಲರೂ ಮುಂದೆ ಬರಬೇಕೆಂಬ ವಿಚಾರದಲ್ಲಿ ಮಾತ್ರ ಸಮಾನತೆಯಿರಲೇಬೇಕು. ಮುಂದಿರುವವರನ್ನು ದೂಷಿಸುವುದರಿಂದ ಹಿಂದಿರುವವರು ಮುಂದೆ ಬರಲಾರರು. ಮುಂದೆ ಬರಬೇಕೆಂದರೆ ಪ್ರಯತ್ನಪಟ್ಟು ಮುಂದೆ ಬರಬೇಕಷ್ಟೆ. ಈ ವೇದಮಂತ್ರ ನೆನಪಿನಲ್ಲಿಡಬೇಕಾದುದಾಗಿದೆ:
ಸಮಾನೀ ವ ಆಕೂತಿಃ ಸಮಾನಾ ಹೃದಯಾ ನ ವಃ |
ಸಮಾನಮಸ್ತು ವೋ ಮನೋ ಯಥಾ ವಃ ಸುಸಹಾಸತಿ || (ಋಕ್.10.191.4.)
ಇದರ ಅರ್ಥ ಹೀಗಿದೆ: "ನಮ್ಮ ಆಲೋಚನೆಗಳು, ಹೃದಯಗಳು, ಮನಸ್ಸುಗಳು ಸಮಾನವಾಗಿರಲಿ. ಹೀಗೆ, ನಮ್ಮ ೊಳಿತೂ ಸಹ ಒಟ್ಟಿಗೇ ಆಗುವುದು."
     ಆರ್ಥಿಕ ಸಮಾನತೆಯನ್ನೂ ಸಹ ವ್ಯಾವಹಾರಿಕವಾಗಿ ಉಳಿಸಿಕೊಂಡು ಬರುವುದು ದುಸ್ಸಾಧ್ಯ. ಒಂದು ಸಣ್ಣ ಕಾಲ್ಪನಿಕ ಉದಾಹರಣೆ ನೋಡೋಣ. ಒಂದು ಹಳ್ಳಿಯಲ್ಲಿ ಒಂದು ನೂರು ಕುಟುಂಬಗಳಿದ್ದು, ಅದರಲ್ಲಿ 30 ಕುಟುಂಬಗಳು ಶ್ರೀಮಂತ, 40 ಕುಟುಂಬಗಳು ಮಧ್ಯಮ ಮತ್ತು 40 ಕುಟುಂಬಗಳು ಬಡ ಕುಟುಂಬಗಳೆಂದು ಭಾವಿಸೋಣ. ಅವರಲ್ಲಿನ ಎಲ್ಲಾ ಆಸ್ತಿ-ಪಾಸ್ತಿಗಳನ್ನು ವಶಪಡಿಸಿಕೊಂಡು ಬಂದ ಹಣವನ್ನು -ಕುಟುಂಬಕ್ಕೆ ತಲಾ 15 ಲಕ್ಷ ರೂ. ಎಂದುಕೊಳ್ಳೋಣ- ಎಲ್ಲಾ ಕುಟುಂಬಗಳವರಿಗೆ ಹಂಚಲಾಯಿತು ಎಂದುಕೊಳ್ಳೋಣ. ಐದು ವರ್ಷಗಳು ಕಳೆದ ನಂತರ ಸಮೀಕ್ಷೆ ನಡೆಸಿದರೆ ಆ ಹಳ್ಳಿಯಲ್ಲಿ ಶ್ರೀಮಂತ, ಮಧ್ಯಮ ಮತ್ತು ಬಡ ಕುಟುಂಬಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚು-ಕಡಿಮೆ ಕಂಡುಬರಲಾರದು. ಇದಕ್ಕೆ ಮೂಲಕಾರಣ ಜನರ ಮನೋಭಾವ ಎನ್ನುವುದನ್ನು ತಿಳಿಯಲು ಕಷ್ಟವೇನಲ್ಲ. ಬುದ್ಧಿ ಮತ್ತು ಶ್ರಮ ಉಪಯೋಗಿಸಿಕೊಂಡವರು ಮತ್ತು ಹಣವನ್ನು ಸೂಕ್ತ ರೀತಿ ಉಪಯೋಗಿಸಿಕೊಂಡವರು ಶ್ರೀಮಂತರಾಗುತ್ತಾರೆ, ಅಲ್ಪ ಬುದ್ಧಿ, ಅಲ್ಪ ಶ್ರಮಪಡುವವರು ಮಧ್ಯಮವರ್ಗದವರಾಗುತ್ತಾರೆ. ದುಶ್ಚಟಗಳಿಗೆ ದಾಸರಾದವರು, ಸೋಮಾರಿಗಳು, ಹಣವನ್ನು ಸೂಕ್ತ ರೀತಿಯಲ್ಲಿ ಬಳಸಲು ಬರದವರು ತಮ್ಮ ಹಣವನ್ನು ಪೋಲು ಮಾಡಿ ಬಡವರಾಗುತ್ತಾರೆ. ಮತ್ತೆ ಸಮಾನತೆಯ ಕೂಗು ಬಂದರೆ ಪುನಃ ಎಲ್ಲರ ಹಣವನ್ನು ಕಸಿದು ಸಮಾನವಾಗಿ ಹಂಚಬೇಕೆ? ಇಲ್ಲಿ ಅಗತ್ಯವಿರುವುದು ಜನರನ್ನು ಶ್ರಮಜೀವಿಗಳಾಗಿಸುವುದಕ್ಕೆ, ದುಶ್ಚಟಗಳಿಂದ ದೂರವಿರಿಸುವುದಕ್ಕೆ ಬೇಕಾದ ಜ್ಞಾನದ ತಿಳಿವನ್ನು ಮೂಡಿಸುವುದಕ್ಕೆ, ಬದುಕನ್ನು ಒಳ್ಳೆಯ ರೀತಿಯಲ್ಲಿ ನಡೆಸಿ ಮುಂದೆ ಬರಲು ಸಹಕರಿಸುವುದಕ್ಕೆ ಅಷ್ಟೆ. ಕೊಟ್ಟ ಸೌಲಭ್ಯಗಳನ್ನು ಸರಿಯಾಗಿ ಉಪಯೋಗಪಡಿಸಿಕೊಳ್ಳುವವರಿಗೆ ಮಾತ್ರ ಸೌಲಭ್ಯ ನೀಡಿದರೆ ಮಾತ್ರ ಪ್ರಯೋಜನವಾದೀತು. ಇಲ್ಲದಿದ್ದರೆ ಅದು ಅಪಾತ್ರದಾನವಾಗುವುದು.
     ಇನ್ನೊಂದು ಪ್ರಮುಖ ಸಂಗತಿಯನ್ನು ನಾವು ಗಮನಿಸಬೇಕಿದೆ. ಅದೆಂದರೆ ಹಿಂದಿರುವುದಕ್ಕೆ ಅಥವ ಮುಂದೆ ಇರುವುದಕ್ಕೆ ಜಾತಿ ಎಂದೂ ಕಾರಣ ಅಲ್ಲವೇ ಅಲ್ಲ. ನಿಜವಾದ ಕಾರಣವೆಂದರೆ ಜೀವನಶೈಲಿ ಮಾತ್ರ ಹಿಂದೆ ಉಳಿಯುವುದರಲ್ಲಿ ಅಥವ ಮುಂದೆ ಬರುವುದರಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಆದರೆ ಕುಟಿಲ ರಾಜಕಾರಣಿಗಳು ಅಧಿಕಾರದ ಸಲುವಾಗಿ ಸಂವಿಧಾನಾತ್ಮಕವಾದ ಈ ಜಾತ್ಯಾತೀತ ದೇಶದಲ್ಲಿ ಜಾತಿ ಜಾತಿಗಳಲ್ಲಿ ವಿಷಬೀಜ ಬಿತ್ತುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು ವಿಪರ್ಯಾಸ. ರಾಜಕಾರಣಿಗಳ ಕೃಪಾಪೋಷಿತ ಮಾಧ್ಯಮಗಳೂ ಇದಕ್ಕೆ ನೀರೆರೆಯುತ್ತಿವೆ. ಜಾತಿ ವಿದ್ವೇಷ ಅಥವ ಜಾತಿಪ್ರೇಮವನ್ನೇ ಬಂಡವಾಳವಾಗಿಸಿಕೊಂಡ ಕೆಲವು ಸಾಹಿತಿಗಳೂ ಜಾತಿ-ಜಾತಿಗಳಲ್ಲಿ ವೈಮನಸ್ಯ ಪೋಷಿಸುತ್ತಿರುವುದು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಭಾರತದ ರಾಷ್ಟ್ರಪತಿಯಾಗಿದ್ದ  ಡಾ. ಝಾಕಿರ್ ಹುಸೇನರು ಹೇಳಿದ್ದ ಈ ಮಾತು ಇಲ್ಲಿ ಬಹಳ ಪ್ರಸ್ತುತವಾಗುತ್ತದೆ: "ಭಾರತದಲ್ಲಿ ಎಂದು ನೀವು ನನ್ನನ್ನು ಧರ್ಮದಿಂದ ಗುರುತಿಸುವುದಿಲ್ಲವೋ ಅಂದು ಮಾತ್ರ ಭಾರತದಲ್ಲಿ ಜಾತ್ಯಾತೀತತೆ ಸಾಧ್ಯವಾಗುತ್ತದೆ."
     ಎಲ್ಲರೂ ಎಲ್ಲಾ ವಿಷಯಗಳಲ್ಲಿ ಪ್ರವೀಣರಾಗಿರುವುದಿಲ್ಲ. ಆದ್ದರಿಂದ ಎಲ್ಲರೂ ಎಲ್ಲಾ ಕೆಲಸಗಳನ್ನು ಮಾಡಲಾರರು. ಯಾರು ಯಾವ ವಿಷಯದಲ್ಲಿ ಪ್ರವೀಣರಾಗಿರುತ್ತಾರೋ ಆ ಕ್ಷೇತ್ರದಲ್ಲಿ ಬದುಕು ಕಾಣಬಲ್ಲರು. ಹೀಗಾಗಿ ಕೆಲವರು ಬೌದ್ಧಿಕ ಕ್ಷೇತ್ರ, ಕೆಲವರು ವಾಣಿಜ್ಯ ಕ್ಷೇತ್ರ, ಆಡಳಿತಾತ್ಮಕ ಕ್ಷೇತ್ರ, ಶಾರೀರಿಕ ಶ್ರಮದ ಕ್ಷೇತ್ರಗಳಲ್ಲಿ ತೊಡಗಿಕೊಂಡು ಜೀವನದ ದಾರಿ ಕಾಣುತ್ತಾರೆ. ನಿಜ ಸಮಾನತೆಯೆಂದರೆ ಈ ಎಲ್ಲಾ ಕೆಲಸಗಳಲ್ಲಿ ಉಚ್ಛ-ನೀಚ ಭಾವನೆಗಳಿಗೆ ಅವಕಾಶ ಕೊಡದಿರುವುದು. ಸಮಾನತೆಯಿರಬೇಕೆಂದು ಎಲ್ಲರೂ ವಕೀಲರಾಗಲಿ, ವೈದ್ಯರಾಗಲಿ, ಇಂಜನಿಯರರಾಗಲಿ, ಕಾರ್ಮಿಕರಾಗಿರಲಿ ಎಂದು ಬಯಸುವುದು ಉಚಿತವಾಗುವುದೇ? ಸ್ವಸ್ಥ ಸಮಾಜಕ್ಕೆ, ಸಮಾಜದ ಅಸ್ತಿತ್ವಕ್ಕೆ ಒಬ್ಬರಿಗೊಬ್ಬರು ಪೂರಕವಾದ ಈ ಎಲ್ಲಾ ವಿಭಾಗಗಳಲ್ಲೂ ಕೆಲಸ ಮಾಡುವವರು ಇರಬೇಕು. ವಾಸ್ತವವಾಗಿ ನೋಡಿದರೆ ಯಾವ ಒಂದು ವಿಭಾಗವೂ ಚಿಕ್ಕದಲ್ಲ ಅಥವ ದೊಡ್ಡದಲ್ಲ. ಸಮಾಜದ ಅಸ್ತಿತ್ವಕ್ಕೆ ಈ ಎಲ್ಲವೂ ಇರಲೇಬೇಕು. ಯಾವುದೊಂದು ಇಲ್ಲದಿದ್ದರೂ ಆ ಸಮಾಜ ಅಂಗವಿಕಲವಾಗುತ್ತದೆ. ಈ ಕೆಲಸಗಳು ಸಂಬಂಧಿಸಿದ ವ್ಯಕ್ತಿಗಳ ಶಕ್ತಿ, ಸಾಮರ್ಥ್ಯವನ್ನು, ಒಲವನ್ನೂ ಅವಲಂಬಿಸಿದವಾದ್ದರಿಂದ ಅವರುಗಳ ಆ ಕೆಲಸಗಳಿಗೆ ಮನ್ನಣೆ ನೀಡುವ ಮನೋಭಾವ ಬಂದಲ್ಲಿ ಅದು ಸಮಾನತೆಯೆನಿಸೀತು.
     ವಿಶ್ವಮಾನವ ಕಲ್ಪನೆ, ವಿಶ್ವಭ್ರಾತೃತ್ವ ಅನ್ನುವುದನ್ನೂ ಪರಸ್ಪರರಲ್ಲಿ ಸೋದರತೆ, ಸಮಾನತೆಗೆ ಪರ್ಯಾಯವಾಗಿ ಬಳಸುವುದನ್ನು ಕಂಡಿದ್ದೇವೆ. ಪ್ರಪಂಚದಲ್ಲಿ 196 ದೇಶಗಳಿವೆಯೆಂದು ಗುರುತಿಸುತ್ತಾರೆ. ಎಷ್ಟೋ ದೇಶಗಳ ಹೆಸರುಗಳೇ ನಮಗೆ ಗೊತ್ತಿಲ್ಲ. ವಿಶ್ವಭ್ರಾತೃತ್ವ ಸಾಧ್ಯವಿದ್ದರೆ ಈ ದೇಶಗಳ ಸಂಖ್ಯೆ ಕಡಿಮೆಯಿರುತ್ತಿತ್ತು ಅಥವ ವಿವಿಧ ದೇಶಗಳ ನಡುವೆ ಸ್ನೇಹಭಾವವಿರುತ್ತಿತ್ತು. ಈಗಲಾದರೋ ದೇಶಗಳು ಒಡೆಯುತ್ತಿವೆ, ಆಕ್ರಮಣಕ್ಕೆ ಒಳಗಾಗುತ್ತವೆ, ಗಡಿರೇಖೆಗಳು ಬದಲಾಗುತ್ತವೆ. ಪ್ರಪಂಚವೇ ಒಂದು ಕುಟುಂಬ ಎಂಬ ವೇದವಾಣಿಯ ಸಾಕಾರಕ್ಕೆ ಪೂರಕ ವಾತಾವರಣವಿದೆಯೇ? ಈ 196 ದೇಶಗಳ ಪೈಕಿ 49 ದೇಶಗಳು ಮುಸ್ಲಿಮರು ಬಹುಸಂಖ್ಯಾತರಾಗಿರುವ ದೇಶಗಳಾಗಿವೆ, ಕೆಲವು ಇಸ್ಲಾಮಿಕ್ ದೇಶಗಳೆಂದೇ-ಪಾಕಿಸ್ತಾನವೂ ಸೇರಿ- ಘೋಷಿಸಲ್ಪಟ್ಟ ದೇಶಗಳಾಗಿವೆ. 120 ದೇಶಗಳು ಕ್ರಿಶ್ಚಿಯನ್ ದೇಶಗಳೆಂದು ಗುರುತಿಸಲ್ಪಡುತ್ತವೆ. ಒಂದು ಅಂದಾಜಿನ ಪ್ರಕಾರ ಮತ/ಧರ್ಮದ ಅನುಸಾರ ಪ್ರಪಂಚದ ಜನಸಂಖ್ಯೆ ಸುಮಾರು ಹೀಗಿದೆ:
1. ಕ್ರಿಶ್ಚಿಯನ್ - 2 ಬಿಲಿಯನ್.
2. ಇಸ್ಲಾಮ್ -  1.3 ಬಿಲಿಯನ್,
3. ಹಿಂದೂ -  900 ಮಿಲಿಯನ್,
4. ಇತರರು -  850 ಮಿಲಿಯನ್,
5. ಬೌದ್ಧ -   360 ಮಿಲಿಯನ್,
6. ಚೀನಾ ಮೂಲವಾಸಿ - 225 ಮಿಲಿಯನ್,
7. ಆದಿವಾಸಿ ಪದ್ಧತಿ -   95 ಮಿಲಿಯನ್. 
8. ಯಹೂದ್ಯರು -     19 ಮಿಲಿಯನ್.
     ವಸ್ತುಸ್ಥಿತಿಯಂತೆ ವಿಶ್ಲೇಷಣೆ ಮಾಡಿದರೆ ಮತ/ಧರ್ಮಗಳೂ ಸಮಾನತೆಯ ಶತ್ರುಗಳಾಗಿ ಪರಿಣಮಿಸಿರುವುದು ಗೋಚರವಾಗದಿರದು. ಎಲ್ಲಿ ಪರಧರ್ಮ ಸಹಿಷ್ಣುತೆ ಇರುತ್ತದೋ ಅಲ್ಲಿ ಸಮಾನತೆಯ ಕನಸು ಕಾಣಬಹುದು. ಕೋಟ್ಯಂತರ ವರ್ಷಗಳಿಂದ ಅಸ್ತಿತ್ವದಲ್ಲಿರುವ ಈ ಪ್ರಪಂಚದಲ್ಲಿ ಕೇವಲ ಸುಮಾರು 2013ವರ್ಷಗಳ ಹಿಂದೆ ಪ್ರಾರಂಭವಾದ ಕ್ರಿಶ್ಚಿಯನ್ ಮತವನ್ನು ಇಂದು ಪ್ರಪಂಚದ ಅತಿ ಹೆಚ್ಚು ಸಂಖ್ಯೆಯ ಜನರು ಅನುಸರಿಸುತ್ತಿದ್ದಾರೆ. ಸುಮಾರು 1400 ವರ್ಷಗಳ ಹಿಂದೆ ಜನಿಸಿದ ಇಸ್ಲಾಮ್ ಮತಾನುಯಾಯಿಗಳು ಎರಡನೆಯ ಸ್ಥಾನದಲ್ಲಿದ್ದಾರೆ. ಇಷ್ಟೊಂದು ಕ್ಷಿಪ್ರ ಪ್ರಗತಿಯ ಹಿಂದೆ ತಮ್ಮ ತಮ್ಮ ಧರ್ಮಗಳನ್ನು ಅಗ್ರಣಿಗಳಾಗಿಸಲು ನಡೆದ ಪ್ರಯತ್ನಗಳದು ಸಿಂಹಪಾಲೆಂದರೆ ತಪ್ಪಾಗಲಾರದು. ಆಸೆ, ಆಮಿಷ, ಅನಿವಾರ್ಯತೆ, ಬಡತನ ಮತ್ತು ಅಜ್ಞಾನಗಳ ದುರುಪಯೋಗ, ಕುಟಿಲೋಪಾಯಗಳು, ದುರ್ಮಾರ್ಗಗಳು, ಬಲಪ್ರಯೋಗಗಳಿಂದ ಮಾಡಲಾದ ಮತಾಂತರಗಳ ಕೊಡುಗೆಯೂ ಇದರಲ್ಲಿದೆ. ಪ್ರಪಂಚವನ್ನೇ ಕ್ರಿಶ್ಚಿಯನ್/ಮುಸ್ಲಿಮ್ ಬಹುಸಂಖ್ಯಾತರನ್ನಾಗಿಸಲು ಪ್ರಯತ್ನಗಳು ಎಡೆಬಿಡದೆ ನಡೆಯುತ್ತಿದ್ದು, ಇದಕ್ಕಾಗಿ ಯುದ್ಧಗಳು ಸಂಭವಿಸಿವೆ, ಸಂಭವಿಸಲಿವೆ. ಆರೋಗ್ಯಕರ ಪೈಪೋಟಿ ಮಾನವನ ಅಭಿವೃದ್ಧಿಗೆ ಪೂರಕ. ಅನಾರೋಗ್ಯಕರ ಪೈಪೋಟಿ ಮಾನವನಿಗೆ ಮಾರಕ. ಪೈಪೋಟಿ ಹೀಗೆಯೇ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಮ್ ರಾಷ್ಟ್ರಗಳ ನಡುವೆ ಯುದ್ಧಗಳು -ನೇರ ಮತ್ತು ಪರೋಕ್ಷ-  ನಡೆಯುವ ಸಾಧ್ಯತೆಗಳನ್ನು ತಳ್ಳಿಹಾಕಲಾಗದು. ಧರ್ಮ/ಮತದ ಹೆಸರಿನಲ್ಲಿ ವೈಚಾರಿಕ ಮನೋಭಾವ. ಚಿಂತನೆಗಳಿಗೆ ಇರುವ ಅವಕಾಶಗಳಿಗೆ ಬೇಡಿ ತೊಡಿಸಲಾಗಿದೆ. ಹಾಗೆಯೇ, ಅಭಿವ್ಯಕ್ತಿ ಸ್ವಾತಂತ್ರ್ಯದ ಮುಸುಕಿನಲ್ಲಿ ವಿರೋಧಿ ಮತ/ಧರ್ಮಗಳವರನ್ನು ನಿಂದಿಸುವವರೂ ಇದ್ದಾರೆ. ಯಾರಿಗೆ ಯಾವ ಧರ್ಮ ಇಷ್ಟವೋ ಅದನ್ನು ಅನುಸರಿಸಲು ಅವಕಾಶ ಕೊಟ್ಟರೆ, ಮತಾಂತರಕ್ಕೆ ಪ್ರೋತ್ಸಾಹ ಸಿಗದಿದ್ದರೆ, ಪ್ರಲೋಭನೆ ಒಡ್ಡದಿದ್ದರೆ ಸಮಾನತೆಯ, ವಿಶ್ವಭ್ರಾತೃತ್ವದ ಕನಸು ಕಾಣಲು ಅವಕಾಶವಿದೆ. ಈ ವಾತಾವರಣ ಬರಬಹುದೆಂದು ನಿರೀಕ್ಷಿಸಲಾದೀತೆ?
     ಪ್ರಪಂಚದಲ್ಲಿ 6000-7000 ಭಾಷೆಗಳು ಇವೆಯೆನ್ನಲಾಗಿದೆ. ಜನಸಂಖ್ಯಾವಾರು ಲೆಕ್ಕ ಹಾಕಿದರೆ, 2009ರ ಅಂಕಿ ಅಂಶಗಳಂತೆ ಚೈನೀಸ್ ಭಾಷೆಯನ್ನು 1213 ಮಿಲಿಯನ್ ಜನರು ಮಾತನಾಡುತ್ತಿದ್ದು ಪ್ರಥಮ ಸ್ಥಾನದಲ್ಲಿ ಬರುತ್ತದೆ. ಅನುಕ್ರಮವಾಗಿ2,3 ಮತ್ತು 4ನೆಯ ಸ್ಥಾನಗಳಲ್ಲಿ 329 ಮಿಲಿಯನ್ ಜನ ಮಾತನಾಡುವ ಸ್ಪಾನಿಷ್, 328 ಮಿಲಿಯನ್ ಜನರು ಮಾತನಾಡುವ ಇಂಗ್ಲಿಷ್ ಮತ್ತು 229 ಮಿಲಿಯನ್ ಜನರು ಮಾತನಾಡುವ ಅರೇಬಿಕ್ ಭಾಷೆಗಳು ಬರುತ್ತವೆ. 182 ಮಿಲಿಯನ್ ಜನರು ಮಾತನಾಡುವ ಹಿಂದಿ 5ನೆಯ ಸ್ಥಾನದಲ್ಲಿದೆ. ಭಾರತ ದೇಶವೊಂದರಲ್ಲೇ 1652 ವಿವಿಧ ಭಾಷೆಗಳನ್ನು ಮಾತನಾಡುವ ಜನರಿದ್ದಾರೆ. ಬ್ರಿಟಿಷರ ಬಳುವಳಿಯಾಗಿ ಭಾರತಕ್ಕೆ ಬಂದ ಇಂಗ್ಲಿಷನ್ನು 1965ರವರೆಗೆ ಮಾತ್ರ ಉಳಿಸಿಕೊಳ್ಳಲು ಸಂವಿಧಾನದಲ್ಲಿ ನಿರ್ಧರಿಸಲಾಗಿತ್ತು. ಆದರೆ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಮಾಡುವ ವಿಚಾರದಲ್ಲಿ ದಕ್ಷಿಣ ಭಾರತದಲ್ಲಿ ಉಗ್ರ ಚಳುವಳಿಗಳು ನಡೆದು ವಿಷಯ ತಣ್ಣಗಾಯಿತು. ಪ್ರಾದೇಶಿಕ ಭಾಷೆಗಳ ಜೊತೆಗೆ ಇಂಗ್ಲಿಷಿನ ಬದಲಿಗೆ ಹಿಂದಿಯನ್ನು ಒಪ್ಪಿಕೊಂಡಿದ್ದರೆ, ಇಂದು ಹಿಂದಿ ಮಾತನಾಡುವವರ ಸಂಖ್ಯೆ ಪ್ರಪಂಚದಲ್ಲಿ ಎರಡನೆಯ ಸ್ಥಾನದಲ್ಲಿರುತ್ತಿತ್ತು. ಈ ಅಂಕಿ ಅಂಶಗಳನ್ನು ಸಾಂದರ್ಭಿಕವಾಗಿ ಹೇಳಿದ್ದಷ್ಟೆ ಹೊರತು ಮುಖ್ಯ ವಿಷಯಕ್ಕೆ ಬರುತ್ತೇನೆ. ಸ್ವಭಾಷಾ ಪ್ರೇಮಕ್ಕಿಂತ ಇತರ ಭಾಷಾದ್ವೇಶ ಸಹ ಸೋದರತೆಯ ಭಾವನೆಗೆ ಕೊಡಲಿ ಪೆಟ್ಟು ಹಾಕಿದೆ. ಹಿಂದಿ ಭಾಷೆಯ ಮೇಲಿನ ದ್ವೇಶ ಗುಲಾಮಗಿರಿಯ ಬಳುವಳಿಯಾದ ಇಂಗ್ಲಿಷನ್ನು ಅನಿವಾರ್ಯವನ್ನಾಗಿ ಉಳಿಸಿತು. ಇಂಗ್ಲಿಷ್ ಇಲ್ಲದೆ ಬೆಳವಣಿಗೆ, ಪ್ರಗತಿ ಅಸಾಧ್ಯ ಅನ್ನುವುದು ಸರಿಯಲ್ಲ ಅನ್ನುವುದನ್ನು ಪ್ರಪಂಚದ ಭಾಷಾ ಅಂಕಿ ಸಂಖ್ಯೆಗಳು ಸಾರಿವೆ. ಭಾಷಾವಾರು ರಾಜ್ಯಗಳ ರಚನೆ ಸಹ ದೇಶದ ಸಮಗ್ರತೆಗೆ ಧಕ್ಕೆ ತರುತ್ತಿದೆಯೇನೋ ಎಂದು ಅನ್ನಿಸುತ್ತಿದೆ. ಭಾಷೆಯ ಹೆಸರಿನಲ್ಲಿ ಅಕ್ಕ ಪಕ್ಕದ ರಾಜ್ಯಗಳ ನಡುವೆ ಹಿಂಸಾತ್ಮಕ ಗಲಭೆಗಳಾಗಿವೆ, ಆಗುತ್ತಿವೆ. ನಮ್ಮ ಭಾಷೆಯೇ ಹೆಚ್ಚು ಎಂಬ ವಾದ ವಿವಾದಗಳು ಮಾನವರ ನಡುವೆ ಕಂದಕ ಉಂಟು ಮಾಡುತ್ತಿವೆ. ನಮ್ಮ ನಮ್ಮ ಭಾಷೆಗಳನ್ನು ಪ್ರೀತಿಸೋಣ, ಉಳಿಸೋಣ, ಬೆಳೆಸೋಣ; ಇತರ ಭಾಷೆಗಳನ್ನು ದ್ವೇಷಿಸದಿರೋಣ ಎಂಬ ಭಾವನೆ ಬರುವುದು ಸಾಧ್ಯವಾದಾಗ ಮಾತ್ರ ಸೋದರತೆ, ಸಮಾನತೆಗಳ ಮಾತನ್ನಾಡಲು ನಮಗೆ ಹಕ್ಕಿರುತ್ತದೆ. 
     ಸಮಾನತೆಯ ಇನ್ನೊಂದು ಘೋರ ಶತ್ರು ಲಿಂಗ ತಾರತಮ್ಯ. ಕೇವಲ ನಮ್ಮ ಸುತ್ತಲಿನ ಸಂಗತಿಗಳ ಬಗ್ಗೆ ಮಾತ್ರ ನೋಡದೆ ಪ್ರಪಂಚದ ಎಲ್ಲೆಡೆ ಗಮನ ಹರಿಸಿದರೆ ಈ ತಾರತಮ್ಯದ ಪರಿಣಾಮ ಎಷ್ಟು ಅಸಹನೀಯ ಎಂಬುದು ಬಹುಷಃ ಅನುಭವಿಸಿದವರಿಗಷ್ಟೇ ತಿಳಿದೀತು. ಹುಟ್ಟಿದ ಮಗು ಹೆಣ್ಣು ಎಂದು ತಿಳಿದ ಸಮಯದಿಂದ ತಾರತಮ್ಯ ಪ್ರಾರಂಭವಾಗುತ್ತದೆ. ಹೆಣ್ಣಿನ ಶೋಷಣೆ ಮಾಡುವುದರಲ್ಲಿ ಹೆಣ್ಣೂ ಸಹ ಪ್ರಧಾನ ಪಾತ್ರ ವಹಿಸುತ್ತದೆ ಎಂಬುದನ್ನೂ ತಳ್ಳಿಹಾಕಲಾಗದು. ಜಾತಿ, ಧರ್ಮದ ಕಟ್ಟುಪಾಡುಗಳಲ್ಲಿ ಆಕೆಯನ್ನು ಕಟ್ಟಿಹಾಕಿ ಶಿಕ್ಷಣ ಪಡೆಯುವ ಹಕ್ಕಿನಿಂದಲೂ ಅವರು ವಂಚಿತರಾಗಿರುವುದು ಸುಳ್ಳಲ್ಲ. ಅವರು ಧರಿಸುವ ವಸ್ತ್ರಗಳ ಬಗ್ಗೆ ಸಹ ಮತಾಂಧರು ಕಟ್ಟುನಿಟ್ಟು ಮಾಡಿರುವುದು ತಿಳಿದ ವಿಷಯ. ತಾನು ಬುದ್ಧಿವಂತಳೆಂದು ತಿಳಿದ ಮಹಿಳೆ ಪುರುಷನಿಗೆ ಸಮನಾದ ಹಕ್ಕುಗಳಿಗೆ ಒತ್ತಾಯಿಸುತ್ತಾಳೆ, ಆದರೆ ಬುದ್ಧಿವಂತ ಮಹಿಳೆ ಸುಮ್ಮನಿರುತ್ತಾಳೆ ಎಂಬುದು ಜನಜನಿತ. ಹೆಣ್ಣು ಎಷ್ಟು ಸುರಕ್ಷಿತ ಎಂಬುದು ಈಗ ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳೇ ಸಾಕ್ಷಿ ಹೇಳುತ್ತಿವೆ. ಅನೇಕ ಕಾರಣಗಳಿಂದಾಗಿ ಲಿಂಗಸಮಾನತೆ ಸಾಧ್ಯವಿರದಿರಬಹುದು, ಆದರೆ ಸಮಾನ ಅವಕಾಶಗಳಿಂದ ಹೆಣ್ಣು ವಂಚಿತಳಾಗಬಾರದು. ಇಲ್ಲಿ ಹಿಂದಿನ ಸಂಗತಿಗಳಲ್ಲಿ ವಿಶ್ಲೇಷಿಸಿದಂತೆ ಸಮಾನತೆ ಎಂದರೆ ಸಮಾನ ಅವಕಾಶಗಳು ಎಂದು. ಸಮಾನ ಅವಕಾಶಗಳಿದ್ದು ಹೆಣ್ಣು ಎಷ್ಟು ಸಾಧನೆ ಮಾಡಲು ಸಾಧ್ಯವೋ ಮಾಡಲು ಸಾಧ್ಯವಾಗುವಂತಾಗಬೇಕು. ಈಗ ಹೇಳಿ, ಸಮಾನತೆ, ಸೋದರತೆ, ವಿಶ್ವಭ್ರಾತೃತ್ವ ಎಂದೆಲ್ಲಾ ಮಾತನಾಡಲು ಯಾರಿಗೆ ಬಾಯಿ ಬಂದೀತು?
     ಸಮಾನತೆಯ ಬಗ್ಗೆ ಮಾತನಾಡುವವರು ಒಂದು ಸಂಗತಿಯನ್ನು ನೆನಪಿನಲ್ಲಿಡಬೇಕಿದೆ. ಅದೆಂದರೆ ಯಾವುದೇ ವ್ಯಕ್ತಿ ಈಗ ತಾನು ಇರುವುದಕ್ಕಿಂತ ಮೇಲಿನ ಸ್ಥಿತಿಗೆ ತಲುಪಲು ಪ್ರಯತ್ನಿಸುತ್ತಲೇ ಇರುತ್ತಾನೆ. ಕಟು ವಾಸ್ತವವೆಂದರೆ ಮೊದಲು ನಾವು ನಮ್ಮನ್ನು ಇಷ್ಟಪಡುತ್ತೇವೆ, ನಂತರ ಬೇರೆಯವರನ್ನು! ಸಮಾನತೆಯನ್ನು ಯಾರೂ ಕೊಡುವುದಿಲ್ಲ, ನಾವು ಗಳಿಸಬೇಕು. ಬಡವ ಶ್ರೀಮಂತನಾಗಲು, ಆಟಗಾರ ಶ್ರೇಷ್ಠ ಆಟಗಾರನಾಗಲು, ಇರುವುದಕ್ಕಿಂತ ಉನ್ನತ ಅಧಿಕಾರ ಹೊಂದಲು ಬಯಸುತ್ತಲೇ ಇರುತ್ತಾರೆ. ಸಮಾನತೆಯೆಂದರೆ ಎಲ್ಲರೂ ಒಂದು ಹಂತದಲ್ಲೇ ಉಳಿದು ಸಮನಾಗಿ ಬಾಳುವುದಲ್ಲ. ಪದೇ ಪದೇ ಒತ್ತಿ ಹೇಳುತ್ತಿರುವಂತೆ ಇಲ್ಲೂ ಸಹ ಉನ್ನತ ಸ್ಥಿತಿ ತಲುಪಲು ಎಲ್ಲರಿಗೂ ಸಮಾನ ಅವಕಾಶವಿರುವಂತೆ ನೋಡಿಕೊಳ್ಳುವುದರಲ್ಲಿ ಸಮಾನತೆಯಿದೆ. ಆದರೆ ಈಗೇನಾಗುತ್ತಿದೆ? ಭ್ರಷ್ಟಾಚಾರ ಈ ಎಲ್ಲಾ ಸಮಾನ ಅವಕಾಶಗಳಿಗೆ ಕೊಕ್ಕೆ ಹಾಕಿದೆ. ಅಪಮಾರ್ಗಗಳನ್ನು ಬಳಸಿ ಮೇಲೇರುವ ಪ್ರಯತ್ನ, ಇತರರನ್ನು ಮುಂದೆ ಬರದಂತೆ ತಡೆಯುವ ಪ್ರಯತ್ನಗಳು ಮೇಲುಗೈ ಸಾಧಿಸಿವೆ. ಜನಸೇವೆಗಾಗಿ ಎಂದು ಕೈಮುಗಿದು ಅಧಿಕಾರಕ್ಕೇರುವ ನಾಯಕರು ಕೋಟಿ ಕೋಟಿ ಜನರ ಹಣ ಲೂಟಿ ಮಾಡುತ್ತಾರೆ. ಅಧಿಕಾರಕ್ಕಾಗಿ ದೇಶವನ್ನೇ ಮಾರಲು ಹಿಂದೆ ಮುಂದೆ ನೋಡದ, ಏನು ಮಾಡಲೂ ಹೇಸದವರ ಕೈಯಲ್ಲಿ ಅಧಿಕಾರ ಸಿಗುತ್ತದೆ. ಹಾಗಾದರೆ ಇದಕ್ಕೆ ಮುಕ್ತಿಯಿದೆಯೇ? ಮುಕ್ತಿಯಿದೆ, ಮಾರ್ಗವಿದೆ; ಸಮಾನತೆ, ವಿಶ್ವಭ್ರಾತೃತ್ವದ ಕನಸು ಕಾಣುವವರು ಮೊದಲು ಅದನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕಿದೆ. ಆಗ ಇತರರಿಗೆ ಅವರು ಮಾರ್ಗದರ್ಶಿಯಾಗಬಲ್ಲರು.
     ದೇಶಪ್ರೇಮ, ಧರ್ಮಪ್ರೇಮ, ಜಾತಿಪ್ರೇಮ, ಭಾಷಾಪ್ರೇಮ ಎಲ್ಲವೂ ಒಳ್ಳೆಯದೇ. ಅಸಮಾನತೆಗೆ ದೇಶ, ಧರ್ಮ, ಜಾತಿ, ಭಾಷೆಗಳು ಕಾರಣವಲ್ಲ. ಆದರೆ ದೇಶ, ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಅದೆಷ್ಟು ಮಾರಣಹೋಮಗಳಾಗಿವೆ! ನಿಜವಾದ ಕಾರಣ ನಿಮಗೆ ಈಗ ಗೊತ್ತಾಗಿರಬಹುದು. ಇತರ ದೇಶ/ಧರ್ಮ/ಜಾತಿ/ಭಾಷೆಗಳ ಮೇಲಿನ ದ್ವೇಷವೇ ಅದು! ಅದನ್ನು ತ್ಯಜಿಸಿದರೆ ನಾವು ವಿಶ್ವಮಾನವರೇ. ಅಸಮಾನತೆಯನ್ನು ಹೋಗಲಾಡಿಸಲು ಧರ್ಮ/ಜಾತಿಗಳು ಹುಟ್ಟಿದವು. ಆದರೆ ಮುಂದೆ ಅವೇ ಅಸಮಾನತೆಗೆ ಮೆಟ್ಟಲುಗಳಾದವು. ಸಮಾನತೆಯ ಸಾಧನೆಗೆ ಕೇವಲ ಸರ್ಕಾರವನ್ನು ನೆಚ್ಚಿ ಕುಳಿತುಕೊಳ್ಳುವಲ್ಲಿ, ಸರ್ಕಾರವನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ಸರ್ಕಾರ ಕೇವಲ ಸಾಧನ ಮಾತ್ರ. ಆ ಸಾಧನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕೆಲಸ ಮಾಡಬೇಕಾದವರು ನಾವುಗಳೇ. 
    ಸಮಾನತೆಯನ್ನು ಜನರ ಬುದ್ಧಿಶಕ್ತಿಯಲ್ಲಿ, ದೇಹಶಕ್ತಿಯಲ್ಲಿ, ಮನೋಭಾವದಲ್ಲಿ, ಭೌತಿಕ ಸೌಂದರ್ಯದಲ್ಲಿ, ಇತ್ಯಾದಿ ಹತ್ತು ಹಲವು ರೀತಿಗಳಲ್ಲಿ ತರುವುದು ಸಾಧ್ಯವಿದೆಯೇ? ಸಮಾನತೆಯನ್ನು ತರಲು ಸಾಧ್ಯವಿರುವಂತಹ ಸಂಗತಿಗಳಲ್ಲಿ ಮಾತ್ರ ಅದನ್ನು ಸಾಧಿಸಲು ಪ್ರಯತ್ನಿಸುವುದು ಉತ್ತಮ. ಯಾವುದರಲ್ಲೋ ಸಮಾನತೆ ತರುತ್ತೇವೆಂದು ಮತ್ತಿನ್ಯಾವುದೋ ರೀತಿಯ ತಾರತಮ್ಯಗಳನ್ನು ಜನರ ನಡುವೆ ಉಂಟುಮಾಡುವ, ಸಮಾನತೆ ತರುವ ಹೆಸರಿನಲ್ಲಿ ಅಸಮಾನತೆ ಹೆಚ್ಚಿಸುವ ಸರ್ಕಾರದ ಇಂದಿನ ರೀತಿ-ನೀತಿಗಳು, ಕಾರ್ಯಕ್ರಮಗಳು ಬದಲಾದರೆ ಮಾತ್ರ ಏನನ್ನಾದರೂ ಒಳಿತನ್ನು ನಿರೀಕ್ಷಿಸಲು ಸಾಧ್ಯ. ಈ ವೇದಮಂತ್ರದ ಸಂದೇಶ ಪಾಲನೀಯವಾಗಿದೆ:
ಯೇ ಪಂಥಾನೋ ಬಹವೋ ದೇವಯಾನಾ ಅಂತರಾ ದ್ಯಾವಾಪೃಥಿವೀ ಸಂಚರಂತಿ | ತೇಷಾಮಜ್ಯಾನಿಂ ಯತಮೋ ವಹಾತಿ ತಸ್ಮೈಮಾದೇವಾಃ ಪರಿಧತ್ತೇಹ ಸರ್ವೇ | ಗ್ರೀಷ್ಮೋ ಹೇಮಂತಃ ಶಿಶಿರೋ ವಸಂತಃ ಶರದ್ವರ್ಷಾಃ ಸ್ವಿತೇನೋದಧಾತ | ಆನೋಗೋಷು ಭಜತಾಂ ಪ್ರಜಯಾಂ ನಿವಾತ ಇದ್ ವಃ ಶರಣೇಸ್ಯಾಮ | ಇದಾವತ್ಸರಾಯ ಪರಿವತ್ಸರಾಯ ಸಂವತ್ಸರಾಯ ಕೃಣುತಾ ಬೃಹನ್ನವಮ್ | ತೇಷಾಂ ವಯಂ ಸುಮತೌ ಯಜ್ಞಿಯಾನಾಮಪಿ ಭದೇ ಸೌಮನಸೇ ಸ್ಯಾಮ || (ಅಥರ್ವ.೬.೫೫.೧,೨)

     ಅರ್ಥ: ಜನರು ಒಳ್ಳೆಯವರಾಗಲು ಬಹಳಷ್ಟು ದಾರಿಗಳಿವೆ. ಯಾವ ದಾರಿ ಒಳ್ಳೆಯದೋ ಅದರಲ್ಲಿ ಮಾತ್ರ ಹೋಗಬೇಕು. ಒಳ್ಳೆಯ ದಾರಿಯ ಪಯಣ ಮತ್ತು ಒಳ್ಳೆಯದನ್ನೇ ಮಾಡುವುದರಿಂದ ಸದಾ ಸುಖ, ಸಂತೋಷ, ನೆಮ್ಮದಿ ಸಿಗುತ್ತದೆ. ನಮಗಾಗಿ ಶ್ರಮಿಸುವ ಹಾಲು ಕೊಡುವ ಹಸುಗಳಿಗೆ, ಹೊಲ-ಗದ್ದೆಗಳಲ್ಲಿ ದುಡಿಯುವ ಎತ್ತುಗಳಿಗೆ, ಜೀವರಿಗೆ ನಾವು ಒಳಿತನ್ನೇ ಬಯಸಬೇಕು. ಮನೆಯಲ್ಲೂ, ಮನೆಯ ಹೊರಗೂ ಎಲ್ಲೆಡೆಯೂ, ಎಲ್ಲರೊಂದಿಗೂ ನಮ್ಮ ನಡವಳಿಕೆಗಳು ಪ್ರೇಮಭಾವದಿಂದ ಕೂಡಿರಬೇಕು. ಅನ್ನ, ಜಲ, ಅವಕಾಶಗಳು ಸಮೃದ್ಧಿಯಾಗಿರುವಂತೆ ನೋಡಿಕೊಂಡು, ಜ್ಞಾನಪ್ರಸಾರ, ಕೆಲಸಕಾರ್ಯಗಳು, ಸಮಾನ ಅವಕಾಶಗಳು ಸದಾ ಸಮೃದ್ಧವಾಗಿರುವಂತೆ ಇರಬೇಕು. ಹೀಗಿದ್ದರೆ ದೇಶದ ಉನ್ನತಿ, ಎಲ್ಲರಲ್ಲಿ ಭಾವೈಕ್ಯ ಮೂಡದೇ ಇದ್ದೀತೆ? ತಾರತಮ್ಯವಿರದ ಸಹೃದಯ ಪೂರ್ಣ ಸದ್ಗುಣಗಳು ಮಾತ್ರ ಸಮಾನತೆಗೆ ಪ್ರೇರಕ ಅಂಶಗಳು.
    ಪ್ರಗತಿ ಜೀವಂತಿಕೆಯ ಸಂಕೇತ. ಈಗ ಇರುವುದಕ್ಕಿಂತ ಮುಂದಿನ ಉತ್ತಮ ಸ್ಥಿತಿಗೆ ಮುಂದೆ ಹೋಗೋಣ. ಮುಂದೆ ಹೋದಾಗ ಹಿಂತಿರುಗಿ ನೋಡಿ, ಹಿಂದೆ ಬಿದ್ದವರನ್ನು ಮುಂದೆ ಬರಲು ಸಹಕರಿಸಿ ಕೈಹಿಡಿದು ಮುಂದೆ ತರೋಣ. ಮತ್ತೆ ಮುಂದೆ ಹೋಗೋಣ, ಮತ್ತೆ ಹಿಂದಿರುವವರನ್ನೂ ಮುಂದಕ್ಕೆ ತರೋಣ, ಮತ್ತೆ ಮುಂದೆ ಹೋಗೋಣ. ಈ ಪ್ರಕ್ರಿಯೆ ನಿರಂತರವಾಗಿರಲಿ. ಇದು ನಿಜವಾದ ಸಮಾನತೆಯ, ನಿಜವಾದ ಮಾನವತೆಯ, ನಿಜವಾದ ವಿಶ್ವಭ್ರಾತೃತ್ವದ ಕಲ್ಪನೆ. ಈ ಕಲ್ಪನೆ ಸಾಕಾರವಾಗಬೇಕಾದರೆ ಇದಕ್ಕೆ ಪೂರಕವಾದ ಜ್ಞಾನದ ಅರಿವನ್ನು ಮೂಡಿಸುವ ಕಾರ್ಯ ಮುಂದೆ ಇರುವವರದಾಗಿದೆ. ಟೀಕೆ ಮಾಡುತ್ತಾ, ಒಬ್ಬರನ್ನೊಬ್ಬರು ದೂಷಿಸುತ್ತಾ ಕಾಲಹರಣ ಮಾಡುವುದರಿಂದ ಮುಂದೆ ಬರಲಾಗುವುದಿಲ್ಲ. ಮುಂದೆ ಬರಬೇಕೆಂದರೆ ಮುಂದೆ ಹೋಗಬೇಕಷ್ಟೆ. ಸಮಾನತೆ ಬೇಕೆಂದರೆ ಹಿಂದಿರುವವರನ್ನು ಮುಂದೆ ತರಬೇಕಷ್ಟೆ, ಮುಂದಿರುವವರನ್ನು ಹಿಂದೆ ತರುವುದಲ್ಲ. ಇದಕ್ಕೆ ಬೇರೆ ಅಡ್ಡದಾರಿಗಳಿಲ್ಲ. 'ಸಂ ಅಜತಿ ಇತಿ ಸಮಾಜಃ'- ಒಂದುಗೂಡಿ ಮುಂದುವರೆಯುವುದೇ ಸಮಾಜ. ಇಲ್ಲದಿದ್ದರೆ ಅದು ಸಮಾಜ ಅನ್ನಿಸಿಕೊಳ್ಳದೆ, 'ದುಃ ಅಜ' ಅರ್ಥಾತ್ ದುರಾಜ ಆಗುತ್ತದೆ. ಯೋಚಿಸಿ: ನಾವು, ನೀವು ಕೆಲವು ವಿಷಯಗಳಲ್ಲಿ ಮುಂದಿದ್ದೇವೆ. ಏಕೆಂದರೆ ನಮಗಿಂತ ಹಿಂದೆ ಇರುವವರು ಬಹಳ ಜನರಿದ್ದಾರೆ. ಅವರನ್ನೂ ನಮ್ಮ ಜೊತೆಗೆ ಮುಂದೆ ತಂದು, ನಮಗಿಂತ ಮುಂದೆ ಇರುವವರ ಜೊತೆಗೆ ಸಮನಾಗಿ ಹೋಗುವ ಪ್ರಯತ್ನ ಎಡೆಬಿಡದೆ ಮಾಡೋಣ, ಮುನ್ನಡೆಯೋಣ.  
-ಕ.ವೆಂ.ನಾಗರಾಜ್.
*****************
ಜನಮಿತ್ರ ಪತ್ರಿಕೆಯ 'ಚಿಂತನ' ಅಂಕಣದಲ್ಲಿ:
ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ 6 ಮತ್ತು 13.8.2014ರಲ್ಲಿ ಪ್ರಕಟಿತ:





7 ಕಾಮೆಂಟ್‌ಗಳು:

  1. ಧನ್ಯವಾದ, ಆತ್ಮೀಯ ಪ್ರಕಾಶರೇ. ಈ ಲೇಖನಕ್ಕೆ ಪ್ರೇರಣೆ ಯಾರೆಂದು ನೀವು ಊಹಿಸಿರಬಹುದು! :)

    ಪ್ರತ್ಯುತ್ತರಅಳಿಸಿ
    ಪ್ರತ್ಯುತ್ತರಗಳು
    1. ಇದು ಖಂಡಿತ ಅವರ ತಲೆಗೆ ಹೋಗಿರುವುದಿಲ್ಲ ನಾಗರಾಜರೆ, ಏಕೆಂದರೆ ಅವರು ಬಿಟ್ಟು ಬೇರೆಲ್ಲರೂ ಸರಿಯಿಲ್ಲದರು. ಅವರ ಬಿಟ್ಟು ಮಿಕ್ಕೆಲ್ಲರಿಗೂ ಒಪ್ಪಿಗೆಯಾಗುವ ವಿಚಾರಗಳ ಸುಂದರ ಪ್ರಸ್ತುತಿ.

      ಅಳಿಸಿ
  2. ಅಸಮಾನತೆಯ ಕಾವಲ್ಲಿ ಬೇಯುತಿದೆ ಏಕೋ ಜಗತ್ತು. ಸ್ತ್ರೀ ಔನತ್ಯವನ್ನು ಸಾರುವ ನೆಲದಲ್ಲೇ ನಿರಂತರ ಅತ್ಯಾಚಾರಗಳ ಸರಮಾಲೆ!

    ಮಾನವ ಭೂಪಟದ ಅಂಕೆ ಮುರಿದು, ಜಾತಿ ಧರ್ಮಗಳ ಸರಪಳಿಗಳ ಹರೆದು ಅದೆಂದು 'ಒಂದೆ ಕುಲ ಮಾನವ ಸಂಕುಲ" ಎಂದು ಬದಕುತ್ತಾನೋ?

    ಅತ್ಯುತ್ತಮ ಬರಹ.

    ಪ್ರತ್ಯುತ್ತರಅಳಿಸಿ
    ಪ್ರತ್ಯುತ್ತರಗಳು
    1. ನಿಮ್ಮ ಆಶಯ ಸಾಕಾರಗೊಂಡಂದು ಈ ಜಗತ್ತಿನ ಅಂತ್ಯ! ಗಾಬರಿಯಾಗದಿರಿ, ಒಳ್ಳೆಯ ಜಗತ್ತಿನ ಉಗಮ!

      ಅಳಿಸಿ
  3. ಮಾಹಿತಿ, ವಿಚಾರ ನಿರೂಪಣೆ ಮತ್ತು ಮಂಥನಕ್ಕೆ ಎಡೆಮಾಡಿಕೊಡುವ ಲೇಖನ....

    ಪ್ರತ್ಯುತ್ತರಅಳಿಸಿ