ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶುಕ್ರವಾರ, ಆಗಸ್ಟ್ 18, 2017

ಒಂಟಿತನದ ವಿಶ್ವರೂಪ


     ಒಂಟಿತನ ಸಾಮಾನ್ಯವಾಗಿ ಎಲ್ಲರೂ ಅನುಭವಿಸುವ ಅನಿವಾರ್ಯ ಸ್ಥಿತಿ. ತಾನೊಬ್ಬನೇ, ತನ್ನೊಡನೆ ಇತರರಿಲ್ಲವೆಂಬ ಭಾವವನ್ನು ಒಂಟಿತನವೆನ್ನಬಹುದು. ಇಂತಹ ಸ್ಥಿತಿಯಲ್ಲಿ ಆಹಾರ ರುಚಿಸುವುದಿಲ್ಲ, ನೀರು ಹಿತವಾಗುವುದಿಲ್ಲ. ಆಹಾರ ಸೇವಿಸಿದರೂ ಅನಿವಾರ್ಯ ಕ್ರಿಯೆಯಂತೆ ಜರುಗುವುದು. ಯಾವುದರಲ್ಲೂ ಆಸಕ್ತಿಯಿರದು. ಆಲಸ್ಯತನ. ಸಮಯ ನಿಧಾನವಾಗಿ ಚಲಿಸುವುದು. ತಾತ್ಕಾಲಿಕ ಒಂಟಿತನ ಸಹ್ಯವಾಗಬಹುದು. ದೀರ್ಘಕಾಲದ ಅನಿವಾರ್ಯ ಒಂಟಿತನ ಖಿನ್ನತೆಗೆ ದೂಡುತ್ತದೆ, ಕಾಯಿಲೆಗಳಿಗೂ ದಾರಿ ಮಾಡಿಕೊಡುತ್ತದೆ. ಒಂಟಿತನದಿಂದ ಬರುವ ಹತಾಶೆ, ಸಿಟ್ಟು, ಅಸಹಾಯಕತೆಗಳು ಹುದುಗಿಸಿಟ್ಟಿದ್ದ ಆಕ್ರೋಶ ಒಮ್ಮೆಲೇ ಹೊರನುಗ್ಗಿ ಅಸಹ್ಯಕರ ವಾತಾವರಣ ಸೃಷ್ಟಿಸಿ, ಸಂಬಂಧಗಳನ್ನು ಮುರಿಯುವಂತೆ ಮಾಡಬಹುದು. ಪರಿಸ್ಥಿತಿ ಬಿಗಡಾಯಿಸಿ ಸರಿಪಡಿಸಲಾಗದ ಹಾನಿ ಉಂಟು ಮಾಡಬಹುದು. ದುರ್ಬಲ ಮನಸ್ಕರು ಆತ್ಮಹತ್ಯೆ ಸಹ ಮಾಡಿಕೊಳ್ಳಬಹುದು. ಒಂಟಿತನ, ಸ್ನೇಹಕ್ಕಾಗಿ ಹಪಹಪಿಸುವ ಹಂಬಲಿಕೆಯ ಸೂಚಿ.
     ಒಂದು ಉದಾಹರಣೆ ನೋಡೋಣ. ಅವನೊಬ್ಬ ಆದರ್ಶವಾದಿ. ನ್ಯಾಯ, ನೀತಿ, ಧರ್ಮ ಎನ್ನುವ ಅವನಿಗೆ ಕುಟುಂಬದ ಸದಸ್ಯರ ಸಹಕಾರ ಸಿಗುವುದಿಲ್ಲ. ನಾಲ್ಕು ಜನರಂತೆ ಅವನಿಲ್ಲ್ಲವೆಂಬ ಆತಂಕ ಅವನ ಪೋಷಕರಿಗೆ. ಅನೇಕ ರೀತಿಯಲ್ಲಿ ತಿಳಿಹೇಳುತ್ತಾರೆ, ಅವರಿವರಿಂದ ಉಪದೇಶ ಮಾಡಿಸುತ್ತಾರೆ. ಆದರೆ ಆದರ್ಶದ ಬೆನ್ನು ಬಿದ್ದ ಯುವಕನಿಗೆ ಅವಾವುದೂ ರುಚಿಸುವುದಿಲ್ಲ. ಒಳ್ಳೆಯ ವಿಚಾರಕ್ಕೆ ಮನೆಯವರೇ ಬೆಂಬಲಿಸದಿದ್ದರೆ ಹೇಗೆ ಎಂಬುದು ಅವನ ವಾದ. ಕೊನೆಗೆ ಮನೆಯವರು ಸುಮ್ಮನಾದರೂ ಅವರ ಕಿರಿಕಿರಿ, ಗೊಣಗಾಟಗಳು ತಪ್ಪುವುದಿಲ್ಲ. ಕಠಿಣ ಆದರ್ಶದ ಹಾದಿ ಹಿಡಿದ ಅವನಿಗೆ ಮನೆಯ ಹೊರಗೂ ಪ್ರೋತ್ಸಾಹ ಸಿಗುವುದಿಲ್ಲ. ಬೆನ್ನು ತಟ್ಟುವವರಿಲ್ಲದ ಅವನನ್ನು ಪ್ರಿಯರ ಹೀನೈಕೆ ಕುಗ್ಗಿಸುತ್ತದೆ, ಒಂಟಿತನ ಕಾಡುತ್ತದೆ. ಒಳ್ಳೆಯವನಾಗು, ನೀನು ಒಂಟಿಯಾಗುವೆ ಎಂಬ ಮಾತು ಅವನಂತಹವರಿಗೆ ಹೊಂದುತ್ತದೆ.
     ಹದಿಹರೆಯದ ಹುಚ್ಚು ಪ್ರೇಮಿಗಳ ಒಂಟಿತನ ಮತ್ತೊಂದು ತರಹ. ಅವನಿಲ್ಲದೆ/ಅವಳಿಲ್ಲದೆ ಬಾಳು ಶೂನ್ಯ ಎಂದು ಕೊರಗುವ, ಹುಚ್ಚಾಗುವ ದೇವದಾಸಗಳದ್ದು ಒಂದು ರೀತಿಯಾದರೆ, ತನಗೆ ದಕ್ಕದ ಅವಳು/ಅವನು ಬೇರೆಯವರಿಗೂ ಸಿಗಬಾರದೆಂದು ಆಸಿಡ್ ಎರಚುವ, ಕೊಲೆ ಮಾಡುವರದು ಮತ್ತೊಂದು ರೀತಿ. ಆತ್ಮಹತ್ಯೆ ಮಾಡಿಕೊಳ್ಳುವವರದು ಮಗದೊಂದು ರೀತಿ. ಕೊನೆಯವರೆಗೂ ಮದುವೆಯಾಗದೇ ಉಳಿಯುವ ಭಗ್ನಪ್ರೇಮಿಗಳನ್ನೂ, ಮಾನಸಿಕ ಕಾಯಿಲೆಗಳಿಂದ ನರಳುವವರನ್ನೂ ಕಾಣಬಹುದು. ಅತಿಯಾಗಿ ಹಚ್ಚಿಕೊಂಡ ಸ್ನೇಹಿತರು, ಬಂಧುಗಳು, ಮನೆಯವರು ಯಾರೇ ಆಗಲಿ ದೂರವಾದಾಗ/ಕಾಲವಾದಾಗ ಸಹ ಒಂಟಿತನ ಕಾಡದೇ ಇರದು.. ವೃದ್ಧಾಪ್ಯದಲ್ಲಿ ಮಕ್ಕಳು ಏನು ಮಾಡದಿದ್ದರೂ ಪರವಾಗಿಲ್ಲ, ಪ್ರೀತಿಯಿಂದ ಮಾತನಾಡಿಸಿದರೆ ಸಾಕು ಎಂದು ಹಂಬಲಿಸುವ ವೃದ್ಧರ ಸಂಖೆಯೂ ಕಡಿಮೆಯಿಲ್ಲ. ಪ್ರೀತಿ, ವಿಶ್ವಾಸ, ಸ್ನೇಹದ ಕೊರತೆಯೇ ಒಂಟಿತನದ ಮೂಲ. ಒಂಟಿತನ ಕಾಡಬಾರದೆಂದರೆ ಪರಸ್ಪರ ಪ್ರೀತಿ, ವಿಶ್ವಾಸಗಳಿಗೆ ಲೋಪವಾಗದಂತೆ ನೋಡಿಕೊಳ್ಳುವುದು ಅಗತ್ಯ.
     ಹಿತವಾದ ರೀತಿಯ ಒಂಟಿತನವಿದೆ. ಅದೆಂದರೆ ವಿವಿಧ ರಂಗಗಳಲ್ಲಿ ಸುಪ್ರಸಿದ್ಧರಾದವರ, ಮುಖಂಡರ, ಹಿರಿಯ ಅಧಿಕಾರಿಗಳ ಒಂಟಿತನ. ಅವರು  ಒಂಟಿತನವನ್ನು ಒಪ್ಪಿಕೊಳ್ಳಲೇಬೇಕು. ಒಂಟಿಯಾಗಿರುವುದೆಂದರೆ ಇತರರಿಗಿಂತ ಭಿನ್ನವಾಗಿರುವುದು, ಇತರರಿಗಿಂತ ಭಿನ್ನವೆಂದರೆ ಒಂಟಿಯಾಗಿರುವುದು ಎಂಬುದು ಅವರ ಮಟ್ಟಿಗೆ ಸರಿ. ಅವರ ಒಂಟಿತನದಲ್ಲೇ ಸೃಜನಾತ್ಮಕ ಶಕ್ತಿ ಹೊರಹೊಮ್ಮುತ್ತದೆ. ಇದರಲ್ಲೂ ಒಂದು ಅಪಾಯವಿದೆ. ಅದೆಂದರೆ ಸುಪ್ರಸಿದ್ಧರಾದವರು ಕಾರಣಾಂತರಗಳಿಂದ ಪ್ರಸಿದ್ಧಿ ಕಳೆದುಕೊಂಡರೆ, ಬಹುಪರಾಕ್ ಹೇಳುತ್ತಿದ್ದವರು ಇದ್ದಕ್ಕಿದ್ದಂತೆ ಕಣ್ಮರೆಯಾದರೆ ಅವರು ಅನುಭವಿಸುವ ಒಂಟಿತನದ ನೋವು ವರ್ಣನಾತೀತ.
     ಇನ್ನೊಂದು ಅಪಾಯಕಾರಿ ಒಂಟಿತನವಿದೆ. ಅದೆಂದರೆ ಒಟ್ಟಿಗಿದ್ದರೂ ಕಾಡುವ ಒಂಟಿತನ. ಎಲ್ಲೆಲ್ಲೂ ನೀರು, ಕುಡಿಯಲು ತೊಟ್ಟೂ ನೀರಿಲ್ಲ ಎಂಬಂತಹ ಸ್ಥಿತಿ ಅದು. ಒಂದು ಉದಾಹರಣೆ ನೋಡೋಣ. ಒಂದು ಕುಟುಂಬದವರು ಒಟ್ಟಿಗೇ ಟಿವಿ ನೋಡುತ್ತಿರುತ್ತಾರೆ. ಪರಸ್ಪರ ಮಾತುಗಳು ಅನಿವಾರ್ಯವಾದರೆ ಮಾತ್ರ ಆಡುತ್ತಾರೆ. ಅವರವರ ಪಾಡು ಅವರಿಗೆ. ಪರಸ್ಪರರನ್ನು ಸಹಿಸಿಕೊಂಡು ಹೋಗುತ್ತಿರುತ್ತಾರೆ. ಅಸಹನೀಯವಾದಾಗ ಕಿರುಚಾಡುತ್ತಾರೆ, ಜಗಳವಾಡುತ್ತಾರೆ, ಅನಿವಾರ್ಯವೆಂಬಂತೆ ಸುಮ್ಮನಾದರೂ ಎಲ್ಲರೂ ಅಲ್ಲಿ ಒಂಟಿಗಳೇ. ಕಛೇರಿಗಳಲ್ಲೂ ಅಷ್ಟೇ. ಒಂಟಿತನವನ್ನು ಅನುಭವಿಸುವ ಅಧಿಕಾರಿಗಳು, ನೌಕರರನ್ನು ಕಾಣಬಹುದು. ಇಲ್ಲಿ ಗಮನಿಸುವ ಅಂಶವೆಂದರೆ ಸ್ವಂತಿಕೆಗೆ, ಅಹಂಗೆ ಬೀಳುವ ಪೆಟ್ಟು ಒಂಟಿತನವಾಗಿ ಕಾಡುವುದು! ಪರಸ್ಪರರ ಅಪನಂಬಿಕೆಯಿಂದ ಉಂಟಾಗುವ ಒಂಟಿತನ ನರಕಸದೃಶ. ಉದ್ದೇಶೂರ್ವಕವಾಗಿ ಅಹಂಗೆ ಪೆಟ್ಟು ಕೊಡುವ ಕುಟುಂಬದವರಿಂದಲೇ, ಜೊತೆಗಾರರಿಂದಲೇ ನೋವು ಅಧಿಕವಾಗಿ ಒಂಟಿತನ ಕಾಡುತ್ತದೆ.
     ಒಂಟಿತನದ ತಾಪ ಕಡಿಮೆ ಮಾಡಿಕೊಳ್ಳಲು ಮಾರ್ಗಗಳಿವೆ. ಓದುವುದು, ಬರೆಯುವುದು, ಸಂಗೀತ ಕೇಳುವುದು, ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಒಳ್ಳೆಯ ಅಭ್ಯಾಸಗಳಾದರೆ, ದುಶ್ಚಟಗಳಿಗೆ ದಾಸರಾಗುವುದು ಇನ್ನೊಂದು ರೀತಿಯ ಪಲಾಯನ. ಸಿಗರೇಟು ಸೇದುವುದು, ಕುಡಿಯುವುದು, ಜೂಜಾಡುವುದು, ವೇಶ್ಯಾಸಂಗ, ಇತ್ಯಾದಿಗಳು ಇದರಲ್ಲಿ ಸೇರುತ್ತವೆ. ಕ್ರಮೇಣ ದುಶ್ಚಟಗಳು ಅವರನ್ನೇ ಆಕ್ರಮಿಸಿ ಅವರನ್ನಲ್ಲದೆ ಅವರ ಅವಲಂಬಿತರಿಗೂ ತೊಂದರೆ ಕೊಡುತ್ತವೆ. ಸರಿಯಾಗಿ ಬಳಸಿಕೊಂಡಲ್ಲಿ ಒಂಟಿತನ ವರವಾಗುತ್ತದೆ. ಒಳ್ಳೆಯ ಸಾಹಿತ್ಯ, ಸಂಗೀತ, ಇತ್ಯಾದಿಗಳು ಕುಡಿಯೊಡೆಯುವುದು ಆಗಲೇ. ಪ್ರೀತಿಸುವವರ, ತನ್ನನ್ನು ಗುರುತಿಸುವವರ ಕೊರತೆ ನೀಗಿಸಿಕೊಳ್ಳಲು ಅವರೇ ಇತರರನ್ನು ಪ್ರೀತಿಸಲು, ಇತರರನ್ನು ಗೌರವಿಸಲು ಮುಂದಾದರೆ ಅವರಿಂದಲೂ ಪ್ರತಿ ಪ್ರೀತಿ, ಪ್ರತಿ ಗೌರವ ಸಿಗಲಾರದೆ? ಪ್ರೀತಿ, ವಿಶ್ವಾಸಗಳು ಒಂಟಿಯಲ್ಲವೆಂದು ಭಾವಿಸುವಂತೆ ಮಾಡುತ್ತದೆ. ಸಮುದಾಯ, ಸಂಘಟನೆ, ಜಾತಿ, ಧರ್ಮ, ಗುಂಪು, ಇತ್ಯಾದಿಗಳೂ ಒಂಟಿತನವನ್ನು ಹೋಗಲಾಡಿಸುವ ಸಲುವಾಗಿಯೇ ಹುಟ್ಟಿಕೊಂಡದ್ದು. ದುಃಖ ಅನುಭವಿಸಲು ಒಬ್ಬರು ಇದ್ದರೂ ಆಗುತ್ತದೆ, ಆದರೆ ಸಂತೋಷ ಹಂಚಿಕೊಳ್ಳಲು ಇಬ್ಬರಾದರೂ ಇರಬೇಕು. ಇತರ ಹೃದಯಗಳ ಮಿಡಿತ ಕೇಳದವರ ಹೃದಯ ಬಾಡುತ್ತದೆ, ಇತರರ ಮಾತುಗಳನ್ನು ಕೇಳಲಿಚ್ಛಿಸದವನ ಮೆದುಳು ಕುಗ್ಗುತ್ತದೆ.
     ಒಂಟಿತನದಂತೆಯೇ ತೋರುವ, ಆದರೆ ಒಂಟಿತನವಲ್ಲದ, ಒಂಟಿತನಕ್ಕೆ ಹೋಲಿಸಲಾಗದ ಸಂಗತಿಯೊಂದಿದೆ. ಅದೇ ಏಕಾಂತ. ಏಕಾಂತ ಬೇರೆ, ಒಂಟಿತನ ಬೇರೆ. ಒಂಟಿತನ ತನ್ನತನದ ಬಡತನವಾದರೆ, ಏಕಾಂತ ತನ್ನತನದ ವೈಭವ. ಏಕಾಂತದಲ್ಲಿ ಬರಹಗಾರ ಅರ್ಥವಾಗದ ಸಂಗತಿಗಳಿಗೆ ಅರ್ಥ ಹುಡುಕುತ್ತಾನೆ, ಸಂಗೀತಗಾರ ಹೊಸ ಆಯಾಮಗಳ ಕುರಿತು ಧ್ಯಾನಿಸುತ್ತಾನೆ, ವಿವಿಧ ಸ್ತರಗಳವರು ಅಭಿರುಚಿಗೆ ತಕ್ಕಂತೆ ಮುಂದುವರೆಯುವ ಕುರಿತು ಚಿಂತಿಸುತ್ತಾರೆ, ಸಾಧಕ ಬದುಕಿನ ಅರ್ಥ ತಿಳಿಯುವ ಪ್ರಯತ್ನ ನಡೆಸುತ್ತಾನೆ. ಆಗ ಅವರುಗಳ ಜೊತೆಗಿರುವುದು ದಾರಿ ತೋರಿಸುವ ಅವರ ಅಂತರಂಗ. ತಪ್ಪುಗಳನ್ನು ಇತರರ ಎದುರಿಗೆ ಒಪ್ಪಿಕೊಳ್ಳದಿದ್ದರೂ ಅಂತರಂಗದೆದುರು ತಲೆಬಾಗಲೇಬೇಕು, ಅದುವರೆಗೆ ಗೋಚರಿಸದ ಸತ್ಯ ಗೋಚರಿಸುವುದೇ ಏಕಾಂತದ ಮಹಿಮೆ. ಏಕಾಂತ ಪ್ರೌಢತೆಯ ಸಂಕೇತ. ಅಲ್ಲಿ ಚಟುವಟಿಕೆಯಿದೆ, ಚಲನೆಯಿಲ್ಲದ ಕ್ರಿಯೆಯಿದೆ, ಶ್ರಮವಿರದ ಕೆಲಸವಿದೆ, ಕಣ್ಣು ಮೀರಿದ ದೃಷ್ಟಿಯಿದೆ, ಬಯಕೆ ಮೀರಿದ ಆಸೆಯಿದೆ, ಅನಂತ ತೃಪ್ತಿಯ ಭಾವವಿದೆ. ಏಕಾಂತ ತನ್ನತನವನ್ನು ಬೆಳೆಸುತ್ತದೆ. ಅಂತರಂಗ ಬಹಿರಂಗಕ್ಕೆ ಹೊಂದಿಕೆಯಾಗದಿದ್ದರೆ ಒಂಟಿತನ ಕಾಡುತ್ತದೆ. ಏಕಾಂತ ಹೊಂದಿಕೆ ಮಾಡಿಕೊಳ್ಳುವ ದಾರಿ ತೋರುತ್ತದೆ. ನಾವು ನಾವಾಗಿರಲು ಏಕಾಂತದಲ್ಲಿ ಮಾತ್ರ ಸಾಧ್ಯ. ಇತರರೊಂದಿಗೆ ಇದ್ದಾಗ ನಾವು ನಮ್ಮತನವನ್ನು ಕಳೆದುಕೊಳ್ಳುತ್ತೇವೆ.  ಇತರರು ಏನೆಂದುಕೊಳ್ಳುತ್ತಾರೆಂದೋ, ತಪ್ಪು ತಿಳಿಯುತ್ತಾರೆಂದೋ ಅಥವಾ ಮೆಚ್ಚಿಸುವ ಸಲುವಾಗಿಯೋ ಇಷ್ಟವಿಲ್ಲದಿದ್ದರೂ ನಮ್ಮತನಕ್ಕೆ ಹೊರತಾಗಿ ವರ್ತಿಸುತ್ತೇವೆ, ಪರಿಸ್ಥಿತಿಯೊಂದಿಗೆ ರಾಜಿ ಮಾಡಿಕೊಳ್ಳುತ್ತೇವೆ. ಏಕಾಂತದಲ್ಲಿ ಹಾಗಲ್ಲ, ಅಲ್ಲಿ ಅಂತರಂಗ ಬಹಿರಂಗಗಳಿಗೆ ಹೊಂದಿಕೆಯಿರುತ್ತದೆ. ಆದ್ದರಿಂದ ಅಲ್ಲಿ ಸಂತೋಷವಿರುತ್ತದೆ. ಸಾಧನೆಗೆ, ಧ್ಯಾನಕ್ಕೆ, ಮನನಕ್ಕೆ, ವಿಮರ್ಶೆಗೆ, ಹೇಗಿರಬೇಕೆಂದು ನಿರ್ಧರಿಸುವುದಕ್ಕೆ, ಉತ್ತಮ ರೀತಿಯಲ್ಲಿ ಮುಂದುವರೆಯುವುದಕ್ಕೆ ಏಕಾಂತದಲ್ಲಿ ಅವಕಾಶವಿದೆ. ಇತರರನ್ನು ಕೈಯಿಂದ ಮುಟ್ಟುವುದಕ್ಕೂ ಹೃದಯದಿಂದ ಮುಟ್ಟುವುದಕ್ಕೂ ವ್ಯತ್ಯಾಸ ತಿಳಿಯುವುದು ಏಕಾಂತದಲ್ಲೇ.
                      -ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ