ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಏಪ್ರಿಲ್ 1, 2014

ಪುರುಸೊತ್ತಿಲ್ಲವೇ?

     'ನಿನ್ನೆ ಕಾರ್ಯಕ್ರಮ ಎಷ್ಟು ಚೆನ್ನಾಗಿತ್ತು ಗೊತ್ತಾ? ನೀನು ಯಾಕೋ ಬರಲಿಲ್ಲ?' ಎಂಬ ಪ್ರಶ್ನೆಗೆ ಅವನು ಉತ್ತರಿಸಿದ್ದ, 'ಏನ್ ಮಾಡಲೋ? ನನಗಂತೂ ಒಂದ್ ನಿಮಿಷಾನೂ ಪುರುಸೊತ್ತೇ ಇರಲ್ಲ.' ಆದರೆ ನಿಜವಾದ ಸಂಗತಿಯೆಂದರೆ ಕಾರ್ಯಕ್ರಮ ನಡೆದ ಸಮಯದಲ್ಲಿ ಆತ ತನ್ನ ಗೆಳೆಯನೊಂದಿಗೆ ಬಾರಿನಲ್ಲಿ ಕುಡಿಯುತ್ತಾ ಕುಳಿತಿದ್ದ. ಹಾಗಾಗಿ ಅವನಿಗೆ ಪುರುಸೊತ್ತಿರಲಿಲ್ಲ. ಈ 'ಪುರುಸೊತ್ತಿಲ್ಲ' ಅನ್ನುವುದನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತೇವೆ. ಅಷ್ಟಕ್ಕೂ ಈ 'ಪುರುಸೊತ್ತು' ಅಂದರೆ ಏನು? ಏನಾದರೂ ಮಾಡಲು ಅಗತ್ಯವಾದ ಸಮಯ ಅಷ್ಟೇ. ನಾವು ಸಮಯದೊಂದಿಗೇ  ಇರುತ್ತೇವೆ, ಆದರೆ ನಮಗೆ ಸಮಯವೇ ಇರುವುದಿಲ್ಲ! ಈ ಸಮಯ ಅನ್ನುವುದು ಒಬ್ಬರಿಗೆ ಒಂದೊಂದು ತರಹ ಇರುತ್ತದೆಯೇ? ಒಬ್ಬರಿಗೆ ೨೪ ಗಂಟೆ, ಇನ್ನೊಬ್ಬರಿಗೆ ೨೦ ಗಂಟೆಯಂತೆ ಇರುತ್ತದೆಯೇ? ಎಲ್ಲರಿಗೂ ಇರುವುದು ಇಪ್ಪನಾಲ್ಕೇ ಗಂಟೆಗಳು! ವಿವೇಕಾನಂದ, ಬುದ್ಧ, ಬಸವಣ್ಣ, ಮಹಾವೀರ, ಮಹಾತ್ಮ ಗಾಂಧಿ, ಗೋಳ್ವಾಲ್ಕರ್, ಚಂದ್ರಶೇಖರ ಆಜಾದ್, ಭಗತ್ ಸಿಂಗ್, ಆಶ್ಫಾಕ್ ಉಲ್ಲಾ ಮುಂತಾದವರಿಗೆ ಇದ್ದದ್ದು, ಈಗ ನಮ್ಮ ನಡುವೆಯೇ ಇರುವ ಸಿದ್ಧಗಂಗಾ ಶ್ರೀಗಳು, ಪಂ. ಸುಧಾಕರ ಚತುರ್ವೇದಿಯವರು, ಸಚಿನ್ ತೆಂಡೂಲ್ಕರ್ ಮುಂತಾದವರಿಗೂ ಇರುವುದು ಇತರ ನಮ್ಮ ನಿಮ್ಮೆಲ್ಲರಿಗೂ ಇರುವಷ್ಟೇ ಸಮಯ! ಸಮಯ ನಿಜವಾದ ಸಮತಾವಾದಿ. ಅದು ಶ್ರೀಮಂತರಿಗೆ, ಬಡವರಿಗೆ, ಆ ಜಾತಿಯವರಿಗೆ, ಈ ಜಾತಿಯವರಿಗೆ, ದಲಿತರಿಗೆ, ಮುಂದುವರೆದವರಿಗೆ, ಕರಿಯರಿಗೆ, ಬಿಳಿಯರಿಗೆ, ದಡ್ಡರಿಗೆ, ಜಾಣರಿಗೆ, ಚಿಕ್ಕವರಿಗೆ, ದೊಡ್ಡವರಿಗೆ, ಗಂಡಸರಿಗೆ, ಹೆಂಗಸರಿಗೆ, ಇತ್ಯಾದಿ ಯಾವುದೇ ಭೇದ ಮಾಡದೇ ಎಲ್ಲರಿಗೂ ಒಂದೇ ರೀತಿಯ ಸಮಯ ಕೊಡುತ್ತದೆ. 
     ಒಬ್ಬ ಯಶಸ್ವಿ ವ್ಯಕ್ತಿಗೆ, ಮಾಡಲು ಬೇಕಾದಷ್ಟು ಕೆಲಸಗಳು ಇದ್ದವರಿಗೆ ಸಮಯ ಸಿಗುತ್ತದೆ. ಆದರೆ ಸೋಮಾರಿಗಳಿಗೆ ಸಿಗುವುದಿಲ್ಲ. ಚಟುವಟಿಕೆಯಿಂದ ಕೂಡಿದ ವ್ಯಕ್ತಿ ತಾನು ಮಾಡಬೇಕೆಂದಿರುವ ಎಲ್ಲಾ ಕೆಲಸಗಳಿಗೂ ಪುರುಸೊತ್ತು ಮಾಡಿಕೊಳ್ಳುತ್ತಾನೆ, ಅರ್ಥಾತ್ ಸಮಯ ಹೊಂದಿಸಿಕೊಳ್ಳುತ್ತಾನೆ. ಅವನು ಸಮಯವನ್ನು ಹೇಗೆ ವಿನಿಯೋಗಿಸಬೇಕೆಂದು ಯೋಜಿಸುತ್ತಾನೆ, ಸಿಗುವ ಸಣ್ಣ ಅವಕಾಶವನ್ನೂ ಉಪಯೋಗಿಸಿಕೊಳ್ಳುತ್ತಾನೆ. ಅದು ಒಬ್ಬ ಯಶಸ್ವಿಯ ಗುಣ, ಸಾಧಕನ ಲಕ್ಷಣ. ಪುರುಸೊತ್ತಿಲ್ಲ ಅನ್ನುವವರು ಸಾಮಾನ್ಯವಾಗಿ ಸಮಯವನ್ನು ಹೇಗೆ ಉಪಯೋಗಿಸಿಕೊಳ್ಳಬೇಕೆಂಬ ಬಗ್ಗೆ ತಲೆ ಕೆಡಿಸಿಕೊಳ್ಳದೆ, ಗೊತ್ತು ಗುರಿಯಿಲ್ಲದೆ ಹೇಗೋ ಕೆಲಸ ಮಾಡುವವರು ಎಂದು ಗೊತ್ತಾಗಿಬಿಡುತ್ತದೆ. ಸಾಧಕರಿಗೂ, ಸಾಮಾನ್ಯರಿಗೂ ಇರುವ ವ್ಯತ್ಯಾಸ ಅವರು ಉಪಯೋಗಿಸಿಕೊಳ್ಳುವ ಸಮಯದ ರೀತಿಯಲ್ಲಿದೆ. ಈ ಸಮಯ ಅನ್ನುವುದು ಎಲ್ಲರಿಗೂ ಉಚಿತವಾಗಿ ಸಿಗುತ್ತದೆ, ಅದಕ್ಕಾಗಿ ಯಾರೂ ಹಣ ಕೊಡಬೇಕಿಲ್ಲ. ಹಾಗೆಂದು ಅದಕ್ಕೆ ಬೆಲೆಯಿಲ್ಲ ಎನ್ನಲಾಗುವುದಿಲ್ಲ, ಅದು ಅಮೂಲ್ಯವಾದುದು. ಅದನ್ನು ಕೊಳ್ಳಲಾಗುವುದಿಲ್ಲ. ಅದನ್ನು ನಾವು ಇಟ್ಟುಕೊಳ್ಳಬಹುದು, ಖರ್ಚು ಮಾಡಬಹುದು. ಆದರೆ ಒಮ್ಮೆ ಅದನ್ನು ಕಳೆದುಕೊಂಡರೆ ಅದನ್ನು ಪುನಃ ಪಡೆಯಲಾಗುವುದೇ ಇಲ್ಲ! 
     'ಹೇಗೋ ಜೀವನ ನಡೆಸಿದರಾಯಿತು' ಅನ್ನುವವರು ಸಮಯದ ಬಗ್ಗೆ ಮಹತ್ವ ಕೊಡಲಾರರು. 'ಹುಟ್ಟಿದ, ಇದ್ದ, ಒಂದು ದಿನ ಸತ್ತ' ಎಂಬ ರೀತಿಯಲ್ಲಿ ಬಾಳಿದವರನ್ನು ಸಮಾಜವಿರಲಿ, ಅವರ ಕುಟುಂಬಸ್ಥರೇ ಕಾಲಾನಂತರದಲ್ಲಿ ಮರೆತುಬಿಡುತ್ತಾರೆ. ನೂರು ವರ್ಷಗಳು ಪೂರ್ಣವಾಗಿ ಬಾಳುವವರ ಸಂಖ್ಯೆ ಕಡಿಮೆ. ಸರಾಸರಿ ೮೦ರಿಂದ೯೦ ವರ್ಷದವರೆಗೆ ಬದುಕುತ್ತಾರೆ ಎಂದಿಟ್ಟುಕೊಳ್ಳೋಣ. ಇದರಲ್ಲಿ ಸುಮಾರು ಮೂರನೆಯ ಒಂದು ಭಾಗದಷ್ಟು, ಕೆಲವರಿಗೆ ಅದಕ್ಕೂ ಹೆಚ್ಚು,  ಅವಧಿ ನಿದ್ದೆಯಲ್ಲಿ ಕಳೆದುಹೋಗುತ್ತದೆ. ಬಾಲ್ಯ ಮತ್ತು ಮುಪ್ಪಿನ ಅವಧಿಯಲ್ಲಿ ಸುಮಾರು ಮೂರನೆಯ ಒಂದು ಭಾಗ ಕಳೆಯುತ್ತದೆ. ಉಳಿಯುವ ಮೂರನೆಯ ಒಂದರಷ್ಟು ಭಾಗದಲ್ಲಿ ಸಂಸಾರದ ಜಂಜಾಟ, ಕಾಯಿಲೆ-ಕಸಾಲೆಗಳು, ಇನ್ನಿತರ ಸಂಗತಿಗಳಿಗೆ ಸಮಯ ಕೊಡಬೇಕು. ಇಷ್ಟೆಲ್ಲಾ ಆಗಿ ಉಳಿಯುವ ಅವಧಿಯಲ್ಲಿ ಏನಾದರೂ ಸಾಧನೆ ಮಾಡುವುದಾದರೆ ಮಾಡಬೇಕು ಎಂದರೆ ಸಮಯದ ಮಹತ್ವದ ಅರಿವು ನಮಗೆ ಆಗುತ್ತದೆ. ಇಷ್ಟಾಗಿಯೂ ಸಾಧನೆ ಮಾಡುವವರಿದ್ದಾರೆ ಎಂದರೆ ಅವರು ಸಮಯದ ಸದ್ವಿನಿಯೋಗ ಮಾಡಿಕೊಳ್ಳುವವರು, ಸಮಯದ ಮಹತ್ವ ಅರಿತವರೇ ಸರಿ. ನಿಜವಾಗಿಯೂ ಸಮಯದ ಅಭಾವವಿಲ್ಲ. ಇರುವುದು ಇರುವ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರ ಜಾಣತನದ ಅಭಾವ ಅಷ್ಟೆ. ಹೆಚ್ಚಿನ ಸಮಯ ಹಳೆಯ ಕಷ್ಟ-ನಷ್ಟಗಳ ಕುರಿತು ಚಿಂತಿಸುವುದರಲ್ಲಿ, ಹಗಲು ಕನಸು ಕಾಣುತ್ತಾ ಮನಸ್ಸಿನಲ್ಲೇ ಮಹಲುಗಳನ್ನು ಕಟ್ಟುವುದರಲ್ಲಿ ಕಳೆದುಹೋಗುತ್ತದೆ. ಸಮಯದ ಒಂದೊಂದು ಕ್ಷಣವೂ ಅಂತಿಮವೇ, ಏಕೆಂದರೆ ಆ ಕ್ಷಣಗಳು ಮತ್ತೆ ಸಿಗುವುದೇ ಇಲ್ಲ ಎಂಬ ಅರಿವು ಇದ್ದವರು ಸಮಯದ ಸದುಪಯೋಗ ಮಾಡಿಕೊಳ್ಳುತ್ತಾರೆ. ನಿಜವಾದ ವಿಚಾರವೆಂದರೆ ಸಮಯ ವ್ಯರ್ಥವಾಗುವುದಿಲ್ಲ, ವ್ಯರ್ಥವಾಗುವುದು ನಮ್ಮ ಜೀವನ, ಇರುವ ಸಮಯವನ್ನು ಉಪಯೋಗಿಸಿಕೊಳ್ಳದಿದ್ದರೆ!
ಸಿಕ್ಕಾಗ ಸಮಯವನು ತಕ್ಕಾಗಿ ಬಳಸಿದೊಡೆ
ಸಿಕ್ಕದುದು ಸಿಕ್ಕುವುದು ದಕ್ಕದುದು ದಕ್ಕುವುದು |
ಕಳೆಯಿತೆಂದರೆ ಒಮ್ಮೆ ಸಿಕ್ಕದದು ಜಾಣ
ಕಾಲದ ಮಹತಿಯಿದು ಕಾಣು ಮೂಢ ||
     ಸಾಧನೆಗೆ ಲಭ್ಯವಾಗುವ ಸಮಯವೇ ಕಡಿಮೆ ಇರುವಾಗ, 'ಹೊತ್ತೇ ಹೋಗುವುದಿಲ್ಲ' ಎನ್ನುವವರು, 'ಟೈಮ್ ಕಳೆಯಲು' ಏನಾದರೂ ಮಾಡಬೇಕಲ್ಲಾ ಎಂದು ಅಲ್ಲಿ, ಇಲ್ಲಿ ಅಡ್ಡಾಡುವವರು, ಇಸ್ಪೀಟು ಆಡುವವರು, ಪಾರ್ಕಿನ ಕಟ್ಟೆಗಳು, ಬೆಂಚುಗಳಲ್ಲಿ ಕುಳಿತು ಹರಟುವವರು, ಇತರರ ವಿಚಾರಗಳಲ್ಲಿ ಮೂಗು ತೂರಿಸುವವರು, ಮುಂತಾದವರು ನಮ್ಮ ನಡುವೆಯೇ ಕಂಡುಬರುತ್ತಾರೆ. ಇವರುಗಳಿಗೆ 'ಮಾಡಬೇಕಾದ' ಕೆಲಸಗಳನ್ನು ಮಾಡಲು ಮಾತ್ರ ಪುರುಸೊತ್ತು ಸಿಗುವುದಿಲ್ಲ. ಸಮಯ ಕಳೆಯುವವರಿಗೆ ವಾಸ್ತವವಾಗಿ ಸಮಯವೇ ಅವರನ್ನು ಕಳೆಯುತ್ತಿದೆ ಎಂಬುದರ ಅರಿವಾಗುವುದಿಲ್ಲ. ಇಂತಹ ಪ್ರವೃತ್ತಿಯಿಂದ ಇವರು ಸ್ವತಃ ತೊಂದರೆಗಳನ್ನೂ ಅನುಭವಿಸುತ್ತಾರೆ. ಆದರೆ ಆಗ 'ಕಾಲ ಮಿಂಚಿದ ಮೇಲೆ ಚಿಂತಿಸಿದಂತೆ' ಆಗಿರುತ್ತದೆ. ಅವರು ಆಗ ಹೇಳುವುದೇನೆಂದರೆ, 'ನಮ್ಮ ಟೈಮೇ ಸರಿಯಿಲ್ಲ'. ಸರಿಯಿಲ್ಲದಿರುವುದು ಟೈಮೋ. ಅವರೋ? ಇಲ್ಲಿ ಇನ್ನೊಂದು ಅಪಾಯವೂ ಇದೆ. ದುಡಿದು ಉಣ್ಣುವವರು ಸಮಯವನ್ನು ಗೌರವಿಸುವವರಾದರೆ, ಈ ಮಾಡಬೇಕಾದ ಕೆಲಸಗಳನ್ನು ಮಾಡಲು ಪುರುಸೊತ್ತು ಮಾಡಿಕೊಳ್ಳದೆ, 'ದುಡಿಯದೇ' ಉಣ್ಣಬಯಸುವವರಲ್ಲಿ ಕೆಲವರಾದರೂ ಶ್ರಮಪಡದೇ ಹಣ ಗಳಿಸಲು ಕಳ್ಳತನ, ದರೋಡೆ, ವಂಚನೆ, ಇತ್ಯಾದಿಗಳಲ್ಲಿ ತೊಡಗಿ ಸಮಾಜಕಂಟಕರೂ ಆಗುವವರಿರುತ್ತಾರೆ.
     ಸಮಯ ಅದ್ಭುತ ಸಂಜೀವಿನಿ ಇದ್ದಂತೆ. ಅದು ನೋವನ್ನು ಮರೆಸುತ್ತದೆ, ಸತ್ಯವನ್ನು ಹೊರತರುತ್ತದೆ, ಪಾಪಿಗಳನ್ನು ಶಿಕ್ಷಿಸುತ್ತದೆ, ನ್ಯಾಯ ನೀಡುತ್ತದೆ. ಅದು ಕಿಲಾಡಿ ಕೂಡಾ! ಕಾಯುವವರಿಗೆ ದೀರ್ಘವಾಗಿರುತ್ತದೆ, ಭಯಪಡುವವರ ಹತ್ತಿರ ಧಾವಿಸುತ್ತದೆ, ಶೋಕಿಸುವವರಿಗೆ, ಚಿಂತಿಸುವವರಿಗೆ ಅತಿ ಉದ್ದವಾಗಿರುತ್ತದೆ, ಸಂತೋಷಪಡುವವರಿಗೆ ಚಿಕ್ಕದಾಗಿರುತ್ತದೆ, ಆದರೆ ಅದನ್ನು ಪ್ರೀತಿಸುವವರಿಗೆ ಮಾತ್ರ ಶಾಶ್ವತವಾಗಿರುತ್ತದೆ. ಸಂತೋಷವಾಗಿರುವುದಕ್ಕೆ ಸಮಯ ಕಂಡುಕೊಳ್ಳದಿದ್ದರೆ, ದುಃಖ ಪಡುವುದಕ್ಕೆ ಸಮಯ ಬಂದುಬಿಡುತ್ತದೆ.
     'ಕಾಲಾಯ ತಸ್ಮೈ ನಮಃ'. ನಾವು ವಿಳಂಬ ಮಾಡಬಹುದು. ಸಮಯ ಮಾತ್ರ ವಿಳಂಬಿಸುವುದೇ ಇಲ್ಲ. ಸಾಮಾನ್ಯವಾಗಿ ಸಮಯಪಾಲನೆ ಮಾಡುವವರು ಮೌಲ್ಯಗಳಿಗೆ ಮಹತ್ವ ಕೊಡುವವರಾಗಿರುತ್ತಾರೆ ಎಂಬುದು ಅಂತಹವರನ್ನು ಗಮನಿಸಿದರೆ ಗೊತ್ತಾಗುತ್ತದೆ. ಏನನ್ನಾದರೂ ಸಾಧಿಸಬೇಕೆಂದರೆ ಮೊದಲು ನಾವು ಮಾಡಬೇಕಾದ ಕೆಲಸಗಳೇನು, ಅದಕ್ಕಾಗಿ ಕೊಡುವ ಸಮಯವೇನು ಎಂಬುದನ್ನು ನಿರ್ಧರಿಸಿ ತಕ್ಕಂತೆ ಯೋಜಿಸಬೇಕು. ಮನಸ್ಸಿನಲ್ಲಿ ದೊಡ್ಡ ದೊಡ್ಡ ಯೋಜನೆಗಳನ್ನು ಇಟ್ಟುಕೊಂಡು, ಮನಸ್ಸಿನಲ್ಲೇ ಲೆಕ್ಕ ಹಾಕುತ್ತಾ ಕುಳಿತುಬಿಟ್ಟರೆ ಯೋಜನೆಗಳು ಕನಸಿನಲ್ಲೇ ಉಳಿಯುತ್ತವೆ. ಕನಸು ನನಸಾಗಬೇಕಾದರೆ ಅದಕ್ಕಾಗಿ ಬೇಕಾದ ನಿಶ್ಚಿತ ಸಮಯವನ್ನು ಅದಕ್ಕೆ ಕೊಡಲೇಬೇಕು. 
     ನಮ್ಮ ಏಳಿಗೆಯಲ್ಲಿ, ಅಭಿವೃದ್ಧಿಯಲ್ಲಿ ಸುತ್ತಲಿನ ಸಮಾಜದ ಕೊಡುಗೆ ಅಪಾರವಾಗಿದೆ. ಆ ಸಮಾಜಕ್ಕೆ ನಾವೂ ಏನಾದರೂ ಕೊಡದೇ ಇದ್ದರೆ ನಾವು ಸಾಲಗಾರರಾಗಿಬಿಡುತ್ತೇವೆ. ಸಮಾಜದ ಋಣ ತೀರಿಸಲು ಸಮಾಜಕ್ಕಾಗಿಯೂ ದಿನದ ಸ್ವಲ್ಪ ಕಾಲವನ್ನಾದರೂ ಮೀಸಲಿಡುವುದು ನಮ್ಮ ಕರ್ತವ್ಯವಾಗಬೇಕು. ದಿನನಿತ್ಯದ ಕೆಲಸಗಳು, ನಿದ್ದೆ, ಮನೆಕೆಲಸಗಳು, ವ್ಯಾಯಾಮ, ಅಧ್ಯಯನ, ಧ್ಯಾನ, ಇತ್ಯಾದಿಗಳಿಗೆ ನಿಗದಿತ ಸಮಯವನ್ನು ಧಾರಾಳವಾಗಿ ಕೊಟ್ಟರೂ, ದಿನಕ್ಕೆ ಒಂದೆರಡು ಗಂಟೆಗಳನ್ನಾದರೂ ಸಮಾಜ, ದೇಶ, ಧರ್ಮ ಸಂಬಂಧಿತ ಕೆಲಸಗಳಿಗೆ ಸಮಯಾವಕಾಶ ಮಾಡಿಕೊಳ್ಳುವುದು ಕಷ್ಟವೇನಲ್ಲ. ಕಷ್ಟ ಸಮಯದ ಅಭಾವದ್ದಲ್ಲ, ಸೋಮಾರಿ ಮನಸ್ಸಿನದು ಎಂಬುದು ನಮಗೇ ಗೊತ್ತಾಗುತ್ತದೆ. ಸ್ವಂತ ಕೆಲಸಗಳಿಗಲ್ಲದೆ ಸಮಾಜ, ದೇಶಕ್ಕಾಗಿ, ಜನಸೇವೆಗಾಗಿ ಸಮಯವನ್ನು ಮೀಸಲಾಗಿಡುವವರೇ ದೊಡ್ಡವರು ಎನಿಸಿಕೊಳ್ಳುವವರು. ಮನಸ್ಸು ಮಾಡಿದರೆ ನಾವೂ ದೊಡ್ಡವರಾಗಬಹುದು! ನಮಗೂ ಸಮಯವಿದೆ!!
-ಕ.ವೆಂ.ನಾಗರಾಜ್.
**************
[31-03-2014ರ ಜನಮಿತ್ರ ಪತ್ರಿಕೆಯಲ್ಲಿ ಪ್ರಕಟಿತ.]

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ