ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಜುಲೈ 31, 2017

ಮತೀಯವಾದ ಮರೆ ಮಾಡುತ್ತಿರುವ ಇತಿಹಾಸ

   

     ದೇಶದ ಸ್ವಾತಂತ್ರ್ಯಕ್ಕಾಗಿ ನಗುನಗುತ್ತಾ ಭಗತ್ ಸಿಂಗ್ ಗಲ್ಲಿಗೇರಿದಾಗ ಅವನ ವಯಸ್ಸು ಕೇವಲ 23 ವರ್ಷಗಳು. ಬ್ರಿಟಿಷರ ಕುತಂತ್ರ, ಮುಸಲ್ಮಾನರ ಪ್ರತ್ಯೇಕ ರಾಷ್ಟ್ರಕ್ಕಾಗಿ ಮಹಮದಾಲಿ ಜಿನ್ನಾ ಒತ್ತಾಯ, ಒತ್ತಡಕ್ಕೆ ಮಣಿದ ಗಾಂಧೀಜಿಯಂತಹ ನಾಯಕರುಗಳ ಕಾರಣದಿಂದ ಭಾರತದ ವಿಭಜನೆ ಮತ್ತು ಆ ತರುಣದಲ್ಲೇ ನಡೆದ ಭೀಕರ ಕೋಮು ದಳ್ಳುರಿ ದೇಶವನ್ನು ದಹಿಸಿತು, ಸ್ವಾತಂತ್ರ್ಯ ಪ್ರೇಮಿಗಳ ಅಸಹಾಯಕತೆಯ ಕಂಬನಿ ಸುರಿಯಿತು. ಭಗತ್ ಸಿಂಗನಂತಹ ವೀರರ ಬಲಿದಾನವಾಗದಿದ್ದರೆ, ಜಿನ್ನಾರಂತಹವರು ಪಾಕಿಸ್ತಾನದ ಬೇಡಿಕೆ ಮುಂದಿಡಲಾಗುತ್ತಿರಲಿಲ್ಲ. ದೇಶ ವಿಭಜನೆಯಾದಾಗ ಭಗತ್ ಸಿಂಗನ ತವರೂರು ಫೈಸಲಾಬಾದಿನ ಲಿಲ್ಲಾಪುರಬಾಂಗೆ ಪಾಕಿಸ್ತಾನದ ಭಾಗವಾಯಿತು. ಭಗತ್ ಸಿಂಗ್ ಭಾರತ ಮತ್ತು ಪಾಕಿಸ್ತಾನಗಳೆರಡರ ಸ್ವಾತಂತ್ರ್ಯ ಹೋರಾಟದ ಅವಿಭಾಜ್ಯ ಅಂಗ. ಆದರೆ ಅವನ ಹೆಸರನ್ನು, ನೆನಪನ್ನು ಮರೆ ಮಾಡುವ ವ್ಯವಸ್ಥಿತ ಷಡ್ಯಂತ್ರ ಪಾಕಿಸ್ತಾನದಲ್ಲಿ ಸಾಗಿದೆ. (ಭಾರತದಲ್ಲೂ ಗಾಂಧೀಜಿ ಮತ್ತು ಅವರ ಕಾಂಗ್ರೆಸ್ ಸಂಗಡಿಗರ ಹೊರತಾಗಿ ಉಳಿದವರ ತ್ಯಾಗ, ಬಲಿದಾನಗಳನ್ನು ಗೌಣವಾಗಿಸಿ ಬಿಂಬಿಸಲಾಗುತ್ತಿದೆ. ಸುಭಾಷ ಚಂದ್ರ ಬೋಸರ ಕುರಿತ ಎಷ್ಟೋ ಸತ್ಯಗಳು ಇನ್ನೂ ಕತ್ತಲ ಗರ್ಭದಲ್ಲೇ ಅಡಗಿರುವುದು ಒಂದು ಸಣ್ಣ ಉದಾಹರಣೆಯಷ್ಟೆ.) ಭಗತ್ ಸಿಂಗ್ ಮತ್ತು ಅವನ ಸಂಗಡಿಗರ ವಿರುದ್ಧ ವಿಚಾರಣೆ ನಡೆಯುವಾಗ ಅವರ ಪರವಾಗಿ ಧ್ವನಿ ಎತ್ತಲು ಗಾಂಧೀಜಿಯವರ ಮೇಲೆ ಜನರ ಒತ್ತಡ ಹೆಚ್ಚಿದ್ದರೂ ಗಾಂಧೀಜಿ ಒಪ್ಪಿರಲಿಲ್ಲ. ದೇಶ ವಿಭಜನೆಯಾದಾಗ ಪಾಕಿಸ್ತಾನದ ಭಾಗದಲ್ಲಿದ್ದ ಹಿಂದೂಗಳ ಮೇಲೆ ನಡೆದ ದೌರ್ಜನ್ಯ, ಆ ಕಾರಣದಿಂದ ಪಾಕಿಸ್ತಾನದಿಂದ ಭಾರತದ ಭಾಗಕ್ಕೆ ವಲಸೆ ಬಂದ ಹಿಂದೂಗಳ ಸಂಖ್ಯೆ ಅಗಣಿತ. ಈಗ ಪಾಕಿಸ್ತಾನದಲ್ಲಿನ ಹಿಂದೂಗಳ ಸಂಖ್ಯೆ ವಿಭಜನಾಪೂರ್ವದಲ್ಲಿದ್ದವರ ಸಂಖ್ಯೆಯ ಶೇ. 10ಕ್ಕಿಂತಲೂ ಕಡಿಮೆ, ಅಲ್ಲಿನ ಒಟ್ಟು ಜನಸಂಖ್ಯೆಯಲ್ಲಿ ಈಗ ಅಲ್ಲಿರುವ ಹಿಂದೂಗಳು ಶೇ.2ಕ್ಕಿಂತಲೂ ಕಡಿಮೆಯಿದ್ದು, ಅವರು ಎರಡನೆಯ ದರ್ಜೆಯ ನಾಗರಿಕರಂತೆ ಬಾಳಬೇಕಾಗಿದೆ. ಪಾಕಿಸ್ತಾನದಲ್ಲಿ ಕಟ್ಟರ್ ಮತೀಯವಾದ ಪರಧrfm ಸಹಿಷ್ಣುತೆಯನ್ನು ದೂರವಿರಿಸಿದ್ದರೆ, ಭಾರತದಲ್ಲಿ ಇಂತಹ ವಾಸ್ತವ ಸಂಗತಿಗಳನ್ನು ಮಾತನಾಡುವವರನ್ನು ಇಲ್ಲಿನ ಜಾತ್ಯಾತೀತವಾದಿಗಳೆನಿಸಿಕೊಂಡವರು ಹೀಯಾಳಿಸುವ ಪ್ರವೃತ್ತಿ ಹೊಂದಿದ್ದಾರೆ. ಕಟು ವಾಸ್ತವ ಇತಿಹಾಸದ ಮೇಲೆ ಪೊರೆ ಮುಸುಕುವುದಕ್ಕೆ, ಬರೆ ಎಳೆಯುವುದಕ್ಕೆ ಇದಕ್ಕಿಂತ ಉತ್ತಮ ವಾತಾವರಣ ಬೇರೆ ಬೇಕಿಲ್ಲ.
     ಭಗತ್ ಸಿಂಗ್ ಒಬ್ಬ ಮಾನವತಾವಾದಿ. ಮಾನವತೆಯನ್ನು ಗೌರವಿಸದ ಧರ್ಮವನ್ನು ಧರ್ಮವೆಂದೆನ್ನಬಹುದೇ? ಭಗತ್ ಸಿಂಗ್ ಸಾಯುವ ಮುನ್ನ ವ್ಯಕ್ತಪಡಿಸಿದ್ದ ಬಯಕೆಗಳಲ್ಲಿ ಒಂದು ತಾನು ಇದ್ದ ಜೈಲಿನ ಕೊಠಡಿಯ ಶೌಚಾಲಯದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಕೆಳವರ್ಗದ ಹೆಣ್ಣುಮಗಳ ಕೈಯಿಂದ ರೊಟ್ಟಿ ತಿನ್ನಬೇಕು ಅನ್ನುವುದು. ಅದಕ್ಕೆ ಅವನು ಕೊಟ್ಟಿದ್ದ ಕಾರಣವೆಂದರೆ ತಾನು ಚಿಕ್ಕ ಮಗುವಾಗಿದ್ದಾಗ ತನ್ನ ಹೇಸಿಗೆಯನ್ನು ತೊಳೆದು ಸ್ವಚ್ಛ ಮಾಡುತ್ತಿದ್ದವಳು ಹೆತ್ತ ತಾಯಿಯಾದರೆ, ಜೈಲಿನ ತನ್ನ ಕೊಠಡಿಯ ಶೌಚಾಲಯದ ಹೇಸಿಗೆ ತೊಳೆಯುತ್ತಿದ್ದವಳೂ ಅಮ್ಮನೇ ಆಗಬೇಕು ತಾನೇ! ಅವನು ಆಕೆಯನ್ನು ಸಂಬೋಧಿಸುತ್ತಿದ್ದುದೂ ಅಮ್ಮ ಎಂದೇ! ಅವನು ಎಂತಹ ವ್ಯಕ್ತಿತ್ವದವನು ಎಂಬುದಕ್ಕೆ ಈ ಉದಾಹರಣೆ ಸಾಕು. ಭಗತ್ ಸಿಂಗ್, ರಾಜಗುರು, ಸುಖದೇವರನ್ನು ಗಲ್ಲಿಗೇರಿಸಿದ ಲಾಹೋರಿನ ಐತಿಹಾಸಿಕ ಜೈಲನ್ನು ಪಾಕಿಸ್ತಾನ ೧೯೬೧ರಲ್ಲಿ ಕೆಡವಿ ಹಾಕಿತು. ಲಾಹೋರ್ ಜೈಲಿನ ಸಮೀಪದ ವೃತ್ತಕ್ಕೆ ೧೯೪೭ರವರೆಗೂ ಭಗತ್ ಸಿಂಗನ ಹೆಸರಿತ್ತು. ಪಾಕಿಸ್ತಾನದ ಉದಯದ ನಂತರ ಭಗತ್ ಸಿಂಗ್ ಮುಸ್ಲಿಮನಲ್ಲವೆಂಬ ಕಾರಣಕ್ಕೆ ಆ ಹೆಸರನ್ನು ಶಾದ್ ಮಾನ್ ಚೌಕವೆಂದು ಬದಲಿಸಲಾಯಿತು. ಭಗತ್ ಸಿಂಗ್ ಮತ್ತು ಅವನ ಸಹಚರರನ್ನು ಕದ್ದು ಮುಚ್ಚಿ ಗಲ್ಲಿಗೇರಿಸಿದ ನಂತರ ಬ್ರಿಟಿಷರು ಅವರ ದೇಹಗಳನ್ನು ಈಗ ಭಾರತದ ಭಾಗವಾಗಿರುವ ಫಿರೋಜಪುರ ಜಿಲ್ಲೆಯ ಗಾಂದಾ ಸಿಂಗಾವಾಲಾ ಎಂಬ ಗ್ರಾಮದಲ್ಲಿ ಸುಟ್ಟು ಹಾಕಿದ್ದರು. ಲಾಹೋರಿನ ಜನರು ಧಾವಿಸಿ ಅರೆಸುಟ್ಟ ದೇಹಗಳ ಅವಶೇಷಗಳು, ಬೂದಿಯನ್ನು ಲಾಹೋರಿಗೆ ತಂದು ವಿಧಿವತ್ತಾಗಿ ಅಂತ್ಯ ಸಂಸ್ಕಾರ ಮಾಡಿದ್ದು ಇತಿಹಾಸ. ಆ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದವರ ಸಂಖ್ಯೆ ಐವತ್ತು ಸಾವಿರವಾಗಿತ್ತೆಂದರೆ ಅವನ ಕುರಿತು ಅಲ್ಲಿನವರು ಎಂತಹ ಭಾವನೆ ಹೊಂದಿದ್ದರೆಂದು ಸೂಚಿಸುತ್ತದೆ. ೨೬-೦೩-೧೯೩೧ರಂದು ಹುತಾತ್ಮರ ಗೌರವಾರ್ಥ ಲಾಹೋರ್ ಬಂದ್ ಆಚರಿಸಲಾಗಿತ್ತು. ಭಗತ್ ಸಿಂಗನ ೧೦೫ನೆಯ ಹುಟ್ಟುಹಬ್ಬದ ನೆನಪಿನಲ್ಲಿ ಶಾದ್ ಮಾನ್ ಚೌಕಕ್ಕೆ ಭಗತ್ ಸಿಂಗನ ಹೆಸರಿಡಲು ತೀರ್ಮಾನಿಸಲಾಗಿತ್ತು. ಭಗತ್ ಸಿಂಗ್ ಮುಸ್ಲಿಮನಲ್ಲವಾದ್ದರಿಂದ ಅವನ ಹೆಸರನ್ನು ಇಡಬಾರದೆಂದು ಕಟ್ಟರ್ ಮತೀಯವಾದಿ ಸಂಘಟನೆ ಜಮಾ ಉದ್ ದವಾ ನೀಡಿದ ಎಚ್ಚರಿಕೆಗೆ ಮಣಿದ ಸರ್ಕಾರ ತೀರ್ಮಾನ ಕೈಬಿಟ್ಟಿತು. ಭಗತ್ ಸಿಂಗ್ ಭಾರತ ಮತ್ತು ಪಾಕಿಸ್ತಾನಗಳೆರಡರ ಇತಿಹಾಸದ ಅವಿಭಾಜ್ಯ ಅಂಗ. ಯಾವುದೋ ಹೊರದೇಶದ ಸರ್ವಾಧಿಕಾರಿ ಗಡ್ಡಾಫಿಯ ಹೆಸರನ್ನು ಅವನು ಮುಸ್ಲಿಮನೆಂಬ ಕಾರಣಕ್ಕೆ ಸ್ಟೇಡಿಯಮ್ಮಿಗೆ ಇಡುತ್ತಾರೆ. ಆದರೆ ದೇಶದವನೇ ಆದ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರನಿಗೆ ಅವನು ಮುಸ್ಲಿಮನಲ್ಲವೆಂಬ ಕಾರಣಕ್ಕೆ ಅಗೌರವಿಸುತ್ತಾರೆ. ಇದು ಮಾನವತೆಗೆ, ಇತಿಹಾಸಕ್ಕೆ ಮಾಡುವ ಅಪಚಾರ. ಇಂತಹ ಅಪಚಾರ ಮಾಡುವ ಜಾತ್ಯಾತೀತರು ಎಂದು ಕರೆದುಕೊಂಡು ಆ ಪದಕ್ಕೆ ಅವಮಾನ ಮಾಡುವವರು ನಮ್ಮಲ್ಲೂ ಇದ್ದಾರೆ. ಅಂಡಮಾನ್ ಜೈಲಿನಲ್ಲಿರುವ ಸ್ಮಾರಕದಲ್ಲಿರುವ ವೀರ ಸಾವರ್ಕರರ ಹೆಸರನ್ನು ಅಳಿಸುವ ಅಪಚಾರ ಮಾಡಿದವರು ಹಿಂದಿನ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಮಣಿಶಂಕರ ಐಯರ್ ಎಂಬುದು ನಾಚಿಕೆಗೇಡಿನ ಸಂಗತಿಯಾಗಿದೆ. ಇಂದು ಶಾಲಾಕಾಲೇಜುಗಳ ಪಠ್ಯಪುಸ್ತಕಗಳಲ್ಲಿ ಭಾರತಕ್ಕೆ ಗಾಂಧೀಜಿ ಮತ್ತು ಕಾಂಗ್ರೆಸ್ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿತು ಎಂದು ಬೋಧಿಸಲಾಗುತ್ತಿದೆ. ಭಗತ್, ಚಂದ್ರಶೇಖರ ಆಜಾದ್, ಮದನಲಾಲ್ ಧಿಂಗ್ರಾ, ಕರ್ನಾಟಕದ ಸಂಗೊಳ್ಳಿ ರಾಯಣ್ಣ, ಧೊಂಡಿಯಾವಾಘ ಮೊದಲಾದ ಅಸಂಖ್ಯ ಶೂರವೀರ ಹೋರಾಟಗಾರರ ಬಲಿದಾನಗಳಿಗೆ ಕಿಮ್ಮತ್ತಿಲ್ಲವೇ? ಇಂತಹ ಸ್ಥಿತಿಗೆ ಮರುಗಿ ನಿಟ್ಟುಸಿರು ಬಿಟ್ಟರಷ್ಟೇ ಸಾಕೇ? ಚಿಂತಿಸಿ. ಅಸಂಖ್ಯ ಅಜ್ಞಾತ ಬಲಿದಾನಿಗಳನ್ನು ಅಗೌರವಿಸುವವರಿಗೆ ಪಾಠ ಕಲಿಸಬೇಕಿದೆ. ನೈಜ ಇತಿಹಾಸ ಹೊರಬರಬೇಕಿದೆ. ಸರ್ಕಾರಗಳು ಮಾಡಬೇಕಾದ ಈ ಕೆಲಸವನ್ನು ಮಾಡದಿದ್ದಲ್ಲಿ ಪ್ರಜ್ಞಾವಂತರೇ ಅದನ್ನು ಮಾಡಲು ಮುಂದೆ ಬರಬೇಕಿದೆ.
-ಕ.ವೆಂ.ನಾಗರಾಜ್.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ