ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಏಪ್ರಿಲ್ 28, 2015

ಪ್ರಾಣ ಅರ್ಥಾತ್ ಜೀವ




ತನ್ನಿಷ್ಟ ಬಂದಂತೆ ನಯನ ನೋಡುವುದೆ?
ತನ್ನಿಚ್ಛೆಯಂತೆ ಕೈಕಾಲು ಆಡುವುವೆ? |
ತನುವಿನೊಳಗಿಹ ಅವನಿಚ್ಛೆಯೇ ಪರಮ
ಅವನಿರುವವರೆಗೆ ಆಟವೋ ಮೂಢ ||       
     ಜೀವ ಎಂದರೇನೆಂದು ಅರ್ಥ ಮಾಡಿಕೊಳ್ಳುವುದು ಬಹಳ ಕಷ್ಟ. ಪ್ರಾಣ ಎಂದು ಕರೆಯಲ್ಪಡುವ ಜೀವ ಎಂಬ ಪದವನ್ನು ಬಹಳ ಸಲ ಪ್ರಯೋಗಿಸುತ್ತೇವೆ, ಆದರೆ ಅದು ಏನು ಎಂಬುವುದನ್ನು ನಮಗೆ ವಿವರಿಸಲಾಗುವುದಿಲ್ಲ. ನಮ್ಮ ದೈನಂದಿನ ಚಟುವಟಿಕೆಗಳಿಗೆ ಜೀವ ಎಂದ ಗುರುತಿಸುವುದು ನಮ್ಮ ತಪ್ಪು ಗ್ರಹಿಕೆ. ಈ ಜೀವ ನಿಗೂಢವಾದುದು. ಜೀವ ಅಥವ ಪ್ರಾಣ ಅನ್ನುವುದು ನಿಜವಾದ ನಾವು! ಅದು ಉಸಿರಾಡುವ ಕ್ರಿಯೆಯಲ್ಲ, ಆದರೆ ಜೀವತತ್ತ್ವವೇ ಆಗಿದ್ದು ಅದಿಲ್ಲದಿದ್ದರೆ ಸ್ವಪ್ರಜ್ಞೆಯಾಗಲೀ, ಯಾವುದೇ ಚಟುವಟಿಕೆಯಾಗಲೀ ಸಾಧ್ಯವೇ ಇಲ್ಲ. ಈ ನಮ್ಮ ಜೀವ ಅನ್ನುವುದು ಅನಂತದ ಮತ್ತು ಅಂತ್ಯದ ಗಡಿರೇಖೆ ಎಂದುಕೊಂಡರೆ ನಮ್ಮ ವ್ಯಕ್ತಿತ್ವದ ಅಸ್ತಿತ್ವಕ್ಕೆ ಕಾರಣವಾದ ಜೀವ ಅನಂತವನ್ನು ಅಂತದೊಂದಿಗೆ ಸಂಕುಚಿಸಿದಂತೆ ಅಥವ ಅಂತವು ಅನಂತದೆಡೆಗೆ ಧಾವಿಸುವ ಪ್ರಾರಂಭಿಕ ರೀತಿಯಂತೆ ಭಾವಿಸಿದರೆ ಉಂಟಾಗುವ ಭಾವನೆ ಅನಿರ್ವಚನೀಯ. ಈ ಕೂಡುವ ಸ್ಥಳ ಇದೆಯಲ್ಲಾ, ಅದೇ ಜೀವ! ಅದು ಅಂತವನ್ನೂ ಪ್ರತಿನಿಧಿಸುತ್ತದೆ, ಅನಂತವನ್ನೂ ಪ್ರತಿನಿಧಿಸುತ್ತದೆ. ಹಾಗಾಗಿ ಈ ಜೀವವನ್ನು ನಿಗೂಢ ಎಂದಿರುವುದು! ಅದು ವ್ಯಕ್ತಿಗತವೂ ಅಲ್ಲ, ಇಡೀ ವಿಶ್ವದ್ದೂ ಅಲ್ಲ. ಅದೇನೆಂದು ನಮಗೆ ಗೊತ್ತಿಲ್ಲ, ಅದನ್ನು ವಿವರಿಸಲೂ ನಮಗೆ ಆಗದು. ಆದರೂ ಅದೇನೇ ಇರಲಿ, ಈ ಜೀವ ಅಥವ ಪ್ರಾಣ ಅನ್ನುವುದು ಇತರ ಎಲ್ಲಕ್ಕಿಂತಲೂ ಹಿರಿದಾದುದು ಎಂಬುದರಲ್ಲಿ ಎರಡು ಮಾತಿಲ್ಲ. ಇದನ್ನೇ ಜೀವದ ಮಹತ್ವ ಎನ್ನುವುದು. ಈ ಜೀವ ಅನ್ನುವುದು ಕೇವಲ ಜೈವಿಕ ಚಟುವಟಿಕೆಯಲ್ಲ, ಜೈವಿಕ ಕೆಲಸವಲ್ಲ, ವೈಯಕ್ತಿಕ ಅಥವ ಸಾಮಾಜಿಕ ಜೀವನವಲ್ಲ, ಆದರೆ ಅದಕ್ಕೂ ಹಿರಿದದ್ದಾಗಿದೆ.
     'ಅವರು ನಮ್ಮ ತಂದೆ', 'ಇವರು ನಮ್ಮ ತಾಯಿ', 'ಇವನು ನನ್ನ ಅಣ್ಣ/ತಮ್ಮ' 'ಇವಳು ನನ್ನ ಅಕ್ಕ/ತಂಗಿ' ಎಂದೆಲ್ಲಾ ಹೇಳುತ್ತೇವಲ್ಲಾ ಹೀಗಂದರೆ ಏನು? ಅವರುಗಳ ಶರೀರವನ್ನು ನಾವು ತಂದೆ, ತಾಯಿ, ಅಣ್ಣ, ತಮ್ಮ, ಇತ್ಯಾದಿ ಭಾವಿಸುತ್ತೇವೆಯೇ? ಅವರುಗಳಲ್ಲಿ ಇರುವ ಏನೋ ಒಂದನ್ನು ನಾವು ತಂದೆ, ತಾಯಿ, ಇತ್ಯಾದಿಯಾಗಿ ಕಾಣುತ್ತೇವೆ. ನಾವು ಯಾರು ಎಂಬುದನ್ನು ನಮಗೇ ಹೇಳುವುದು ಕಷ್ಟ, ಇನ್ನು ಇತರರ ಮಾತೇನು? ಹಾಗಾಗಿ ಉಪನಿಷತ್ತು ಹೇಳುತ್ತದೆ: 'ಪ್ರಾಣವೇ ತಂದೆ, ಪ್ರಾಣವೇ ತಾಯಿ, ಪ್ರಾಣವೇ ಸೋದರ, ಪ್ರಾಣವೇ ಉಸಿರು, ಪ್ರಾಣವೇ ಗುರು, ಪ್ರಾಣವೇ ಬ್ರಹ್ಮ!' ಒಂದು ಚಕ್ರದ ಕೀಲುಗಳು ಹೇಗೆ ಅದರ ಮಧ್ಯಭಾಗದಲ್ಲಿ ಜೋಡಿಸಲ್ಪಟ್ಟಿವೆಯೋ, ಹಾಗೆ ಪ್ರತಿಯೊಂದು ಸಂಗತಿಯೂ ಸಹ ಜೀವತತ್ತ್ವಕ್ಕೆ ಪೋಣಿಸಲ್ಪಟ್ಟಿವೆ. ಈ ಪ್ರಪಂಚದಲ್ಲಿ ಯಾವುದೇ ಮೌಲ್ಯವಿರುವ, ಅರ್ಥವಿರುವ ಸಂಗತಿ ಅನ್ನುವುದು ಏನಾದರೂ ಇದ್ದರೆ ಅದು ಪ್ರಾಣ ಹೊರತುಪಡಿಸಿ ಮತ್ತಾವುದೂ ಅಲ್ಲ. ಪ್ರಾಣವಿರದಿದ್ದರೆ ಯಾವುದಕ್ಕೂ ಅರ್ಥವೇ ಇರುವುದಿಲ್ಲ. ನಮ್ಮ ಪ್ರಾಮುಖ್ಯತೆ ನಾವು ಬದುಕಿರುವವರೆಗೆ ಮಾತ್ರ. ಬದುಕಿರುವವರೆಗೆ ಮಾತ್ರ ನಮಗೆ ಬೆಲೆ. ನಮ್ಮಲ್ಲಿ ಪ್ರಾಣವಿರದಾಗ ನಾವು ಯಾರು? ನಾವು ಏನೂ ಅಲ್ಲ. ನಾವು ಬದುಕಿದ್ದಾಗ ನಾವು ನಮ್ಮ ಶರೀರವನ್ನು 'ನಾವು' ಎಂದು ಅಂದುಕೊಂಡಿರುತ್ತೇವಲ್ಲಾ ಅದು ವಾಸ್ತವವಾಗಿ 'ನಾವು' ಆಗಿರುವುದಿಲ್ಲ. ಆ 'ನಾವು' ಅನ್ನುವುದು ವಾಸ್ತವವಾಗಿ 'ಪ್ರಾಣ'ವೇ ಆಗಿದೆ.
ಪ್ರಾಣವಿದ್ದರೆ ತ್ರಾಣ ಪ್ರಾಣದಿಂದಲೆ ನೀನು
ಪ್ರಾಣವಿರದಿರೆ ದೇಹಕರ್ಥವಿಹುದೇನು?|
ನಿನಗರ್ಥ ನೀಡಿರುವ ಜೀವಾತ್ಮನೇ ನೀನು 
ನೀನಲ್ಲ ತನುವೆಂಬುದರಿಯೋ ಮೂಢ|| 
     ಯಾರಾದರೂ ತನ್ನ ತಂದೆ ಅಥವ ತಾಯಿಗೆ ಕೆಟ್ಟದಾಗಿ ಮಾತನಾಡಿದರೆ, "ಎಂತಹ ಕೃತಘ್ನ ಅವನು! ತನ್ನ ತಂದೆಗೇ/ತಾಯಿಗೇ ಅಸಂಬದ್ಧವಾಗಿ ಮಾತನಾಡುತ್ತಾನೆ" ಎಂದೆನ್ನುತ್ತಾರೆ. ತಂದೆ-ತಾಯಿಗಳಿಗೆ, ಹಿರಿಯರಿಗೆ, ವಿದ್ವಜ್ಜನರಿಗೆ ಗೌರವ ಕೊಡುವುದು ನಮ್ಮ ಸಂಪ್ರದಾಯದಲ್ಲೇ ಬಂದಿದೆ. ಅಂತಹವರನ್ನು ಅಗೌರವಿಸಿ ಮಾತನಾಡಿದರೆ ತಿಳಿದವರು ಹಾಗೆ ಮಾಡದಿರಲು ಎಚ್ಚರಿಸುತ್ತಾರೆ. ಈ ಪ್ರಪಂಚದಲ್ಲಿ ನಾವು ಮಾನವತೆಗೆ, ಸಾಮಾಜಿಕ ಜೀವನಕ್ಕೆ ಬೆಲೆ ಕೊಡುತ್ತೇವೆ. ಇದಕ್ಕೆ ವಿರುದ್ಧವಾಗಿ ಹೋಗುವವರನ್ನು, ಹಿರಿಯರನ್ನು ಧಿಕ್ಕರಿಸುವವರನ್ನು ನಾವು ಶಪಿಸುತ್ತೇವಲ್ಲವೇ? 'ನೋಡು, ಜನರನ್ನು ನೋಯಿಸಬೇಡ' ಎಂದು ಉಪದೇಶಿಸುತ್ತೇವೆ. ಈ 'ಜನರು' ಅಂದರೆ ಯಾರು? 'ನೋಯಿಸುವುದು' ಅಂದರೆ ಏನು? ಜನರು ಅಂದರೆ ಖಂಡಿತ ಶರೀರಗಳಂತೂ ಅಲ್ಲ! ಅಸಭ್ಯ ವ್ಯಕ್ತಿಯಿಂದ ಯಾರಿಗಾದರೂ ನೋವಾಗುತ್ತದೆ ಎಂದರೆ ಅವನ ಪ್ರಾಣತತ್ತ್ವಕ್ಕೆ ಘಾಸಿಯಾಗಿದೆ ಎಂದರ್ಥ. ಬಿಡಿಸಿ ಹೇಳಬೇಕೆಂದರೆ ವ್ಯಕ್ತಿಯೆಂದರೆ ಆತನು ಹೊಂದಿರುವ ಸುಂದರ ಶರೀರವಲ್ಲ, ಅವನಲ್ಲಿರುವ 'ಪ್ರಾಣ'ವೇ ಹೊರತು ಬೇರೆ ಅಲ್ಲ. ಯಾರಾದರೂ ಮನಸ್ಸಿಗೆ ಘಾಸಿಯಾಗುವಂತೆ ಮಾತನಾಡಿದರೆ, 'ಅಯ್ಯೋ, ಸುಮ್ಮನಿರು, ನನ್ನ ಪ್ರಾಣ ಹಿಂಡಬೇಡ' ಎನ್ನುತ್ತೇವೆ. ತಂದೆ, ತಾಯಿ, ಹಿರಿಯರನ್ನು ಅಗೌರವಿಸಿದರೆ ಅವರುಗಳು ಹೊಂದಿರುವ ಶರೀರವನ್ನು ಅಗೌರವಿಸಿದಂತೆ ಅಲ್ಲ, ಅವರಲ್ಲಿರುವ ಪ್ರಾಣತತ್ತ್ವವನ್ನು ಅಗೌರವಿಸಿದಂತೆ! ಅವರುಗಳ ಶರೀರಗಳಲ್ಲಿರುವ ಆ ಪ್ರಾಣತತ್ವ ಹೊರಟುಹೋದಾಗ ಏನಾಗುತ್ತದೆ? ಎಲ್ಲವೂ ಬದಲಾಗಿಬಿಡುತ್ತದೆ. ತಂದೆ ಎಂದು ಗೌರವಿಸಲ್ಪಡುತ್ತಿದ್ದ ವ್ಯಕ್ತಿ ಸತ್ತರೆ ಅವನ ಮಗ ತಂದೆಯ ದೇಹವನ್ನು ಚಿತೆಯಲ್ಲಿರಿಸಿ ಸುಡುತ್ತಾನೆ ಅಥವ ತನ್ನ ಸಂಪ್ರದಾಯದಂತೆ ಹೂಳುವುದೋ ಮತ್ತೇನನ್ನೋ ಮಾಡುತ್ತಾನೆ. ಆಗ ಯಾರಾದರೂ, 'ಅವನು ತಂದೆಯನ್ನೇ ಸುಡುತ್ತಿದ್ದಾನೆ/ಹೂಳುತ್ತಿದ್ದಾನೆ' ಎಂದು ಆಕ್ಷೇಪಿಸುತ್ತಾರೇನು? ಕೆಲವೇ ಘಂಟೆಗಳ ಹಿಂದೆ ಬದುಕಿದ್ದಾಗ ಇದ್ದ ಮಹತ್ವ ಸತ್ತ ಕೂಡಲೇ ಇಲ್ಲವಾಗುತ್ತದೆ. ಅದು ನಮ್ಮ ಪ್ರೀತಿಪಾತ್ರರಾದ ಯಾರೇ ಆಗಬಹುದು, ಗುರು ಆಗಬಹುದು, ಸಾಮಾಜಿಕ ನಾಯಕನಾಗಿರಬಹುದು, ಚಕ್ರವರ್ತಿಯೇ ಇರಬಹುದು. ಅದರಲ್ಲಿ ಏನೂ ವ್ಯತ್ಯಾಸವಾಗದು. ಅವರನ್ನು ಸುಡುವುದೋ, ಹೂಳುವುದೋ, ಮತ್ತೊಂದೇನನ್ನೋ ಮಾಡುತ್ತೇವೆ. ಜನ ಏನೆನ್ನುತ್ತಾರೆ? "ಉತ್ತಮ ರೀತಿಯಲ್ಲಿ ಸಂಸ್ಕಾರ ಮಾಡಿ ಒಳ್ಳೆಯ ಕೆಲಸ ಮಾಡಿದೆ" ಅನ್ನುತ್ತಾರೆ! ಬದುಕಿದ್ದಾಗ ಹೀಗೆ ಮಾಡಿದರೆ? ಕೊಲೆ ಅನ್ನುತ್ತಾರೆ, ಹೀನಕೃತ್ಯ ಅನ್ನುತ್ತಾರೆ! ವ್ಯತ್ಯಾಸ ಗೊತ್ತಾಯಿತಲ್ಲವೇ? ನಾವು ಗೌರವಿಸುವುದು, ಗೌರವಿಸಬೇಕಿರುವುದು ಶರೀರಗಳನ್ನಲ್ಲ, ಶರೀರದೊಳಗಿನ ಪ್ರಾಣತತ್ವಗಳನ್ನು! 'ಅಯ್ಯೋ, ನಮ್ಮ ತಂದೆ ಹೋಗಿಬಿಟ್ಟರು' ಎಂದು ಶೋಕಿಸುತ್ತೇವೆ. ಎಲ್ಲಿಗೆ ಹೋದರು? ತಂದೆ ಅನ್ನುವುದು ಅವರು ಹೊಂದಿದ್ದ ಶರೀರವಲ್ಲ, ಆ ಶರೀರದೊಳಗಿನ ಪ್ರಾಣತತ್ವ ಎಂಬ ಅರಿವು ಮೂಡಿದಾಗ, ಆ ಪ್ರಾಣತತ್ವಕ್ಕೆ ಸಾವಿಲ್ಲ ಎಂದುಕೊಂಡಾಗ ನಮ್ಮ ಚಿಂತನಾಧಾಟಿಯೇ, ಜೀವನವನ್ನು ನೋಡುವ ರೀತಿಯೇ ಬದಲಾಗಿಬಿಡುತ್ತದೆ. ಮನಸ್ಸು ಸದ್ವಿಚಾರಗಳಲ್ಲಿ ತೊಡಗಿಸಿಕೊಳ್ಳುತ್ತದೆ.
ಕಾಣದದು ನಯನ  ಕಿವಿಗೆ ಕೇಳಿಸದು
ಮುಟ್ಟಲಾಗದು ಕರ ತಿಳಿಯದು ಮನ |
ಬಣ್ಣಿಸಲು ಸಿಗದು ಪ್ರಮಾಣಕೆಟುಕದು
ಅವ್ಯಕ್ತ ಆತ್ಮದರಿವು ಸುಲಭವೇ ಮೂಢ? || 
     ಇಡೀ ಜೀವನವೆನ್ನುವುದು ಈ ರಹಸ್ಯಮಯ ಪ್ರಾಣವೇ ಆಗಿದ್ದು, ಅದು ಹಲವು ಹೆಸರುಗಳಲ್ಲಿ, ಹಲವು ಪ್ರಾಕಾರಗಳಲ್ಲಿ ಗೋಚರವಾಗುತ್ತದೆ. ನಾವು ಈ ಹಲವು ವಿಧಗಳನ್ನು ನಮ್ಮ ಕಣ್ಣುಗಳು ಕಾಣುವ ರೀತಿಯಲ್ಲೇ ಭಾವಿಸಿ ಮೋಸ ಹೋಗುತ್ತೇವೆ. ಜೀವಚೈತನ್ಯವಿರುವ ಎಲ್ಲದರಲ್ಲೂ ಈ ಶ್ರೇಷ್ಠ ಪ್ರಾಣತತ್ವವನ್ನು ಕಾಣಬಹುದು. ಸಸ್ಯಗಳಲ್ಲಿ ಕೆಲವು ಪ್ರಮಾಣದಲ್ಲಿ, ಪ್ರಾಣಿಗಳಲ್ಲಿ ಹೆಚ್ಚಿನ ಪ್ರಮಾಣಗಳಲ್ಲಿ ಮತ್ತು ಮನುಷ್ಯರಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಈ ಪ್ರಾಣತತ್ವ ಕಂಡುಬರುತ್ತದೆ. ಈ ಹೆಚ್ಚಿನದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಇದು ಇನ್ನೂ ಮೇಲ್ಪಟ್ಟವರಲ್ಲಿ ಕಂಡುಬರಲೇಬೇಕು. ನಾವು ನಿಜವಾಗಿಯೂ ಎಲ್ಲಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾದ ಹಂತದಲ್ಲಿ ಬಂದು ನಿಂತಿದ್ದೇವೆ. ನಾವು ಯಾವುದರ ಬಗ್ಗೆ ಚರ್ಚಿಸುತ್ತಿದ್ದೇವೆಯೋ ಅದರ ಬಗ್ಗೆ ಸಹ ನಮಗೆ ಪೂರ್ಣ ಜ್ಞಾನವಿಲ್ಲ. ಈ ಪ್ರಾಣತತ್ವದ ಬಗ್ಗೆ ಯಾರಿಗೆ ಅರಿವಿದೆಯೋ, ಯಾರು ಈ ರಹಸ್ಯಾತ್ಮಕ ಪ್ರಾಣತತ್ವವು ಎಲ್ಲಕ್ಕಿಂತಲೂ ಹಿರಿದೆಂಬ ವಿಚಾರದಲ್ಲಿ ಹೆಚ್ಚು ತಿಳುವಳಿಕೆ ಹೊಂದಿರುತ್ತಾರೋ ಅವರನ್ನು ಜ್ಞಾನದ ಒಡೆಯರೆನ್ನಬಹುದು. ಅಂತಹವರ ಉದ್ಗಾರಗಳು ಸಾಮಾನ್ಯವಾಗಿ ಸತ್ಯವಾದುದಾಗಿರುತ್ತವೆ.
     ಜೀವದ ಬಗ್ಗೆ, ಜೀವತತ್ವದ ಬಗ್ಗೆ ಜ್ಞಾನ ಹೊಂದಿರುವವರು ನಿಜಕ್ಕೂ ಶ್ರೇಷ್ಠ ಜ್ಞಾನಿಗಳಾಗಿರುತ್ತಾರೆ. ಏಕೆಂದರೆ ಈ ಜ್ಞಾನ ನಮ್ಮಂತಹ ಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗಲಾರದು. ಅಂತಹ ಜ್ಞಾನ ನಿಜಕ್ಕೂ ಅತೀಂದ್ರಿಯದ್ದಾಗಿರುತ್ತದೆ. ಅಂತಹವರು ಆಡುವ ಮಾತುಗಳು ಸತ್ಯದಿಂದ ತುಂಬಿ ತುಳುಕುತ್ತಿರುತ್ತವೆ. ಅವರು ಹೇಳುವ ಮಾತುಗಳು ಸತ್ಯವಾಗುತ್ತವೆ, ಹೇಳಿದಂತೆ ನಡೆಯುತ್ತವೆ, ಏಕೆಂದರೆ ಅವರು ಹೊಂದಿರುವ ಜ್ಞಾನ ಅಂತಹುದಾಗಿರುತ್ತದೆ. ಅವಧೂತರುಗಳು, ಮಹಾಮಹಿಮರ ವಿಚಾರದಲ್ಲಿ ಇಂತಹ ಅನುಭವ ಕಂಡಿರುವ ನೂರಾರು ನಿದರ್ಶನಗಳಿವೆ. ಅವರು ಆಡುವ ಕೆಲವು ಮಾತುಗಳು ಸಾಮಾನ್ಯರಿಗೆ ಅರ್ಥವಾಗದಾದಾಗ, "ಸ್ವಾಮಿ, ನಿಮ್ಮ ಮಾತು ನಮಗೆ ಅರ್ಥವಾಗಲಿಲ್ಲ" ಎಂದರೆ ಅವರಿಂದ ಬರಬಹುದಾದ ಉತ್ತರ, "ಅರ್ಥ ಕಟ್ಟಿಕೊಂಡು ನಿನಗೇನಾಗಬೇಕು? ಇದು ನಿನಗೆ ಅರ್ಥವಾಗಲೂಬಾರದು". ನಿಜ, ಇಂತಹ ಸಂಗತಿಗಳು ನಾವೇ ಅರ್ಥ ಮಾಡಿಕೊಳ್ಳುವ ಹಂತಕ್ಕೆ ನಾವು ಏರಿದಾಗ ಮಾತ್ರ ನಮಗೆ ಅರ್ಥವಾಗಬಹುದು. ನಾವು ಅಂತರಂಗದಲ್ಲಿ ಬೆಳೆಯುತ್ತಾ ಹೋದಂತೆ ಸತ್ಯದ ಹತ್ತಿರ ಹತ್ತಿರಕ್ಕೆ ತಲುಪುತ್ತಾ ಹೋಗುತ್ತೇವೆ.
ಪರಮಾತ್ಮ ನೀಡಿಹನು ಪರಮ ಸಂಪತ್ತು
ವಿವೇಚಿಪ ಶಕ್ತಿ ಮೇಣ್ ಮನಸಿನ ಬಲವು |
ನಿನಗೆ ನೀನೆ ಮಿತ್ರ ಸರಿಯಾಗಿ ಬಳಸಿದೊಡೆ
ಇಲ್ಲದಿರೆ ನಿನಗೆ ನೀನೆ ಅರಿಯು ಮೂಢ || 
-ಕ.ವೆಂ.ನಾಗರಾಜ್.
**************
ದಿನಾಂಕ 6.04.2015ರ ಜನಮಿತ್ರ ಪತ್ರಿಕೆಯ 'ಚಿಂತನ' ಅಂಕಣದಲ್ಲಿ ಪ್ರಕಟಿತ:

ಗುರುವಾರ, ಏಪ್ರಿಲ್ 9, 2015

'ಬದುಕುವ' ಆಸೆ!


ಬಂಡಿಗೊಡೆಯನು ನೀನೆ ಪಯಣಿಗನು ನೀನೆ
ಅವನ ಕರುಣೆಯಿದು ಅಹುದಹುದು ತಾನೆ |
ಗುರಿಯ ಅರಿವಿರಲು ಸಾರ್ಥಕವು ಪಯಣ
ಗುರಿಯಿರದ ಪಯಣ ವ್ಯರ್ಥ ಮೂಢ ||
     ನಮ್ಮ ಅಸ್ತಿತ್ವ ಎಷ್ಟು ಮಹತ್ವದ್ದಾಗಿದೆ, ನಮ್ಮ ಅಸ್ತಿತ್ವವಿದ್ದರೆ ಎಲ್ಲವೂ ಇರುತ್ತದೆ, ಇಲ್ಲದಿದ್ದರೆ ಏನೂ ಇರುವುದಿಲ್ಲವೆಂಬ ಚಮತ್ಕಾರಿಕ ಸಂಗತಿಯ ಬಗ್ಗೆ ಹಿಂದಿನ ಲೇಖನದಲ್ಲಿ ಚರ್ಚಿಸಿದೆವು. ಈ ಅಸ್ತಿತ್ವಕ್ಕಿಂತಲೂ ಮಹತ್ವವಾಧ ಸಂಗತಿ ಇದ್ದು, ಅದು ನಮ್ಮ ಅಸ್ತಿತ್ವಕ್ಕೆ ಮೂಲಕಾರಣವಾಗಿದೆ. ತರ್ಕದ ಎಳೆಯನ್ನು ಬಿಡಿಸುತ್ತಾ ಹೋದಂತೆ ನಮಗೆ ಸತ್ಯದ ಅರಿವಾಗುತ್ತಾ ಹೋಗುತ್ತದೆ. ವೇದಗಳು ಹೇಳುವುದೂ ಇದನ್ನೇ! ಸತ್ಯವನ್ನು ಕಂಡುಕೊಳ್ಳಿರಿ, ಸತ್ಯವನ್ನು ಆವಿಷ್ಕರಿಸಿರಿ, ಅಸತ್ಯವೆಂದು ಕಂಡುದನ್ನು ಕಿತ್ತೆಸೆಯಿರಿ. (ಯೂಯಂ ತತ್ ಸತ್ಯಶವಸ ಆವಿಷ್ಕರ್ತ ಮಹಿತ್ವನಾ | ವಿಧ್ಯತಾ ವಿದ್ಯುತಾ ರಕ್ಷಃ || -ಋಕ್.೧.೮೬.೯) ಯಾವುದನ್ನೂ ಕಣ್ಣು ಮುಚ್ಚಿ ಒಪ್ಪಬೇಕಿಲ್ಲ, ಯಾರೋ ಹೇಳಿದರೆಂದು ಕೇಳಬೇಕಿಲ್ಲ, ಕೇಳಿರಿ, ತಿಳಿಯಿರಿ, ವಿಚಾರ ಮಾಡಿರಿ, ಚರ್ಚಿಸಿರಿ, ಅಂತರಂಗಕ್ಕೆ ಒಪ್ಪಿಗೆಯಾದರೆ ಸ್ವೀಕರಿಸಿ, ಸತ್ಯವನ್ನು ನೀವೇ ಕಂಡುಕೊಳ್ಳಿ ಎಂಬ ಮಾತು ವೈಚಾರಿಕ ಪ್ರಜ್ಞೆ ಇರಬೇಕೆಂಬುದನ್ನು ಒತ್ತಿ ಹೇಳುತ್ತದೆ.
     ಈ ಅಸ್ತಿತ್ವ ಅನ್ನುವುದು ತನ್ನಿಂದ ತಾನೇ ಪರಿಪೂರ್ಣವಲ್ಲ. ಅಸ್ತಿತ್ವದಲ್ಲಿರುವ ಬಯಕೆ ಅದಕ್ಕೂ ಮೊದಲು ಇರುವುದಾಗಿದ್ದು ಅಸ್ತಿತ್ವ ಅದನ್ನು ಅವಲಂಬಿಸಿದೆ. ನಾವು ಒಂದು ವಿಧದ ಆಸೆ, ಭರವಸೆ, ನಿರೀಕ್ಷೆಯ ಕಾರಣದಿಂದಾಗಿ ಬದುಕಿರುತ್ತೇವೆಯೇ ಹೊರತು, ಕೇವಲ ಈಗಿನ ಅನುಭವಗಳ ಕಾರಣಗಳಿಂದ ಅಲ್ಲ. ನಮ್ಮೊಳಗೆ ಅದೇನೋ ಇದೆ, ಅದು ಈ ನಿರೀಕ್ಷೆಯ ಬಲದಿಂದ ನಮ್ಮನ್ನು ಬಂಧಿಸಿರುತ್ತದೆ. ಈಗಿರುವುದಕ್ಕಿಂತ ಇನ್ನೂ ಉತ್ತಮ ಸ್ಥಿತಿಗೆ ಏರಬೇಕೆಂಬ 'ಆಸೆ'ಯೇ ನಮ್ಮನ್ನು ಬಂಧಿಸುವ ಆ ಶಕ್ತಿಯಾಗಿದೆ. ಇದೇ ಆತ್ಮೋನ್ನತಿಯ 'ಆಸೆ'!
     ನಮ್ಮ ಅಸ್ತಿತ್ವಕ್ಕೆ, ಬದುಕಿಗೆ ಬೆಲೆ ಬರುವುದೇ ಇನ್ನೂ ಉತ್ತಮ ಸ್ಥಿತಿಗೆ ಏರಬೇಕೆಂಬ ಅಂತರ್ಗತ ಪ್ರಜ್ಞೆಯಿಂದ ಎಂಬುದನ್ನು ನಾವು ಗಮನಿಸಬೇಕು. ಆತ್ಮಾವಲೋಕನ ಮಾಡಿಕೊಂಡರೆ ತಿಳಿದೀತು, ಈ ಪ್ರಪಂಚದಲ್ಲಿ ಇಂದು ನಾವು ಏಕೆ ಸಂತೋಷವಾಗಿರುತ್ತೇವೆಂದರೆ, ನಾಳೆ ನಾವು ಸಂತೋಷವಾಗಿರುತ್ತೇವೆಂಬ ನಿರೀಕ್ಷೆಯಿಂದಲೇ ಹೊರತು, ಇಂದು ಸಂತೋಷವಾಗಿದ್ದೇವೆಂಬ ಕಾರಣದಿಂದ ಅಲ್ಲ. ಇಂದು ನಾವು ಎಷ್ಟೇ ಕಷ್ಟದ ಸ್ಥಿತಿಯಲ್ಲಿದ್ದರೂ, ಕೆಳಹಂತದಲ್ಲಿದ್ದರೂ ಮುಂದೊಮ್ಮೆ ನಾವು ಸುಖವಾಗಿರುತ್ತೇವೆ, ಮೇಲೆ ಬರುತ್ತೇವೆ ಎಂಬ ಒಳತುಡಿತ, ಒಳಭರವಸೆ ಇಂದಿನ ಸ್ಥಿತಿಯನ್ನು ಸಹಿಸಿಕೊಳ್ಳುಂತೆ, ಸಹನೀಯವಾಗುವಂತೆ ಮಾಡುತ್ತದೆ ಎಂಬುದು ಸತ್ಯವಲ್ಲವೇ? ಈ ಆಸೆ ಹೊರನೋಟಕ್ಕೆ ಕಾಣುವುದಿಲ್ಲ. ಆದರೆ ಇದು ನಮ್ಮೊಳಗೇ ನಮಗೆ ಕಾಣದಂತೆಯೇ ಕೆಲಸ ಮಾಡುತ್ತಿರುತ್ತದೆ. ಈ ಬದುಕುವ, ಮೇಲೇರುವ ಆಸೆ ನಮ್ಮ ವಿಚಿತ್ರ ಮತ್ತು ವಿಶಿಷ್ಟವಾದ ಗುಣವಾಗಿದೆ. ಈ ಗುಣದ ಕಾರಣವನ್ನು ತರ್ಕದ ಮೂಲಕ ತಿಳಿಯುವುದು ಸಾಧ್ಯವಿದೆಯೆಂದು ಅನ್ನಿಸುವುದಿಲ್ಲ. ಇದು ತರ್ಕಾತೀತವಾದ ವಿಸ್ಮಯವೆನ್ನಬಹುದು.
     ಸಾಯಲು ಇಚ್ಛಿಸುವವರು ಯಾರಾದರೂ ಇದ್ದಾರೆಯೇ? ಸಾಯಬಯಸುವ ಯಾವುದೇ ಜೀವಿ -ಅದು ಮಾನವನಿರಬಹುದು, ಪ್ರಾಣಿಯಿರಬಹುದು, ಕ್ರಿಮಿ-ಕೀಟವಿರಬಹುದು, ಗಿಡ-ಮರಗಳಿರಬಹುದು- ಇದೆಯೇ? ಆತ್ಮಹತ್ಯೆ ಮಾಡಿಕೊಳ್ಳುವವರು ಇರುತ್ತಾರೆ ಎಂದು ನೀವು ಹೇಳಬಹುದು. ಅವರು ಸಾಯುವುದೂ, ಸಾಯಬಯಸುವುದೂ 'ಬದುಕಲಿಕ್ಕಾಗಿಯೇ' ಎಂದು ನನ್ನ ಉತ್ತರವಿದೆ. ಎಷ್ಟು ದೀರ್ಘಕಾಲದವರೆಗೆ ಬದುಕಲು ಸಾಧ್ಯವೋ ಅಷ್ಟೂ ಕಾಲ ಜನರು ಬದುಕಿರಬಯಸುತ್ತಾರೆ. 'ದೀರ್ಘಾಯುಷ್ಮಾನ್ ಭವ' ಎಂದು ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡುತ್ತಾರೆ. 'ದೇವರೇ, ನನಗೆ (ನಮಗೆ ಎಂದು ನಮ್ಮ ಕುಟುಂಬದವರನ್ನೂ ಸೇರಿಸುತ್ತೇವೆ) ದೀರ್ಘಾಯಸ್ಸು, ಆರೋಗ್ಯ, ಸಂಪತ್ತು ಕೊಡು' ಎಂದು ಪ್ರಾರ್ಥನೆಯನ್ನೂ ಮಾಡುತ್ತೇವೆ. ಈ ದೀರ್ಘಾಯಸ್ಸು ಅಂದರೆ ಏನಿರಬಹುದು? ಅದು ಬಹುಷಃ ನಾವು ಭಾವಿಸಿರುವಂತೆ ಈಗ ಹೊಂದಿರುವ ಶರೀರವನ್ನೇ ಧರಿಸಿ ಇರುವ ಬಯಕೆಯಂತೂ ಇರಲಾರದು. ನಾವು ಗೊತ್ತಿಲ್ಲದಂತೆಯೇ, ನಮಗೇ ಅದು ಏನೆಂದು ನಮ್ಮ ಮನಸ್ಸಿಗೇ ಸ್ಪಷ್ಟವಿರದ ಸಂಗತಿಯ ಬಗ್ಗೆ ಪ್ರಾರ್ಥಿಸುತ್ತೇವೆ. ನಾವು ನಮ್ಮ ಕಲ್ಪನೆಗೂ ಮೀರಿದಂತಹ ಅದೇನೋ ಬಯಸುತ್ತೇವೆ. ಈ ದೀರ್ಘಾಯಸ್ಸು ಅಂದರೆ ಈಗಿನ ಶರೀರದಲ್ಲಿಯೇ ಬಹುಕಾಲ ಇರುವುದೇ? ಅದು ಬಾಲ್ಯಕಾಲದ ಶರೀರವೇ, ಯುವಾವಸ್ಥೆಯ ಶರೀರವೇ, ಮಧ್ಯವಯಸ್ಸಿನ ಶರೀರವೇ, ಪ್ರೌಢಾವಸ್ಥೆಯ ಶರೀರವೇ ಅಥವ ವೃದ್ಧಾಪ್ಯದ ಶರೀರವೇ? ಯಾವುದು ಎಂದು ನಾವು ಖಚಿತವಾಗಿ ಹೇಳಲಾರೆವು ಮತ್ತು ಅದೇ ಸ್ಥಿತಿಯಲ್ಲಿ ಬಹುಕಾಲ ಇರಲಾರೆವು ಎಂಬ ಅರಿವೂ ನಮಗೆ ಇರುತ್ತದೆ. ಆದರೂ ನಮಗೆ ದೀರ್ಘಾಯಸ್ಸು ಬೇಕು!
ಆತ್ಮನೇ ತಾನೆಂಬ ಅರಿವು ಮರೆಯಾಗಿ
ತನು-ಮನವೇ ತಾವೆಂದು ಭ್ರಮಿತರಾಗಿರಲು|
ತುಂಬಿದಜ್ಞಾನದಿಂ ಜನಿಸುವುದು ಕಾಮ
ಕಾಮಫಲಿತಕಾಗಿ ಕರ್ಮಗೈವರು ಮೂಢ||
     ನಮ್ಮ ಒಳಾಂತರಂಗದಲ್ಲಿ ಅಡಗಿದ ಬಯಕೆಯೆಂದರೆ ನಮ್ಮ ಅಸ್ತಿತ್ವದ ಮಹತ್ವವನ್ನು ಚಿರವಾಗಿ ಇರುವಂತೆ ಮಾಡುವುದೇ ಆಗಿದೆ! ವಿಚಾರ ಮಾಡಿದರೆ, ಶರೀರದ ಮೂಲಕ ನಾವು ಹೊಂದಿರುವ ಅಸ್ತಿತ್ವವನ್ನೇ ನಮ್ಮ ಅಸ್ತಿತ್ವ ಎಂದು ತಪ್ಪಾಗಿ ಗುರುತಿಸಿಕೊಂಡರೂ, ಶಾರೀರಿಕ ಅಸ್ತಿತ್ವಕ್ಕೂ ಮೀರಿ ಮುಂದುವರೆಯುವ ಸೂಕ್ಷ್ಮ ತುಡಿತವಿರುವುದನ್ನು ಕಂಡುಕೊಳ್ಳಬಹುದು. ಈ ಕಾರಣದಿಂದಲೇ ನಾವು ಹೆಚ್ಚು ಹೆಚ್ಚು ಬಯಸುತ್ತಾ ಹೋಗುವುದು, ಹೆಚ್ಚು ಹೆಚ್ಚು ಸಂಗ್ರಹಿಸುತ್ತಾ ಹೋಗುವುದು ಮತ್ತು ನಮ್ಮ ಅಸ್ತಿತ್ವವನ್ನು ಬಾಹ್ಯವಾಗಿ ವಿಸ್ತರಿಸಿಕೊಳ್ಳುತ್ತಾ ಹೋಗುವುದು! ಇದನ್ನು ಅನುಭವಿಸುವ ಸಲುವಾಗಿಯೇ ದೀರ್ಘಾಯಸ್ಸು ಕೋರುವುದು! ನಮ್ಮ ಪ್ರಾಪ್ತಿ(ಸಾಮ್ರಾಜ್ಯ ಅಂದುಕೊಳ್ಳೋಣ)ಯನ್ನು ಮತ್ತು ಸಮಯವನ್ನು ಹೆಚ್ಚಿಸಿಕೊಳ್ಳಬಯಸುವುದೇ ನಮ್ಮ ಆಸೆಯಾಗಿದೆ. ಇದಕ್ಕಾಗಿಯೇ ನಮ್ಮ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇವೆ. ನಾವು ಈಗಿರುವುದಕ್ಕಿಂತಲೂ ಹೆಚ್ಚಿನದನ್ನು ಎಲ್ಲಾ ಸಾಧ್ಯ ಮಾರ್ಗಗಳಿಂದ ಪಡೆಯಬಯಸುತ್ತೇವೆ. ಅದು ಎಷ್ಟರಮಟ್ಟಿಗೆ ಎಂದರೆ, ಈಗಲ್ಲದಿದ್ದರೆ ನಾಳೆ, ನಾಳೆಯಲ್ಲದಿದ್ದರೆ ನಾಡಿದ್ದು, ಹೀಗೆಯೇ ಮುಂದುವರೆದು ಅನಂತಕಾಲದವರೆಗೆ ಇಡೀ ವಿಶ್ವವೇ ನಮ್ಮದಾಗಬೇಕೆಂಬವರೆಗೆ ಈ ಅಸೆ ಅನ್ನುವುದು ಅಪ್ರಜ್ಞಾತ್ಮಕವಾಗಿ ನಮ್ಮಲ್ಲಿ ಸುಪ್ತವಾಗಿರುತ್ತದೆ. ಆದರೆ ತಿಳುವಳಿಕೆಯ ಕೊರತೆಯಿಂದ ಈ ಶರೀರದಲ್ಲಿಯೇ ದೀರ್ಘವಾಗಿ ಇರಬೇಕೆಂಬ ಆಸೆ ನಮ್ಮದು ಎಂದು ಅಂದುಕೊಂಡುಬಿಡುತ್ತೇವೆ. ಚತುರ್ವಿಧ ಪುರುಷಾರ್ಥಗಳಲ್ಲಿ ಈ ಕಾಮ/ಆಸೆಗೂ ಪ್ರಧಾನ ಸ್ಥಾನವಿರುವುದನ್ನು ಗಮನಿಸಬಹುದು. ಸಣ್ಣ ಸಣ್ಣ ಅಸೆಗಳನ್ನು ಬಿಟ್ಟು ಅತ್ಯಂತ ಗರಿಷ್ಠವಾದುದನ್ನು ಪಡೆಯಲು ನೆರವಾಗುವ ದೊಡ್ಡ ಆಸೆಯೇ ಪುರುಷಾರ್ಥ ಸಾಧನೆಗೆ ನೆರವಾಗುವ ಕಾಮವಾಗಿದೆ.
ಬೇಕು ಬೇಕೆಂಬುದಕೆ ಕೊನೆಯೆಂಬುದೆಲ್ಲಿ?
ಬಯಸಿದ್ದು ಸಿಕ್ಕಲ್ಲಿ ಮತ್ತಷ್ಟು ಬೇಕು ಮತ್ತಷ್ಟು|
ಸಿಕ್ಕಲ್ಲಿ ಮಗದಷ್ಟು ಬೇಕೆಂಬುದಕೆ ಕಾರಣವು
ಕಾಮ, ಅದಕಿಲ್ಲ ಪೂರ್ಣ ವಿರಾಮ ಮೂಢ||
     ಬದುಕುವ ಆಸೆ ಅನ್ನುವುದು ನಮ್ಮ ಅಸ್ತಿತ್ವಕ್ಕೆ ಆಧಾರ ಎಂದು ಮೇಲಿನ ತರ್ಕದಿಂದ ತಿಳಿಯುತ್ತದೆ. ಆದರೆ ಈ ಬದುಕುವುದು ಅಂದರೆ ಏನು, ಬದುಕಿನ ಗುರಿ ಏನು ಎಂಬುದಕ್ಕೆ ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಾರೆ. ಸ್ವರ್ಗ ಅಥವ ಮೋಕ್ಷ ಪ್ರಾಪ್ತಿಗಾಗಿ ಬದುಕುವುದು ಅನ್ನುತ್ತಾರೆ. ಹುಟ್ಟುವುದು ಆಕಸ್ಮಿಕವಾದರೂ ಸಾಯುವುದು ಖಚಿತ ಎನ್ನುವವರೂ ಇದ್ದಾರೆ. ಸಾಯುವುದಾಗಲೀ, ಸ್ವರ್ಗ ಸೇರುವುದಾಗಲೀ ನಮ್ಮ ಗುರಿಯಾಗಿರಲಿಕ್ಕಿಲ್ಲ. ಹುಟ್ಟುವುದಕ್ಕಿಂತ ಮುಂಚೆ ಮತ್ತು ಸತ್ತ ನಂತರದಲ್ಲಿ ನಾವು ಈಗ ಹೊಂದಿರುವ ರೂಪದಲ್ಲಿ ಇರುವುದಿಲ್ಲ. ಆದ್ದರಿಂದ ಸಾವು ಅಂತಿಮವಲ್ಲ. ಸಾಯುವುದಾಗಲೀ, ಸ್ವರ್ಗ ಸೇರುವುದಾಗಲೀ ನಮ್ಮ ಬದುಕಿನ ಗುರಿಯಾಗಿದ್ದರೆ ನಾವು ಹುಟ್ಟುತ್ತಲೇ ಇರುತ್ತಿರಲಿಲ್ಲ. ಹುಟ್ಟಿರುವುದರಿಂದ ನಾವು ಗುರಿಯನ್ನು ತಲುಪಿಲ್ಲವೆಂದು ಹೇಳಬೇಕೆ? ಸ್ವಾಮಿ ದಯಾನಂದರು ಹೇಳುತ್ತಾರೆ: 'ಬದುಕುವುದೇ ಬದುಕಿನ ಗುರಿ. ಬದುಕುವುದಕ್ಕಾಗಿ ಬದುಕಬೇಕು, ಇದನ್ನು ಬಿಟ್ಟು ಮತ್ತೇನೂ ಇಲ್ಲ.' ಎಷ್ಟು ಸತ್ಯ!
     ಬದುಕುವ ಆಸೆ ನಮ್ಮನ್ನು ಬದುಕಿಸಿದೆ. ಒಂದು ಗುರಿಯನ್ನು ತಲುಪಲು ನಾವು ಬಯಸಿದರೆ ಅದು ಕಷ್ಟಸಾಧ್ಯವೇನಲ್ಲ. ಯಾವುದೇ ಬಯಕೆ ಈಡೇರಲಾರದಂತಹುದೇನೂ ಅಲ್ಲ. ಅದನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕಷ್ಟೆ. ಕೆಳಹಂತದ ಗುರಿಗಳು, ಆಸೆಗಳು, ಬಯಕೆಗಳನ್ನು ಬಿಟ್ಟು ಉನ್ನತವಾದ ಗುರಿಯೆಡೆಗೆ ನಮ್ಮ ಲಕ್ಷ್ಯವಿದ್ದರೆ ನಮ್ಮ ಶಾರೀರಿಕ ಅಸ್ತಿತ್ವವನ್ನು ಮೀರಿ ನಮ್ಮ ನೈಜ ಅಸ್ತಿತ್ವ ಮುನ್ನಡೆಯುತ್ತದೆ. ಇದನ್ನೇ 'ಬದುಕುವುದು' ಅನ್ನಬಹುದು.
ಹುಟ್ಟು ಮೊದಲಲ್ಲ ಸಾವು ಕೊನೆಯಲ್ಲ
ಹುಟ್ಟು ಸಾವಿನ ಕೊಂಡಿ ಬದುಕಿನಾ ಬಂಡಿ |
ಹಿಂದಕೋ ಮುಂದಕೋ ಬಂಡಿ ಸಾಗುವುದು
ನಶಿಸಿದರೆ ಏರುವೆ ಹೊಸಬಂಡಿ ಮೂಢ ||
-ಕ.ವೆಂ.ನಾಗರಾಜ್.
**************
ದಿನಾಂಕ 30.03.2015ರ ಜನಮಿತ್ರ ಪತ್ರಿಕೆಯ 'ಚಿಂತನ' ಅಂಕಣದಲ್ಲಿ ಪ್ರಕಟಿತ:

ಶನಿವಾರ, ಏಪ್ರಿಲ್ 4, 2015

ಸ್ವಂತ ಅಸ್ತಿತ್ವ


     "ಹಾಂ? ಏನೆಂದಿರಿ? ಆಕಾಶಕ್ಕಿಂತಲೂ ಮಿಗಿಲಾದುದು ಇದೆಯೇ? ಆಕಾಶ ಸರ್ವವ್ಯಾಪಿ. ಅದು ಎಷ್ಟು ವಿಶಾಲವಾದುದು, ಹಿರಿದಾದುದು ಎಂಬುದೇ ತಿಳಿಯದಿರುವಾಗ, ಅದನ್ನು ವಿವರಿಸಲು ಸಾಧ್ಯವೇ ಇಲ್ಲ ಎಂಬಂತಿರುವಾಗ ಅದಕ್ಕಿಂತಲೂ ಮಿಗಿಲಾದುದು ಇದೆಯೇ? ನಿಮಗೆಲ್ಲೋ ತಲೆ ಕೆಟ್ಟಿರಬೇಕು" ಎಂಬ ಪ್ರತಿಕ್ರಿಯೆ ಆಕಾಶಕ್ಕಿಂತಲೂ ಹೆಚ್ಚಿನದು ಇದೆ ಎಂದು ಹೇಳಿದಾಗ ಬರಬಹುದಾದ ಸಾಮಾನ್ಯ ಪ್ರತಿಕ್ರಿಯೆ. ಅದು 'ಸ್ವಂತ ಅಸ್ತಿತ್ವ' ಎಂದು ಹೇಳಿದಾಗ 'ನಿಜಕ್ಕೂ ಇವನಿಗೆ ತಲೆ ಕೆಟ್ಟಿದೆ ಅಥವ ನಮ್ಮ ತಲೆ ಕೆಡಿಸುತ್ತಿದ್ದಾನೆ' ಎಂತಲೂ ಭಾವಿಸಬಹುದು. ಈ ನಮ್ಮ ಅಸ್ತಿತ್ವ ಹೇಗೆ ದೊಡ್ಡದು ಎಂಬ ಬಗ್ಗೆ ವಿಚಾರ ಮಾಡೋಣ.
ತನ್ನ ತಾನರಿಯೆ ಗುರುಕೃಪೆಯು ಬೇಕು
ಅರಿತುದನು ವಿಚಾರ ಮಾಡುತಿರಬೇಕು|
ವಿಚಾರ ಮಥನದ ಫಲವೆ ನಿತ್ಯ ಸತ್ಯ
ವೇದವಿದಿತ ಸತ್ಯ ತತ್ವವಿದು ಮೂಢ||
     ಈ ಆಕಾಶ ದೊಡ್ಡದು ಎಂಬ ಅರಿವು ನಮಗೆ ಬರಬೇಕಾದರೆ ನಮಗೆ ನಮ್ಮ ಅಸ್ತಿತ್ವದ ಬಗ್ಗೆ ಅರಿವು ಇರಬೇಕು. ಅಸ್ತಿತ್ವದ ಅರಿವು ಮೊದಲು ಬರುತ್ತದೆ, ನಂತರ ಹೊರಗಿನ ಆಕಾಶದ ಅರಿವು! ನಾವು ಮೊದಲು ಇದ್ದರೆ ತಾನೇ ಆಕಾಶ ಅನ್ನುವುದು ಇರುವುದು! ಆದ್ದರಿಂದ, ವಿಶಾಲ ಆಕಾಶದ ಕುರಿತು ತಿಳಿಯಬೇಕಾದರೆ ನಮ್ಮ ಅಸ್ತ್ತಿತ್ವದ ಅರಿವು ನಿರ್ಧಾರಕ ಅಂಶವಾಗುತ್ತದೆ. 'ಸ್ಮರ' ಎಂತಲೂ ಹೇಳಲಾಗುವ ಈ ನಮ್ಮ ಅಸ್ತಿತ್ವ ನಮ್ಮ ಅರಿವಿಗೆ, ತಿಳುವಳಿಕೆಗೆ ಸಮನಾಗಿರುತ್ತದೆ. ನೋಡಿ, ನಾವೇ ಇಲ್ಲದಿದ್ದರೆ, ಆಕಾಶ ಇದೆಯೋ ಇಲ್ಲವೋ ಅನ್ನುವ ಪ್ರಶ್ನೆಯೇ ಬರುವುದಿಲ್ಲ. ಯಾರಾದರೂ ತಮ್ಮ ಅಸ್ತಿತ್ವದ ಅರಿವನ್ನು ಕಳೆದುಕೊಂಡರೆ, ಅರ್ಥಾತ್ ತಾವು ಯಾರು ಎಂಬುದರ ಅರಿವೇ ಇಲ್ಲದಿದ್ದರೆ, ಅಂತಹವರಿಗೆ ಆಕಾಶದ ಕುರಿತು ಜಿಜ್ಞಾಸೆಯಾಗಲೀ, ಹೇಳುವುದಾಗಲೀ, ಕೇಳುವುದಾಗಲೀ, ಯೋಚಿಸುವುದಾಗಲೀ ಸಾಧ್ಯವಿರುವುದಿಲ್ಲ ಮತ್ತು ಅರ್ಥ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸ್ವಪ್ರಜ್ಞೆ ಇಲ್ಲದಿದ್ದರೆ ಯಾವುದೇ ಉಪಯುಕ್ತವಾದ ಕ್ರಿಯೆಗಳಾಗಲೀ, ಕೆಲಸಗಳಾಗಲೀ ಅಸಾಧ್ಯವಾಗುತ್ತದೆ. ನಮ್ಮ ಅಸ್ತಿತ್ವದ ಬಗ್ಗೆ ನಮಗೇ ಅರಿವಿಲ್ಲದಿದ್ದರೆ, ಆಕಾಶದ ಬಗ್ಗೆಯಾಗಲೀ ಅಥವ ಇನ್ನು ಯಾವುದರ ಬಗ್ಗೆಯಾಗಲೀ ತಿಳಿಯಬಯಸುವುದರಲ್ಲಿ ಏನು ಪ್ರಯೋಜನವಿದೆ? ಎಲ್ಲೆಲ್ಲಿ ಸ್ವಪ್ರಜ್ಞೆ ಜಾಗೃತವಾಗಿರುತ್ತದೋ, 'ನಮ್ಮತನ' ಅನ್ನುವುದು ಹಾಜರಿರುತ್ತದೆಯೋ ಅಲ್ಲಿ ಎಲ್ಲಾ ವಿಧವಾದ ಜ್ಞಾನ ಲಭಿಸುತ್ತಾ ಹೋಗುತ್ತದೆ. ಅಲ್ಲಿ ಯೋಚಿಸುವ ಪ್ರಕ್ರಿಯೆ ಇರುತ್ತದೆ, ಅರ್ಥ ಮಾಡಿಕೊಳ್ಳುವ ಶಕ್ತಿ ಇರುತ್ತದೆ, ಕೇಳುವ, ತಿಳಿಯುವ ಕೆಲಸ ಆಗುತ್ತದೆ ಮತ್ತು ಹಲವು ರೀತಿಗಳಲ್ಲಿ ಜ್ಞಾನಾರ್ಜನೆ ಮಾಡುವ ಆಸಕ್ತಿ ಮೂಡುತ್ತದೆ. ಜೀವನದಲ್ಲಿನ ನಮ್ಮ ಎಲ್ಲಾ ಚಟುವಟಿಕೆಗಳು, ಕ್ರಿಯೆಗಳು ನಮ್ಮ ಸ್ವಂತ ಅಸ್ತಿತ್ವದ ಅರಿವಿನ ಫಲಗಳಾಗಿವೆ. ಇದು ಇಲ್ಲದಿದ್ದರೆ ಇಡೀ ಜಗತ್ತೇ ಶೂನ್ಯ!
     ನಾವು ಧ್ಯಾನಿಸುವಾಗ ಯಾವುದು ಅತ್ಯಂತ ದೊಡ್ಡದೋ ಆ ಕುರಿತು ಧ್ಯಾನಿಸುವುದು ಸೂಕ್ತವೆಂದು ಹಿಂದೆಯೇ ತಿಳಿದುಕೊಂಡಿದ್ದೇವೆ. ನಮ್ಮ ತಿಳುವಳಿಕೆಗೆ ಮೀರಿದ ಕಾಲ್ಪನಿಕ ಸಂಗತಿಗಳನ್ನು ಗುರಿಯಾಗಿರಿಸಿ ಮಾಡುವ ಧ್ಯಾನದಿಂದ ಚಂಚಲ ಮನಸ್ಸಿನ ಹತೋಟಿ ಕಷ್ಟವೆಂಬುದೂ ನಮಗೆ ತಿಳಿದಿದೆ. ಆಕಾಶ ಎಲ್ಲಕ್ಕಿಂತ ದೊಡ್ಡದೆಂದುಕೊಂಡರೆ, ಆಕಾಶದ ಅಗಾಧತೆ ಕುರಿತು ಧ್ಯಾನಿಸುವುದು ಮನೋನಿಯಂತ್ರಣಕ್ಕೆ ಸಹಕಾರಿ. ಅದಕ್ಕಿಂತಲೂ ಸ್ವಂತ ಅಸ್ತಿತ್ವದ ಅರಿವು ಹಿರಿದು ಎಂದು ಮನನ ಮಾಡಿಕೊಂಡರೆ ನಮ್ಮ ಮನಸ್ಸನ್ನು ಆ ಕಡೆಗೆ ಹೊರಳಿಸಬೇಕು. ನಾವು ನಿಧಾನವಾಗಿ, ಹಂತ ಹಂತವಾಗಿ ಅರಿವಿನ ಹಂತವನ್ನು ಏರಿಸಿಕೊಳ್ಳುತ್ತಾ ಹೋಗುತ್ತಿದ್ದೇವೆ ಎಂಬುದು ನಮಗೇ ಅರಿವಾಗುತ್ತಾ ಹೋಗುತ್ತದೆ. ನಾವು ಈ ರೀತಿಯಾಗಿ ಏರುತ್ತಾ ಹೋದಂತೆ ಇನ್ನೂ ಎತ್ತರದ ಸಂಗತಿಗಳ ಅರಿವು ನಮಗೆ ಆಗುತ್ತಾ ಹೋಗುತ್ತದೆ. ಸ್ವಂತ ಅಸ್ತಿತ್ವದ ಪ್ರಜ್ಞೆ ಹೊಂದಿರುವ ವ್ಯಕ್ತಿಗೆ ಪ್ರತಿಯೊಂದು ವಸ್ತು ಅಥವ ಸಂಗತಿಯ ಅಥವ ಆಕಾಶದ ಕುರಿತೇ ಆಗಲಿ ಅ ಅರಿವಿನ ಫಲ ಸ್ವಪ್ರಜ್ಞೆಯ ಬಲದಿಂದಲೇ ಲಭಿಸಿದುದು ಎಂದು ತಿಳಿಯುತ್ತದೆ ಮತ್ತು ಅವನು ಅಷ್ಟರ ಮಟ್ಟಿಗೆ ಅವನು ಸ್ವಂತ ಅಸ್ತಿತ್ವದ ಮಹತ್ವ ತಿಳಿದವನಾಗುತ್ತಾನೆ.
ಹೊರಗಣ್ಣು ತೆರೆದಿದ್ದು ಒಳಗಣ್ಣು ಮುಚ್ಚಿರಲು
ಹೊರಗಿವಿ ಚುರುಕಿದ್ದು ಒಳಗಿವಿಯು ಇಲ್ಲದಿರೆ |
ಸುತ್ತೆಲ್ಲ ಹುಡುಕಾಡಿ ತನ್ನೊಳಗೆ ಇಣುಕದಿರೆ
ತಿರುಳಿರದ ಹಣ್ಣಿನ ಸಿಪ್ಪೆ ನೀ ಮೂಢ ||
     ಧ್ಯಾನದ ಕ್ರಿಯೆಯಲ್ಲಿ ಸ್ವಂತ ಅಸ್ತಿತ್ವದ ಮಹಿಮೆ ತಿಳಿದುಕೊಳ್ಳುವುದು ಒಂದು ಅದ್ಭುತ ತಿರುವು ಮೂಡಿಸುತ್ತದೆ. ಸಾಮಾನ್ಯವಾಗಿ, ನಾವು ಧ್ಯಾನಿಸುವಾಗ ಹೊರಗಿನ ವಸ್ತುಗಳು, ಸಂಗತಿಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಧ್ಯಾನಿಸುತ್ತೇವೆ, ದಿಗಂತದೆಡೆಗೆ ದೃಷ್ಟಿ ಹಾಯಿಸುತ್ತೇವೆ. ಆದರೆ, ಧ್ಯಾನಿಸುವ ಆ ವಸ್ತುಗಳು, ಸಂಗತಿಗಳು, ಗುರಿಗಳು ನಮ್ಮ ಸ್ವಂತ ಅಸ್ತಿತ್ವದೊಂದಿಗೆ ಥಳಕು ಹಾಕಿಕೊಂಡಿದೆಯೆಂಬುದನ್ನು ಅರಿಯಲು ಮರೆತುಬಿಡುತ್ತೇವೆ. ವಸ್ತು/ಸಂಗತಿಯ ಪ್ರಜ್ಞೆ ಮತ್ತು ಪ್ರಜ್ಞೆಯ ವಸ್ತುವಿನ ಸಂಬಂಧಗಳು ಅರಿವಿನಿಂದ ಮರೆಯಾಗಿ ಅಂತಹ ವಸ್ತುಗಳು, ಸಂಗತಿಗಳು, ಗುರಿಗಳು ಹೊರಗೆ ಇರುತ್ತವೆ, ಸ್ವತಂತ್ರವಾಗಿರುತ್ತವೆ, ನಮ್ಮ ಅಸ್ತಿತ್ವಕ್ಕೂ ಅದು ಹೊರತಾಗಿದೆ ಎಂದುಕೊಂಡುಬಿಡುತ್ತೇವೆ. ಇದು ಸತ್ಯವಾಗಿರಲಾರದು. ನಮ್ಮ ಅಸ್ತಿತ್ವಕ್ಕೂ ಅಂತಹ ಸಂಗತಿಗಳಿಗೂ ಪರಸ್ಪರ ಸಂಬಂಧವಿದ್ದೇ ಇರುತ್ತದೆ. ಸಾಮಾನ್ಯರು ಅಸಾಮಾನ್ಯ ಸಂಗತಿಗಳಿಗೂ ತಮಗೂ ಪ್ರತ್ಯೇಕತೆಯಿದೆಯೆಂದು ಭಾವಿಸುತ್ತಾರೆ. ಅವುಗಳನ್ನು ಅವಲಂಬಿಸುತ್ತಾರೆ ಮತ್ತು ಅವುಗಳ ಸಹಾಯ, ಆಧಾರ ತಮಗೆ ಅಗತ್ಯವೆಂದು ಅದಕ್ಕೆ ಜೋತುಬೀಳುತ್ತಾರೆ. ಅಂತಹ ಅಸಾಮಾನ್ಯ ಸಂಗತಿಗಳಿಗೆ ತಾವೇ ಆಧಾರವಾಗಿರುವುದನ್ನು ಮರೆಯುತ್ತಾರೆ. ನಾವು ಇದ್ದರೆ ದೇವರು ಇರುತ್ತಾನೆ ಅಲ್ಲವೇ? ನಾವೇ ಇಲ್ಲದಿದ್ದರೆ ಏನೂ ಇರುವುದಿಲ್ಲವೆಂಬ ಅರಿವು ಮೂಡಿದರೆ ನಾವು ನಮ್ಮ ಧ್ಯಾನದ ಗುರಿಯನ್ನು ಹೊರಗಿನ ಸಂಗತಿಗಳಿಂದ ಒಳಗಿನ ಕಡೆಗೆ ತಿರುಗಿಸುತ್ತೇವೆ. ಹೀಗೆ ಮಾಡಲು ಸಾಧ್ಯವಾದರೆ ನಿಜಕ್ಕೂ ಇದು ಅದ್ಭುತ ಸಾಧನೆಯೆನಿಸುತ್ತದೆ.
ನಾನಿಲ್ಲ ಅವನಿಲ್ಲ ಜಗವಿಲ್ಲ ನಿದ್ದೆಯಲಿ
ರಾಗ ದ್ವೇಷಗಳಿಲ್ಲ ನೋವು ನಲಿವುಗಳಿಲ್ಲ |
ತಮೋತ್ತುಂಗದಲಿ ಪ್ರಶ್ನೋತ್ತರದ ಸೊಲ್ಲಿಲ್ಲ
ಮಾಯಾ ಶಕ್ತಿಗೆದುರುಂಟೆ ಮೂಢ ||
     ಒಂದು ಸಿನೆಮಾ ಹೇಗಿರುತ್ತದೆಯೆಂಬುದನ್ನು  ಅದರ ಟ್ರೈಲರ್ ನೋಡಿ ತಿಳಿಯಬಹುದು. ಹಾಗೆಯೇ ಸ್ವಂತ ಅಸ್ತಿತ್ವದ ಮಹತ್ವವನ್ನು ತಿಳಿಯಲು ಗಾಢನಿದ್ದೆಯಲ್ಲಿ ನಮ್ಮ ಸ್ಥಿತಿ ಹೇಗಿರುತ್ತದೆಯೆಂಬುದನ್ನು ಕಲ್ಪಿಸಿಕೊಂಡರೆ ಸಾಕು. ಗಾಢ ನಿದ್ದೆಯಲ್ಲಿದ್ದಾಗ ನಮಗೆ ನಮ್ಮ ಅರಿವೇ ಇರುವುದಿಲ್ಲ. ಇನ್ನು ದೇವರು, ಜಗತ್ತು, ಆಕಾಶ ಮುಂತಾದವುಗಳು ಸಹ ಇವೆಯೋ, ಇಲ್ಲವೋ ಎಂಬುದರ ಯೋಚನೆ ಸಹ ಬರುವುದಿಲ್ಲ. ಆ ಸಮಯದಲ್ಲಿ ಸುಖ-ದುಃಖ, ಲಾಭ-ನಷ್ಟ, ನೋವು-ನಲಿವುಗಳ ಸುಳಿವೂ ಇರುವುದಿಲ್ಲ. ಯಾವ ಜಂಜಾಟವೂ ಇರುವುದೇ ಇಲ್ಲ. ನಿದ್ದೆಯಿಂದ ಎಚ್ಚರವಾದ ತಕ್ಷಣದಲ್ಲಿ 'ನಾನು' ಎದ್ದುಬಿಡುತ್ತದೆ! ಸುತ್ತಮುತ್ತಲ ಪ್ರಪಂಚವೂ ಎದ್ದುಬಿಡುತ್ತದೆ! 'ನಾನು' ಏಳದಿದ್ದರೆ ಯಾವುದರ ಅಸ್ತಿತ್ವವೂ ಇರುವುದೇ ಇಲ್ಲ. ಇದು ಅಸ್ತಿತ್ವದ ವಿಸ್ಮಯಕಾರಿ ಗುಣ. ನಮ್ಮ ತಡಕಾಟ, ಹುಡುಕಾಟಗಳು ಬಹುತೇಕ ಹೊರಗೆ ಇರುತ್ತವೆ. ಏನು ಹುಡುಕುತ್ತಿದ್ದೇವೆಯೋ ಅದು ಹೊರಗಿಲ್ಲ, ನಮ್ಮೊಳಗೇ ಇದೆ ಎಂಬ ಅರಿವು ಮೂಡತೊಡಗಿದಾಗ ಸ್ವಲ್ಪ ಸ್ವಲ್ಪವಾಗಿ ಬೆಳಕು ಮೂಡತೊಡಗುತ್ತದೆ.
ಬಿಟ್ಟುಬಿಡುವನು ಸಾಧಕನು ತೊರೆಯುವನು
ಹೊರಮನದ ಕೋರಿಕೆಯನಲ್ಲಗಳೆಯುವನು |
ಅಂತರಂಗದ ಕರೆಯನನುಸರಿಸಿ ಬಾಳುವನು
ಸಮಚಿತ್ತದಲಿ ಸಾಗುವನು ಮೂಢ ||
     ಅಂತರಂಗದ ಕರೆಗೆ ಓಗೊಟ್ಟರೆ ನಮಗೆ ಸ್ಪಷ್ಟವಾಗಿ ತಿಳಿಯುತ್ತದೆ: "ನಾವು ಇದ್ದರೆ ಎಲ್ಲವೂ ಇರುತ್ತದೆ; ನಾವು ಇಲ್ಲದಿದ್ದರೆ ಏನೂ ಇರುವುದಿಲ್ಲ. ಇದು ನಮ್ಮ ಅಸ್ತಿತ್ವದ ಮಹತ್ವ!"
-ಕ.ವೆಂ.ನಾಗರಾಜ್.
*************
ದಿನಾಂಕ 23.03.2015ರ ಜನಮಿತ್ರ ಪತ್ರಿಕೆಯ 'ಚಿಂತನ' ಅಂಕಣದಲ್ಲಿ ಪ್ರಕಟಿತ: