ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶನಿವಾರ, ಏಪ್ರಿಲ್ 30, 2011

ವಾಜಿದ್ ಮತ್ತು ವಾಜಪೇಯಿ

                                                                                                 

    


     ನಾನು ಒಬ್ಬ ದೇಶಭಕ್ತ ಶ್ರೀಸಾಮಾನ್ಯ ವ್ಯಕ್ತಿಯ ಕುರಿತು ಈಗ ಹೇಳಹೊರಟಿರುವೆ. ಆತ ಬೇರೆ ಯಾರೂ ಅಲ್ಲ, ನಾನು ಕೆಲವು ವರ್ಷಗಳ ಹಿಂದೆ ಶಿಕಾರಿಪುರಾದ ತಹಸೀಲ್ದಾರನಾಗಿದ್ದಾಗ ನನ್ನ ಅಧೀನ ನೌಕರರಾಗಿದ್ದ ತಾಲ್ಲೂಕಿನ ಉಡುಗಣಿ ಹೋಬಳಿಯ ರೆವಿನ್ಯೂ ಇನ್ಸ್‌ಪೆಕ್ಟರ್ ಅಬ್ದುಲ್ ವಾಜಿದ್. ವಾಜಿದ್ ನನಗೆ ಏಕೆ ಇಷ್ಟವಾದರೆಂದರೆ ಆತ ಸರ್ಕಾರಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದುದಲ್ಲದೆ ಹೊಣೆಯರಿತು ಸಂದರ್ಭಾನುಸಾರ ಸಮಯೋಚಿತವಾಗಿ ನನಗೆ ಸಹಕಾರ ನೀಡುತ್ತಿದ್ದರಿಂದ ಮತ್ತು ಇತರರಂತೆ ಕೆಲಸದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸದೆ ಇದ್ದುದರಿಂದ. ಹೆಚ್ಚು ಇಷ್ಟವಾದದ್ದೇಕೆಂದರೆ ಆತ ತಾಯ್ನೆಲ ಭಾರತವನ್ನು ಪ್ರೀತಿಸುತ್ತಿದ್ದುದರಿಂದ ಮತ್ತು ಅದನ್ನು ತೋರಿಕೆಗಾಗಿ ಅಲ್ಲದೆ ನಿಜವಾದ ಭಾವನೆಯಿಂದ ಮುಕ್ತವಾಗಿ ವ್ಯಕ್ತಪಡಿಸುತ್ತಿದ್ದರಿಂದ. ಹಲವಾರು ಪ್ರಸಂಗಗಳು ನಾವು ಪರಸ್ಪರ ಅಭಿಮಾನದಿಂದ ಕಾಣಲು ಕಾರಣವಾದವು. ಒಂದು ಸಣ್ಣ ಉದಾಹರಣೆ ಹೇಳಬೇಕೆಂದರೆ ಒಂದು ಗ್ರಾಮದಲ್ಲಿ ಅಕ್ರಮ ಸಾಗುವಳಿಗೆ ಸಂಬಂಧಿಸಿದಂತೆ ಒಬ್ಬ ಬಲಾಢ್ಯ ವ್ಯಕ್ತಿಯನ್ನು ವೈಷಮ್ಯದಿಂದಾಗಿ ಕೊಲೆ ಮಾಡಲಾಗಿತ್ತು. ಗ್ರಾಮದಲ್ಲಿ ಎರಡು ಗುಂಪುಗಳಿದ್ದವು. ಪೋಲಿಸರು ಎರಡು ಗುಂಪುಗಳವರನ್ನೂ ಸೆಕ್ಷನ್ ೧೪೪ರಂತೆ ಪ್ರಕರಣ ದಾಖಲಿಸಿ ಶಾಂತಿ ಕಾಪಾಡುವ ಬಗ್ಗೆ ಕ್ರಮ ಕೈಗೊಳ್ಳಲು ಕೋರಿ ಪ್ರಥಮ ವರ್ತಮಾನ ವರದಿ ಕೊಟ್ಟಿದ್ದರು. ನೋಟಿಸ್ ಜಾರಿ ಮಾಡಿ ಕರೆಯಿಸಿದರೆ ಪರಸ್ಪರರಲ್ಲಿ ದ್ವೇಷ ಜಾಸ್ತಿಯಾಗುವುದೆಂಬ ಅನುಮಾನ ನನಗಿತ್ತು. ಕೊಲೆಯಾಗಿ ಎರಡು ದಿನಗಳ ನಂತರದ ಸಾಯಂಕಾಲ ಆ ಗ್ರಾಮಕ್ಕೆ ಭೇಟಿ ಕೊಡುವ ಸಲುವಾಗಿ ರೆವಿನ್ಯೂ ಇನ್ಸ್‌ಪೆಕ್ಟರ್ ಮತ್ತು ಗ್ರಾಮಲೆಕ್ಕಿಗರನ್ನು ಬರಹೇಳಿದೆ. ಅದಾಗಲೇ ಸಂಜೆ ೬ ಘಂಟೆಯಾಗಿತ್ತು. ರೆವಿನ್ಯೂ ಇನ್ಸ್‌ಪೆಕ್ಟರ್ ವಾಜಿದ್ 'ಆ ಗ್ರಾಮಕ್ಕೆ ಮಾಮೂಲು ದಿನಗಳಲ್ಲೇ ಸಾಯಂಕಾಲ ಹೋಗುವುದು ಒಳ್ಳೆಯದಲ್ಲ, ಈಗ ಪರಿಸ್ಥಿತಿ ಬಿಗುವಿನಿಂದ ಇದ್ದು ಬೆಳಿಗ್ಗೆ ಹೋಗುವುದು ಒಳ್ಳೆಯದು' ಎಂದು ಸೂಚಿಸಿದರು. ಹೋಗಲೇಬೇಕೆಂದಿದ್ದಲ್ಲಿ ಪೋಲಿಸರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕೆಂಬ ಸಲಹೆಯನ್ನೂ ಕೊಟ್ಟರು. ಅದು ಅವರು ಕೆಲಸ ತಪ್ಪಿಸಿಕೊಳ್ಳಲು ಹೇಳಿದ್ದಾಗಿರದೆ ಪ್ರಾಮಾಣಿಕವಾಗಿ ಹೇಳಿದ್ದಾಗಿತ್ತು. ಸಮಸ್ಯೆಯಿಂದ ದೂರವಿದ್ದಷ್ಟೂ ಅವು ಪ್ರಬಲವಾಗುವುದೆಂದು ನನ್ನ ಅನುಭವದಿಂದ ಕಂಡುಕೊಂಡಿದ್ದರಿಂದ ಅವರಿಗೆ ಧೈರ್ಯ ಹೇಳಿ ಗ್ರಾಮಕ್ಕೆ ಕರೆದುಕೊಂಡು ಹೋದೆ. ನಾನು ಹೋದ ಕೂಡಲೇ ಗ್ರಾಮದ ಜನರು ಮನೆಗಳನ್ನು ಸೇರಿಕೊಂಡರು. ಹೊರಗಡೆ ಕಾಣಿಸಿಕೊಳ್ಳಲಿಲ್ಲ. ಗ್ರಾಮದ ಒಂದು ದೇವಸ್ಥಾನದ ಜಗಲಿ ಮುಂದೆ ಕುಳಿತು ಕೆಲವರನ್ನು ಬರಹೇಳಿದೆ. ಬೆರಳೆಣಿಕೆಯ ಜನರು ಬಂದಾಗ ಕುಶಲೋಪರಿಯಾಗಿ ಹತ್ತು ನಿಮಿಷ ಮಾತನಾಡುತ್ತಾ ಕಳೆದೆ. ನಾನು ಏಕೆ ಬಂದಿದ್ದೇನೆಂದು ಕುತೂಹಲವಿದ್ದವರಿಗೆ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಕ್ರಮೇಣ ಒಬ್ಬೊಬ್ಬರಾಗಿ ಸುಮಾರು ೪೦-೫೦ ಗ್ರಾಮಸ್ಥರು ಸೇರಿದರು. ಆಗ ವಿಷಯಕ್ಕೆ ಬಂದ ನಾನು ಅಪರಾಧ ನಡೆಯುವ ಮುನ್ನ ಅದನ್ನು ತಡೆಯುವ ಅಧಿಕಾರ ನನಗೆ ಇರುವ ಬಗ್ಗೆ, ಅದನ್ನು ಹೇಗೆ ಜಾರಿ ಮಾಡಬಹುದೆಂಬ ಬಗ್ಗೆ, ಅದರ ಪರಿಣಾಮಗಳ ಬಗ್ಗೆ, ಏನೇ ಗಲಾಟೆಯಾದರೂ ಗಲಾಟೆಗೆ ಕಾರಣರಾಗಬಹುದಾದ ಗ್ರಾಮಸ್ಥರ ಹೆಸರುಗಳನ್ನು ಹೇಳಿ ವಿವರಿಸಿದಾಗ ಮತ್ತು ಯಾವುದೇ ಸಣ್ಣ ಜಗಳವಾದರೂ ಅಧಿಕಾರವನ್ನು ಹಿಂದು ಮುಂದು ನೋಡದೆ ಯಾರ ಮಾತನ್ನೂ ಕೇಳದೆ ಕಠಿಣವಾಗಿ ಜಾರಿ ಮಾಡುತ್ತೇನೆಂದು ಮನವರಿಕೆ ಮಾಡಿಕೊಟ್ಟಾಗ ಅದು ಫಲ ಕೊಟ್ಟಿತು. ಪಕ್ಷಪಾತವಿಲ್ಲದೆ ಕೆಲಸ ಮಾಡುವ ವಾಜಿದರ ಬಗ್ಗೆ ಗ್ರಾಮಸ್ಥರಿಗೆ ಇದ್ದ ಒಳ್ಳೆಯ ಅಭಿಪ್ರಾಯ ಸಹ ಉಪಯೋಗಕ್ಕೆ ಬಂದಿತು. ಪ್ರಕರಣ ದಾಖಲಿಸುವ ಅವಶ್ಯಕತೆ ಬರಲಿಲ್ಲ. ಅಂದಿನಿಂದ ವಾಜಿದ್ ನಾನು ಏನೇ ಹೇಳಿದರೂ ಚಾಚೂ ತಪ್ಪದೆ ಮರುಮಾತನಾಡದೆ ಮಾಡುತ್ತಿದ್ದರು. ಯಾವುದೇ ಸಮಸ್ಯೆಯಿದ್ದರೂ - ಚಳುವಳಿಗಳು, ಕೋಮುಗಲಭೆಗಳು, ಜಮೀನು ಜಗಳಗಳು, ಆಡಳಿತಾತ್ಮಕ ವಿಷಯಗಳು, ಇತ್ಯಾದಿ - ಅವರು ಯಾವುದೇ ಪಕ್ಷಪಾತವಿಲ್ಲದೆ ಕೆಲಸ ಮಾಡುತ್ತಿದ್ದರು.
     ವಾಜಿದ್ ಬಗ್ಗೆ ಹೇಳುವಾಗ ವಾಜಪೇಯಿ ಎಲ್ಲಿಂದ ಬಂದರು ಎಂದು ಕೇಳುವ ಮುಂಚೆ ಹೇಳಿಬಿಡುತ್ತೇನೆ. ಸುಮಾರು ೧೩ ವರ್ಷಗಳ ಹಿಂದಿನ ಮಾತು. ಆಗ ವಾಜಿದರು ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಗ್ರಾಮದ ಗ್ರಾಮಲೆಕ್ಕಿಗರಾಗಿದ್ದರು. ಆಗ ಭಾರತದ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರು ೩೦-೦೮-೧೯೯೮ರಂದು ಸಾಯಂಕಾಲ ೭-೩೦ ರಿಂದ ೮-೩೦ ರವರೆಗೆ ದೂರದರ್ಶನದಲ್ಲಿ ಜನರ ನೇರ ಸವಾಲುಗಳಿಗೆ ನೀಡಿದ ನೇರ ಉತ್ತರಗಳು ಬಿತ್ತರಗೊಂಡವು. ಅದನ್ನು ನೋಡಿ ತೀವ್ರ ಪ್ರಭಾವಿತರಾದ ವಾಜಿದ್ ಪ್ರಧಾನಮಂತ್ರಿಗಳಿಗೆ ೧೩-೦೯-೧೯೯೮ರಲ್ಲಿ ಪತ್ರವೊಂದನ್ನು ಬರೆದರು. ಸುಮಾರು ಮೂರು ಪುಟಗಳಷ್ಟು ದೊಡ್ಡದಾದ ಹಿಂದಿಯಲ್ಲಿ ಬರೆದ ಈ ಪತ್ರದಲ್ಲಿನ ಕೆಲವು ಸಾಲುಗಳು ಹೀಗಿವೆ:

"ಆದರಣೀಯ ಪ್ರಿಯ ಅಟಲಜಿ, ಪ್ರಣಾಮಗಳು.
. . . . . ಸವಾಲುಗಳಿಗೆ ನಿಮ್ಮ ಉತ್ತರದಿಂದ ನನಗೆ ಬಹಳ ಆನಂದವಾಗಿದೆ. . . ದೇಶಸೇವೆಯಲ್ಲಿ ಅಲ್ಪ ಪ್ರಮಾಣದಲ್ಲಾದರೂ ನಾನು ಉಪಯುಕ್ತನಾಗಬೇಕೆಂಬುದು ಒಬ್ಬ ದೇಶವಾಸಿಯಾಗಿ ನನ್ನ ಕರ್ತವ್ಯವಾಗುತ್ತದೆ. . . ನನ್ನ ಉದ್ದೇಶ ದೇಶದ ಏಕತೆ, ಅಖಂಡತೆಯನ್ನು ಉಳಿಸುವುದು, ಸೋದರತ್ವದ ಭಾವನೆಯಿಂದ ದೇಶವಾಸಿಗಳಲ್ಲಿ ದೇಶಭಕ್ತಿ ಮತ್ತು ದೇಶಾಭಿಮಾನ ಜಾಗೃತಗೊಳಿಸಲು ನನ್ನ ಪ್ರಯತ್ನವಿರುತ್ತದೆ.
     ಭಾರತದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ನಾನು ಮೂರು ಕವಿತೆಗಳನ್ನು ರಚಿಸಿರುವೆ. ಇದನ್ನು ದೇಶದ ಹೆಸರಿನಲ್ಲಿ ಸಮರ್ಪಿಸಿ ನಿಮಗೆ ತಲುಪಿಸುತ್ತಿದ್ದೇನೆ. ಮೂರು ಭಾಗಗಳಲ್ಲಿ ರಚಿಸಿರುವ ಈ ಕವಿತೆಗಳು: ಕಲ್ ಕಾ ಹಿಂದೂಸ್ಥಾನ್ (ನಿನ್ನೆಯ ಹಿಂದೂಸ್ಥಾನ), ಆಜ್ ಕಾ ಹಿಂದೂಸ್ಥಾನ್ (ಇಂದಿನ ಹಿಂದೂಸ್ಥಾನ) ಮತ್ತು ಕಲ್ ಕಾ ಹಿಂದೂಸ್ಥಾನ್ (ನಾಳೆಯ ಹಿಂದೂಸ್ಥಾನ).. . .
     ದೇವರಾಣೆ, ದೇಶಭಕ್ತಿ ಮತ್ತು ಅಭಿಮಾನ ಹೊರತುಪಡಿಸಿ ಬೇರೆ ಯಾವುದೇ ಧರ್ಮ, ಪಕ್ಷ, ಭಾವನೆಗಳು ನನ್ನ ಮನದಲ್ಲಿಲ್ಲ. ಗೊತ್ತಿಲ್ಲದೆ ಏನಾದರೂ ತಪ್ಪಾದರೆ ದೇಶಕ್ಕಾಗಿ ಕ್ಷಮಿಸಿ.
     . . . ನಿಮಗೆ ಕವಿತೆಗಳು ಇಷ್ಟವಾದರೆ ಸಂಸತ್ ಸದಸ್ಯರುಗಳ ಗಮನಕ್ಕೂ ತರಲು ಕೋರುವೆ. . . ಈಗ ದೇಶ ಕಠಿಣ ಮತ್ತು ಸಂಕಷ್ಟದ ದಿನಗಳನ್ನು ಎದುರಿಸುತ್ತಿದೆ. . . ವ್ಯಕ್ತಿಯ ಹಿತ ಮುಖ್ಯವೇ ದೇಶದ ಹಿತ ಮುಖ್ಯವೇ ಎಂಬುದನ್ನು ನಾವು ಈಗ ತೀರ್ಮಾನಿಸಲೇಬೇಕಿದೆ.
     . . . ಯುಗಯುಗಗಳಲ್ಲಿ ಹಿಂದೂಸ್ಥಾನವೇ, ನಿನಗೆ ಜಯ-ಜಯಕಾರ ಮೊಳಗಲಿ, ಸಪ್ತ ಸಮುದ್ರಗಳಾಚೆಯೂ ನಿನಗೆ ಜಯ-ಜಯಕಾರಗಳಾಗಲಿ. .
ನಿಮ್ಮ ವಿಶ್ವಾಸಿ,
ಕೆ.ಇ. ಅಬ್ದುಲ್ ವಾಜಿದ್.

     ಮೇಲಿನ ಪತ್ರಕ್ಕೆ ಅಟಲ್ ಬಿಹಾರಿ ವಾಜಪೇಯಿಯವರು ಸ್ವತಃ ಸಹಿ ಮಾಡಿ ಕಳುಹಿಸಿದ ದಿನಾಂಕ ೧೬-೧೦-೧೯೯೮ರ ಪತ್ರದಲ್ಲಿ ಹೀಗೆ ತಿಳಿಸಿದ್ದರು:

"ಪ್ರಿಯ ಶ್ರೀ ಅಬ್ದುಲ್ ವಾಜೀದ್,
     ನಿಮ್ಮ ಪತ್ರದೊಂದಿಗೆ ಸ್ವರಚಿತ ಕೆಲವು ಕವಿತೆಗಳು ತಲುಪಿವೆ. ಧನ್ಯವಾದಗಳು.
     ನಿಮ್ಮ ಪತ್ರ ಮತ್ತು ರಚನೆಗಳನ್ನು ನಾನು ಓದಿದ್ದೇನೆ. ಅವುಗಳಲ್ಲಿ ಭಾವಪ್ರಧಾನವಾಗಿರುವ ಜೊತೆಜೊತೆಗೆ ದೇಶ ಮತ್ತು ಸಮಾಜ ಕುರಿತು ಮಾನವೀಯ ಸಂವೇದನೆಗಳನ್ನು ಜಾಗೃತಗೊಳಿಸುವ ದಿಸೆಯಲ್ಲಿ ಒಳ್ಳೆಯ ಪ್ರೇರಣೆಯಿದೆ. ನಾನು ಈ ಕ್ಷೇತ್ರದಲ್ಲಿ ನಿಮ್ಮ ಸಫಲತೆಗಾಗಿ ಹಾರೈಸುವೆ. ದೇಶಹಿತದ ಸಲುವಾಗಿ ಎಲ್ಲಾ ಸಾಧ್ಯವಿರುವ ಹೆಜ್ಜೆಗಳನ್ನಿಡಲಾಗುವುದು ಎಂಬ ವಿಚಾರದಲ್ಲಿ ತಾವು ವಿಶ್ವಾಸದಿಂದಿರಿ.
ಶುಭಕಾಮನೆಗಳೊಂದಿಗೆ,
ತಮ್ಮವ,
ಅಟಲ್ ಬಿಹಾರಿ ವಾಜಪೇಯಿ"

ವಾಜಿದರ ಕವಿತೆಗಳು:
೧. ಕಲ್ ಕಾ ಹಿಂದೂಸ್ಥಾನ್ (ನಿನ್ನೆಯ ಹಿಂದೂಸ್ಥಾನ)
     ಇದರಲ್ಲಿ ಸ್ವಾತಂತ್ರ್ಯಪೂರ್ವ ಭಾರತದ ಚಿತ್ರಣ ಹೃದಯಕ್ಕೆ ಮುಟ್ಟುವಂತೆ ಚಿತ್ರಿಸಿದ್ದಾರೆ. ಬ್ರಿಟಿಷರ ಕುಟಿಲತೆ, ವಿಭಜಿಸಿ ಆಳುವ, ಒಬ್ಬರನ್ನೊಬ್ಬರು ಎತ್ತಿಕಟ್ಟುವ ಕೆಲಸಗಳನ್ನು ವಿವರಿಸಿ, ಗುಲಾಮಿತನದಿಂದ ಹೊರಬರಲು ಪ್ರೇರಿಸುತ್ತಾ "ಬನ್ನಿ ಸ್ವಾತಂತ್ರ್ಯದ ಜ್ಯೋತಿ ಬೆಳಗೋಣ" ಎಂದು ಕರೆ ನೀಡಿದ್ದಾರೆ.
೨. ಆಜ್ ಕಾ ಹಿಂದೂಸ್ಥಾನ್ (ಇಂದಿನ ಹಿಂದೂಸ್ಥಾನ)
     ಇದರಲ್ಲಿ ಧರ್ಮ ಸಾಮರಸ್ಯದ ಮಹತ್ವ ಬಿಂಬಿಸಲಾಗಿದೆ. ರಾಮನ ಜೊತೆ ರಹೀಮನಿರಲಿ, ಕೃಷ್ಣನ ಕೈಯೊಂದಿಗೆ ಕರೀಮನ ಕೈ ಸೇರಲಿ ಎನ್ನುವ ಇವರು ದ್ವಾಪರದಿಂದ ತ್ರೇತಾಯುಗದವರೆಗೆ ಫಿರೌನ್, ನಮ್ರೂದ, ಮೀರಸಾದಿಕ್, ಕಂಸ, ಶಕುನಿ, ದುರ್ಯೋಧನ, ರಾವಣ ಇಂತಹವರನ್ನು ಜನ ನೆನೆಯಲು ಬಯಸುವುದಿಲ್ಲವೆನ್ನುತ್ತಾರೆ. ಜೀವನ ಅಲ್ಪವಾಗಿದೆ, ದೇಶಕ್ಕೆ ಏನು ಮಾಡಿದೆಯೆಂಬ ಲೆಕ್ಕ ಕೊಡಬೇಕಿದೆ, ಸಹಸ್ರಾರು ಜನರ ಬಲಿದಾನದಿಂದ ಬಂದ ವರದಾನವೀ ಸ್ವಾತಂತ್ರ್ಯ, "ಬನ್ನಿ, ಮತ್ತೊಮ್ಮೆ ಸ್ವಾತಂತ್ರ್ಯದ ಜ್ಯೋತಿ ಬೆಳಗೋಣ" ಎಂದು ಹುರಿದುಂಬಿಸಿದ್ದಾರೆ.
೩. ಭವಿಷ್ಯ್ ಕಾ ಹಿಂದೂಸ್ಥಾನ್ (ಭವಿಷ್ಯದ ಹಿಂದೂಸ್ಥಾನ)
     ರಕ್ತಪಾತ, ಯುದ್ಧ, ಹಿಂಸಾತ್ಮಕ ಕ್ರಾಂತಿಗಳಿಂದ ಉಪಯೋಗವಿಲ್ಲ, ಶಾಂತಿ ಮಂತ್ರದಿಂದ ಸತ್ಯ-ಶಿವ-ಸುಂದರರ ಸಾಕಾರವಾಗುವುದು. ಬಡತನ ನಿವಾರಣೆ ಕ್ರಮಗಳ ಅಗತ್ಯತೆ, ಸಹನ- ಸದ್ಗುಣಶೀಲತೆಯ ಸಂಕಲ್ಪ ಕೈಗೊಳ್ಳುವ ಬಗ್ಗೆ, ದೇಶದ ಹಿತ, ಸಂರಕ್ಷಣೆಯ ಕಡೆಗೆ ಗಮನ, ಒಳ್ಳೆಯ ಪ್ರಜಾತಂತ್ರ, ದೇಶಹಿತಕ್ಕಾಗಿ ಪಕ್ಷ, ಪಂಥ, ಮತ, ಧರ್ಮಗಳನ್ನು ಬದಿಗಿಡುವುದು, ಇತ್ಯಾದಿಗಳನ್ನು ಹೃದಯಂಗಮವಾಗಿ ಮೂಡಿಸಿದ್ದಾರೆ. ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ, ಕೆಟ್ಟ ಕೆಲಸಗಳನ್ನು ಖಂಡಿಸೋಣ, ಮಾತೃಭೂಮಿಯ ಋಣ ತೀರಿಸಲು ಸೇವೆ ಮಾಡೋಣ, ಈ ದೇಶ ನಮ್ಮದು, ನಾವಿ ದೇಶಕ್ಕಾಗಿ ಏನಾದರೂ ಮಾಡಲೇಬೇಕು ಎನ್ನುವ ಇವರ ಆಶಯವೆಂದರೆ: ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣದಲ್ಲಿ ಜನರು ಒಟ್ಟಾಗಿ ನಾವು ಒಂದೇ ಎಂದು ಹೇಳಲಿ, ದೇಶದಲ್ಲಿ ಸುಖ, ಶಾಂತಿ, ಏಕತೆ-ಅಖಂಡತೆಯ ಅಲೆ ಏಳಲಿ, ಪ್ರೀತಿ-ವಿಶ್ವಾಸಗಳ ಸುಂದರ ನಿರ್ಮಲ ಸಮಾಜ ಬರಲಿ ಎಂಬುದೇ. "ಯುಗಯುಗಗಳಲ್ಲಿ ಹಿಂದೂಸ್ಥಾನವೇ, ನಿನಗೆ ಜಯ-ಜಯಕಾರ ಮೊಳಗಲಿ, ಸಪ್ತ ಸಮುದ್ರಗಳಾಚೆಯೂ ನಿನಗೆ ಜಯ-ಜಯಕಾರಗಳಾಗಲಿ" ಎಂದು ಈ ಭಾವಜೀವಿ ಹೃದಯಪೂರ್ವಕ ಬಯಸಿದ್ದಾರೆ.
     ದೇಶಭಕ್ತ ಶ್ರೀಸಾಮಾನ್ಯ ಅಬ್ದುಲ್ ವಾಜೀದರಿಗೆ ಶುಭವಾಗಲಿ.
**********************
ವಾಜಿದರ ರಚನೆಗಳ ಯಥಾಪ್ರತಿಗಳು:










ಅಟಲ ಬಿಹಾರಿ ವಾಜಪೇಯಿಯವರ ಪತ್ರ

ಮತ್ತೊಮ್ಮೆ ಅಬ್ದುಲ್ ವಾಜಿದರಿಗೆ ಶುಭಾಶಯಗಳು.
*************
-ಕ.ವೆಂ.ನಾಗರಾಜ್.

ಗುರುವಾರ, ಏಪ್ರಿಲ್ 28, 2011

ಮೂಢ ಉವಾಚ - 52

ಅಂತ್ಯ
ದಿನಗಳುರುಳುವುವು ಅಂತೆ ಮನುಜನಾಯುವು
ಶಾಶ್ವತನು ತಾನೆಂಬ ಭ್ರಮೆಯು ಮುಸುಕಿಹುದು |
ಚದುರಂಗದ ರಾಜ ಮಂತ್ರಿ ರಥ ಕುದುರೆ ಕಾಲಾಳು
ಆಟದಂತ್ಯದಲಿ ಎಲ್ಲರೂ ಒಂದೆ ಮೂಢ ||
ಅವಿಚ್ಛಿನ್ನ
ಭೂಮಿಯೊಂದಿರಬಹುದು ಮಣ್ಣಿನ ಗುಣ ಭಿನ್ನ
ಜಲವೊಂದಿರಬಹುದು ಜಲದಗುಣ ಭಿನ್ನ |
ಜ್ಯೋತಿಯೊಂದಿರಬಹುದು ಪ್ರಕಾಶ ಭಿನ್ನ
ಭಿನ್ನದೀ ಜಗದಿ ಆತ್ಮವವಿಚ್ಛಿನ್ನ ಮೂಢ ||
ತಡ
ಯೌವನವು ಮುಕ್ಕಾಗಿ ಸಂಪತ್ತು ಹಾಳಾಗಿ
ಗೆಳೆಯರು ಮರೆಯಾಗಿ ಕೈಕಾಲು ಸೋತಿರಲು |
ನಿಂದೆ ಮೂದಲಿಕೆ ಸಾಲಾಗಿ ಎರಗಿರಲು
ಬದುಕಿನರ್ಥ ತಿಳಿದೇನು ಫಲ ಮೂಢ ||

ಬೇಟೆ
ಮದಭರಿತ ಯೌವನವ ಮುಪ್ಪು ತಿನ್ನುವುದು
ಸಾಕೆಂಬ ಭಾವವನು ಬೇಕೆಂಬುದಳಿಸುವುದು |
ಗುಣವನಸೂಯೆ ತಿನ್ನುವುದು ಒಂದನಿನ್ನೊಂದು
ನುಂಗದಿರುವುದಿದೆಯೇ ಜಗದಿ ಮೂಢ ||
********************
-ಕ.ವೆಂ.ನಾಗರಾಜ್.






ಸಂಪ್ರದಾಯಗಳು ಸಂಕೋಲೆಗಳಾಗದಿರಲಿ

ಸುಗಮ ಜೀವನಕೆ ಕಟ್ಟುಪಾಡುಗಳು ಬೇಕು 
ಮೀರಿದರೆ ಆಪತ್ತು ನೆಮ್ಮದಿಯು ಹಾಳು |
ಶಾಸ್ತ್ರವಿಧಿಗಳು ಬೇಕು ಮಂಗಳವ ತರಲು
ವಿವೇಕದಿಂದನುಸರಿಸೆ ಸುಖವು ಮೂಢ ||
     ಕೈ ಹಿಡಿದ ಗಂಡ ಗತಿಸಿದರೆ ವಿಧವೆ ಪತ್ನಿ ಕೇಶ ಮುಂಡನ ಮಾಡಿಸಿಕೊಂಡು ಕೆಂಪು ಅಥವಾ ಬಿಳಿ ಸೀರೆ ಉಟ್ಟುಕೊಂಡು ಕೈಗೆ ಬಳೆ ಹಾಕಿಕೊಳ್ಳದೆ ಹಣೆಗೆ ಕುಂಕುಮ ಇಟ್ಟುಕೊಳ್ಳದೆ ಒಂದು ರೀತಿಯ ಒಂಟಿ ಹಾಗೂ ಬಲವಂತದ ವೈರಾಗ್ಯದ ಜೀವನ ನಡೆಸಬೇಕಾಗಿದ್ದ ಕಾಲವಿತ್ತು. ಚಿಕ್ಕ ವಯಸ್ಸಿನಲ್ಲೇ ವಿಧವೆಯಾದವರ ಪಾಡು ಅನುಭವಿಸಿದವರಿಗೇ ಗೊತ್ತು. ಆಕೆಗೆ ಶುಭ ಕಾರ್ಯಗಳಲ್ಲಿ ಆಹ್ವಾನವಿರುತ್ತಿರಲಿಲ್ಲ. ಆಕೆ ಎದುರಿಗೆ ಬಂದರೆ ಅಪಶಕುನವೆಂದು ಭಾವಿಸುವವರಿದ್ದರು. ಹೊಸ ಪೀಳಿಗೆಯವರಿಗೆ ಇಂತಹ ಅನಿಷ್ಟ ಸಂಪ್ರದಾಯದ ಪರಿಚಯ ಇರಲಾರದು. ಪ್ರಾರಂಭದಲ್ಲಿ ಕೇಶಮುಂಡನ ಮಾಡಿಸಿಕೊಳ್ಳುವುದು ನಿಂತರೂ ಕೈಗೆ ಬಳೆ ಹಾಕಿಕೊಳ್ಳಲು, ಹಣೆಗೆ ಕುಂಕುಮ ಇಟ್ಟುಕೊಳ್ಳಲು ಹಿಂಜರಿಯುತ್ತಿದ್ದರು. ಈಗ ಪರಿಸ್ಥಿತಿ ಬದಲಾಗಿದೆ, ಸುಧಾರಣೆಯಾಗಿದೆ. ಕಳೆದ ಎರಡು-ಮೂರು ದಶಕಗಳಿಂದೀಚೆಗೆ ಈ ಸಂಪ್ರದಾಯದ ಆಚರಣೆ ಕಂಡು ಬರುತ್ತಿಲ್ಲ. ಒಂದು ಅನಿಷ್ಟ ಸಂಪ್ರದಾಯದ ಅಂತ್ಯವಾಗಿರುವುದು ಸಮಾಧಾನದ ಸಂಗತಿ. 
     ಸಂಪ್ರದಾಯವೆಂದರೆ ತಲೆ ತಲಾಂತರಗಳಿಂದ ಆಚರಿಸಿಕೊಂಡು ಬರಲಾಗುವ ಆಚರಣೆಗಳು, ನಡವಳಿಕೆಗಳು. ಸರಿಯೋ, ತಪ್ಪೋ ವಿಚಾರ ಮಾಡದೆ ಅದನ್ನು ಮುಂದುವರೆಸಿಕೊಂಡು ಬರುವವರನ್ನು ಸಂಪ್ರದಾಯವಾದಿಗಳು ಎನ್ನುತ್ತಾರೆ. ಕೆಲವನ್ನು ಆಚರಿಸಿ ಕೆಲವನ್ನು ಕೈಬಿಡುವ ಅನುಕೂಲ/ಅವಕಾಶವಾದಿಗಳೂ ಇದ್ದಾರೆ. ಅರ್ಥವಿಲ್ಲದ ಸಂಪ್ರದಾಯಗಳನ್ನು ಧಿಕ್ಕರಿಸಿ ನಡೆಯುವವರೂ ಇದ್ದಾರೆ. ಸ್ವತಃ ಸಂಪ್ರದಾಯಗಳನ್ನು ಆಚರಿಸದಿದ್ದರೂ, ಅರ್ಥವಿಲ್ಲವೆಂದು ತಿಳಿದಿದ್ದರೂ, ಇತರರ ಸಲುವಾಗಿ ಅವನ್ನು ಬೆಂಬಲಿಸುವವರ ಸಂಖ್ಯೆ ಸಹ ಗಣನೀಯವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರನ್ನೂ ಹೊಂದಿಸಿಕೊಂಡು, ಹೊಂದಿಕೊಂಡು ಸಮನ್ವಯ ಮಾಡಿ ಸದ್ವಿಚಾರ ತಿಳಿಸಲು ಹೆಣಗುವವರೂ ಇದ್ದಾರೆ. ಎಲ್ಲಾ ಸಂಪ್ರದಾಯಗಳೂ ಕೆಟ್ಟವಲ್ಲ; ಹಾಗೆಯೇ ಎಲ್ಲವೂ ಒಳ್ಳೆಯವು ಎಂದು ಹೇಳಲಾಗುವುದಿಲ್ಲ. ಯಾವ ಆಚರಣೆಗಳಿಂದ ಯಾರಿಗೂ ತೊಂದರೆಯಿಲ್ಲವೋ, ಯಾವುದರಿಂದ ಮನುಷ್ಯನ ಬೌದ್ಧಿಕ ವಿಕಾಸ, ಅಭಿವೃದ್ಧಿಗೆ ಸಹಕಾರವಾಗುವುದೋ, ಸಂತಸ ಹರಡುವುದೋ, ತಾರತಮ್ಯ ಇಲ್ಲದಿರುವುದೋ ಅಂತಹವುಗಳನ್ನು ಒಳ್ಳೆಯ ಸಂಪ್ರದಾಯಗಳೆನ್ನಬಹುದು. ಇದಕ್ಕೆ ತದ್ವಿರುದ್ಧವಾದ ಸಂಪ್ರದಾಯಗಳನ್ನು ಕೆಟ್ಟವು ಎಂದುಕೊಳ್ಳಬಹುದು. ಒಳ್ಳೆಯದಕ್ಕೋ, ಕೆಟ್ಟದಕ್ಕೋ ಗೊತ್ತಿಲ್ಲ, ಈಗಂತೂ ಹೊಸ ಹೊಸ ಸಂಪ್ರದಾಯಗಳು, ಆಚರಣೆಗಳು ಚಾಲ್ತಿಗೆ ಬರುತ್ತಿವೆ, ಹಿಂದಿನ ಅನುಭವಗಳಿಂದ ಹೇಳುವುದಾದರೆ ಕ್ರಮೇಣ ಅವು ಗಟ್ಟಿಗೊಳ್ಳುತ್ತವೆ.
      ಬಾಲ ಗಂಗಾಧರನಾಥ ತಿಲಕರು ಬ್ರಿಟಿಷರ ವಿರುದ್ಧ ಜನರನ್ನು ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರೇಪಿಸುವ ಸಲುವಾಗಿ ಹುಟ್ಟುಹಾಕಿದ ಸಾರ್ವಜನಿಕ ಗಣೇಶ ಉತ್ಸವಗಳು ಇಂದು ಯಾವ ಮಟ್ಟಕ್ಕೆ ತಲುಪಿವೆ ಎಂಬುದು ವಿಚಾರ ಮಾಡಬೇಕಾದ ಸಂಗತಿಯಾಗಿದೆ. ಮೊದಲು ಊರಿಗೆ ಒಂದರಂತೆ ಇದ್ದುದು, ಈಗ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಮೂರ್ತಿಗಳನ್ನು ಇಟ್ಟು ಅಲ್ಲಿ ನಡೆಸುವ ಕಾರ್ಯಕ್ರಮಗಳು, ಪೈಪೋಟಿ, ವಂತಿಕೆ ವಸೂಲಿ, ವಿಸರ್ಜನೆ ಸಮಯದಲ್ಲಿ ಕುಡಿದು ಕುಣಿಯುವ ಯುವಕರು, ಮತೀಯ ಘರ್ಷಣೆಗಳು, ಇತ್ಯಾದಿಗಳನ್ನು ಗಮನಿಸಿದರೆ ಇವೆಲ್ಲಾ ಯಾವ ಪುರುಷಾರ್ಥಕ್ಕಾಗಿ ಎಂದು ಅನ್ನಿಸದೇ ಇರದು. ಒಳ್ಳೆಯ ರೀತಿಯಲ್ಲಿ ಆಚರಿಸುವವರು ಇದ್ದರೂ ಅಂತಹವರ ಸಂಖ್ಯೆ ಬೆರಳೆಣಿಕೆಯಷ್ಟು. ಗಣೇಶೋತ್ಸವಗಳು ಮುಗಿಯುವವರೆಗೂ ಶಾಂತಿ, ಸುವ್ಯವಸ್ಥೆಗಳಿಗಾಗಿ ಸಂಬಂಧಿಸಿದವರು ಹಗಲೂ ರಾತ್ರಿ ಹೆಣಗುವ, ಇಂತಹ ಉತ್ಸವಗಳು (ಗಣೇಶೋತ್ಸವ ಮಾತ್ರ ಅಲ್ಲ, ಎಲ್ಲಾ ಮತೀಯ/ಧಾರ್ಮಿಕ ಉತ್ಸವಗಳು ಸೇರಿ) ಏಕಾದರೂ ಬರುತ್ತವೋ ಎಂದು ಅಂದುಕೊಳ್ಳುವ ಪರಿಸ್ಥಿತಿ ಇಂದು ಇದೆ. ನಾನು ಗಣೇಶೋತ್ಸವವನ್ನಾಗಲೀ, ಇಂತಹ ಇತರ ಉತ್ಸವಗಳನ್ನಾಗಲೀ ವಿರೋಧಿಸುತ್ತಿಲ್ಲ, ಅದನ್ನು ಆಚರಿಸಲಾಗುತ್ತಿರುವ ರೀತಿಯ ಬಗ್ಗೆ ಮಾತ್ರ ಬೆರಳು ತೋರಿಸುತ್ತಿದ್ದು, ಆಚರಣೆಗಳು ಅರ್ಥಪೂರ್ಣವಾಗಿರಲೆಂಬ ಕಳಕಳಿ ಮಾತ್ರ ಇಲ್ಲಿದೆ. 
     ಸಂಕಷ್ಟಹರ ಗಣಪತಿ ಪೂಜೆಯನ್ನು ಇಂದು ಸಾಮೂಹಿಕ ಸನ್ನಿಯಂತೆ ಆಚರಿಸಲಾಗುತ್ತಿದೆ. ಆದರೆ ಎಷ್ಟು ಜನರು ಇದನ್ನು ಶ್ರದ್ಧೆಯಿಂದ ಆಚರಿಸುತ್ತಿದ್ದಾರೆ? ಹೆಚ್ಚಿನವರು ಸ್ವಸಹಾಯ ಪದ್ಧತಿಯ ಹೋಟೆಲ್ಲಿನಲ್ಲಿ ಹಣ ಕೊಟ್ಟು ಕಾಫಿ ಕುಡಿದಂತೆ ದೇವಸ್ಥಾನಕ್ಕೆ ಹೋಗಿ ಹಣ ಕೊಟ್ಟು ಚೀಟಿ ಬರೆಸಿ ಹೋಗುತ್ತಾರೆ, ಪ್ರಸಾದ ಕೊಡುವ ಸಮಯಕ್ಕೆ ಬಂದು ಕೈಮುಗಿದು ಪ್ರಸಾದ ಪಡೆದು ಹೋಗುತ್ತಾರೆ. ಪೂಜೆಯ ಸಮಯದಲ್ಲಿ ದೇವಸ್ಥಾನದಲ್ಲಿದ್ದವರೂ ಪರಸ್ಪರ ಮಾತುಕತೆಗಳಲ್ಲಿ ತೊಡಗಿರುತ್ತಾರೆ. ಇಂತಹ ಆಚರಣೆಯಿಂದ ಯಾರಿಗೆ ಪ್ರಯೋಜನ? ಯಾರ ಕಷ್ಟಗಳು ಪರಿಹಾರವಾಗುತ್ತದೆ? ಶ್ರದ್ಧೆಯಿಂದ, ಅರ್ಥ ತಿಳಿದುಕೊಂಡು ಮಾಡುವ ಕ್ರಿಯೆಗಳಿಂದ ಮಾತ್ರ ಫಲ ಸಿಗಲು ಸಾಧ್ಯವಲ್ಲವೇ? ಇಲ್ಲದಿದ್ದರೆ ಅವು ತೋರಿಕೆಗೆ ಮಾಡುವ ಆಚರಣೆಗಳು ಅಷ್ಟೆ. ಇಸ್ಲಾಮ್ ಮತ ಪ್ರಾರಂಭವಾದ ಸಂದರ್ಭದಲ್ಲಿ ಧ್ವನಿವರ್ಧಕವಿರಲಿಲ್ಲ. ಆದರೆ ಇಂದು ಎಲ್ಲಾ ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿ ಅಗತ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಧ್ವನಿವರ್ಧಿಸಿ ನಮಾಜು, ಉಪದೇಶಗಳನ್ನು ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅದನ್ನು ಕೇಳಲು ಇಚ್ಛಿಸದವರಿಗೂ ಬಲವಂತವಾಗಿ ಕೇಳುವಂತೆ ಮಾಡುತ್ತಿರುವುದು ಒಂದು ರೀತಿಯ ಶಬ್ದಮಾಲಿನ್ಯವಲ್ಲವೇ?
     ಜಾತ್ರೆ, ಪೂಜೆ, ಇತ್ಯಾದಿಗಳ ಹೆಸರಿನಲ್ಲಿ ದೇವರನ್ನು ಸಂತುಷ್ಟಗೊಳಿಸುವ(?) ಕಾರಣದಿಂದ ಪ್ರಾಣಿಬಲಿ ನೀಡುವ ಸಂಪ್ರದಾಯ ಒಳ್ಳೆಯದೆಂದು ಹೇಳಬಹುದೆ? ಇದನ್ನು ಸಮರ್ಥಿಸುವ ಜನರಿಗೆ ಕಡಿಮೆಯೇನಿಲ್ಲ. ಶಿಕಾರಿಪುರದಲ್ಲಿ ತಾಲ್ಲೂಕು ದಂಡಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಜಾತ್ರೆಯ ಸಮಯದಲ್ಲಿ ಕೋಣಬಲಿ ತಡೆಯಲು ಒಂದು ಗ್ರಾಮದಲ್ಲಿ ಪೋಲಿಸರ ನೆರವಿನೊಂದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದರೂ, ಗ್ರಾಮಸರಿಗೆ ಕಾನೂನಿನಲ್ಲಿ ಇರುವ ನಿಷೇಧ, ಉಲ್ಲಂಘಿಸಿದರೆ ಆಗುವ ಪರಿಣಾಮಗಳು, ಇತ್ಯಾದಿ ತಿಳುವಳಿಕೆ ಹೇಳಲು ಮುಂಚಿತವಾಗಿ ನಡೆಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಪಶುವೈದ್ಯರ ಸಹಾಯದಿಂದ ಸಿರಿಂಜಿನಲ್ಲಿ ಕೋಣನ ರಕ್ತವನ್ನು ತೆಗೆದು ಸಾಂಕೇತಿಕವಾಗಿ ದೇವಿಗೆ ಅರ್ಪಿಸಲು ಗ್ರಾಮದ ಮುಖ್ಯಸರು ಒಪ್ಪಿ ಮುಚ್ಚಳಿಕೆ ಬರೆದುಕೊಟ್ಟಿದ್ದರೂ, ಪೋಲಿಸರ ಕಣ್ಗಾವಲು ಇದ್ದರೂ ಎಲ್ಲರ ಕಣ್ಣುತಪ್ಪಿಸಿ ಕೋಣಬಲಿ ನೀಡಿದ ಪ್ರಸಂಗ ಬೇಸರ, ಮುಜುಗರ ಉಂಟುಮಾಡಿತ್ತು. ಎಲ್ಲಾ ಮಾಧ್ಯಮಗಳಲ್ಲೂ ವಿಷಯ ಅತಿರಂಜಿತವಾಗಿ ಪ್ರಚಾರಗೊಂಡಿತು. ಕೆಲವರ ಮೇಲೆ ಪ್ರಕರಣ ದಾಖಲಿಸಿದರೂ ರಾಜಕೀಯ ನಾಯಕರ ಮಧ್ಯಪ್ರವೇಶ ಪ್ರಕರಣವನ್ನು ದುರ್ಬಲಗೊಳಿಸಿದ್ದು ಸುಳ್ಳಲ್ಲ. ಈ ಪ್ರಕರಣವನ್ನು ರಾಜಕೀಯ ಮಾಡುವ ಸಲುವಾಗಿ ಪರವಾಗಿ ಮತ್ತು ವಿರೋಧವಾಗಿ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಬಳಸಿಕೊಂಡವು. ಅನಿಷ್ಟ ಸಂಪ್ರದಾಯಕ್ಕೆ ವಿರೋಧ ವ್ಯಕ್ತಪಡಿಸಿದವರೂ ಸಾತ್ವಿಕ ಕಾರಣಕ್ಕೆ ವಿರೋಧಿಸದೆ ವಿರೋಧಿಗಳನ್ನು ವಿರೋಧಿಸಲು ಮಾತ್ರ ಬಳಸಿದ್ದು ನೋವಿನ ವಿಷಯ. ಮಾಧ್ಯಮಗಳೂ ಕೆಸರೆರಚಾಟಕ್ಕೆ ಸಾಥ್ ನೀಡಿದವೇ ಹೊರತು, ಅವುಗಳಿಗೆ ಜನರಲ್ಲಿ ತಿಳುವಳಿಕೆ ಹೆಚ್ಚಿಸುವ ಶಕ್ತಿಯಿದ್ದರೂ ಮಾಡಲಿಲ್ಲ. ಇಂತಹ ಉದಾಹರಣೆಗಳನ್ನು ಸಾಕಷ್ಟು ನೋಡಬಹುದು. ಅಂಧ ಸಂಪ್ರದಾಯಗಳ ಕುರಿತು ತಿಳಿಸುವ ಸಲುವಾಗಿ ಕೆಲವನ್ನು ಮಾತ್ರ ಸಾಂಕೇತಿಕವಾಗಿ ಉದಾಹರಿಸಿರುವೆ.
     ಸಂಪ್ರದಾಯಗಳನ್ನು ಹೇಗೆ ಆಚರಿಸಬೇಕು ಅನ್ನುವುದಕ್ಕಿಂತ ಕೆಟ್ಟ ಸಂಪ್ರದಾಯಗಳನ್ನು ಗುರುತಿಸಿ ಅವುಗಳಿಂದ ದೂರ ಉಳಿಯಲು ಮತ್ತು ಸಾಧ್ಯವಾದರೆ ತಡೆಯಲು ಪ್ರಯತ್ನಿಸುವುದು ಇಂದಿನ ಅಗತ್ಯ. ಮಠ-ಮಂದಿರಗಳು, ಮಸೀದಿಗಳು, ಚರ್ಚುಗಳು, ಇತ್ಯಾದಿಗಳು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಶ್ರದ್ಧಾ ಕೇಂದ್ರಗಳಾಗಿವೆ. ಈ ಕೇಂದ್ರಗಳು ವಾಸ್ತವವಾಗಿ ಸತ್ಕರ್ಮಗಳನ್ನು ಪೋಷಿಸುವ, ಜ್ಞಾನ ಪಸರಿಸುವ ಕೆಲಸ ಮಾಡಬೇಕು. ವಿಷಾದದ ಸಂಗತಿಯೆಂದರೆ ಹೆಚ್ಚಿನವು ಋಣಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿವೆ. ಶೈಕ್ಷಣಿಕ, ವೈದ್ಯಕೀಯ ಸಂಸ್ಥೆಗಳನ್ನು, ಕಲ್ಯಾಣ ಮಂದಿರಗಳನ್ನು ಕಟ್ಟಿ ಹಣ ಮಾಡುವ ಕೇಂದ್ರಗಳಾಗಿವೆ. ತಿರಳಿಗಿಂತ ಸಿಪ್ಪೆಗೆ ಹೆಚ್ಚು ಮಾನ್ಯತೆ ಕೊಡಲಾಗುತ್ತಿದೆ. ನಿಜ, ತಿರುಳಿನ ರಕ್ಷಣೆಗೆ ಸಿಪ್ಪೆಯಿರಬೇಕು, ಆದರೆ ಸಿಪ್ಪೆಯೇ ತಿರುಳಾಗಬಾರದು. ಆ ಕಾರಣದಿಂದಾಗಿ ಉತ್ತರಾಧಿಕಾರಕ್ಕಾಗಿ ಕಚ್ಚಾಡುವ, ಒಡೆತನ ಸಾಧಿಸಬಯಸುವವರ ಕೂಟ ಅಲ್ಲಿ ಮನೆ ಮಾಡಿವೆ. ಮೂಲ ಉದ್ದೇಶ ಮರೆತು ಭೌತಿಕ ಆಸ್ತಿ, ಸಂಪತ್ತು ಕ್ರೋಢೀಕರಿಸಲು ನೀಡುವ ಮಹತ್ವವೇ ಇದಕ್ಕೆ ಕಾರಣವೆಂದರೆ ಅದರಲ್ಲಿ ಅತಿಶಯೋಕ್ತಿಯಿಲ್ಲ.
     ರೂಢಿಗತ ಸಂಪ್ರದಾಯಗಳಿಗೆ ಹೇಗೆ ಮನಸ್ಸು ಒಗ್ಗಿಕೊಳ್ಳುತ್ತದೆ ಎಂಬುದಕ್ಕೆ ಅತ್ಯತ್ತಮ ಉದಾಹರಣೆ ಎಂದರೆ, ಬಲಶಾಲಿ ಆನೆಯ ಕಾಲಿಗೆ ಕಬ್ಬಿಣದ ಸರಪಳಿ ಹಾಕಿ ಮರವೊಂದಕ್ಕೆ ಕಟ್ಟಿ ಹಾಕಿದರೆ ಅದು ಬಿಡಿಸಿಕೊಳ್ಳಲು ಪ್ರಯತ್ನವೇ ಮಾಡುವುದಿಲ್ಲ. ಆನೆ ಎಷ್ಟು ಬಲಶಾಲಿಯೆಂದರೆ ಅದಕ್ಕೆ ಆ ಸರಪಳಿ ಮತ್ತು ಮರ ಲೆಕ್ಕವೇ ಅಲ್ಲ. ಅದು ಮನಸ್ಸು ಮಾಡಿದರೆ ಸರಪಳಿ ತುಂಡರಿಸಬಲ್ಲದು ಮತ್ತು ಮರವನ್ನು ಕಿತ್ತು ಬಿಸಾಡಬಲ್ಲದು. ಆದರೂ ಅದು ಮಾಡುವುದಿಲ್ಲ. ಏಕೆಂದರೆ ಆನೆ ಚಿಕ್ಕದಾಗಿದ್ದಾಗ ಅದನ್ನು ಅದೇ ರೀತಿ ಕಟ್ಟಿ ಹಾಕಲಾಗುತ್ತಿತ್ತು. ಚಿಕ್ಕದಾಗಿದ್ದರಿಂದ ಅದರಿಂದ ಬಿಡಿಸಿಕೊಳ್ಳಲು ಅದು ಎಷ್ಟೇ ಪ್ರಯತ್ನಿಸಿದರೂ ಆಗ ಆಗುತ್ತಿರಲಿಲ್ಲ. ಕ್ರಮೇಣ ಅದೇ ಅಭ್ಯಾಸವಾಗಿ ಮರಕ್ಕೆ ಕಟ್ಟಿ ಹಾಕಿದರೆ ಬಿಡಿಸಿಕೊಳ್ಳಲಾಗುವುದಿಲ್ಲವೆಂಬ ಭಾವ ಗಟ್ಟಿಗೊಂಡು ಅದು ದೊಡ್ಡದಾದ ಮೇಲೂ ಹಾಗೆ ಕಟ್ಟಿಹಾಕಿದರೆ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರಲೇ ಇರಲಿಲ್ಲ. ನಮ್ಮ ಸ್ಥಿತಿ ಸಹ ಅದೇ ರೀತಿ ಇದೆ. ನಮಗೆ ವಿಚಾರ ಮಾಡುವ ಶಕ್ತಿ ದೇವರು ಕೊಟ್ಟಿದ್ದಾನೆ. ಕೆಲವು ಸಂಪ್ರದಾಯಗಳು ಅರ್ಥಹೀನವೆಂದು ನಮಗೆ ತಿಳಿಯುತ್ತದೆ, ಮನಸ್ಸು ಮಾಡಿದರೆ ಅದನ್ನು ಧಿಕ್ಕರಿಸುವ, ಮುಂದುವರೆಸದಿರುವ ಶಕ್ತಿ ನಮಗಿದೆ, ಆದರೂ ನಾವು ಹಾಗೆ ಮಾಡುವುದಿಲ್ಲವೆಂಬುದು ವಿಷಾದದ ಸಂಗತಿ. 'ಅಪ್ಪ ಹಾಕಿದ ಆಲದಮರವೆಂದು ಅದಕ್ಕೆ ನೇಣು ಹಾಕಿಕೊಳ್ಳಲಾಗುವುದೇ' ಎಂಬ ಪ್ರಚಲಿತ ಗಾದೆ ಮಾತು ತಿಳಿಸುವುದೂ ವಿಚಾರ ಮಾಡಿ ಮುಂದುವರೆಯಿರಿ ಎಂದೇ. ಮರದ ನೆರಳಿನಲ್ಲಿ ಬಾಳೋಣ, ಆದರೆ ಏಕೆ ನೇಣು ಹಾಕಿಕೊಳ್ಳಬೇಕು? ಸಾರಾಸಗಟಾಗಿ ಎಲ್ಲವನ್ನೂ ತಳ್ಳಿಹಾಕಬೇಕಾಗಿಲ್ಲ. ಕುಟುಂಬಕ್ಕೆ, ಸುತ್ತಮುತ್ತಲಿನವರಿಗೆ ಹಿತವೆನಿಸುವ ಒಳ್ಳೆಯ ಸಂಪ್ರದಾಯಗಳನ್ನು ಉಳಿಸಿ ಬೆಳೆಸಬಹುದು, ಆದರೆ ಅನಿಷ್ಠ ಸಂಪ್ರದಾಯಗಳನ್ನು ನಿಲ್ಲಿಸುವ ಮತ್ತು ಸದ್ಯಕ್ಕೆ ಒಳ್ಳೆಯದೆನಿಸಿದರೂ ಕಾಲಾನುಕಾಲಕ್ಕೆ ಅದರ ಆಚರಣೆಯಿಂದ ಆಗುವ ಪರಿಣಾಮಗಳನ್ನೂ ಗಮನಿಸಿ ಯೋಗ್ಯತಾನುಸಾರ ನಿರ್ಣಯಿಸಿ ಅಂತಹವುಗಳನ್ನು ಕೈಬಿಡುವ ಬಗ್ಗೆ ನಿರ್ಧರಿಸುವುದು ಇಂದಿನ ಅಗತ್ಯವಾಗಿದೆ. ಸಂಪ್ರದಾಯಗಳು ನಮ್ಮನ್ನು ಕಟ್ಟಿಹಾಕುವ ಸರಪಳಿಗಳಾಗದಿರಲಿ; ನಮ್ಮನ್ನು ಒಳ್ಳೆಯ ದಾರಿಯಲ್ಲಿ ಮುನ್ನಡೆಸುವ ದಾರಿದೀಪಗಳಾಗಲಿ.
***************
-ಕ.ವೆಂ.ನಾಗರಾಜ್.

ಮಂಗಳವಾರ, ಏಪ್ರಿಲ್ 26, 2011

ಭಾವಕಟ್ಟು




       ಅಣೆಕಟ್ಟಿನಲ್ಲಿ ನೀರಿದೆ. ಒಳಹರಿವು ಹೆಚ್ಚಾದಂತೆ ನೀರನ್ನು ಕ್ರೆಸ್ಟ್ ಗೇಟ್ ತೆರೆದು ಹೊರಬಿಡಲಾಗುತ್ತದೆ. ನೀರನ್ನು ಹೊರಬಿಡದೆಹೋದರೆ? ಅಣೆಕಟ್ಟು ತುಂಬಿ ಹೆಚ್ಚಾದ ನೀರು ಹೊರಬರುತ್ತದೆ. ನೀರಿನ ದಬ್ಬುವ ಶಕ್ತಿ ಒಳಹರಿವು ಹೆಚ್ಚಾದಂತೆ ಹೆಚ್ಚುತ್ತಾ ಹೋಗಿ ಅಣೆಕಟ್ಟಿಗೆ ಅಪಾಯವಾಗಬಹುದು. ಭೂಕಂಪ, ಪ್ರಕೃತಿ ವಿಕೋಪ, ಮಾನವ ನಿರ್ಮಿತ ಅನಾಹುತ, ಇತ್ಯಾದಿ ಯಾವುದೇ ಕಾರಣಕ್ಕೆ ಅಣೆಕಟ್ಟು ಒಡೆದರೆ? ಆಗ ಆಗುವ ನಷ್ಡ ಅಗಾಧ. ಮಾನವನ ಮನಸ್ಸನ್ನೂ ಅಣೆಕಟ್ಟು ಇರುವ ಜಲಾಶ್ರಯಕ್ಕೆ ಹೋಲಿಸಬಹುದು. ನೀರಿನ ಬದಲಿಗೆ ಅಲ್ಲಿ ಭಾವನೆಗಳು ಇರುತ್ತದೆ. ಭಾವನೆಗಳು ಮಡುಗಟ್ಟಲು ಬಿಟ್ಟರೆ ಅನಾಹುತ ತಪ್ಪಿದ್ದಲ್ಲ. ಅಣೆಕಟ್ಟಿನಿಂದ ನೀರನ್ನು ಅಗತ್ಯ ಪ್ರಮಾಣದಲ್ಲಿ ಹೊರಬಿಡುತ್ತಾ ಹೋದರೆ ಒಳ್ಳೆಯ ಬೆಳೆ ಬೆಳೆಯಲು ಉಪಯೋಗವಾಗುತ್ತದೆ. ಅದೇ ರೀತಿ ಭಾವನೆಗಳನ್ನು ಸೂಕ್ತ ರೀತಿಯಲ್ಲಿ ಹೊರಹಾಕಿದರೆ ಒಳ್ಳೆಯ ಪರಿಣಾಮ ಕಾಣಬಹುದು. ಅವಮಾನ, ಅಸಹಾಯಕತೆ, ಸಿಟ್ಟು, ಈಡೇರದ ಬಯಕೆ, ಹಗೆತನ, ಹೊಟ್ಟೆಕಿಚ್ಚು, ಇತ್ಯಾದಿ ಕಾರಣಗಳಿಂದ ಉಂಟಾಗುವ ಭಾವನೆಗಳ ಹೊಯ್ದಾಟದ ಭಾರಕ್ಕೆ ಸೋತು ಮನಸ್ಸು ಸ್ಪೋಟಿಸಿದರೆ ಅದರಿಂದ ಹಾನಿ ನಿಶ್ಚಿತ. ಅಂತಹ ಸಂದರ್ಭಗಳಲ್ಲಿ ತಕ್ಷಣಕ್ಕೆ ಪ್ರತಿಕ್ರಿಯಿಸದೆ ಮೌನವಾಗಿದ್ದು, ತನ್ನ ಮಾತಿನಿಂದ ಆಗಬಹುದಾದ ಪರಿಣಾಮಗಳನ್ನು ಕುರಿತು ನಿಧಾನವಾಗಿ ಯೋಚಿಸಿ, ಸಮಯ, ಸಂದರ್ಭ ಅನುಸರಿಸಿ ನಿಧಾನವಾಗಿ  ಭಾವನೆಗಳನ್ನು ಹೊರಬಿಟ್ಟಲ್ಲಿ ಒಳ್ಳೆಯದಾಗುತ್ತದೆ.ನಾವೂ ಈ ಭಾವಕಟ್ಟು ನಿರ್ಮಿಸಿಕೊಳ್ಳೋಣವೇ?
-ಕ.ವೆಂ.ನಾಗರಾಜ್.

ಸೋಮವಾರ, ಏಪ್ರಿಲ್ 25, 2011

ಸಾಧ್ಯವಾದರೆ ಪ್ರೀತಿಸೋಣ


     ಒಂದು ಸಂದರ್ಭವನ್ನು ಊಹಿಸಿಕೊಳ್ಳೋಣ. ಒಂದು ದಂತವೈದ್ಯರ ಕ್ಲಿನಿಕ್‌ನಲ್ಲಿ ವೈದ್ಯರನ್ನು ಕಾಣಲು ರೋಗಿಗಳು ತಮ್ಮ ಸರತಿಗಾಗಿ ಕಾಯುತ್ತಿದ್ದಾರೆ. ನೋವಿನ ಬಾಧೆಯಿಂದ ಎಲ್ಲರೂ ಮುಖ ಕಿವುಚಿ ಕುಳಿತಿದ್ದಾರೆ. ನರಳಾಟ ಬಿಟ್ಟರೆ ಬೇರೆ ಭಾವವಿಲ್ಲ. ಆಗ ಒಬ್ಬ ತಾಯಿ ತನ್ನ ಹಲ್ಲು ನೋವಿನ ಚಿಕಿತ್ಸೆ ಸಲುವಾಗಿ ತನ್ನ ಪುಟ್ಟ ಮಗುವಿನೊಂದಿಗೆ ಅಲ್ಲಿಗೆ ಬಂದು ಸಾಲಿನಲ್ಲಿ ಕೂರುತ್ತಾಳೆ. ಆ ಮಗು ತನ್ನ ಪಕ್ಕ ಕುಳಿತ ವೃದ್ಧ ರೋಗಿಯನ್ನು ಕುತೂಹಲದಿಂದ ನೋಡುತ್ತಾ ತಾತಾ ಎನ್ನುತ್ತದೆ. ಆತ ಮಗುವನ್ನೊಮ್ಮೆ ನೋಡಿ ಪಕ್ಕಕ್ಕೆ ಮುಖ ತಿರುಗಿಸಿ ನರಳುತ್ತಾನೆ. ಮಗು ತಾಯಿಯ ತೊಡೆಯಿಂದ ಬಲವಂತವಾಗಿ ಇಳಿದು ಆ ವ್ಯಕ್ತಿಯ ಹತ್ತಿರ ಹೋಗಿ ಆತನನ್ನು ಮುಟ್ಟಿ ಕತ್ತೆತ್ತಿ ನೋಡುತ್ತಾ ಮತ್ತೆ ತಾತಾ ಎಂದು ನಗುತ್ತದೆ. ಆತನಿಗೆ ಮಗುವನ್ನು ಮಾತನಾಡಿಸದೆ ಇರಲು ಸಾಧ್ಯವೇ ಇಲ್ಲ. ಆತ ನಗುತ್ತಾ ಏನು ಮಗು? ಅನ್ನುತ್ತಾನೆ. ಮಗು ಚಪ್ಪಾಳೆ ತಟ್ಟಿ ನಗುತ್ತದೆ. ಇದನ್ನು ಗಮನಿಸುತ್ತಿದ್ದ ಇತರರೂ ಮಗುವಿನ ನಗುಮುಖದಿಂದ ಆಕರ್ಷಿತರಾಗಿ ಅದನ್ನು ಮಾತನಾಡಿಸಲು ಪ್ರಾರಂಭಿಸುತ್ತಾರೆ. ಒಬ್ಬರ ಕೈಯಿಂದ ಇನ್ನೊಬ್ಬರ ಕೈಗೆ ಹೋಗುತ್ತಾ ಆಟವಾಡಿಕೊಂಡಿದ್ದ ಮಗುವಿನಿಂದ ಹತ್ತೇ ನಿಮಿಷದಲ್ಲಿ ಅಲ್ಲಿನ ವಾತಾವರಣವೇ ಬದಲಾಗುತ್ತದೆ. ಮಗುವಿನೊಂದಿಗೆ ಮಾತನಾಡುತ್ತಿದ್ದಾಗ ಅವರುಗಳಿಗೆ ನೋವಿನ ಅನುಭವವೇ ಆಗುತ್ತಿರಲಿಲ್ಲ. ಒಂದು ಮಗುವಿನ ನಿಷ್ಕಲ್ಮಶ ನಗು ಮಾಡಿದ ಪರಿವರ್ತನೆ ಅದಾಗಿತ್ತು. ಆ ಮಗುವಿಗೆ ಸಾಧ್ಯವಾಗಿದ್ದು ದೊಡ್ಡವರಿಗೆ ಏಕೆ ಆಗುವುದಿಲ್ಲ? ಏಕೆಂದರೆ ಮಗುವಿಗೆ ಚಿಕ್ಕವರು, ದೊಡ್ಡವರು, ಬಡವ, ಶ್ರೀಮಂತ, ಆ ಜಾತಿ, ಈ ಜಾತಿ, ಕರಿಯ, ಬಿಳಿಯ, ಇತ್ಯಾದಿ ಬೇಧ ಭಾವವಿರುವುದಿಲ್ಲ. ಮಕ್ಕಳಂತೆ ನಿಷ್ಕಲ್ಮಶ ನಗು ದೊಡ್ಡವರಿಗೆ ಬರಲು ಕಷ್ಟ. ಆದರೆ ಸಾಧ್ಯವಾದಷ್ಟು ನಗುನಗುತ್ತಾ ಮಾತನಾಡುವ ವ್ಯಕ್ತಿಗಳು ಎಲ್ಲರಿಗೂ ಇಷ್ಟವಾಗುತ್ತಾರೆ.

ಶನಿವಾರ, ಏಪ್ರಿಲ್ 23, 2011

ಮೂಢ ಉವಾಚ - 51 : ಆತ್ಮ

ಕಾಣಿಸದು ಕಣ್ಣಿಗೆ ಕಿವಿಗೆ ಕೇಳಿಸದು
ಮುಟ್ಟಲಾಗದು ಕರ ತಿಳಿಯದು ಮನ |
ಬಣ್ಣಿಸಲು ಸಿಗದು ಪ್ರಮಾಣಕೆಟುಕದು
ಅವ್ಯಕ್ತ ಆತ್ಮದರಿವು ಸುಲಭವೆ ಮೂಢ ||


ಕಾಣುವುದು ನಿಜವಲ್ಲ ಕಾಣದಿರೆ ಸುಳ್ಳಲ್ಲ
ತಿಳಿದದ್ದು ನಿಜವಲ್ಲ ತಿಳಿಯದಿರೆ ಸುಳ್ಳಲ್ಲ |
ಕೇಳುವುದು ನಿಜವಲ್ಲ ಕೇಳದಿರೆ ಸುಳ್ಳಲ್ಲ
ಆತ್ಮಾನಾತ್ಮರರಿವು ಅವನೆ ಬಲ್ಲ ಮೂಢ ||


ಅರಿತವರು ಹೇಳಿಹರು ಅಚ್ಚರಿಯ ಸಂಗತಿಯ
ಆತ್ಮಕ್ಕೆ ಅಳಿವಿಲ್ಲ ಹುಟ್ಟು ಸಾವುಗಳಿಲ್ಲ |
ಬದಲಾಗದು ಬೆಳೆಯದು ನಾಶವಾಗದು
ಚಿರಂಜೀವ ನಿತ್ಯ ಶಾಶ್ವತವು ಮೂಢ ||


ಅಚ್ಚರಿಯು ಅಚ್ಚರಿಯು ಏನಿದಚ್ಚರಿಯು
ಆತ್ಮವಿದು ಅಚ್ಚರಿಯು ಹೇಳಲಚ್ಚರಿಯು |
ಕೇಳಲಚ್ಚರಿಯು ಅರಿಯಲಚ್ಚರಿಯು
ಆತ್ಮವನರಿಯದಿಹದಚ್ಚರಿಯು ಮೂಢ ||
*********************
-ಕ.ವೆಂ.ನಾಗರಾಜ್.

ಬುಧವಾರ, ಏಪ್ರಿಲ್ 20, 2011

ಮೂಢ ಉವಾಚ - 50

ತರ್ಕ
ಸುಖವು ಸ್ವಾಭಾವಿಕ ದುಃಖವಾಗಂತುಕನು
ಯೋಗವನುಸರಿಸುವುದು ನಿಜವಿಯೋಗ |
ದುಃಖಸಂಯೋಗ ವಿಯೋಗವೀವುದು ಸುಖ
ವಿಯೋಗವೆ ಯೋಗವೆನುವರು ಮೂಢ ||
ತನುಗುಣ
ನೀರು ಹರಿಯುವುದು ಬೆಂಕಿ ಸುಡುವುದು
ಬಾಲನವನಂತ್ಯದಲಿ ಮುಪ್ಪಡರಿ ಕುಗ್ಗುವನು |
ಚಣಚಣಕೆ ತನುವು ಬದಲಾಗುತಿಹುದು
ಬದಲಾಗುವುದೆ ತನುಗುಣವು ಮೂಢ ||
ಯಾರ ಸ್ವತ್ತು
ತಾಯಿಯ ಸ್ವತ್ತಲ್ಲ ತಂದೆಯ ಸ್ವತ್ತಲ್ಲ
ಪತ್ನಿಯ ಸ್ವತ್ತಲ್ಲ ಮಕ್ಕಳ ಸ್ವತ್ತಲ್ಲ |
ಮಿತ್ರರ ಸ್ವತ್ತಲ್ಲ ತನ್ನದಲ್ಲವೆ ಅಲ್ಲ
ಶರೀರವಿದಾರ ಸ್ವತ್ತು ಗೊತ್ತಿಲ್ಲ ಮೂಢ ||
ಅತಿಥಿ
ಜೀವಿಗಳಿವರು ಎಲ್ಲಿಂದ ಬಂದವರು
ಬಂದದ್ದಾಯಿತು ಮತ್ತೆಲ್ಲಿ ಹೋಗುವರು |
ಎಲ್ಲಿಂದ ಬಂದಿಹರಲ್ಲಿಗೇ ಹೋಗುವರು
ಕೆಲದಿನ ನಮ್ಮೊಡನಿರುವರು ಮೂಢ ||
***************
-ಕ.ವೆಂ.ನಾಗರಾಜ್.

ಶುಕ್ರವಾರ, ಏಪ್ರಿಲ್ 15, 2011

ಮೂಢ ಉವಾಚ - 49

ಬೇಕು - ಸಾಕು
ಬಯಕೆಗಳಿರೆ ಬಡವ ಸಾಕೆಂದರದುವೆ ಸಿರಿ
ನಾನೆಂಬುದು ಅಜ್ಞಾನ ನನದೇನೆನಲು ಜ್ಞಾನ |
ದಾಸನಾದರೆ ಹಾಳು ಒಡೆಯನಾದರೆ ಬಾಳು
ಮನದೊಡೆಯನಾದವನೆ ಮಾನ್ಯ ಮೂಢ ||

ಬಯಸದಿರುವವರಿಹರೆ ಈ ಜಗದಿ ಸಂಪತ್ತು
ಪರರ ಮೀರಿಪ ಬಯಕೆ ತರದಿರದೆ ಆಪತ್ತು |
ಸಮಚಿತ್ತದಿಂ ನಡೆದು ಕರ್ಮಫಲದಿಂ ಪಡೆದ
ಜ್ಞಾನ ಸಂಪತ್ತಿಗಿಂ ಮಿಗಿಲುಂಟೆ ಮೂಢ ||
ತಿರುಳು
ಅರ್ಧ ಜೀವನವ ನಿದ್ದೆಯಲಿ ಕಳೆವೆ
ಬಾಲ್ಯ ಮುಪ್ಪಿನಲಿ ಕಾಲುಭಾಗವ ಕಳೆಯೆ |
ಕಷ್ಟ ಕೋಟಲೆ ಕಾಯಿಲೆ ಉದರಭರಣೆಗೆ
ಕಳೆದುಳಿವ ಬಾಳಿನಲಿ ತಿರುಳಿರಲಿ ಮೂಢ ||
ಮತ್ಸರ
ನೋಡುವ ನೋಟವದು ಭಿನ್ನವಾಗುವುದು
ಅತ್ತೆ ಸೊಸೆಯರ ನಡುವೆ ಹೆತ್ತವರ ನಡುವೆ |
ದ್ವೇಷ ಭುಗಿಲೇಳುವುದು ಸೋದರರ ನಡುವೆ
ಕಾಳ ಮತ್ಸರದ ಚೇಳು ಕುಟುಕೀತು ಮೂಢ ||
****************
-ಕ.ವೆಂ.ನಾಗರಾಜ್.

ಮಂಗಳವಾರ, ಏಪ್ರಿಲ್ 12, 2011

ಮೂಢ ಉವಾಚ - 48 ;ವಿಷಯಲೋಲುಪತೆ

ವಿಷಯಲೋಲುಪತೆ
ವಿಷಯಲೋಲುಪತೆ ವಿಷಕಿಂತ ಘೋರ
ಮೊಸಳೆಯ ಬೆನ್ನೇರಿ ದಡವ ದಾಟಲುಬಹುದೆ?|
ಅಂತರಂಗದ ದನಿಯು ಹೊರದನಿಯು ತಾನಾಗೆ
ಹೊರಬರುವ ದಾರಿ ತೋರುವುದು ಮೂಢ||


ವಿಷಯಾಭಿಧ್ಯಾನ ತರದಿರದೆ ಅಧ್ವಾನ
ಕಂಡು ಕೇಳಿದರಲಿ ಬರುವುದನುರಾಗ|
ಬಯಕೆ ಫಲಿಸದೊಡೆ ಕೋಪದುದಯ
ಕೋಪದಿಂ ಅಧೋಗತಿಯೆ ಮೂಢ||


ವಿಷಯಮಾರ್ಗದಿ ನಡೆದು ಮಲಿನರಾದವರ
ಹಿಂಬಾಲಿಸದೆ ಹೆಜ್ಜೆ ಹೆಜ್ಜೆಗೆ ಮಿತ್ತು ಪತನ |
ಯುಕ್ತಮಾರ್ಗದಿ ನಡೆದು ವಿವೇಕಿಯಾದೊಡೆ
ಅನುಸರಿಸುವುದು ಫಲಸಿದ್ಧಿ ಮುಕ್ತಿ ಮೂಢ|


ಚಪಲತೆ
ಚಿತ್ತ ಚಪಲತೆಯಿಂ ಚಿತ್ತ ಚಂಚಲತೆ
ಚಿತ್ತ ಚಂಚಲತೆಯಿಂ ಚಿತ್ತ ತಳಮಳವು |
ತಳಮಳ ಕಳವಳ ಹಾಳುಗೆಡವದೆ ಶಾಂತಿ
ಶಾಂತಿಯಿಲ್ಲದಿರೆ ಸುಖವೆಲ್ಲಿ ಮೂಢ ||
*****************
-ಕ.ವೆಂ.ನಾಗರಾಜ್.

ಶನಿವಾರ, ಏಪ್ರಿಲ್ 2, 2011

ದೇವರನ್ನು ದೇವರ ಪಾಡಿಗೆ ಬಿಟ್ಟುಬಿಡೋಣ! - 2

     ನಾನು ವಿಗ್ರಹಾರಾಧನೆಯನ್ನು ಸಮರ್ಥಿಸುವುದಿಲ್ಲವೆಂದ ಮಾತ್ರಕ್ಕೆ ಅದನ್ನು ವಿರೋಧಿಸುವುದಿಲ್ಲ. ಏಕೆಂದರೆ ನಾನು ಯಾವುದೇ ವಿಚಾರ, ತತ್ವಗಳನ್ನು ಪ್ರತಿಪಾದಿಸುವಷ್ಟು ಪ್ರಬುದ್ಧತೆ ಹೊಂದಿಲ್ಲ. ವಿಗ್ರಹ ಪೂಜೆಯಿಂದ ಶಾಂತಿ, ನೆಮ್ಮದಿ ಪಡೆಯುತ್ತಿರುವ/ಪಡೆಯಬಯಸುವ ಬಹುತೇಕರ ಶ್ರದ್ಧೆ, ನಂಬಿಕೆಗಳು ಸುಳ್ಳೆಂದು ನಾನು ಹೇಗೆ ಹೇಳಲಿ? ಅವರುಗಳ ಪ್ರಾರ್ಥನೆಗೆ ವಿಗ್ರಹಗಳು ಮಾಧ್ಯಮವಾಗಿರಬಹುದು. ವಿಗ್ರಹಗಳು ಅವರ ಮನೋಶಕ್ತಿಯ ಕೇಂದ್ರೀಕರಣಕ್ಕೆ ಸಾಧನ ಹಾಗೂ ಸಹಕಾರಿಯಾಗಿ ಇರಬಹುದು. ವಿಗ್ರಹಗಳನ್ನು ದೇವರೆಂದು ಭಾವಿಸಿ, ನಂಬಿ ಪೂಜಿಸುವವರ ಮಾನಸಿಕ ಚಿಂತನೆಯ ಅಲೆಗಳು ವಿಗ್ರಹಗಳಲ್ಲಿ ಕ್ರೋಢೀಕೃತಗೊಂಡು ಅಲ್ಲಿ ಶಕ್ತಿ ಸಂಚಯನ ಆಗಿರಬಹುದು. ಅಂತಹ ಸ್ಥಳಗಳು ಶಕ್ತಿ ಕೇಂದ್ರಗಳಾಗಿರಬಹುದು. ಇಲ್ಲೂ ಸಹ ವಿಗ್ರಹಗಳಿಗಿಂತ ಅವುಗಳನ್ನು ಪೂಜಿಸುವವರ ಮನೋಶಕ್ತಿಯೇ ನಿರ್ಧಾರಕವೆಂದು ನನ್ನ ವೈಯಕ್ತಿಕ ಅನಿಸಿಕೆ. ದೇವರನ್ನು ವಿಗ್ರಹಗಳಲ್ಲಿ ಅಥವ ವಿಗ್ರಹಗಳ ಮೂಲಕ ಕಾಣುವುದರಲ್ಲಿಯೂ ಅರ್ಥವಿರಬಹುದು, ಇಲ್ಲದಿರಬಹುದು. ಆದರೆ ವಿಗ್ರಹಗಳೇ ದೇವರೆಂದು ಭಾವಿಸುವುದು ತಾರ್ಕಿಕವಾಗಿಯೂ ಸಹ ಕಷ್ಟಕರ ಸಂಗತಿ. ಒಂದು ಹಂತದ ಪರಿಪಕ್ವತೆ ಬಂದ ನಂತರದಲ್ಲಿ ವಿಗ್ರಹ ಪೂಜೆಯ ಅಗತ್ಯ ಬಾರದೇ ಹೋಗಬಹುದು. ಕೆಲವು ದೇವಸ್ಥಾನಗಳಲ್ಲಿ ದೇವರ ಪ್ರಸಾದ ಕೇಳಿ ಬೇಡುತ್ತಾ ಕುಳಿತ ಭಕ್ತರನ್ನು ಗಮನಿಸಿದ್ದೀರಾ? ಬಲಗಡೆ ಹೂವು ಬಿದ್ದರೆ ಒಪ್ಪಿಗೆಯೆಂತಲೂ ಎಡಗಡೆ ಬಿದ್ದರೆ ಅಶುಭವೆಂದು ನಂಬುವ ಅವರು ದೇವರೊಂದಿಗೆ ಮಾತನಾಡುವ ಪರಿಯನ್ನೂ ನೋಡಿದ್ದೇನೆ. ತಮ್ಮ ಕಷ್ಟ ಸುಖ ತೋಡಿಕೊಳ್ಳುತ್ತಾ 'ಯಾಕಪ್ಪಾ ಇಷ್ಟು ಪರೀಕ್ಷೆ ಮಾಡುತ್ತೀಯಾ? ಇನ್ನೂ ಸತಾಯಿಸಬೇಡ, ಒಳ್ಳೆಯದು ಮಾಡಪ್ಪಾ, ಬೇಗ ಪ್ರಸಾದ ಕೊಡು' ಎಂಬಿವೇ ಇತ್ಯಾದಿ ಹಳಹಳಿಸುತ್ತಿರುತ್ತಾರೆ. ಪ್ರಸಾದ ಕೇಳಲು ಬಂದ ಇತರರೂ ಅವರ ಸರದಿಗಾಗಿ ಕಾಯುತ್ತಿರುತ್ತಾರೆ. ಹಲವರಿಗೆ ಅದು ಭ್ರಮೆಯಂತೆ ಕಂಡರೂ ಭಕ್ತರ ತದೇಕ ಚಿತ್ತತೆ, ನಂಬಿಕೆ ಅಲ್ಲಿ ಎದ್ದು ಕಾಣುತ್ತದೆ. ಅಲ್ಲಿಯೂ ಅವರ ಮನೋಶಕ್ತಿಯೇ ಪ್ರಮುಖವೆಂದು, ವಿಗ್ರಹವಲ್ಲವೆಂದು ನನಗೆ ಅನ್ನಿಸುತ್ತದೆ. ವೈದ್ಯರಲ್ಲಿನ ನಂಬಿಕೆ ಅರ್ಧ ಕಾಯಿಲೆ ವಾಸಿ ಮಾಡುವಂತೆ ದೇವರಲ್ಲಿನ ಅವರ ನಂಬಿಕೆ ಅವರಿಗೆ ನೆಮ್ಮದಿ, ಶಾಂತಿ ಕಂಡುಕೊಳ್ಳಲು ನೆರವಾಗಬಹುದು. ಮೊದಲಿನಿಂದ ಪೂರ್ವಜರು ಮತ್ತು ಸುತ್ತಮುತ್ತಲಿನವರು ಇಟ್ಟುಕೊಂಡು ಬಂದ ನಂಬಿಕೆ, ನಡವಳಿಕೆಗಳನ್ನು ಅವರು ಮುಂದುವರೆಸುತ್ತಾರೆ. ಮುಂದೆ ಅವರ ಮಕ್ಕಳೂ ಅದೇ ರೀತಿಯಲ್ಲಿ ಸಾಗಬಹದು.
     ಒಂದು ಪ್ರಾಂತದ ರಾಜನೊಬ್ಬ ಸ್ವಾಮಿ ವಿವೇಕಾನಂದರೊಂದಿಗೆ ಚರ್ಚಿಸುತ್ತಿದ್ದ ಸಂದರ್ಭ. ಆ ರಾಜನಿಗೆ ವಿಗ್ರಹಾರಾಧನೆಯಲ್ಲಿ/ಮೂರ್ತಿ ಪೂಜೆಯಲ್ಲಿ ನಂಬಿಕೆಯಿರಲಿಲ್ಲ. ವಿಗ್ರಹಪೂಜೆ ಬಗ್ಗೆ ಆತ ನಿಕೃಷ್ಟವಾಗಿ ಮಾತನಾಡಿದುದನ್ನು ಶಾಂತವಾಗಿ ಆಲಿಸಿದ ವಿವೇಕಾನಂದರು ರಾಜನ ಭಾವಚಿತ್ರವೊಂದನ್ನು ತರಿಸಲು ಹೇಳಿದರು. ಭಾವಚಿತ್ರ ತಂದಾಗ ಅಲ್ಲಿದ್ದ ಸಭಾಸದರೊಬ್ಬರನ್ನು ಕರೆದು ಆ ಭಾವಚಿತ್ರದ ಮೇಲೆ ಉಗುಳಲು ಹೇಳಿದರು. ಆ ವ್ಯಕ್ತಿ ನಡುಗಿಹೋದರು -'ರಾಜರ ಭಾವಚಿತ್ರದ ಮೇಲೆ ಉಗುಳುವುದೇ?'. ವಿವೇಕಾನಂದರು ಹೇಳಿದರು -'ಇದು ರಾಜರ ಭಾವಚಿತ್ರವೇ ಹೊರತು ರಾಜರಲ್ಲ; ಉಗುಳಿದರೆ ರಾಜರಿಗೆ ಏನೂ ಆಗುವುದಿಲ್ಲ'. ಅದಕ್ಕೆ ಅವರು 'ಸ್ವಾಮಿ, ಇದು ಭಾವಚಿತ್ರವಿರಬಹುದು. ಆದರೆ ಇದರಲ್ಲಿ ನಾವು ರಾಜರನ್ನು ಕಾಣುತ್ತಿದ್ದೇವೆ. ಇದರ ಮೇಲೆ ಉಗುಳುವುದು ನಮಗೆ ಕಲ್ಪನೆಯಲ್ಲಿಯೂ ಅಸಾಧ್ಯ'. ಆಗ ವಿವೇಕಾನಂದರು ರಾಜರಿಗೆ 'ದೇವರ ವಿಗ್ರಹಗಳು ದೇವರಲ್ಲ. ಅದರೆ ಜನ ಅಲ್ಲಿ ದೇವರನ್ನು ಕಾಣುತ್ತಾರೆ. ಅವುಗಳನ್ನು ಪೂಜಿಸಿ ನೆಮ್ಮದಿ, ಶಾಂತಿ ಕಂಡುಕೊಳ್ಳುತ್ತಾರೆ. ಆದ್ದರಿಂದ ವಿಗ್ರಹಪೂಜೆಯನ್ನು ವಿರೋಧಿಸುವುದು ಸಲ್ಲ' ಎಂದು ಮನವರಿಕೆ ಮಾಡಿಕೊಟ್ಟಿದ್ದರು.
     ವೇದ, ಉಪನಿಷತ್ತುಗಳು, ರಾಮಾಯಣ, ಮಹಾಭಾರತದ ವೃತ್ತಾಂತಗಳು, ದೇವರ ಮಹಿಮೆ ಕೊಂಡಾಡುವ ಕಥೆಗಳು, ಬೈಬಲ್, ಕುರಾನ್, ಗುರುಗ್ರಂಥ ಸಾಹೀಬಾ, ವಿವಿಧ ಧರ್ಮಗ್ರಂಥಗಳು, ಇತ್ಯಾದಿಗಳು ಜನಸಮೂಹದ ಮೇಲೆ ಅಚ್ಚಳಿಯದ ಪ್ರಭಾವ ಬೀರಿವೆ, ಬೀರುತ್ತಿವೆ. ಎಲ್ಲಾ ಧರ್ಮಗ್ರಂಥಗಳು ಮೂಲಭೂತವಾಗಿ ಮನುಷ್ಯನ ಒಳ್ಳೆಯ ನಡವಳಿಕೆ ಬಗ್ಗೆ ಒತ್ತು ನೀಡಿವೆ. ಆದರೆ ಅವುಗಳನ್ನು ನಂಬುವ ಜನರ ನಡವಳಿಕೆ ಒಳ್ಳೆಯ ರೀತಿಯಲ್ಲಿ ಇದೆ ಎಂದು ಹೇಳಲಾಗುವುದಿಲ್ಲ. ದೇವರನ್ನು ಹಲವು ಹೆಸರುಗಳಲ್ಲಿ, ಹಲವು ರೂಪಗಳಲ್ಲಿ ಪೂಜಿಸುತ್ತಿರುವ ಮತ್ತು ಹೊಸ ಹೊಸ ದೇವರುಗಳು ಮತ್ತು ಪೂಜಾ ಪದ್ಧತಿಗಳನ್ನು ಹುಟ್ಟು ಹಾಕಲಾಗುತ್ತಿರುವ ಹಿಂದೂ ಸಮಾಜದಲ್ಲಿ ಪರಧರ್ಮ ಸಹಿಷ್ಣುತೆ ಮೈಗೂಡಿದೆ. ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಸಮುದಾಯದಲ್ಲಿ ಪರಧರ್ಮ ಸಹಿಷ್ಣುತೆಯ ಕೊರತೆ ಕಂಡು ಬರುತ್ತಿರುವುದು ಸುಳ್ಳೇನಲ್ಲ. ಹಾಗೆಂದು ನಾನು ಯಾವುದೇ ಧರ್ಮದ ಪರ ಅಥವಾ ವಿರೋಧಿ ಅಲ್ಲ. ನನಗೆ ಅದರ ಅಗತ್ಯವೂ ಇಲ್ಲ. ದೇವರ ಹೆಸರಿನಲ್ಲಿ ನಡೆಯುತ್ತಿರುವ ಗೊಂದಲ, ಸಮಸ್ಯೆ, ಸಂಘರ್ಷಗಳ ಬಗ್ಗೆ ಮಾತ್ರ ನನ್ನಲ್ಲಿ ತಳಮಳ ಇದೆ.
     ನನ್ನ ಮನಸ್ಥಿತಿ ಹೇಗಿದೆಯೆಂದರೆ ಯಾವುದಾದರೂ ಉತ್ತಮ ಗ್ರಂಥ ಓದಿದಾಗ ಅದರಲ್ಲಿನ ಒಳ್ಳೆಯ ಅಂಶಗಳಿಗೆ ಮಾರುಹೋಗುತ್ತೇನೆ. ಯಾವುದು ಮನಸ್ಸಿಗೆ ಹಿತ, ಸಂತೋಷ ನೀಡುತ್ತದೆಯೋ ಮತ್ತು ಅದನ್ನು ಅಂತಃಸಾಕ್ಷಿ ಒಪ್ಪುತ್ತದೆಯೋ ಅದು ಒಳ್ಳೆಯದೆಂದೇ ನನ್ನ ಭಾವನೆ. ಚಿಕ್ಕಂದಿನಲ್ಲಿ ಪ್ರತಿದಿನ ಸಾಯಂಕಾಲ ಆಟ ಆಡಿಕೊಂಡು ಬಂದ ನಂತರ ಕೈಕಾಲುಮುಖ ತೊಳೆದುಕೊಂಡು ನಾವು ಐವರು ಮಕ್ಕಳು ನಮ್ಮ ತಾಯಿ ಹೇಳಿಕೊಡುತ್ತಿದ್ದ ಪ್ರಾರ್ಥನೆ, ಭಜನೆಗಳನ್ನು ಒಟ್ಟಿಗೆ ಹೇಳಿ ದೇವರಿಗೆ ನಮಸ್ಕಾರ ಮಾಡಿದ ನಂತರವೇ ಓದಿಕೊಳ್ಳಲು ತೊಡಗುತ್ತಿದ್ದೆವು. ಹಬ್ಬ ಹರಿದಿನಗಳಲ್ಲಿ ತಂದೆಯವರು ಮಾಡುತ್ತಿದ್ದ ದೇವರ ಪೂಜೆ ನಂತರ ಮಂಗಳಾರತಿ, ತೀರ್ಥ, ಪ್ರಸಾದ ಪಡೆದ ಮೇಲಷ್ಟೇ ನಮಗೆ ತಿಂಡಿ ಸಿಗುತ್ತಿತ್ತು. ಆ ದಿನಗಳಲ್ಲಿ ತೋರಣ ಕಟ್ಟುವುದು, ಗಣಪತಿ ಪೂಜೆಗೆ ಮಂಟಪ ಸಿದ್ಧಪಡಿಸುವುದು, ನವರಾತ್ರಿಯಲ್ಲಿ ಗೊಂಬೆಗಳನ್ನು ಅಂದವಾಗಿ ಜೋಡಿಸುವುದು, ಇತ್ಯಾದಿಗಳನ್ನು ಶ್ರದ್ಧೆಯಿಂದ ಮತ್ತು ಆಸಕ್ತಿಯಿಂದ ಮಾಡುತ್ತಿದ್ದೆ. ಸಾಮೂಹಿಕ ರಾಮನವಮಿ, ಗಣೇಶ ಉತ್ಸವಗಳ ಸಂದರ್ಭಗಳಲ್ಲಿ ಏರ್ಪಾಡಾಗುತ್ತಿದ್ದ ಹರಿಕಥೆಗಳು, ಸಂಗೀತ ಕಾರ್ಯಕ್ರಮಗಳನ್ನು ಆಸಕ್ತಿಯಿಂದ ತಲ್ಲೀನನಾಗಿ ಕೇಳುತ್ತಿದ್ದೆ. ವಿಶೇಷವಾಗಿ ರಾಮಾಯಣ, ಮಹಾಭಾರತಗಳಿಗೆ ಸಂಬಂಧಿಸಿರುತ್ತಿದ್ದ ಹರಿಕಥೆಗಳು ನನ್ನ ಮೇಲೆ ತುಂಬಾ ಪರಿಣಾಮ ಬೀರಿವೆ. ರಾಮಾಯಣ, ಮಹಾಭಾರತಗಳು ನಿಜವಾಗಿಯೂ ನಡೆದಿದೆಯೋ, ಇಲ್ಲವೋ ಎಂಬಿತ್ಯಾದಿ ವಿವಾದಗಳ ಬಗ್ಗೆ ನನಗೆ ಆಸಕ್ತಿಯಿಲ್ಲ. ಆದರೆ ಅವುಗಳಲ್ಲಿ ತುಂಬಿರುವ ನೀತಿಪಾಠಗಳು, ಜೀವನದರ್ಶನ ಅನುಕರಣೀಯ.
     ದೇವರ ಕುರಿತು ಜಿಜ್ಞಾಸೆ, ದೇವರನ್ನು ಪೂಜಿಸುವ ರೀತಿ ಕುರಿತು ವಿವಿಧ ಆಲೋಚನೆಗಳು ಚಿಕ್ಕಂದಿನಿಂದಲೇ ಬಂದಿತ್ತು. ಹಬ್ಬ ಹರಿದಿನಗಳಲ್ಲಿ ತಂದೆಯವರು ಪೂಜೆ ಮಾಡುವ ಸಂದರ್ಭಗಳಲ್ಲಿ ನಾವು ಮಕ್ಕಳಿಗೆ ಸಹಜವಾದ ಆಟ, ಜಗಳಗಳಲ್ಲಿ ತೊಡಗಿ ಕಿರುಚಾಟ, ಅಳು, ಗಲಾಟೆ ಮಾಡುತ್ತಿದ್ದರಿಂದ ತಂದೆಯವರ ಏಕಾಗ್ರತೆಗೆ ಭಂಗ ಬಂದು ಅವರು ಸಿಟ್ಟಿಗೇಳುತ್ತಿದ್ದರು. ಆ ಸಿಟ್ಟಿನಲ್ಲಿ ಮಕ್ಕಳಲ್ಲಿ ದೊಡ್ಡವನಾದ ನನಗೆ ಬೈಗುಳ ಮತ್ತು ಪೆಟ್ಟುಗಳು ಬೀಳುವುದು ಸಾಮಾನ್ಯವಾಗಿತ್ತು. ಕೆಲವೊಮ್ಮೆ ನನ್ನ ತಪ್ಪಿಲ್ಲದಿದ್ದರೂ ನಾನು ಬೈಸಿಕೊಳ್ಳಬೇಕಾದಾಗ, ಪೆಟ್ಟು ತಿನ್ನಬೇಕಾಗಿ ಬಂದಾಗ ನನಗೆ ಸರಿಕಾಣುತ್ತಿರಲಿಲ್ಲ. ಆಗೆಲ್ಲಾ ನನ್ನ ಮನಸ್ಸು 'ಹಬ್ಬ ಮಾಡುವುದು ಎಲ್ಲರಿಗೂ ಒಳ್ಳೆಯದಾಗಲಿ, ಸಂತೋಷ ಸಿಗಲಿ ಎಂದು; ಇದರಿಂದ ಮನಸ್ಸಿಗೆ ಬೇಸರವಾಗುವುದಾದರೆ ಅಂತಹ ಹಬ್ಬ ಏಕೆ ಬೇಕು?' ಎಂದು ಯೋಚಿಸುತ್ತಿತ್ತು. ಚಿಕ್ಕಂದಿನಿಂದಲೇ ದೇವರ ಕುರಿತು ತರ್ಕ, ಜಿಜ್ಞಾಸೆಗಳಿಗೆ ಶ್ರೀಕಾರ ಬಿದ್ದಿತ್ತು.
     ಇಂದು ಯಾರನ್ನು ನಮ್ಮ ಕಷ್ಟ, ಕಾರ್ಪಣ್ಯಗಳಿಗಾಗಿ ಮೊರೆಯಿಡುತ್ತೇವೆಯೋ ಆ ದೇವರುಗಳೇ ಸಮಸ್ಯೆಗಳ ಮೂಲವಾಗಿರುವುದು ಯುಗಮಹಿಮೆ. ದೇವರಿಗಾಗಿ ಧರ್ಮಯುದ್ಧಗಳು, ಮಾರಣಹೋಮಗಳು ನಡೆಯುತ್ತಿರುವುದು ಯಾವ ಪುರುಷಾರ್ಥಕ್ಕಾಗಿ? ತಮ್ಮ ಮತ-ಧರ್ಮದ ವಿಸ್ತಾರದ ಹಿನ್ನೆಲೆಯೇ ದೇಶ-ದೇಶಗಳ ನಡುವೆ ನಡೆಯುವ ಯುದ್ಧಗಳ ನಿಜವಾದ ಕಾರಣವೆಂಬುದು ಸುಸ್ಪಷ್ಟ. ನಾನು ದೇವರು/ದೇವರುಗಳ ವಿರುದ್ಧ ಮಾತನಾಡುತ್ತಿಲ್ಲ. ದೇವರ ಹೆಸರಿನಲ್ಲಿ ನಡೆಯುತ್ತಿರುವ ಪ್ರಚಲಿತ ವಿದ್ಯಮಾನದ ಬಗ್ಗೆ ಹೇಳುತ್ತಿದ್ದೇನೆ. ದೇವರ ಹೆಸರಿನಲ್ಲಿ ಅನೇಕ ಒಳ್ಳೆಯ ಜೊತೆಗೆ ಕೆಟ್ಟ ಸಂಪ್ರದಾಯಗಳೂ ಆಚರಿಸಲ್ಪಡುತ್ತಿವೆ. ನಿಜವಾಗಿಯೂ ದೇವರು ತನ್ನನ್ನು ಕುರಿತು ಜನರು ಪೂಜಿಸಬೇಕು, ಪ್ರಾರ್ಥಿಸಬೇಕು ಎಂದು ಬಯಸುತ್ತಾನೆ ಎಂದು ನಾನು ನಂಬುವುದಿಲ್ಲ. ದೇವರನ್ನು ಪೂಜಿಸುವುದು, ಪ್ರಾರ್ಥಿಸುವುದು ಜನರಿಗೆ ಬೇಕಾಗಿದೆಯೇ ಹೊರತು ದೇವರಿಗಲ್ಲ. ನೂರೆಂಟು ಪಾಪಕೃತ್ಯಗಳನ್ನು ಮಾಡಿ ಪರಿಹಾರರೂಪವಾಗಿ ದೇವರಿಗೆ ಪೂಜೆ-ಪುನಸ್ಕಾರಗಳನ್ನು ಮಾಡುವುದು, ಹುಂಡಿಗೆ ಹಣ ಹಾಕುವುದು, ಇತ್ಯಾದಿ ಮಾಡಿ ಪಾಪ ಕಳೆದುಕೊಂಡ ಭಾವನೆ ಮೂಡಿಸಿಕೊಳ್ಳುವುದು ಕಾಣುತ್ತೇವೆ. ಪಾಪ ಮಾಡಿದ್ದನ್ನು ಕ್ಷಮಿಸುವಂತಹ ದೇವರಿಗಿಂತ ಪಾಪಕ್ಕೆ ತಕ್ಕ ಶಿಕ್ಷೆ ಕೊಡುವ ದೇವರು ನನಗೆ ಇಷ್ಟ. ಏಕೆಂದರೆ ಹೀಗಿದ್ದರೆ ಕೆಟ್ಟದನ್ನು ಮಾಡಲು ಹಿಂಜರಿಯುವಂತಹ ವಾತಾವರಣ ಬರಬಹುದು. ಆದರೆ ನಮ್ಮ ಇಷ್ಟ, ಕಷ್ಟ ಅನುಸರಿಸಿ ದೇವರು ಇರುತ್ತಾನೋ, ಇಲ್ಲವೋ ಗೊತ್ತಿಲ್ಲ.
     ದೇವರ ಕುರಿತು ಜಿಜ್ಞಾಸೆ, ಗೊಂದಲಗಳು ಬಗೆಹರಿಸಲು ಆ ದೇವರೇ ಬರಬೇಕು! ಬಸವಣ್ಣನವರು ಎಲ್ಲಾ ಜಾತಿಗಳವರನ್ನು ಒಟ್ಟುಗೂಡಿಸಲು ಪ್ರಯತ್ನಿಸಿದರು. ಆಗಿದ್ದೇನು? ಅಂತಹವರದ್ದೇ ಒಂದು ಜಾತಿ/ಧರ್ಮ ಆಯಿತು. ಮಧ್ಯಪ್ರದೇಶದಲ್ಲೂ ಸಹ ಜಾತಿ ಪದ್ಧತಿ ವಿರೋಧಿಸುವ ಗುಂಪಿದ್ದು, ಅವರನ್ನು 'ಅಜಾತರು' ಎಂಬ ಜಾತಿ ಹೆಸರು ಇಟ್ಟು ಅವರದೇ ಜಾತಿ ಮಾಡಿಬಿಟ್ಟಿದ್ದಾರೆ. ಯಾವುದೇ ಹೊಸ ವಿಚಾರ, ಜ್ಞಾನ ಪಸರಿಸುವವರನ್ನೂ ಸಹ ಪ್ರತ್ಯೇಕಿಸಿ ಹೆಸರಿಟ್ಟುಬಿಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸತ್ಯಾನ್ವೇಶಿಗಳು ಗೊಂದಲ, ತೊಂದರೆಗಳಿಗೆ ಸಿಲುಕುತ್ತಾರೆ.
     ವೇದಗಳ ಕುರಿತು ವೇದಾಧ್ಯಾಯಿ ಸುಧಾಕರ ಶರ್ಮರವರ ಉಪನ್ಯಾಸಗಳು ಸೇರಿದಂತೆ ಹಲವಾರು ಜ್ಞಾನವೇತ್ತರ ಮಾತುಗಳನ್ನು ಕೇಳಿದ ನಂತರ ಮತ್ತು ಸಂಬಂಧಿಸಿದ ವಿಚಾರಧಾರೆಗಳಿರುವ ಪುಸ್ತಕಗಳನ್ನು ಓದಿದ ನಂತರ ಸಂದೇಹಗಳು ಬಗೆಹರಿದಿಲ್ಲವಾದರೂ ನನ್ನ ವಿಚಾರ ಸರಿಯಾದ ದಾರಿಯಲ್ಲಿದೆಯೆಂಬ ಭಾವ ಮೂಡುತ್ತಿದ್ದು ಒಂದು ರೀತಿಯ ಅಭಿಪ್ರಾಯ ನನ್ನೊಳಗೆ ಸಾಂದ್ರೀಕೃತವಾಗುತ್ತಿದೆ. ಅವೆಂದರೆ:
೧. ಎಲ್ಲವನ್ನೂ, ಎಲ್ಲರನ್ನೂ ನಿಯಂತ್ರಿಸುವ ಅದ್ಭುತ ಶಕ್ತಿ ಇದೆ. ಅದನ್ನು ದೇವರೆಂದಾದರೂ ಕರೆಯಿರಿ, ಯಾವ ಹೆಸರಿನಲ್ಲಾದರೂ ಕರೆಯಿರಿ. ಆ ಶಕ್ತಿ ಎಲ್ಲರನ್ನೂ -ನಂಬುವವರನ್ನೂ, ನಂಬದವರನ್ನೂ, ಕೆಟ್ಟವರನ್ನೂ, ಒಳ್ಳೆಯವರನ್ನೂ - ಸಮಾನಭಾವದಿಂದ ಕಾಣುತ್ತದೆ. ಆ ಶಕ್ತಿ ಕೇವಲ ಮಾನವ ಜೀವಿಗಳಿಗೆ ಮತ್ತು ನಿರ್ದಿಷ್ಟ ಗಡಿ ಪ್ರದೇಶಗಳಿಗೆ ಮಾತ್ರ ಸೀಮಿತವಲ್ಲ.
೨. ನಮಗೆ ಆಗುವ ಎಲ್ಲಾ ಒಳಿತು ಕೆಡಕುಗಳಿಗೆ ನಾವೇ ಕಾರಣರೇ ಹೊರತು ಇತರರಲ್ಲ, ದೇವರಲ್ಲವೇ ಅಲ್ಲ. ದೇವಸ್ಥಾನಕ್ಕೆ ಹೋಗಿ ತಪ್ಪುಕಾಣಿಕೆ ಹಾಕುವುದರಿಂದ ಮತ್ತು ಕ್ಷಮಿಸಲು ಪ್ರಾರ್ಥಿಸುವುದರಿಂದ ಮಾಡಿದ ಪಾಪ ಹೋಗುವುದಿಲ್ಲ. ಮಾಡಿದ ಕರ್ಮಕ್ಕೆ ಅನುಸಾರವಾಗಿ ಫಲ ಕಟ್ಟಿಟ್ಟ ಬುತ್ತಿ.
೩. ಪುನರ್ಜನ್ಮವಿದೆ. ನಾವು ಮಾಡುವ ಒಳ್ಳೆಯ ಕೆಲಸಗಳು ಒಳಿತನ್ನೇ ತರುತ್ತದೆ, ಈ ಜನ್ಮದಲ್ಲಿ ಅಲ್ಲದಿದ್ದರೂ ಮುಂದಿನ ಜನ್ಮದಲ್ಲಿ!
೪. ಒಳ್ಳೆಯದು ಮತ್ತು ಸತ್ಯವೆಂದು ಭಾವಿಸುವ ದಾರಿಯಲ್ಲಿ ನಡೆಯುವುದೇ ದೇವರ ಪೂಜೆ.
೫. ಮೊದಲಿನಿಂದ ನಡೆದುಬಂದ ಸಂಪ್ರದಾಯಗಳನ್ನು ವಿಮರ್ಶಿಸಿ ಅದರಲ್ಲಿನ ಅರ್ಥಪೂರ್ಣ ಅಂಶಗಳನ್ನು ಉಳಿಸಿಕೊಂಡು ಪಾಲಿಸುವುದು. ಅರ್ಥವಿಲ್ಲದ ಮತ್ತು ಇತರರರಿಗೆ ನೋವು ಉಂಟುಮಾಡಬಹುದಾದ ಸಂಗತಿಗಳನ್ನು ಬಿಡುವುದು ಅಗತ್ಯ.
೬. ಸತ್ಯ ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹವಿಲ್ಲದೆ ಸ್ವೀಕರಿಸುವ ಮತ್ತು ಅಗತ್ಯವೆನಿಸಿದಲ್ಲಿ ನಮ್ಮನ್ನು ನಾವು ತಿದ್ದಿಕೊಳ್ಳುವ ಮನೋಭಾವ ಬರಬೇಕು.
     ದೇವರನ್ನು ದೇವರ ಪಾಡಿಗೆ ಬಿಟ್ಟುಬಿಡೋಣ. ಆತ ತನ್ನ ಕೆಲಸ ಮಾಡಿಯೇ ಮಾಡುತ್ತಾನೆ. ನಾವು ನಮ್ಮ ಕೆಲಸ ಮಾಡೋಣ, ಅಂದರೆ ನಾವು ಏಕೆ ಹುಟ್ಟಿದ್ದೇವೆ ಎಂಬುದನ್ನು ಅರಿತು ಸತ್ಯಾನ್ವೇಶಿಗಳಾಗಿ ನಡೆಯೋಣ, ಇರುವಷ್ಟು ಕಾಲ ಯಾರಿಗೂ ಉಪಕಾರ ಮಾಡದಿದ್ದರೂ ಅಪಕಾರವನ್ನಂತೂ ಮಾಡದಿರೋಣ!
************
-ಕ.ವೆಂ.ನಾಗರಾಜ್.

ದೇವರನ್ನು ದೇವರ ಪಾಡಿಗೆ ಬಿಟ್ಟುಬಿಡೋಣ! - 1

     ಜಗತ್ತಿನ ಚರಾಚರ ಜೀವಿಗಳು, ನಿರ್ಜೀವಿಗಳ ಸೃಷ್ಟಿ, ಸ್ಥಿತಿ, ಲಯಗಳಿಗೆ ಕಾರಣಕರ್ತವಾದ ಶಕ್ತಿಯನ್ನು ದೇವರೆಂದು ಇಟ್ಟುಕೊಳ್ಳಬಹುದು. ದೇವರೇ ಇಲ್ಲ ಎಂದು ಹೇಳುವ ಚಾರ್ವಾಕ/ನಾಸ್ತಿಕರಿಂದ ಹಿಡಿದು, ದೇವರಿಗೆ ಹಲವಾರು ಹೆಸರುಗಳನ್ನು ನೀಡಿ ಪೂಜಿಸುವವರು, ನಾವು ಪೂಜಿಸುವ ದೇವರೊಬ್ಬರೇ ದೇವರು, ಆ ದೇವರನ್ನು ಪೂಜಿಸದವರೆಲ್ಲಾ ಪಾಖಂಡಿಗಳು/ಕಾಫಿರರು ಎಂದು ಹೇಳುವವರು, ತಮ್ಮ ನಂಬಿಕೆಯನ್ನು ಇತರರ ಮೇಲೆ ಬಲವಂತವಾಗಿ ಹೇರಬಯಸುವವರು, ತಮ್ಮ ಧರ್ಮ ಪ್ರಚಾರಕ್ಕಾಗಿ ಇತರರ ಬಡತನ, ಅನಾರೋಗ್ಯ, ತಿಳುವಳಿಕೆಯ ಕೊರತೆಯನ್ನು ಬಂಡವಾಳ ಮಾಡಿಕೊಳ್ಳುವವರು, ಅನೇಕ ಆಮಿಷಗಳನ್ನು ಒಡ್ಡಿ ಮತಾಂತರದ ಮೂಲಕ ಸಂಖ್ಯೆ ಹೆಚ್ಚಿಸಿಕೊಳ್ಳುವ ಧಾವಂತದಲ್ಲಿರುವವರು, ಧರ್ಮಯುದ್ಧದ ಹೆಸರಿನಲ್ಲಿ ನರಮೇಧ ಮಾಡುವವರು, ಇತ್ಯಾದಿ, ಇತ್ಯಾದಿ ಮಾನವರ ಸಮೂಹದಲ್ಲಿ ನಾವು ಬಾಳುತ್ತಿದ್ದೇವೆ. ಜಗತ್ತಿನ ಸೃಷ್ಟಿ ಹೇಗಾಯಿತು ಎಂಬ ಬಗ್ಗೆ ವೈಜ್ಞಾನಿಕವಾಗಿ, ಧಾರ್ಮಿಕವಾಗಿ ವಿವೇಚಿಸುವ, ವಿಶ್ಲೇಷಿಸುವ ಕಾರ್ಯ ನಿರಂತರವಾಗಿ ನಡೆದಿದೆ. ಆದರೆ ಎಲ್ಲರೂ ಒಪ್ಪುವಂತಹ ವಿಚಾರವನ್ನು ಮುಂದಿಡಲು, ಆ ಅಗೋಚರ ಶಕ್ತಿಯ ಮೂಲವನ್ನು ತಿಳಿದು ಅರ್ಥೈಸುವ ಕಾರ್ಯ ಮಾಡಲು ಬಹಳ ಹಿಂದಿನ ಕಾಲದಿಂದಲೇ ನಿರಂತರ ಪ್ರಯತ್ನಗಳು, ಹುಡುಕಾಟಗಳು ಸಾಗಿವೆ, ಸಾಗುತ್ತಲೇ ಇವೆ, ಬಹುಷಃ ಸಾಗುತ್ತಲೇ ಇರುತ್ತದೆ.
     ಸಕಲ ಜೀವರಾಶಿಗಳಲ್ಲಿ ಮನುಷ್ಯ ಪ್ರಾಣಿ ಬಿಟ್ಟರೆ ಉಳಿದವು ದೇವರ ಬಗ್ಗೆ ತಲೆ ಕೆಡಿಸಿಕೊಂಡಿರಲಾರವು. ಮನುಷ್ಯ ಮಾತ್ರ ತಾನೂ ತಲೆ ಕೆಡಿಸಿಕೊಂಡು ಇತರರ ತಲೆಯನ್ನೂ ಕೆಡಿಸುತ್ತಿದ್ದಾನೆ. ಇದಕ್ಕೆ ಕಾರಣ ಅವನಿಗೆ ವಿವೇಚಿಸುವ ಶಕ್ತಿಯನ್ನು ದೇವರು ನೀಡಿರುವುದು. ಮನುಷ್ಯನಿಗೂ ಸಹ ಮೊದಲು ಈ ವಿಚಾರಗಳಿರಲಿಲ್ಲ. ವಿಕಾಸ ಹೊಂದುತ್ತಾ ಬಂದಂತೆ, ವಿಚಾರವಿಮರ್ಶೆ ಮಾಡುವ ಬುದ್ಧಿ ಬೆಳೆಯುತ್ತಾ ಹೋದಂತೆ, ತನ್ನನ್ನು ಮತ್ತು ಇತರ ಜೀವರಾಶಿಗಳನ್ನು ನಿಯಂತ್ರಿಸುವ ಶಕ್ತಿಯನ್ನು ಭಕ್ತಿಯಿಂದ, ಭಯದಿಂದ, ಗೌರವದಿಂದ ನೋಡುವ ಪ್ರವೃತ್ತಿ ಬೆಳೆದು ತನ್ನ ಕಲ್ಪನೆಯ ದೇವರುಗಳನ್ನು ಸೃಷ್ಟಿಸಿದ. ಮರ, ಗಿಡ, ಸೂರ್ಯ, ಚಂದ್ರ, ನಕ್ಷತ್ರ, ಗುಡುಗು, ಸಿಡಿಲು, ಮಿಂಚು, ಬೆಂಕಿ, ನೀರು, ಇತ್ಯಾದಿಗಳಲ್ಲಿ ದೇವರನ್ನು ಕಂಡು ಪೂಜಿಸತೊಡಗಿದ. ಇವುಗಳನ್ನೂ ಮೀರಿದ, ಇವುಗಳನ್ನೂ ನಿಯಂತ್ರಿಸುವ ಶಕ್ತಿಯೊಂದಿದೆ ಎಂದು ಅರಿತು ದೇವರ ಸಾಮ್ರಾಜ್ಯವನ್ನು ತನ್ನ ಕಲ್ಪನಾಶಕ್ತಿಯಲ್ಲಿ ಬೆಳೆಸತೊಡಗಿದ. ದೇವರ ಹೆಸರಿನಲ್ಲಿ ಕಥೆಗಳು, ಪುರಾಣಗಳು ಹುಟ್ಟಿಕೊಂಡವು. ದೇವರ ಮಹಿಮೆಯನ್ನು ಕೊಂಡಾಡಿದವು. ತಮ್ಮ ಕಲ್ಪನೆ, ನಂಬಿಕೆ, ಪ್ರದೇಶಗಳಿಗೆ ತಕ್ಕಂತೆ ಗುಂಪುಗಳಾಗಿ ಜಾತಿ, ಮತ, ಧರ್ಮಗಳು ಹುಟ್ಟಿಕೊಂಡವು. ನಂತರದಲ್ಲಿ ಹುಟ್ಟಿನ ಆಧಾರದಲ್ಲಿ ಮನುಷ್ಯನ ಜಾತಿ, ಧರ್ಮಗಳು ನಿಗದಿಸಲ್ಪಟ್ಟವು. ದೇವರು ಮನುಷ್ಯನನ್ನು ಸೃಷ್ಟಿಸಿದ. ಮನುಷ್ಯ ಹಲವು ದೇವರುಗಳನ್ನೇ ಸೃಷ್ಟಿಸಿದ.
     ಒಂದು ಹಂತದವರೆಗೆ ವಿವಿಧ ಆಚಾರ-ವಿಚಾರಗಳನ್ನು ಒಪ್ಪಿಕೊಳ್ಳಬಹುದು. ಆದರೆ, ನಾವು ಹೇಳುವುದೇ ಸರಿ, ಇತರರು ಹೇಳುವುದು ತಪ್ಪು, ದೇವರು ಹೀಗೆಯೇ ಇದ್ದಾನೆ, ನಾವು ಪಾಲಿಸುವ ಧರ್ಮ/ಜಾತಿ/ಮತವೇ ನೈಜವಾದದ್ದು ಎಂಬ ವಾದ ಒಪ್ಪುವುದು ಕಷ್ಟ. ಇತರ ವಿಚಾರಗಳನ್ನು ಹೊಂದಿರುವವರು ಧರ್ಮದ್ರೋಹಿಗಳು, ಶಿಕ್ಷಾರ್ಹರು, ಅವರು ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು, ನಮ್ಮ ಧರ್ಮಾನುಯಾಯಿಗಳಾಗಲೇಬೇಕು, ವಿಚಾರವನ್ನು ಒಪ್ಪಲೇಬೇಕು, ಎಂಬ ವಿಚಾರಧಾರೆ ಎಷ್ಟರ ಮಟ್ಟಿಗೆ ಸರಿ? ಅವರವರ ವಿಚಾರ ಅವರಿಗಿರಲಿ. ಅದನ್ನು ಕಡ್ಡಾಯವಾಗಿ ಇತರರ ಮೇಲೆ ಹೇರುವುದು ತರವಲ್ಲ. ತಮ್ಮ ಮತ/ಧರ್ಮ ಬೆಳೆಸಲು ಆರೋಗ್ಯ/ಶಿಕ್ಷಣ/ ಧಾರ್ಮಿಕ/ ವ್ಯಾವಹಾರಿಕ ಮಾಧ್ಯಮಗಳೆಲ್ಲವನ್ನೂ ಬಳಸಿಕೊಳ್ಳುವುದರ ಜೊತೆಗೆ ಬಡತನ, ಅಜ್ಞಾನಗಳನ್ನೂ ದುರ್ಬಳಕೆ ಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಧರ್ಮಯುದ್ಧದ ಹೆಸರಿನಲ್ಲಿ ಇತರರನ್ನು ಮಟ್ಟ ಹಾಕುವ, ಬೆದರಿಕೆ ಹಾಕುವ, ಭಯೋತ್ಪಾದನೆ ನಡೆಸುವ ಕುರುಡು ಮತಾಂಧರ ಸಂಖ್ಯೆ ಸಹ ಕಡಿಮೆಯೇನಿಲ್ಲ. ವಿಗ್ರಹಾರಾಧನೆ ಮಾಡದಿರುವವರು ಧರ್ಮದ ಹೆಸರಿನಲ್ಲಿ ದೇವಸ್ಥಾನಗಳನ್ನು, ಪೂಜಾಸ್ಥಾನಗಳನ್ನು ಧ್ವ್ವಂಸ ಮಾಡಿ ಅನೇಕ ಅಮೂಲ್ಯ ಕಲಾಕೃತಿಗಳ ನಾಶ ಮಾಡುವುದನ್ನು, ಅದೇ ರೀತಿ ಒಂದು ಗುಂಪಿನವರು ಇನ್ನೊಂದು ಗುಂಪಿನೊಂದಿಗೆ ಘರ್ಷಣೆ ನಡೆಸುವುದನ್ನು ನಾಗರಿಕ ಸಮಾಜ ಒಪ್ಪಲಾರದು. ಕಲಾಕೃತಿಗಳನ್ನು ನಿರ್ಮಿಸುವುದು ಸುಲಭದ ಕೆಲಸವಲ್ಲ; ಆದರೆ ಹಾಳು ಮಾಡುವುದು ಸುಲಭ. ಸ್ವತಃ ಜೀವ ಕೊಡಲಾರದವರು ಜೀವ ತೆಗೆಯುವುದು ಎಷ್ಟರ ಮಟ್ಟಿಗೆ ಸರಿ? ಇಂತಹ ಪ್ರಯತ್ನಗಳಿಂದ ಅವರು ತಮ್ಮ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು. ತರ್ಕಕ್ಕಾಗಿ ಕಾಲಘಟ್ಟದಲ್ಲಿ ಎಲ್ಲರೂ ಒಂದೇ ಮತ/ಜಾತಿ/ಧರ್ಮಕ್ಕೆ ಸೇರಿದರು ಎಂದಿಟ್ಟುಕೊಳ್ಳೋಣ. ಆಮೇಲೆ ಏನು ಮಾಡುವುದು? ವಾಸ್ತವವಾಗಿ ಆಗ ಘಟಿಸಬಹುದಾದುದೇನೆಂದರೆ ಅವರಲ್ಲೇ ಪುನಃ ಒಳಪಂಗಡಗಳ ಸೃಷ್ಟಿಯಾಗಿ ತಮ್ಮದೇ ಮೇಲು ಎಂದು ವಾದಿಸತೊಡಗುವರು. ದೇವರ ಕೊಡುಗೆಯಾದ ವೈಚಾರಿಕ ಶಕ್ತಿಯನ್ನು ಮೊಟಕುಗೊಳಿಸುವ, ಇದಕ್ಕೂ ಮುಂದೆ ಯೋಚಿಸಬಾರದು ಎಂದು ಬೇಲಿ ಹಾಕುವ ಇಂತಹ ಪ್ರವೃತ್ತಿಗಳಿಂದ ಒಂದು ರೀತಿಯಲ್ಲಿ ಪ್ರಗತಿಗೆ ಹಿನ್ನಡೆಯಾಗುತ್ತದೆ ಎಂದು ಅನ್ನಿಸುವುದಿಲ್ಲವೇ?
     'ಸಂಕಟ ಬಂದಾಗ ವೆಂಕಟರಮಣ' ಎಂಬಂತೆ ನಾವು ಕಷ್ಟದ ಪರಿಸ್ಥಿತಿಯಲ್ಲಿ ದೇವರನ್ನು ನೆನೆಯುವುದೇ ಹೆಚ್ಚು. ತೊಂದರೆ, ತಾಪತ್ರಯಗಳಿಲ್ಲದವರು ಯಾರಿದ್ದಾರೆ? ಹೀಗಾಗಿ ಯಾರೂ ಸಹಾಯಕ್ಕೆ ಬಾರದಿದ್ದಾಗ ಸಹಾಯ ಮಾಡು ಎಂದು ದೇವರನ್ನು ಬಿಟ್ಟು ಇನ್ನು ಯಾರನ್ನು ಕೋರಬೇಕು? ಈ ಕಾರಣಕ್ಕಾಗಿಯಾದರೂ ದೇವರು ನಮಗೆ ಬೇಕು. ಒಂದೆರಡು ಉದಾಹರಣೆಗಳನ್ನು ಗಮನಿಸೋಣ. ರಸ್ತೆ ಅಪಘಾತದಲ್ಲಿ ಇರುವ ಒಬ್ಬನೇ ೬ ವರ್ಷದ ಮಗ ತೀವ್ರವಾಗಿ ಪೆಟ್ಟು ಬಿದ್ದು ಆಸ್ಪತ್ರೆಗೆ ಸೇರಿಸಿದ ತಂದೆ-ತಾಯಿಯರ ಗೋಳು ಹೇಳತೀರದು. ತುಂಬಾ ರಕ್ತಸ್ರಾವವಾಗಿ ಮಗುವಿಗೆ ತುರ್ತಾಗಿ ರಕ್ತ ಕೊಡಬೇಕಾಗಿದೆ. ತಂದೆ ನೀಡಿದ ರಕ್ತದ ಪ್ರಮಾಣ ಸಾಲದು. ಆಸ್ಪತ್ರೆಯಲ್ಲಿ ಮಗುವಿಗೆ ಬೇಕಾದ ವರ್ಗದ ರಕ್ತ ಇಲ್ಲ. ಬೇರೆಲ್ಲಾ ಕಡೆ ರಕ್ತ ಹೊಂದಿಸಲು ಪರದಾಡಿದರೂ ಫಲ ಸಿಗಲಿಲ್ಲ. ಏನು ಮಾಡಲೂ ತೋಚದ ಆ ಸಂದರ್ಭದಲ್ಲಿ ಅಕಾಸ್ಮಾತ್ತಾಗಿ ಅಲ್ಲಿಗೆ ಬಂದಿದ್ದವರೊಬ್ಬರಿಗೆ ವಿಷಯ ತಿಳಿದು ಅವರ ರಕ್ತದ ವರ್ಗವೂ ಮಗುವಿನ ರಕ್ತದ ವರ್ಗಕ್ಕೆ ಸೇರಿದ್ದು ಅವರು ರಕ್ತ ನೀಡಿದ್ದಲ್ಲದೇ ತಮ್ಮ ಸಹೋದರನನ್ನೂ ಕರೆಸಿ ಅವರಿಂದಲೂ ರಕ್ತದಾನ ಮಾಡಿಸಿದರು. ಮಗುವಿನ ಪ್ರಾಣ ಉಳಿಯಿತು. ಮಗುವಿನ ತಂದೆ, ತಾಯಿ ಆ ವ್ಯಕ್ತಿಯ ಕಾಲಿಗೆ ಬಿದ್ದು ಹೇಳಿದರು -'ನೀವೇ ನಮ್ಮ ಪಾಲಿನ ದೇವರು!'.
     ಸುಮಾರು ೨೫ವರ್ಷಗಳ ಹಿಂದಿನ ನನ್ನ ಸ್ವಂತದ ಒಂದು ಅನುಭವ ಹೇಳುವೆ. ನಾನು ಹಾಸನ ಜಿಲ್ಲೆಯ ಹಳ್ಳಿಮೈಸೂರಿನಲ್ಲಿ ಉಪತಹಸೀಲ್ದಾರನಾಗಿದ್ದಾಗ ಒಂದು ಮಧ್ಯಾಹ್ನ ಒಬ್ಬ ಸುಮಾರು ೫೦ ವರ್ಷದ ಸುಬ್ಬಯ್ಯ ಎಂಬ ವ್ಯಕ್ತಿ ಕಛೇರಿಗೆ ಬಂದ. ಅಂದು ಹೆಚ್ಚಿನ ಕೆಲಸವಿಲ್ಲದ್ದರಿಂದ ಅವನೊಂದಿಗೆ ಕುಶಲೋಪರಿ ಮಾತನಾಡುತ್ತಿದ್ದೆ. ತೊಗಲು ಗೊಂಬೆ ಆಡಿಸುವ ವೃತ್ತಿಯ ಆತ ಹಲವಾರು ಪೌರಾಣಿಕ, ಐತಿಹಾಸಿಕ ಸಂಗತಿಗಳನ್ನು ರಾಗವಾಗಿ ಜಾನಪದ ಧಾಟಿಯಲ್ಲಿ ಹಾಡಿದ ಕುಶಲತೆಗೆ ಬೆರಗಾದೆ. ಅನಕ್ಷರಸ್ತನಾದರೂ ಅದ್ಭುತ ಕಲಾವಿದ ಅವನಲ್ಲಿ ನನಗೆ ಕಂಡ. ಸರ್ಕಾರ ಅವನಿಗೆ ಮಂಜೂರು ಮಾಡಿದ್ದ ೪ ಎಕರೆ ಜಮೀನನ್ನು ಗ್ರಾಮದ ಬಲಾಢ್ಯರೊಬ್ಬರು ಆಕ್ರಮಿಸಿಕೊಂಡು ಅನುಭವಿಸುತ್ತಿದ್ದರು. ವಂಶದ ಕಾಯಕವಾಗಿ ತೊಗಲು ಗೊಂಬೆ ಆಡಿಸಿಕೊಂಡು ಊರೂರು ಅಲೆಯುತ್ತಿದ್ದರಿಂದ ಜಮೀನು ಉಳಿಸಿಕೊಳ್ಳಲು ಅವನಿಗೆ ಆಗಿರಲಿಲ್ಲ. ಈ ಸಮಸ್ಯೆಯ ಸಲುವಾಗಿಯೇ ಆತ ನನ್ನನ್ನು ಭೇಟಿ ಮಾಡಲು ಬಂದಿದ್ದ. ವಿವರ ಪಡೆದು ನಾನೇ ಖುದ್ದು ಗ್ರಾಮಕ್ಕೆ ಹೋಗಿ ಜಮೀನನ್ನು ಅವನಿಗೆ ಬಿಡಿಸಿಕೊಟ್ಟೆ. ನನ್ನ ಪ್ರಯತ್ನದಿಂದ ಆ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಗೊಂಬೆಸುಬ್ಬಯ್ಯನನ್ನು ಸನ್ಮಾನಿಸಿ ಗೌರವಿಸಲಾಯಿತು. ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಹಾಗೂ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಯೂ ನಾನೇ ಆಗಿದ್ದರಿಂದ ಸಂಘಗಳ ವತಿಯಿಂದಲೂ ತೊಗಲು ಗೊಂಬೆ ಆಡಿಸಲು ಅಗತ್ಯವಾಧ ಉತ್ತಮ ಗುಣಮಟ್ಟದ ಪರದೆ, ಗ್ಯಾಸ್ ಲೈಟು, ತಬಲ, ಮುಂತಾದ ವಾದ್ಯ ಪರಿಕರಗಳೊಂದಿಗೆ ಧನಸಹಾಯವನ್ನೂ ಸಹ ಮಾಡಿಸಿದೆ. ಆ ಸಂದರ್ಭದಲ್ಲಿ ಆತ ನನಗೆ ಕೈ ಮುಗಿದು ಹೇಳಿದ್ದು: 'ಯಪ್ಪಾ, ನೀವೇ ನಮ್ಮ ದ್ಯಾವರು!'.
     ಮೇಲೆ ತಿಳಿಸಿದಂತಹ ಅನೇಕ ಉದಾಹರಣೆಗಳು ನಿಮ್ಮ ಗಮನಕ್ಕೂ ಬಂದಿರಬಹುದು. ನಮ್ಮ ನಿಮ್ಮೆಲ್ಲರ ಅನುಭವದಂತೆ ಕಷ್ಟದಲ್ಲಿದ್ದಾಗ, ಬೇರೆ ಯಾವುದೇ ಸಹಾಯ ದೊರಕದಿದ್ದಾಗ ಅನಿರೀಕ್ಷಿತ ನೆರವು ನೀಡುವವರನ್ನು ದೇವರು ಎಂತಲೋ ಅಥವಾ ದೇವರೇ ಅವರ ಮೂಲಕ ಮಾಡಿಸಿದ ಸಹಾಯ ಎಂತಲೋ ಭಾವಿಸುವುದು ಸುಳ್ಳಲ್ಲ. ಹಸಿವಿನಿಂದ ಕಂಗೆಟ್ಟು ಹಪಹಪ ಪಡುತ್ತಿರುವವರಿಗೆ ತಿನ್ನಲು ಏನಾದರೂ ಕೊಡುವವರೇ ದೇವರು. ಅಂದರೆ ದೇವರು ಆಪದ್ಭಾಂದವನೆಂದು ಎಲ್ಲರೂ ಒಪ್ಪುತ್ತೇವಲ್ಲವೇ?
     ಸೂರ್ಯನ ಕಿರಣಗಳನ್ನು ಮಸೂರದ (ಲೆನ್ಸ್) ಮೂಲಕ ಹಾಯಿಸಿ ಕೇಂದ್ರೀಕರಿಸಿ ಒಣಗಿದ ಕಾಗದ, ತರಗೆಲೆಗಳಿಗೆ ಬೆಂಕಿ ಹೊತ್ತಿಸಲು ಸಾಧ್ಯವಿರುವಂತೆಯೇ, ನಮ್ಮ ಮನಸ್ಸನ್ನು ನಿಯಂತ್ರಿಸಿ ಒಂದು ವಿಷಯದ ಕುರಿತು ಕ್ರೋಢೀಕರಿಸಿ ಪ್ರಾರ್ಥಿಸಿದಾಗ, ನಾವು ಎಷ್ಟರ ಮಟ್ಟಿಗೆ ಆರೀತಿ ಮಾಡಲು ಸಾಧ್ಯವಿದೆಯೋ ಅಷ್ಟರ ಮಟ್ಟಿಗೆ ಸಫಲತೆ ಕಂಡುಕೊಳ್ಳಬಹುದೆಂಬುದು ನನ್ನ ವೈಯಕ್ತಿಕ ಅನುಭವ. ಅನಿರೀಕ್ಷಿತವಾಗಿ ಕಷ್ಟಕರ ಪರಿಸ್ಥಿತಿಗೆ ಸಿಲುಕಿ ಹತಾಶನಾಗಿದ್ದಾಗ, ಅವಮಾನಿತನಾಗುವುದಕ್ಕಿಂತ ಆತ್ಮಹತ್ಯೆ ಮಾಡಿಕೊಳ್ಳುವುದು ಒಳಿತೆಂದು ಭಾವಿಸಿದ ಸಂದರ್ಭವೊಂದರಲ್ಲಿ ನಾನು ದೇವಸ್ಥಾನಕ್ಕೆ ಹೋಗಿ ಅಡ್ಡಬೀಳಲಿಲ್ಲ. ಆ ಸಮಯದಲ್ಲಿ ನಾನು ಸುಬ್ರಹ್ಮಣ್ಯದಲ್ಲಿ ಕೊಠಡಿಯೊಂದರಲ್ಲಿ ವಾಸವಿದ್ದೆ. ದೇವಸ್ಥಾನದ ಹೊರಗಿನ ಕಟ್ಟೆಯೊಂದರ ಮೇಲೆ ಕುಳಿತು ನನ್ನನ್ನು ಪಾರು ಮಾಡುವಂತೆ ಅಗೋಚರ ಶಕ್ತಿಯಲ್ಲಿ ತದೇಕ ಚಿತ್ತದಿಂದ ಆರ್ತನಾಗಿ, ಮೌನವಾಗಿ ಪ್ರಾರ್ಥಿಸಿದ್ದೆ. ನನ್ನ ಪ್ರಾರ್ಥನೆಯ ಫಲವೋ, ದೇವರ ಸಹಾಯವೋ ಎಂಬಂತೆ ನನ್ನನ್ನು ಮುಸುಕಿ ಮುಳುಗಿಸಲಿದ್ದ ಕಾರ್ಮೋಡ ಸರಿದು ಹೋಗಿದ್ದಂತೂ ಸತ್ಯ. ಒಮ್ಮೆಯಾದರೆ ಆಕಸ್ಮಿಕವೆನ್ನಬಹುದಿತ್ತು. ಹಲವಾರು ಸಂದರ್ಭಗಳಲ್ಲಿ ಮನಸ್ಸು ನಿಯಂತ್ರಿಸಿ ಮಾಡಿದ ಏಕಚಿತ್ತದ ಧ್ಯಾನ ನನಗೆ ಪರಿಹಾರದ ದಾರಿ ತೋರಿದೆ, ಸಾಂತ್ವನ ನೀಡಿದೆ. ನನಗೆ ದೇವರ ಕುರಿತು ಸ್ಪಷ್ಟ ಕಲ್ಪನೆಯಿಲ್ಲ, ಅಭಿಪ್ರಾಯವಿಲ್ಲ. ಯಾರನ್ನು ಪ್ರಾರ್ಥಿಸುತ್ತಿದ್ದೇನೆ, ಆ ದೇವರು ಹೇಗಿದ್ದಾನೆ ಎಂಬುದೂ ಗೊತ್ತಿಲ್ಲ. ಆದರೆ ಅಗೋಚರ, ಕಲ್ಪನೆ/ತರ್ಕಕ್ಕೆ ಮೀರಿದ, ನಮ್ಮನ್ನೆಲ್ಲಾ ನಿಯಂತ್ರಿಸುವ ಶಕ್ತಿಯೊಂದಿದೆ ಎಂಬ ನಂಬಿಕೆ ಮಾತ್ರ ಧೃಢವಾಗಿದ್ದು ನಾನು ಪ್ರಾರ್ಥಿಸಿದ್ದು, ಪ್ರಾರ್ಥಿಸುವುದು ಆ ಶಕ್ತಿಯನ್ನೇ! ಹಾಗಾದರೆ ನಮ್ಮ ಪ್ರಾರ್ಥನೆ ಸಫಲಗೊಳಿಸಿಕೊಳ್ಳಬಲ್ಲ ಶಕ್ತಿ ನಮ್ಮೊಳಗೇ ಇದೆಯೇ? ಹೌದಾದರೆ ದೇವರು ನಮ್ಮೊಳಗೂ ಇದ್ದಾನಲ್ಲವೇ?
. . . . (ಮುಂದುವರೆದಿದೆ).
[ಬಳಸಿರುವ ಚಿತ್ರ ಅಂತರ್ಜಾಲದಿಂದ ಹೆಕ್ಕಿದ್ದು]