ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಸೆಪ್ಟೆಂಬರ್ 30, 2013

ಮರೆತುಬಿಡಿ, ಚೆನ್ನಾಗಿರಿ!

     ಹಿರಿಯರೊಬ್ಬರು ನಿಧನರಾಗುವ ಮುನ್ನ ಹಿಂದಿನ ಎರಡು ದಿನಗಳಲ್ಲಿ ತಮ್ಮನ್ನು ಕಾಣಲು ಬರುತ್ತಿದ್ದ ಮಕ್ಕಳಿಗೆ, ಬಂಧುಗಳಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆಲ್ಲಾ ಹೇಳುತ್ತಿದ್ದುದು ಒಂದೇ ಮಾತು: 'ಎಲ್ಲಾ ಮರೆತುಬಿಡಿ; ಎಲ್ಲರೂ ಚೆನ್ನಾಗಿರಿ'. ಸಂಬಂಧಪಟ್ಟವರು, ಪಡದಿದ್ದವರು ಎಲ್ಲರಿಗೂ ಈ ಮಾತು ಹೇಳುತ್ತಿದ್ದುದು, ಕೈಹಿಡಿದುಕೊಂಡು ಈ ಮಾತು ಪುನರುಚ್ಛರಿಸುತ್ತಿದ್ದುದು, ಕೆಲವರಿಂದ ಈ ಕುರಿತು ಭಾಷೆ ಪಡೆಯುತ್ತಿದ್ದುದನ್ನು ಕಂಡ ಕೆಲವರಿಗೆ ಅದು ಅರಳು ಮರಳಿನ ಮಾತಿನಂತೆ ಕಂಡಿದ್ದಿರಬಹುದು. ಆದರೆ ಅಂತರ್ಮುಖಿಯಾಗಿ ಯೋಚಿಸಿದಾಗ ಉತ್ತಮ ಬದುಕಿನ ಸಂದೇಶ ಇದರಲ್ಲಡಗಿರುವುದು ಗೋಚರಿಸದೆ ಇರದು. 'ಲೋಕೋ ಭಿನ್ನರುಚಿಃ' ಎಂಬಂತೆ ಭಿನ್ನ ಅಭಿರುಚಿಗಳ ಜನರ ನಡುವೆ ಸಮನ್ವಯ ಸಾಧಿಸಬೇಕೆಂದರೆ ಈ ಸಂದೇಶದ ಪಾಲನೆಯಿಂದ ಮಾತ್ರ ಸಾಧ್ಯ.
     ಸುಮಾರು ಹದಿನೈದು ವರ್ಷಗಳ ಹಿಂದಿನ ಪ್ರಸಂಗವಿದು. ಅರಕಲಗೂಡಿನಲ್ಲಿ ತಹಸೀಲ್ದಾರನಾಗಿದ್ದಾಗ ಒಂದು ಜಮೀನಿನ ತಕರಾರು ಪ್ರಕರಣ ನನ್ನ ಮುಂದೆ ಬಂದಿತ್ತು. ಗಂಡ ಅಪಘಾತದಲ್ಲಿ ಮೃತನಾದ ನಂತರ ಆತನ ಹೆಸರಿನಲ್ಲಿದ್ದ  ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡಲು ಮಧ್ಯ ವಯಸ್ಕ ವಿಧವೆ ಕೋರಿದ್ದ ಅರ್ಜಿಗೆ ಗಂಡನ ಅಣ್ಣಂದಿರು ತಕರಾರು ಸಲ್ಲಿಸಿದ್ದರು. ವಿಚಾರಣೆ ಕಾಲದಲ್ಲಿ ತಿಳಿದು ಬಂದಿದ್ದೇನೆಂದರೆ ಮೃತನ ತಂದೆ-ತಾಯಿಗೆ ನಾಲ್ಕು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣು ಮಗಳು. ಮೃತನನ್ನು ಹೊರತುಪಡಿಸಿ ಉಳಿದವರೆಲ್ಲಾ ಒಳ್ಳೆಯ ಸ್ಥಿತಿಯಲ್ಲಿದ್ದರು. ಮಗಳನ್ನು ಸಿರಿವಂತ ಕುಟುಂಬಕ್ಕೆ ಕೊಟ್ಟು ವಿವಾಹ ಮಾಡಲಾಗಿತ್ತು. ಹಿರಿಯ ಮಗ ಬೆಂಗಳೂರಿನ ಸರ್ಕಾರಿ ಕಾಲೇಜೊಂದರ ಪ್ರೊಫೆಸರ್, ಎರಡನೆಯವನು ತುಮಕೂರಿನಲ್ಲಿ ಇಂಜನಿಯರ್, ಕೊನೆಯ ಮಗ ಪ್ರೌಢಶಾಲೆಯ ಉಪಾಧ್ಯಾಯ. ಮೃತ ವ್ಯಕ್ತಿ ಮೂರನೆಯವನಾಗಿದ್ದು ಅವಿದ್ಯಾವಂತ. ತಂದೆ-ತಾಯಿಗೆ ಪಿತ್ರಾರ್ಜಿತವಾಗಿ ಬಂದಿದ್ದ ನಾಲ್ಕು ಎಕರೆ ತರಿ ಜಮೀನು ಇತ್ತು. ಒಳ್ಳೆಯ ಸ್ಥಿತಿಯಲ್ಲಿದ್ದ ಉಳಿದ ಮಕ್ಕಳು ಅವಿದ್ಯಾವಂತ ಸಹೋದರನೂ ಚೆನ್ನಾಗಿರಲಿ, ಹಳ್ಳಿಯನ್ನು ಬಿಟ್ಟುಬರಲು ಇಚ್ಛಿಸದ ತಂದೆ-ತಾಯಿಗೆ ಆಸರೆಯಾಗಿರಲಿ ಎಂಬ ಭಾವನೆಯಿಂದ ಪಿತ್ರಾರ್ಜಿತ ಸ್ವತ್ತನ್ನು ಅವನ ಹೆಸರಿಗೆ ಖಾತೆ ಮಾಡಿಕೊಡಲು ಒಪ್ಪಿಗೆ ಸೂಚಿಸಿ, ಜಮೀನಿನ ಮೇಲಿನ ತಮ್ಮ ಹಕ್ಕನ್ನು ಬಿಟ್ಟುಕೊಟ್ಟು ಅವನ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದರು. ಬಡಕುಟುಂಬದ ಹೆಣ್ಣನ್ನು ಮದುವೆಯಾಗಿದ್ದ  ಅವನ ಬದುಕಿಗೂ ಇದರಿಂದ ಭದ್ರತೆ ಬಂದಿತ್ತು. ಕೆಲವು ವರ್ಷಗಳ ನಂತರ ಆತ ಅಪಘಾತದಲ್ಲಿ ತೀರಿದಾಗ ಜಮೀನಿನ ಪಾಲು ಕೇಳುವುದರೊಂದಿಗೆ ಮೃತನ ಹೆಂಡತಿಯ ಹೆಸರಿಗೆ ಖಾತೆ ಮಾಡಿಕೊಡಬಾರದೆಂದು  ಮೃತನ ಅಣ್ಣಂದಿರು ತಕರಾರು ಮಾಡಿದ್ದರು. ಜಮೀನು ಕೈತಪ್ಪಿದಲ್ಲಿ ಆಸರೆಯಿಲ್ಲದೆ ಬೀದಿಗೆ ಬೀಳಲಿದ್ದ ಮೃತನ ಹೆಂಡತಿ, ಮದುವೆ ವಯಸ್ಸಿಗೆ ಬಂದಿದ್ದ ಅವನ ಮಗಳ ಕುರಿತು ತಕರಾರುದಾರರಿಗೆ ಮರುಕವಿರಲಿಲ್ಲ. ಕೊನೆಯ ಮಗನೊಬ್ಬ ಮಾತ್ರ ಅತ್ತಿಗೆಯ ಪರವಾಗಿ ಮಾತನಾಡಿದ್ದ. ಅಧಿಕಾರದಲ್ಲಿದ್ದ ಪ್ರಭಾವಿ ರಾಜಕಾರಣಿಯೊಬ್ಬರು ತಕರಾರುದಾರರ ಪರವಾಗಿ ತೀರ್ಪು ನೀಡಲು ಒಂದು ರೀತಿಯ ಬೆದರಿಕೆಯ ಒತ್ತಾಯ ಮಾಡಿದ್ದರು. ಕಾಲೇಜು ಪ್ರೊಫೆಸರರು ಹತ್ತು ಸಾವಿರ ರೂ. ಲಂಚದ ಆಮಿಷ ಒಡ್ಡಿದ್ದರು. ಇದನ್ನು ಲೆಕ್ಕಿಸದೆ, ಜಮೀನಿನ ಮೇಲಿನ ಹಕ್ಕನ್ನು ಮೊದಲೇ ಬಿಟ್ಟುಕೊಟ್ಟು ಮೃತನ ಹೆಸರಿಗೆ ಖಾತೆ ಮಾಡಿಕೊಡಲು ತಕರಾರುದಾರರು ಹಿಂದೆ ಬರೆದುಕೊಟ್ಟಿದ್ದ ಒಪ್ಪಿಗೆ ಪತ್ರ ಹಾಗೂ ಮೃತ ಗಂಡನ ಹೆಸರಿನಲ್ಲಿದ್ದ ಜಮೀನು ಇವುಗಳನ್ನು ಪರಿಗಣಿಸಿ ಮೃತನ ಪತ್ನಿಯ ಹೆಸರಿಗೆ ಖಾತೆ ಮಾಡಲು ತೀರ್ಪು ನೀಡಿದಾಗ ಜಮೀನು ಕೈತಪ್ಪಿ ಹೋಗುವುದೆಂದೇ ಆತಂಕದಲ್ಲಿದ್ದ ಆ ಬಡ ಹೆಣ್ಣು ಮಗಳು ತನ್ನ ಮಗಳೊಂದಿಗೆ ಬಂದು ಕಣ್ಣೀರಿಡುತ್ತಾ ಕೃತಜ್ಞತೆ ವ್ಯಕ್ತಪಡಿಸಿದ್ದಳು. ಆಗ ಆಕೆ ಕಾಲೇಜು ಪ್ರೊಫೆಸರರ ಪತ್ನಿಗೂ ತನಗೂ ಒಮ್ಮೆ ಸಂಸಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಜಗಳವಾಗಿತ್ತೆಂದೂ, ಕುಟುಂಬಗಳಲ್ಲಿ ಪರಸ್ಪರ ಮನಸ್ತಾಪಕ್ಕೆ ಇದೇ ಕಾರಣವಾಗಿ ಈ ಹಂತಕ್ಕೆ ಬಂದು ತಾನು ಬೀದಿಗೆ ಬೀಳುವ ಪ್ರಸಂಗ ಒದಗಿತೆಂದೂ ಕಣ್ಣೀರಿಟ್ಟು ಹೇಳಿದ್ದಳು. ಮುಂದೊಮ್ಮೆ ಕಾಲೇಜು ಪ್ರೊಫೆಸರರು ಭೇಟಿಯಾದಾಗ ಅವರೊಂದಿಗೆ ಸಮಾಲೋಚಿಸಿ, ಚರ್ಚಿಸಿ, ಮನವೊಲಿಸಿ ದೊಡ್ಡ ಸ್ಥಾನದಲ್ಲಿರುವ ಅವರು ಪ್ರಸಂಗ ಇಲ್ಲಿಗೇ ಮುಕ್ತಾಯಗೊಳಿಸಿದಲ್ಲಿ ಆಗುವ ಸತ್ಪರಿಣಾಮದ ಕುರಿತು ಹಾಗೂ ಇದರಿಂದ ನಿಜಕ್ಕೂ ದೊಡ್ಡವರೆನಿಸಿಕೊಳ್ಳುತ್ತೀರೆಂದು ಮನವರಿಕೆ ಮಾಡಿಕೊಟ್ಟಾಗ ತೀರ್ಪಿನ ವಿರುದ್ಧ ಅವರು ಸಲ್ಲಿಸಬೇಕೆಂದಿದ್ದ್ದ ಮೇಲುಮನವಿಯನ್ನು ಸಲ್ಲಿಸಲಿಲ್ಲ. ಕೆಟ್ಟ ಘಳಿಗೆಯೊಂದರಲ್ಲಿ ಕುಟುಂಬದ ಸದಸ್ಯರುಗಳಲ್ಲಿ ಉಂಟಾಗುವ ಮನಸ್ತಾಪ ಮಾನವೀಯತೆಯನ್ನೇ ಹೇಗೆ ಮರೆಸುತ್ತದೆ ಎಂಬುದನ್ನು ತೋರಿಸುವುದಷ್ಟೇ ಈ ಪ್ರಸಂಗ ಉಲ್ಲೇಖಿಸಿದ ಉದ್ದೇಶ. ಹಲವಾರು ಕಾರಣಗಳಿಗಾಗಿ ಉಂಟಾಗುವ ಜಗಳ, ಮನಸ್ತಾಪಗಳನ್ನು ಮರೆತು ಪರಸ್ಪರರನ್ನು ಕ್ಷಮಿಸಿ ಮುನ್ನಡೆದಲ್ಲಿ ಸಂಬಂಧಗಳು ಉಳಿದುಕೊಳ್ಳುತ್ತವೆ. ಇಲ್ಲದಿದ್ದಲ್ಲಿ ಸಂಬಂಧಗಳು ಹಳಸುತ್ತದೆ. ಹಳಸಿದ ಸಂಬಂಧಗಳ ಲಾಭ ಇತರರಿಗೆ ಆಗುತ್ತದೆ. ಸಂಬಂಧಿಸಿದವರು ನಗೆಪಾಟಲಿಗೆ ಒಳಗಾಗುವರಲ್ಲದೆ ಅವರ ಬಗ್ಗೆ ಇರುವ ಒಳ್ಳೆಯ ಅಭಿಪ್ರಾಯ ಹೊರಟುಹೋಗುತ್ತದೆ. ಸಂಬಂಧಗಳು ಕಳಚಿದ ಬಗ್ಗೆ ಮನದಾಳದಲ್ಲಿ ನೋವು ಉಳಿಯುತ್ತದೆ. ಹೊಂದಿಕೊಂಡು ನಡೆದಲ್ಲಿ ಸಂಬಂಧಗಳು ಮಧುರವಾಗಿ ಉಳಿಯದಿದ್ದರೂ ಹಾಳಾಗುವುದಿಲ್ಲ. ಈ ಹಿನ್ನೆಲೆಯಲ್ಲಿ 'ಎಲ್ಲಾ ಮರೆತುಬಿಡಿ, ಚೆನ್ನಾಗಿರಿ' ಎಂಬ ಮಾತು ಅರ್ಥಪೂರ್ಣವೆನಿಸುತ್ತದೆ. ಮನ ನೋಯುವಂತಹ ಕೆಲವು ಸಂಗತಿಗಳು ಘಟಿಸಿದ  ಸಂದರ್ಭಗಳಲ್ಲಿ ತಕ್ಷಣದಲ್ಲಿ ಕೋಪದಿಂದ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇದ್ದಲ್ಲಿ ಸಂಬಂಧಗಳು ಉಳಿದುಕೊಳ್ಳುತ್ತವೆ.
      ಹೊಂದಾಣಿಕೆಯಿದ್ದಲ್ಲಿ ಸಂಬಂಧಗಳು ಚೆನ್ನಾಗಿರುತ್ತದೆ. ಸಂಬಂಧಗಳು ಚೆನ್ನಾಗಿದ್ದಲ್ಲಿ ಜೀವನ ಸಹನೀಯವೆನಿಸುತ್ತದೆ. ಸಂಬಂಧಗಳು ಹಾಳಾಗಲು ಕಾರಣಗಳೇನು ಎಂದು ವಿಶ್ಲೇಷಿಸುವುದು ಋಣಾತ್ಮಕ ಚಿಂತನೆಯಾಗುತ್ತದೆ. ಸಂಬಂಧಗಳು ಹಾಳಾಗದಿರಲು ಏನು ಮಾಡಬಹುದು ಎಂದು ಧನಾತ್ಮಕವಾಗಿ ನೋಡೋಣ. ಸಂಬಂಧಗಳು ಉಳಿಯಬೇಕೆಂದರೆ - ೧. ಸಂಬಂಧಗಳು ಇರಬೇಕು, ಉಳಿಯಬೇಕು, ಬೆಳೆಯಬೇಕು ಎಂಬ ಮನೋಭಾವ, ೨. ಕುಟುಂಬ ಎಂದರೆ ಕೇವಲ ಗಂಡ, ಹೆಂಡತಿ ಮತ್ತು ಮಕ್ಕಳು ಮಾತ್ರ ಎಂಬ ಸೀಮಿತ ಪರಿಧಿಯಿಂದ ಹೊರಬರುವುದು. ೩. ಕುಟುಂಬದ ಸದಸ್ಯರುಗಳಲ್ಲಿ ಭಿನ್ನಾಭಿಪ್ರಾಯಗಳಿದ್ದಲ್ಲಿ ಮನಸ್ತಾಪಗಳ ಸಂದರ್ಭಗಳು ಬಾರದಂತೆ ನೋಡಿಕೊಳ್ಳುವುದು, ೪. ತಾಳ್ಮೆ, ಸಹನೆಯಿಂದ ವರ್ತಿಸುವುದು, ಕೋಪತಾಪದ ಸಂದರ್ಭಗಳಲ್ಲಿ ತಕ್ಷಣ ಪ್ರತಿಕ್ರಿಯಿಸದೆ ಸೂಕ್ತ ಸಮಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು, ೫. ಮೂರನೆಯ ವ್ಯಕ್ತಿಗಳು ಮೂಗು ತೂರಿಸಿ ಸಂಬಂಧಗಳನ್ನು ಕೆಡಿಸಲು ಅವಕಾಶ ಕೊಡಬಾರದು, ಅವರು ಹೇಳುವ ಮಾತುಗಳಲ್ಲಿ ನಿಜವಿದ್ದರೂ ಅದಕ್ಕೆ ಪ್ರಾಮುಖ್ಯತೆ ನೀಡದಿರುವುದು, ೬. ಇರುವ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ಬರಲು ಸಂಬಂಧಿಗಳಲ್ಲಿ ಆರೋಗ್ಯಕರ ಸ್ಪರ್ಧೆ ಇರಬೇಕು, ಆದರೆ ನಮಗಿಂತ ಚೆನ್ನಾಗಿರುವ ಸಂಬಂಧಿಗಳ ಕುರಿತು ಹೊಟ್ಟೆಕಿಚ್ಚು ಪಡದೆ, ಉತ್ತಮ ಸ್ಥಿತಿಯಲ್ಲಿರದವರನ್ನು ಕಡೆಗಣಿಸದೆ ಇರುವ ಮನೋಭಾವ ಇರಬೇಕು. ನಾವು ದೊಡ್ಡವರಾಗಲು ಇತರರನ್ನು ಚಿಕ್ಕವರಾಗಿ ಬಿಂಬಿಸಬೇಕಿಲ್ಲ. ನಾವು ದೊಡ್ಡತನದಿಂದ ವರ್ತಿಸಬೇಕಷ್ಟೆ. ೭. ಮಾತುಕತೆಗಳಲ್ಲಿ ಸಂಯಮವಿರಬೇಕು. ವ್ಯಕ್ತಿಗಳನ್ನು ಮುದುಕ, ಮುದುಕಿ, ಕುಂಟ, ಕುರುಡ, ಕುಳ್ಳ, ಲಂಬು, ಪೆದ್ದ, ಹುಚ್ಚ, ಇತ್ಯಾದಿ ವಿಶೇಷತೆಗಳನ್ನು ಜೋಡಿಸಿ ಎದುರಿನಿಂದಾಗಲೀ, ಹಿಂದಿನಿಂದಾಗಲೀ ಸಂಬೋಧಿಸಬಾರದು. ಇತರರ ಅಭಿಪ್ರಾಯಗಳನ್ನು ಅವು ನಮಗೆ ಸರಿಯೆನಿಸದಿದ್ದರೂ ಗೌರವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಎದುರಿಗಿಲ್ಲದ ವ್ಯಕ್ತಿಗಳ ಬಗ್ಗೆ ಸಹ ಹಗುರವಾಗಿ ಮಾತನಾಡಬಾರದು. ಒಂದಲ್ಲಾ ಒಂದು ಸಂದರ್ಭದಲ್ಲಿ ಆ ಮಾತು ಅವರಿಗೆ ತಲುಪುತ್ತದೆ ಹಾಗೂ ಅದರಿಂದ ಮಾತನಾಡಿದವರು ಸಣ್ಣವರಾಗುತ್ತಾರೆ ಎಂಬ ಅರಿವಿರಬೇಕು.  ೮. ತಮ್ಮದು ತಪ್ಪು ಎಂದು ಕಂಡುಬಂದರೆ ಹಿಂಜರಿಕೆ ತೋರದೆ ಒಪ್ಪಿಕೊಂಡು ಸರಿಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದು, ೯. ಸಂಬಂಧಗಳನ್ನು ಕೆಡಿಸುವವರಿಂದ ದೂರವಿರುವುದು, ೧೦. ಯಾರನ್ನೂ ದೂರದಿರುವುದು, ಯಾರಿಗೂ ಕೇಡೆಣಿಸದಿರುವುದು, . . ಹೀಗೆ ಪಟ್ಟಿ ಬೆಳೆಸುತ್ತಾ ಹೋಗಬಹುದು. ಇದರಲ್ಲಿನ ಒಂದೊಂದು ಅಂಶಗಳ ಕುರಿತೂ ಸ್ವವಿಮರ್ಶೆ ಮಾಡಿಕೊಳ್ಳುವುದು ಪ್ರತಿಯೊಬ್ಬರಿಗೆ ಅವಶ್ಯವಾಗಿದೆ.
     'ಬಾಳು, ಬಾಳಗೊಡು' ಎಂದ ಮಹಾವೀರ, 'ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸು' ಎಂದ ಏಸುಕ್ರಿಸ್ತ, 'ಇವನಾರವ, ಇವನಾರವ ಎಂದೆಣಿಸದಿರಯ್ಯ, ಇವ ನಮ್ಮವನೆಂದೆಣಿಸಯ್ಯ' ಎಂದ ಬಸವಣ್ಣ,  'ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಾಣವಕ್ಕು' ಎಂದ ಸರ್ವಜ್ಙನೇ ಮುಂತಾದ ದಾರ್ಶನಿಕರು, ಸಂತರು ಒತ್ತಿ ಹೇಳುವುದು ಒಂದೇ ವಿಷಯ - ಮನುಷ್ಯನಿಗೆ ಇರಬೇಕಾಧ ಹೊಂದಾಣಿಕೆಯ ಮನೋಭಾವ. ನಮ್ಮದು ತಪ್ಪಿದ್ದರೆ ತಿದ್ದಿಕೊಂಡು ನಡೆಯೋಣ. ಇತರರ ತಪ್ಪನ್ನು ಕ್ಷಮಿಸೋಣ. ಕ್ಷಮಿಸುವ ಮನೋಭಾವ ದೈವತ್ವದ ಗುಣ. ಸ್ವಾಮಿ ವಿವೇಕಾನಂದರ ಈ ವಾಣಿಯನ್ನುನೆನಪಿನಲ್ಲಿಡೋಣ:
     "ಇತರರಿಗೆ ಒಳಿತು ಮಾಡುವುದೇ ಧರ್ಮ; ಇತರರನ್ನು ಘಾಸಿಗೊಳಿಸುವುದು ಅಧರ್ಮ. ಶಕ್ತಿ ಮತ್ತು ಪುರುಷತ್ವವೇ ಧರ್ಮ; ದುರ್ಬಲತೆ ಮತ್ತು ಹೇಡಿತನಗಳೇ ಅಧರ್ಮ. ಸ್ವಾತಂತ್ರ್ಯವೇ ಧರ್ಮ; ಗುಲಾಮಗಿರಿಯೇ ಅಧರ್ಮ. ಇತರರನ್ನು ಪ್ರೀತಿಸುವುದು ಧರ್ಮ; ದ್ವೇಷಿಸುವುದೇ ಅಧರ್ಮ. ದೇವರಲ್ಲಿ ಮತ್ತು ತನ್ನಲ್ಲಿ ತಾನು ನಂಬಿಕೆಯಿರಿಸಿಕೊಳ್ಳುವುದೇ ಧರ್ಮ; ಅಪನಂಬಿಕೆಯೇ ಅಧರ್ಮ. ಇತರರ ಬಗ್ಗೆ ದೂಷಿಸಿ ಮಾತನಾಡುವುದು ತಪ್ಪು. ಬಹಳಷ್ಟು ಸಂಗತಿಗಳು ಮನಸ್ಸಿನಲ್ಲಿ ಮೂಡಬಹುದು; ಅವುಗಳನ್ನು ವ್ಯಕ್ತಪಡಿಸುತ್ತಾ ಹೋದರೆ ಕ್ರಮೇಣ ಸಣ್ಣ ಮಣ್ಣುಗುಡ್ಡೆಯೇ ಬೆಟ್ಟವಾಗುತ್ತದೆ. ಕ್ಷಮಿಸಿದರೆ ಮತ್ತು ಕ್ಷಮಿಸಿ ಮರೆತುಬಿಟ್ಟರೆ ಎಲ್ಲವೂ ಸುಖಾಂತ್ಯವಾಗುತ್ತದೆ."  ಎಂತಹ ಸತ್ವಯುತವಾದ, ಸತ್ಯವಾದ ಮಾತಿದು! 
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು||
ಗಡಿಬಿಡಿಯಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||
                              -ಕ.ವೆಂ. ನಾಗರಾಜ್,


ಗುರುವಾರ, ಸೆಪ್ಟೆಂಬರ್ 26, 2013

ನಾನಿಲ್ಲದೆ ಅವನಿಲ್ಲ !

     ನನಗೆ ಬಹಳ ಸಂತೋಷವಾಗಿತ್ತು. 'ಆಗಲಾರದು, ಕಷ್ಟ' ಎಂದುಕೊಂಡಿದ್ದ ಕೆಲಸವೊಂದು ಯಶಸ್ವಿಯಾಗಿ ಪೂರ್ಣವಾಗಿಬಿಟ್ಟಿತ್ತು. ನನಗೇ ನಂಬಲಾಗುತ್ತಿರಲಿಲ್ಲ. "ನೀವು ಇಲ್ಲದಿದ್ದರೆ ಈ ಕೆಲಸ ಆಗುತ್ತಲೇ ಇರಲಿಲ್ಲ. ನೀವು ಗ್ರೇಟ್ ಸಾರ್" ಎಂಬಂತಹ ಮಾತುಗಳು ಕೇಳಿಬಂದಾಗ ಉಬ್ಬಿಹೋಗಿದ್ದೆ. 'ನನ್ನಿಂದಲೇ ಈ ಕೆಲಸ ಆಗಿದ್ದು, ಇಲ್ಲದಿದ್ದರೆ ಆಗುತ್ತಿರಲಿಲ್ಲ'ವೆಂಬ ಭಾವನೆ ನನಗೂ ಬಂದು ಹೆಮ್ಮೆಪಡುತ್ತಿದ್ದಾಗಲೇ ಬಂದಿದ್ದ ಅವನು ನನ್ನನ್ನು ನೋಡಿ ಮುಗುಳ್ನಗುತ್ತಾ ಕರೆದಿದ್ದ: "ಬಾ ಇಲ್ಲಿ."
ನಾನು: (ನಗುತ್ತಲೇ) ಏನು ಸಮಾಚಾರ?
ಅವನು: ಈ ಕೆಲಸ ನೀನೇ ಮಾಡಿದ್ದಾ? ಬಹಳ ಚೆನ್ನಾಗಿದೆ.
ನಾನು: ನಿನಗೂ ಗೊತ್ತಿದೆ, ನಾನೇ ಮಾಡಿದ್ದು ಅಂತ. ತಮಾಷೆ ಮಾಡಬೇಡ. ಎಲ್ಲರೂ ಹೇಳ್ತಾ ಇರೋದನ್ನೂ ಕೇಳ್ತಲೇ ಇದೀಯ.
ಅವನು: ಎಲ್ಲರೂ ಏನಾದರೂ ಹೇಳಲಿ. ನಿನಗೆ ಏನು ಅನ್ನಿಸುತ್ತೆ ಅದನ್ನು ಹೇಳು.
ನಾನು: (ಗಂಭೀರವಾಗಿ) ಅನುಮಾನ ಏಕೆ? ನಾನೇ ಇದನ್ನು ಮಾಡಿದ್ದು.
ಅವನು: ಹಾಗಲ್ಲಪ್ಪಾ. ನಾನು ಕೇಳಿದ್ದು ನೀನು ಅಂದರೆ ಯಾರು ಅಂತ!
ನಾನು: (ಅನುಮಾನದಿಂದ ನೋಡುತ್ತಾ) ನಾನು ಯಾರು ಅಂದರೆ ಏನರ್ಥ? ನಿನ್ನ ಎದುರಿಗೆ ನಿಂತಿರುವ ನನ್ನ ಆರಡಿ ಎತ್ತರದ ಶರೀರವೂ ಕಾಣ್ತಾ ಇಲ್ವಾ?
ಅವನು: ಓ! ಈ ಶರೀರ ನಿನ್ನದಾ?
ನಾನು: ಮತ್ತೇನು ನಿನ್ನದಾ?
ಅವನು: ಹೋಗಲಿ ಬಿಡು. ನಿನ್ನ ಶರೀರ ಅಂದೆಯಲ್ಲಾ, ಅದು ನೀನು ಹೇಳಿದಂತೆ ಕೇಳುತ್ತಾ?
ನಾನು: (ಇವನಿಗೆ ತಲೆ ಕೆಟ್ಟಿರಬೇಕೆಂದುಕೊಂಡು) ನನಗೆ ಸಮಯವಿಲ್ಲ. ಇನ್ನೊಮ್ಮೆ ಮಾತನಾಡೋಣ.
ಅವನು: ನಿನಗೆ ಸಮಯವಿಲ್ಲ. ಆಯಿತು. ನಾನು ಹೇಳುವುದನ್ನು ಬೇಗ ಹೇಳಿಬಿಡುತ್ತೇನೆ. ಈ ಶರೀರ ನಿನ್ನದು. ನೀನು ಹೇಳಿದಂತೆ ಅದು ಕೇಳಿ ಈ ಕೆಲಸ ಮಾಡಿಬಿಟ್ಟಿತು. ಭೇಷ್! ಈಗ ನೀನು ಉಸಿರಾಡ್ತಾ ಇರೋದರಿಂದ ನಿನ್ನ ಶರೀರ ಬದುಕಿದೆ. ಆ ಉಸಿರಾಡೋ ಕೆಲಸದ ಕಂಟ್ರೋಲು ನಿನ್ನ ಕೈಲಿದೆಯಾ? ಹುಟ್ಟಿದ ಕ್ಷಣದಿಂದಲೇ ನಿನಗೆ ಏನೂ ಗೊತ್ತಿಲ್ಲದಿದ್ದಾಗಿನಿಂದಲೇ ಈ ಉಸಿರಾಟ ನಡೀತಿದೆ. ಎಚ್ಚರವಿಲ್ಲದೆ ನೀನು ನಿದ್ದೆ ಮಾಡುತ್ತಿದ್ದಾಗಲೂ ಉಸಿರಾಟ ನಡೀತಾನೇ ಇರುತ್ತೆ. ಈಗ ಹೇಳು, ಈ ಉಸಿರಾಟ ನಿನ್ನಿಂದ ಆಗುತ್ತಿದೆಯಾ ಅಥವ ಬೇರೆ ಯಾರಾದರೂ ಮಾಡಿಸುತ್ತಿದ್ದಾರಾ? ನಿನ್ನಿಂದಲೇ ಉಸಿರಾಟ ಆಗುತ್ತಿದೆ ಅನ್ನವುದಾದರೆ ಈ ಉಸಿರಾಡುವ ಆಟ ನೀನು ನಿಲ್ಲಿಸುವುದೇ ಇಲ್ಲ. ಏಕೆಂದರೆ ನೀನು ಸಾಯಲು ಇಷ್ಟಪಡುವುದೇ ಇಲ್ಲ, ಅಲ್ಲವೇ?
ನಾನು: (ಗೊಂದಲದಿಂದ) ಆಂ?. . . .
ಅವನು: ನಿನ್ನ ಶರೀರದಲ್ಲಿ ರಕ್ತ ಸುತ್ತುತ್ತಲೇ ಇರುತ್ತೆ. ಕೆಟ್ಟ ರಕ್ತ ಹೃದಯಕ್ಕೆ ಹೋಗುತ್ತೆ. ಶುದ್ಧವಾಗಿ ಹೊರಬರುತ್ತೆ. ಕೆಟ್ಟ ರಕ್ತ ಹರಿಯುವ ರಕ್ತನಾಳವೇ ಬೇರೆ, ಒಳ್ಳೆಯ ರಕ್ತ ಹರಿಯುವ ನಾಳಗಳೇ ಬೇರೆ ಇವೆ. ಈ ರಕ್ತ ಹೀಗೇ ಹರಿಯುವಂತೆ ನೀನು ಮಾಡ್ತಾ ಇದೀಯಾ? ಅದನ್ನು ನೀನೇ ಕಂಟ್ರೋಲ್ ಮಾಡ್ತಾಇದೀಯಾ?
ನಾನು: (ತಲೆ ಪರಚಿಕೊಳ್ಳುತ್ತಾ) ಅಯ್ಯೋ!!
ಅವನು: ಸಿಟ್ಟು ಮಾಡಿಕೋಬೇಡ. ನಿನ್ನ ಹೃದಯ ಇದೀಯಲ್ಲಾ, ಅದು ನೀನು ಹುಟ್ಟಿದಾಗಿನಿಂದಲೂ ಲಬ್ ಡಬ್ ಅಂತ ಪುರುಸೊತ್ತಿಲ್ಲದೆ ಹೊಡಕೊಳ್ತಾನೇ ಇದೆ. ಅದಕ್ಕೆ ಯಾವಾಗಲಾದರೂ ಪುರುಸೊತ್ತು ಕೊಡ್ತೀಯಾ? ಕೊಡಕ್ಕೆ ನಿನಗೆ ಆಗುತ್ತಾ? ನಿನ್ನ ಕೈಲಿ ಆಗೋದಿದ್ದರೆ ಅದಕ್ಕೆ ನೀನು ಯಾವತ್ತೂ ವಿಶ್ರಾಂತಿ ಕೊಡೋದೇ ಇಲ್ಲ, ಅಲ್ವಾ? ಏಕೆಂದರೆ ಅದಕ್ಕೆ ವಿಶ್ರಾಂತಿ ಕೊಟ್ಟರೆ ನೀನು ಎಲ್ಲಿ ಇರ್ತೀಯಾ?
ನಾನು: (ಮೆತ್ತಗಾಗಿದ್ದೆ) ನೀನು ಏನು ಹೇಳಬೇಕೆಂದಿದ್ದೀಯಾ? ನೇರವಾಗಿ ಹೇಳು, ಪ್ಲೀಸ್.
ಅವನು: ಪುರುಸೊತ್ತಿಲ್ಲ ಅಂದಿದ್ದೆ? ಹೋಗಲಿ ಬಿಡು. ನಿನ್ನ ತಲೆ ತಿನ್ನುವುದರಿಂದ ನನಗೇನೂ ಲಾಭವಿಲ್ಲ. ನೋಡು, ನೀನು ಉಸಿರಾಡ್ತಾ ಇದೀಯಾ, ನಿನ್ನ ಹೃದಯ ಕೆಲಸ ಮಾಡ್ತಾ ಇದೆ. ಇವೆಲ್ಲದರ ಮೇಲೆ ನಿನ್ನ ಕಂಟ್ರೋಲು ಇಲ್ಲವೇ ಇಲ್ಲ. ಅದನ್ನು ಕಂಟ್ರೋಲು ಮಾಡುತ್ತಿರುವವನೇ ಬೇರೆ ಅಂತ ನಿನಗೆ ಗೊತ್ತಾಯ್ತಲ್ಲಾ, ಅಷ್ಟು ಸಾಕು. ನಿನ್ನ ಕಂಟ್ರೋಲೇ ಇಲ್ಲದೆ, ಬೇರೆಯವರ ಕಂಟ್ರೋಲಿನಿಂದ ಓಡ್ತಾ ಇರೋ ಈ ದೇಹದ ಸಹಾಯದಿಂದ ಮಾಡಿದ ಕೆಲಸ ಮಾತ್ರ ನೀನು ಮಾಡಿದ್ದು ಅಂತ ಹೇಗಾಗುತ್ತೆ?
     ಅವನು ಈ ರೀತಿಯಲ್ಲಿ ಏನೇನೋ ಮಾತನಾಡುತ್ತಿದ್ದಾಗ ಅರಿವಿಲ್ಲದೆ ನಾನು ಕಣ್ಣು ಮುಚ್ಚಿ ಯೋಚಿಸುತ್ತಿದ್ದವನು, ಅವನು ಇದ್ದಕ್ಕಿದ್ದಂತೆ ಮಾತು ನಿಲ್ಲಿಸಿದಾಗ ಫಕ್ಕನೆ ಕಣ್ಣು ಬಿಟ್ಟು ನೋಡಿದೆ. ನೋಡಿದರೆ ಅವನು ಅಲ್ಲಿ ಇರಲೇ ಇಲ್ಲ. "ಏಯ್, ಎಲ್ಲಿದೀಯಾ?" ಎಂದು ಕೂಗಿದೆ. "ಹೇಳು, ನೀನು ಹೇಳಿದ್ದು ನನಗೆ ಕೇಳುತ್ತೆ. ನಾನು ಇಲ್ಲೇ ಇದ್ದೇನೆ" ಎಂಬ ಮಾತು ಕೇಳಿಸಿತು. ಆ ಮಾತುಗಳು ನನ್ನ ಒಳಗಿನಿಂದಲೇ ಬಂದಂತೆ ಅನ್ನಿಸಿತು. 
ನಾನು: ಹಾಂ? ನೀನು ನನ್ನೊಳಗೆ ಇದ್ದೀಯಾ? ಅಲ್ಲಿಗೆ ಹೇಗೆ ಹೋದೆ?
ಅವನು: ನಾನು ಇರುವುದೇ ಇಲ್ಲಿ. ಇಲ್ಲಿ ಬಿಟ್ಟು ಇನ್ನು ಎಲ್ಲಿಗೆ ಹೋಗಲಿ? ನೀನು ಇರುವ ಹೊತ್ತಿಗೇ ನಾನೂ ಇರೋದು. ನೀನಿಲ್ಲದಿದ್ದರೆ ನಾನೆಲ್ಲಿ ಇರ್ತಾ ಇದ್ದೆ? ನನ್ನನ್ನು ಕಂಟ್ರೋಲು ಮಾಡೋನೇ ನೀನು! ನೀನಿಲ್ಲದೆ ನಾನಿಲ್ಲ.
     ನನಗೆ ತಲೆ ಕೆಟ್ಟುಹೋದಂತಾಯಿತು. 'ನಾನಿಲ್ಲದೆ ಅವನಿಲ್ಲವಂತೆ! ನನ್ನ ಮೇಲೆ ನನಗೇ ಕಂಟ್ರೋಲಿಲ್ಲ. ನನ್ನನ್ನು ಕಂಟ್ರೋಲು ಮಾಡೋನೇ ಬೇರೆ ಇರುವಾಗ, ನಾನು ಅವನನ್ನು ಕಂಟ್ರೋಲು ಮಾಡ್ತೀನಂತೆ!' ಎಂದು ನಗುವೂ ಬಂತು. ಹೀಗೇ ಯೋಚಿಸುತ್ತಿದ್ದವನಿಗೆ ಏನೋ ಹೊಳೆಯಿತು. ಹೌದು, ನನ್ನನ್ನು ಕಂಟ್ರೋಲು ಮಾಡುತ್ತಿರುವವನು 'ಅವನೇ' ಇರಬೇಕು! ಕರೆಕ್ಟ್!! ಅವನೇ!! ಈಗ ಸರಿಯಾಯಿತು. ನನ್ನನ್ನು ಅವನು, ಅವನನ್ನು ನಾನು ಕಂಟ್ರೋಲ್ ಮಾಡ್ತಾ ಇದೀವಿ. ನನ್ನನ್ನು ಅವನು ಕಂಟ್ರೋಲ್ ಮಾಡುತ್ತಿರುವುದರಿಂದ ಅವನೇ ಗ್ರೇಟ್! ನಾನು ಇರುವುದರಿಂದಲೇ ಅವನು ಇರೋದು! ಅದಕ್ಕೇ ನಾನೂ ಗ್ರೇಟ್!!
     ನಾನಿಲ್ಲದೆ ಅವನಿಲ್ಲ, ಅವನಿಲ್ಲದೆ ನಾನಿಲ್ಲ! ಹೀಗೆ ನನ್ನಷ್ಟಕ್ಕೇ ನಾನೇ ಜಂಬಪಟ್ಟುಕೊಳ್ಳುತ್ತಿದ್ದಾಗ ಮೂಢನ ಗೊಣಗು ಕೇಳಿಸಿತು:
ರಸಭರಿತ ಫಲಮೂಲ ಕೊಂಬೆ ತಾನಲ್ಲ
ಫಲಸತ್ವ ಸಾಗಿಪ ಮಾರ್ಗ ತಾನಹುದು|
ಮಾಡಿದೆನೆನಬೇಡ ನಿನದೆನಬೇಡ
ಜಗವೃಕ್ಷ ರಸ ಹರಿವ ಕೊಂಬೆ ನೀನು ಮೂಢ||

-ಕ.ವೆಂ.ನಾಗರಾಜ್.

ಬುಧವಾರ, ಸೆಪ್ಟೆಂಬರ್ 18, 2013

ನೂರು ವರ್ಷಗಳಿಗೂ ಮೀರಿ ಬದುಕೋಣ


ಸಾಲುಗಟ್ಟಿಹೆವು ಕೆಲರ್ ಮುಂದೆ ಕೆಲರ್ ಹಿಂದೆ
ಸರಿಸರಿದು ಸಾಗಿ ಬರುತಿಹುದು ಸಾವು |
ಸಾವು ನಿಶ್ಚಿತವಿರಲು ಜೀವಿಗಳೆಲ್ಲರಿಗೆ
ಜಾಣರಲಿ ಜಾಣರು ಬದುಕುವರು ಮೂಢ ||
     ಸಾವಿಲ್ಲದ ಜೀವಿಗಳು ಯಾವುದಾದರೂ ಇವೆಯೇ? ಜೀವಿಗಳಿಗೆಲ್ಲಾ ಸಾವು ಖಚಿತವೆಂಬ ಸರಳ ಸತ್ಯವನ್ನು ತಿಳಿಯದವರು, ಒಪ್ಪದವರು ಯಾರಾದರೂ ಇದ್ದಾರೆಯೇ? ಯಾವುದೇ ಸಿದ್ಧಾಂತ, ತತ್ವ, ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯವಿದ್ದೀತು, ಆದರೆ ಎಲ್ಲರೂ ಸಾಯುತ್ತಾರೆ ಎಂಬ ಬಗ್ಗೆ ಭಿನ್ನಾಭಿಪ್ರಾಯವಿರಲಾರದು. ಸಾಯುವುದು ಗೊತ್ತಿದ್ದರೂ ಮನುಷ್ಯರು ಚಿರಂಜೀವಿಗಳಂತೆ ವರ್ತಿಸಿ, ಎಲ್ಲವೂ ಬೇಕು, ತಮಗೊಬ್ಬರಿಗೇ ಬೇಕು ಎಂದು ಏಕೆ ಹಪಹಪಿಸುತ್ತಾರೆಂಬುದು ಚೋದ್ಯವೇ ಸರಿ. ಆಳವಾಗಿ ತರ್ಕಿಸುತ್ತಾ ಹೋದರೆ 'ಬೇಕು' ಎಂಬುದು ಪ್ರತಿ ಜೀವಿಯ ಅಂತರ್ಗತ ಸ್ವಭಾವವೆಂಬುದನ್ನು ಒಪ್ಪಲೇಬೇಕು. ಈಗ ಇರುವ ಸ್ಥಿತಿಗಿಂತ ಮೇಲೇರಬೇಕು ಎಂಬ ಪ್ರಬಲ ಇಚ್ಛೆ ಎಲ್ಲರಿಗೂ ಸಹಜ. ಈ 'ಬೇಕು' ಅನ್ನುವುದು ಯಾವ ಹಂತದಲ್ಲೇ ಆಗಲಿ, 'ಸಾಕು' ಎಂಬ ಭಾವನೆ ಮೂಡಲು ಬಿಡುವುದಿಲ್ಲ. ಅಂದುಕೊಂಡಿದ್ದಂತೆ ಬಯಸಿದ್ದು ಸಿಕ್ಕಿದ ತಕ್ಷಣದಲ್ಲೇ ಅದಕ್ಕಿಂತ ಮೇಲಿನ 'ಬೇಕು' ಧುತ್ತೆಂದು ಆ ಸ್ಥಾನವನ್ನು ಆಕ್ರಮಿಸಿಬಿಡುತ್ತದೆ. ಮನುಷ್ಯೇತರ ಜೀವಿಗಳಿಗಿಂತ ವಿವೇಚನೆ ಮಾಡುವ ಶಕ್ತಿ ಹೊಂದಿರುವ ಮಾನವಜೀವಿಗಳಲ್ಲಿ ಈ 'ಬೇಕು'ವಿನ ಪ್ರಮಾಣ ಜಾಸ್ತಿ. ಈ 'ಬೇಕು'ವಿನಿಂದಲೇ ಜೀವಚಕ್ರ ತಿರುಗುತ್ತಿರುವುದು ಎನ್ನಬಹುದು. 'ಬೇಕು'ಗಳನ್ನು ಮೀರಿ ಯಾವುದೂ ಬೇಡವೆಂದು ವಿರಾಗಿಗಳಾದವರಿಗೂ ಮೋಕ್ಷ ಸಾಧಿಸಬೇಕೆಂಬ ದೊಡ್ಡ 'ಬೇಕು' ಇರುತ್ತದೆ. ಈ 'ಬೇಕು'ವಿಗಾಗಿಯೇ ಅವರು ಇತರ ಪ್ರಾಪಂಚಿಕ 'ಬೇಕು'ಗಳನ್ನು ದೂರಮಾಡಿರುತ್ತಾರೆ! 
     ಸ್ವಾಮಿ ಚಿದ್ರೂಪಾನಂದ ಸರಸ್ವತಿಯವರು ಒಂದು ಸತ್ಸಂಗದಲ್ಲಿ ಹೇಳಿದ ಪ್ರಸಂಗವಿದು: ಅವರು ಒಮ್ಮೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಕ್ಕೆ ರೋಗಿಗಳನ್ನು ಸಂತಯಿಸುವ ಸಲುವಾಗಿ ಹೋಗಿದ್ದಾಗ ರೋಗದಿಂದ ನರಳುತ್ತಿದ್ದ ಮುದುಕಿಯೊಬ್ಬಳು, "ಯಪ್ಪಾ, ನನಗೆ ನರಳಿ ನರಳಿ ಸಾಕಾಗಿ ಹೋಗಿದೆ. ಜೀವನ ಸಾಕು ಅನ್ನಿಸಿಬಿಟ್ಟಿದೆ. ದಯವಿಟ್ಟು ನನ್ನ ತಲೆಯ ಮೇಲೆ ಕೈಯಿಟ್ಟು ನನ್ನನ್ನು ಬೇಗ ಕರೆಸಿಕೊಳ್ಳಲು ದೇವರಲ್ಲಿ ಹೇಳಪ್ಪಾ" ಅಂದಳಂತೆ. ಆಕೆಯನ್ನು ಸಂತೈಸಿ ಮುಂದೆ ಹೋಗುತ್ತಿದ್ದಾಗ ಆಕೆ ಹಿಂದೆಯೇ ಧಾವಿಸಿ ಬಂದು, "ಯಪ್ಪಾ, ನಿಮಗೆ ದೊಡ್ಡ ಡಾಕ್ಟರು ತುಂಬಾ ಪರಿಚಯ ಅಂತೆ. ಅವರಿಗೆ ಹೇಳಿ ಒಳ್ಳೆಯ ಔಷಧಿ ಕೊಡಲು ಹೇಳಪ್ಪಾ" ಅಂದಳಂತೆ! ಇಲ್ಲಿ ಕಾಣುವುದೇನೆಂದರೆ ಸಾವನ್ನು ಮೀರಿ ಬದುಕಬೇಕೆಂಬ ಆಸೆ. ಇದು ಸಹಜ. ಜೀವ ಹೋಗಲು ಈಗಲೋ ಆಗಲೋ ಎನ್ನುತ್ತಿರುವಾಗಲೂ ಆ ಜೀವ ಬದುಕಲು ತುಡಿಯುತ್ತಿರುತ್ತದೆ. ಇಷ್ಟಾದರೂ ಕ್ಷುಲ್ಲಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಳ್ಳುವವರೂ ಇರುತ್ತಾರೆ. ಬಹುಷಃ ಅದಕ್ಕೆ ಕಾರಣ ಈ ಜನ್ಮದಲ್ಲಿ ಸಿಗದಿದ್ದುದು ಮುಂದಿನ ಜನ್ಮದಲ್ಲಾದರೂ ಸಿಗಲಿ ಎಂಬ ಭಾವವೂ ಇದ್ದಿರಬಹುದು. ಬಡತನ, ಸಾಂಸಾರಿಕ ಸಮಸ್ಯೆಗಳು, ಇತ್ಯಾದಿಗಳಿಂದ ರೋಸಿಹೋದವರು, ಭಗ್ನಪ್ರೇಮಿಗಳು, ಮುಂತಾದವರು ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ತಡೆದು, ಸಾಯುವುದರಿಂದ ಸಮಸ್ಯೆ ಪರಿಹಾರವಾಗುವುದೇ ಎಂದು ವಿಚಾರಿಸಿದರೆ ಅವರು ಬಹುಷಃ ಸಾಮಾನ್ಯವಾಗಿ ಏನು ಹೇಳಬಹುದೆಂದರೆ ಅವರು ಬಯಸಿದ್ದುದು ಈ ಜನ್ಮದಲ್ಲಿ ಸಿಗುವುದೇ ಇಲ್ಲವೆಂಬ ಭಾವದಿಂದ, ಅದು ಇಲ್ಲದೇ ಜೀವನ ವ್ಯರ್ಥವೆಂಬ ಕಾರಣದಿಂದ, ತಮ್ಮ ಸಮಸ್ಯೆಗೆ ಈ ಜನ್ಮದಲ್ಲಿ ಪರಿಹಾರ ಸಿಕ್ಕುವುದೇ ಇಲ್ಲವೆಂಬ, ಇತ್ಯಾದಿ ಕಾರಣಗಳನ್ನು ಕೊಟ್ಟಾರು. ಗಮನಿಸಬೇಕಾದುದೇನೆಂದರೆ, ಅವರ 'ಬೇಕು'ಗಳಿಗಾಗಿಯೇ ಅವರು ಸಾಯುತ್ತಾರೆ. ಏಕೆಂದರೆ ಅದು ಅವರಿಗೆ 'ಬೇಕಾಗಿದೆ'. ಇದು ಏನು ಸೂಚಿಸುತ್ತದೆ? ತಮಗೆ ಬೇಕೆನಿಸಿದಂತೆ ಬದುಕುವುದು ಅವರಿಗೆ ಬೇಕಿದೆ. 
ಬಯಸಿದರು ಸಾವೆ ಬಯಸದಿದ್ದರು ಸಾವೆ
ಬೇಡವೆಂದರೆ ನೀನು ಬರದಿಹುದೆ ಸಾವು |
ಬೇಡದಿರು ಮನವೆ ಬೇಡದಿಹ ಸಾವ
ಅಡ್ಡದಾರಿಯಲಿ ನುಗ್ಗದಿರು ಮೂಢ ||
     ಈ ಸಾವಿಗೆ ನಾಚಿಕೆಯಿಲ್ಲ; ಕರೆದರೂ ಬರುತ್ತದೆ, ಕರೆಯದಿದ್ದರೂ ಬರುತ್ತದೆ. ಹಾಗಿರುವಾಗ ಬಯಸಿ ಏಕೆ ಕರೆಯಬೇಕು? ಅದು ಬರುವವರೆಗೂ ಬದುಕಿರೋಣ. ಅದು ತಾನಾಗಿ ಬಂದಾಗ ಸಂತೋಷದಿಂದ ಹೋಗೋಣ. ನಗುತ್ತಾ ಸಾವನ್ನು ಅದು ಬರುವಾಗ ಮಿತ್ರನಂತೆ ಬರಮಾಡಿಕೊಳ್ಳೋಣ. ೮೪ ಲಕ್ಷ ವಿವಿಧ ಜೀವಿಗಳ ಪೈಕಿ ವಿರಳವಾದ ಮಾನವಜನ್ಮ ಹೊಂದುವುದು ಆ ಪರಮಾತ್ಮನ ಕರುಣೆಯಲ್ಲವೇ? ವೇದಗಳ ಪ್ರಕಾರ ಮತ್ತು ಭಾರತೀಯರ ನಂಬಿಕೆಯಂತೆ ಹುಟ್ಟು-ಸಾವುಗಳ ಚಕ್ರ ಸದಾ ತಿರುಗುತ್ತಿದ್ದು ಜೀವಿಗಳು ಹುಟ್ಟುತ್ತಾ, ಸಾಯುತ್ತಾ ಇದ್ದರೂ ಈ ಜೀವಿಗಳಿಗೆ ಚೈತನ್ಯದಾಯಕವಾದ ಆತ್ಮ ಮಾತ್ರ ಹುಟ್ಟುವುದೂ ಇಲ್ಲ, ಸಾಯುವುದೂ ಇಲ್ಲ; ಅದಕ್ಕೆ ಆದಿಯೂ ಇಲ್ಲ ಅಂತ್ಯವೂ ಇಲ್ಲ. ಆದರೆ, ಇಲ್ಲಿ ಒಂದು ವಿಶೇಷ ಅಂಶವಿದೆ. ಮುಂದೆ ಪಡೆಯುವ ಜನ್ಮ ಈ ಜನ್ಮದಲ್ಲಿ ಮಾಡಿದ ಕರ್ಮಗಳ ಸಂಚಿತಾರ್ಜಿತಫಲವೆಂದು ವೇದ ಸಾರಿದೆ. 
ನ ಕಿಲ್ಬಿಷಮತ್ರ ನಾಧಾರೋ ಅಸ್ತಿ ನ ಯನ್ಮಿತ್ರೈಃ ಸಮಮಮಾನ ಏತಿ |
ಅನೂನಂ ಪಾತ್ರಂ ನಿಹಿತಂ ನ ಏತತ್ಪಕ್ತಾರಂ ಪಕ್ವಃ ಪುನರಾ ವಿಶಾತಿ || (ಅಥರ್ವ.೧೨.೩.೪೮.)
     ಪರಮಾತ್ಮನ ನ್ಯಾಯವಿಧಾನದಲ್ಲಿ ಒಡಕಾಗಲೀ, ದೋಷವಾಗಲೀ ಇಲ್ಲ. ಅವನು ಜೀವಿಗಳಲ್ಲಿ ಇಟ್ಟಿರುವ ಗೂಢವಾದ ಅಂತಃಕರಣದ ಪಾತ್ರೆಯಲ್ಲಿ ಬೇಯಿಸಿದ ಅಡುಗೆಯನ್ನು (ಕರ್ಮಫಲವಿಪಾಕ) ತಯಾರು ಮಾಡಿದವರೇ ಉಣ್ಣಬೇಕಿದೆ. ಇತರರ ಸಹಾಯದಿಂದ, ಅಡ್ಡಮಾರ್ಗದಿಂದ ಇದನ್ನು ತಪ್ಪಿಸಿಕೊಳ್ಳಬಹುದೆಂಬ ಅವಕಾಶ ಇಲ್ಲಿಲ್ಲ ಎಂಬುದು ಇದರ ಅರ್ಥ. ಕರ್ಮಫಲಭೋಗ ಎಲ್ಲರಿಗೂ ಅನಿವಾರ್ಯ. ಹೀಗಿರುವಾಗ ಪುಣ್ಯವಶಾತ್ ಪಡೆದಿರುವ ಮಾನವ ಜನ್ಮವನ್ನು ಇರುವವರೆಗೂ ಸಾರ್ಥಕ ರೀತಿಯಲ್ಲಿ ಬಳಸಿಕೊಳ್ಳಬೇಕಿದೆ.
     ಸಾಯುವುದು ಸುಲಭ, ಬದುಕುವುದು ಕಷ್ಟ. ಸುಲಭವೆಂದು ಸಾಯಲಾಗುವುದೇ? ಕಷ್ಟವಾದರೂ ಬದುಕಬೇಕು. ಬದುಕಬೇಕೆಂಬ ಅದ್ಭುತ ಇಚ್ಛಾಶಕ್ತಿಗೆ ದುರ್ಯೋಧನನ ಉದಾಹರಣೆ ಕೊಡಬಹುದು. ಅವನ ಕಣ್ಣೆದುರಿಗೇ ಭೀಷ್ಮ, ದ್ರೋಣ ಮೊದಲಾದ ಅತಿರಥ, ಮಹಾರಥರು ಹೋದರು. ಕರ್ಣ ಹೋದ, ಸೋದರರು ಹೋದರು, ಆದರೆ ಅವನಿಗೆ ಇನ್ನೂ ವಿಶ್ವಾಸವಿತ್ತು. ಶಲ್ಯ ಇದ್ದಾನೆ, ತಾನೂ ಇದ್ದೇನೆ. ಯುದ್ಧದಲ್ಲಿ ಗೆಲ್ಲುತ್ತೇನೆ, ಬದುಕುತ್ತೇನೆ ಎಂಬ ವಿಶ್ವಾಸ ಅವನಿಗೆ ಸಾಯುವವರೆಗೂ ಇತ್ತು. ಅವನ ಆತ್ಮವಿಶ್ವಾಸ ಮೆಚ್ಚುವಂತಹದು. ಮನುಷ್ಯ ಕನಸು ಕಾಣುವುದನ್ನು ನಿಲ್ಲಿಸಿದಾಗ ಸಾಯತೊಡಗುತ್ತಾನೆ.  ಮಹರ್ಷಿ ದಯಾನಂದ ಸರಸ್ವತಿಯವರ ಶಿಷ್ಯರಾದ ಸ್ವಾಮಿ ಶ್ರದ್ಧಾನಂದರು ಹೇಳುತ್ತಿದ್ದಂತೆ, "ಆಶಾವಾದವೇ ಜೀವನ, ನಿರಾಶಾವಾದವೇ ಮರಣ". ಪರಮಾತ್ಮ ಯಾವ ಜೀವಿ ಎಷ್ಟು ಬದುಕಬೇಕು, ಎಷ್ಟು ಬಾಳಬೇಕು ಎಂಬುದನ್ನು ನಿರ್ಧರಿಸಿರುತ್ತಾನೆ. ಅದಕ್ಕೆ ಮೊದಲು ಆತ್ಮಹತ್ಯೆ ಮಾಡಿಕೊಂಡು ಸತ್ತರೆ ಅದು ಭಗವದಿಚ್ಛೆಗೆ ವಿರುದ್ಧ. ಸಾಯಲು ಬಯಸುವ ದುರಾಸೆ ಜೀವಿಯ ಇಚ್ಛಾಶಕ್ತಿಯನ್ನೇ ಹಾಳುಮಾಡುತ್ತದೆ. ನೂರು ವರ್ಷಗಳಿಗೂ ಹೆಚ್ಚು ಕಾಲ ಬದುಕಿರುವವರ ಬಹಳಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ರಷ್ಯಾ, ಜಪಾನ್ ಮುಂತಾದ ದೇಶಗಳಲ್ಲಿ ೧೯೦ ವರ್ಷಗಳವರೆಗೂ ಜೀವಿಸಿದ್ದವರು ಇದ್ದರು. ಈಗಲೂ ನೂರು ವರ್ಷಗಳನ್ನು ಮೀರಿ ಜೀವಿಸಿರುವ ಹಲವರು ನಮ್ಮ ನಡುವೆ ಇದ್ದಾರೆ. ಸ್ವಾಮಿ ಶ್ರದ್ಧಾನಂದರ ಶಿಷ್ಯರಾದ, ಅದಮ್ಯ ಜೀವನೋತ್ಸಾಹದ ಚಿಲುಮೆ, ನಾಲ್ಕು ವೇದಗಳನ್ನು ಸಂಪೂರ್ಣ ಅಧ್ಯಯನ ಮಾಡಿ ಚತುರ್‍ವೇದಿ ಎಂಬ ಸಾರ್ಥಕ ಹೆಸರನ್ನು ಪಡೆದಿರುವ, ವೇದದ ಸಾರ ಮತ್ತು ಉದ್ದೇಶಗಳನ್ನು ಈಗಲೂ ಸಾರುತ್ತಿರುವ, ನಿಜಬದುಕು ಸಾಗಿಸುತ್ತಿರುವ ಬೆಂಗಳೂರಿನ ೧೧೭ ವರ್ಷಗಳ ಅನುಪಮ ಸಾಧಕ ಮಾರ್ಗದರ್ಶಿ ಪಂ. ಸುಧಾಕರ ಚತುರ್‍ವೇದಿಯವರು ಇಚ್ಛಾಶಕ್ತಿಗೆ ಜ್ವಲಂತ ಉದಾಹರಣೆ. ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಯಾಗಿದ್ದ, ಅಲ್ಲಿ ಹುತಾತ್ಮರಾದವರ ಸಾಮೂಹಿಕ ಸಂಸ್ಕಾರಕಾರ್ಯದಲ್ಲಿ ಭಾಗಿಯಾಗಿದ್ದ, ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದು ಸುಮಾರು ೧೪ ವರ್ಷಗಳ ಕಾಲ ಸೆರೆವಾಸ ಕಂಡಿದ್ದ, ಈಗಲೂ ಸತ್ಸಂಗಗಳನ್ನು ನಡೆಸುತ್ತಾ, ನೂರಾರು ಅಂತರ್ಜಾತೀಯ ವಿವಾಹಗಳನ್ನು ಮಾಡಿಸಿರುವ, ರೂಢಿಗತ ಅಂಧ ಸಂಪ್ರದಾಯಗಳನ್ನು ವಿರೋಧಿಸಿ ವೇದದ ಬೆಳಕಿನಲ್ಲಿ ಸತ್ಯಾನ್ವೇಷಣೆಗೆ ಕರೆ ಕೊಡುತ್ತಿರುವ, ನಿಜವಾಗಿ ಬದುಕಲು ಪ್ರೇರಿಸುತ್ತಿರುವ ಅವರ ಬದುಕು ಅನುಸರಣೀಯ. 

ಸೋಮಾರಿ ಸಾಯುವನು ಸ್ವಾರ್ಥಿ ಸಾಯುವನು
ಹೇಡಿ ಸಾಯುವನು ವೀರನೂ ಸಾಯುವನು |
ದೇವ ನಿಯಮವಿದು ಎಲ್ಲರೂ ಸಾಯುವರು
ಬದುಕಿ ಸಾಯುವರ ನೆನೆಯೋ ಮೂಢ ||
     ಎಲ್ಲರೂ ಸಾಯುತ್ತಾರೆ, ಆದರೆ ಎಲ್ಲರೂ ಬದುಕುತ್ತಾರೆಯೇ ಎಂಬುದು ಕೇಳಬೇಕಾದ ಪ್ರಶ್ನೆ. ಬದುಕುವ ರೀತಿಯಲ್ಲಿ ಬದುಕಿದವರು ಸತ್ತ ಮೇಲೂ ಬದುಕಿರುತ್ತಾರೆ. ನೂರಾರು ವರ್ಷಗಳ ನಂತರವೂ, ಇಂದಿಗೂ ನಾವು ನೆನಪಿಸಿಕೊಳ್ಳುವ, ಗೌರವಿಸುವ, ದೇವರಂತೆ ಕಾಣುವ ರಾಮ, ಕೃಷ್ಣ, ವ್ಯಾಸ, ವಾಲ್ಮೀಕಿ, ಶಂಕರಾಚಾರ್ಯ, ವಿವೇಕಾನಂದ, ಬುದ್ಧ, ಬಸವ, ಮುಂತಾದ ನೂರಾರು, ಸಾವಿರಾರು ಮಹಾನ್ ವ್ಯಕ್ತಿಗಳು ಈ ಮಾತಿಗೆ ಪುಷ್ಟಿ ಕೊಡುತ್ತಾರೆ. ಹೇಗೋ ಹುಟ್ಟಿ, ಹೇಗೋ ಬದುಕಿ, ಹೇಗೋ ಕಂತೆ ಒಗೆದು ಹೋಗುವ ಸಾಮಾನ್ಯರ ನೆನಪು ಅವರ ಮಕ್ಕಳು, ಮೊಮ್ಮಕ್ಕಳುಗಳಿಗೇ ಇರುವುದಿಲ್ಲ ಅಲ್ಲವೇ? ಮಸುಕಾಗಿ ಮರೆಯಾಗುವುದಕ್ಕಿಂತ ಜ್ಯೋತಿಯಾಗಿ ಉರಿದು ನೆನಪು ಉಳಿಸುವುದು ಉತ್ತಮ. ಯೋಗ್ಯವಾಗಿ ಬದುಕಬೇಕೆಂಬ ಮಾರ್ಗದರ್ಶನ ನೀಡುವುದೇ ಸಾವು ಎಂಬುದನ್ನು ಮರೆಯಬಾರದು. ಭಗತ್ ಸಿಂಗ್, ರಾಜಗುರು, ಸುಖದೇವರಂತೆ, ಚಂದ್ರಶೇಖರ ಆಜಾದರಂತೆ ಇನ್ನೊಬ್ಬರ ಬದುಕಿಗಾಗಿ, ಒಳಿತಿಗಾಗಿ ಸಾಯಲು ಸಿದ್ಧರಿರುವವರ, ಸಾಯುವವರ ಬದುಕುಗಳು ಬದುಕಬೇಕಾದ ರೀತಿಗೆ ಉದಾಹರಣೆಗಳು. ಯಜುರ್ವೇದದ ಈ ಮಂತ್ರ ಮಾನವರು ಬದುಕಬೇಕಾದ ರೀತಿಗೆ ಅದ್ಭುತ ಮಾರ್ಗದರ್ಶಿಯಾಗಿದೆ:
 "ಪಶ್ಶೇಮ ಶರದಃ ಶತಂ ಜೀವೇಮ ಶರದಃ ಶತಗ್ ಂ ಶೃಣುಯಾಮ ಶರದಃ ಶತಂ ಪ್ರ ಬ್ರವಾಮ ಶರದಃ ಶತಂ ಶತಮದೀನಾ ಸ್ಯಾಮ ಶರದಃ ಶತಂ ಭೂಯಶ್ಚ ಶರದಃ ಶತಾತ್ ||"
     ಅರ್ಥ: ಶುಭವ ನೋಡುತಲಿ, ಶುಭವ ಕೇಳುತಲಿ, ಶುಭವ ನುಡಿಯುತಲಿ ನೂರ್ಕಾಲ ಬಾಳೋಣ. ದೈನ್ಯತೆಯಿಲ್ಲದೆ ಸ್ವಾಭಿಮಾನದಿಂದ ಸ್ವತಂತ್ರರಾಗಿ ನೂರ್ಕಾಲ ಬಾಳೋಣ. ನೂರು ವರ್ಷಗಳಿಗಿಂತ ಹೆಚ್ಚಾಗಿಯೂ ಬಾಳಿಕೊಂಡಿರೋಣ.
-ಕ.ವೆಂ.ನಾಗರಾಜ್.

ಸೋಮವಾರ, ಸೆಪ್ಟೆಂಬರ್ 9, 2013

ಬೆನಕನ ನೆನಯೋ ಕೊನೆತನಕಾ . .

ಎರಡು ವರ್ಷಗಳ ಹಿಂದೆ ಬೆಲಗೂರಿನಲ್ಲಿ ನಡೆದ ಶ್ರೀರಾಮ ಪಟ್ಟಾಭಿಷೇಕದ ಸಂದರ್ಭದಲ್ಲಿ ಅಲ್ಲಿಗೆ ಹೋಗಿದ್ದಾಗ ಅಲ್ಲಿನ ದೇವಸ್ಥಾನದ ಮುಂದೆ ಕುಳಿತಿದ್ದ ಏಕನಾದಿ ಮೀಟಿ ಹಾಡುತ್ತಿದ್ದ ವ್ಯಕ್ತಿಯ ಬಗ್ಗೆ ನನ್ನ ಗಮನ ಹರಿಯಿತು. ಅವನ ಮುಂದೆ ಕುಳಿತು ಈ ಹಾಡು ಚಿತ್ರೀಕರಿಸಿಕೊಂಡೆ. ಗಣೇಶನ ಹಬ್ಬದ ದಿನವಾದ ಇಂದು ಇದನ್ನು ನೀವೂ ಕೇಳಿ: