ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಜುಲೈ 24, 2012

ವಿಶೇಷ ರೀತಿಯ ಹುಟ್ಟುಹಬ್ಬ


ದಿನಾಂಕ 22.7.2012ರ ಭಾನುವಾರ ನಮಗೆಲ್ಲಾ ಹಬ್ಬದ ವಾತಾವರಣ. ಎರಡು ಕಾರ್ಯಕ್ರಮಗಳು. ಎರಡರಲ್ಲೂ ತಿಪಟೂರು ಚಿನ್ಮಯ ಮಿಷನ್ನಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತ್ನಯರು ಪಾಲುಗೊಂಡಿದ್ದು ನಮ್ಮೆಲ್ಲರ ಸಂತಸವನ್ನು ಇಮ್ಮಡಿಗೊಳಿಸಿತ್ತು. ಹಾಸನದಲ್ಲಿ ಆರಂಭವಾದ ಚಿನ್ಮಯ ಸತ್ಸಂಗದಎರಡನೇ ತಿಂಗಳ ಕಾರ್ಯಕ್ರಮ ಒಂದಾದರೆ, ಎರಡನೆಯದು ಬೆಂಗಳೂರಿನಲ್ಲಿರುವ ಮಗುವಿನ ಹುಟ್ಟುಹಬ್ಬವನ್ನು ಹಾಸನದ ವೃದ್ಧಾಶ್ರಮದಲ್ಲಿ ಆಚರಿಸಿದುದು!! ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರದ್ದು ಯಾವಾಗಲೂ ವಿಶಿಷ್ಟವಾದ ಚಿಂತನೆ. ಬೆಂಗಳೂರಿನಲ್ಲಿರುವ ಮಗಳು ಬಿಂದು ಅಪ್ಪನಿಗೆ ಹೇಳಿದಳು,
"ಅಕ್ಷಯಳ ಹುಟ್ಟುಹಬ್ಬಕ್ಕೆ ಏನಾದರೂ ಒಂದಿಷ್ಟು ದಾನ ಕೊಡಬೇಕು, ಯಾವುದಾದರೂ ದೇವಸ್ಥಾನಕ್ಕೆ ಹಣ ಕೊಡೋಣ."
ನಾಗರಾಜ್ ಹೇಳಿದರು, "ನೋಡಮ್ಮಾ,  ಜೀವಂತ ದೇವರಿಗೆ ಕೊಟ್ಟರೆ ಸಾರ್ಥಕ ವಾಗುತ್ತೆ!"
"ಏನು ಹಾಗಂದ್ರೆ?" ಮಗಳು ಕೇಳಿದಳು.
"ನೋಡು ಬಿಂದು, ಈ ಸಮಾಜದಲ್ಲಿ ಜನರು ಒಳ್ಳೆಯ ರೀತಿಯಲ್ಲಿಯಲ್ಲಾಗಲೀ, ಕೆಟ್ಟ ರೀತಿಯಲ್ಲಾಗಲೀ  ಬೇಕಾದಷ್ಟು ಹಣ ಮಾಡ್ತಾರೆ, ಸಾಮಾನ್ಯವಾಗಿ ತಾವು ಮಾಡಿದ ಪಾಪ ಹೋಗಿಬಿಡುತ್ತೆ, ಅನ್ನೋ ಭ್ರಮೆಯಲ್ಲಿ ದೇವಸ್ಥಾನಗಳಿಗೆ ಸಾಕಷ್ಟು ಹಣ ಕೊಡ್ತಾರೆ. ಹಾಗಾಗಿ ದೇವಸ್ಥಾನಗಳಿಗೆ ಹಣ ಕೊಡುವ ಜನರು ಸಮಾಜದಲ್ಲಿ ಸಾಕಷ್ಟು ಇದ್ದಾರೆ. ಅದರ ಬದಲು  ನಿನ್ನ ಮಗಳ ಹುಟ್ಟುಹಬ್ಬವನ್ನು ಯಾವುದಾದರೂ  ಅನಾಥಾಶ್ರಮದಲ್ಲೋ, ಅಥವಾ ವೃದ್ಧಾಶ್ರಮದಲ್ಲೋ  ಮಾಡೋಣ. ಅಲ್ಲಿನ ನಿವಾಸಿಗಳೊಡನೆ ಸಂತೋಷ ಹಂಚಿಕೊಳ್ಳೋಣ. ಅವರೆಲ್ಲಾ ಜೀವಂತ ದೇವರುಗಳು. ಈ ದೇವರುಗಳ ಮನಸ್ಸನ್ನು ಸ್ವಲ್ಪ ಸಂತೋಷ ಪಡಿಸಿದರೆ ಭಗವಂತ ಮೆಚ್ಚುತ್ತಾನೆ."
ತಂದೆಯ ಮಾತಿಗೆ ಮಗಳು,ಅಳಿಯ ಒಪ್ಪಿದರು. "ನೀವೇ ಏನು ಬೇಕಾದರೂ ಪ್ಲಾನ್ ಮಾಡಿ, ಹಣ  ನಮ್ಮದು, ಪ್ಲಾನ್ ನಿಮ್ಮದು" ಎಂದರು. ಸರಿ. ಯೋಜನೆ ರೂಪಿಸಿದ್ದಾಯ್ತು. ಹೇಗೂ   ನಮಗೆಲ್ಲಾ ಪರಿಚಿತರಾದ  ಡಾ. ಹೆಬ್ಬಾರ್  ವೃದ್ಧಾಶ್ರಮವನ್ನು ನಡೆಸುತ್ತಿದ್ದಾರೆ, ಮಳೆಗಾಲ ಬೇರೆ!  ಅಲ್ಲಿನ ನಿವಾಸಿಗಳಿಗೆ  ಬೆಚ್ಚಗಿನ ಸ್ವೆಟರ್ ಮತ್ತು ಟವೆಲುಗಳನ್ನು ಕೊಡಲು ತೀರ್ಮಾನಿಸಿ ಕಾರ್ಯಕ್ರಮ ನಿಶ್ಚಯ ಗೊಳಿಸಿದ್ದಾಯ್ತು. ದಿನಾಂಕ 22.7.2012 ರಂದು ಸತ್ಸಂಗ ನಡೆಸಲು ತಿಪಟೂರು ಚಿನ್ಮಯ ಮಿಷನ್ನಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರು ಬರುತ್ತಾರೆ, ಅವರಿಂದ ಅಲ್ಲೂ ಒಂದು ಸತ್ಸಂಗ ಮಾಡಿ  ಸ್ವೆಟರ್ ವಿತರಿಸಿ, ಎಲ್ಲರೊಡನೆ ಸಿಹಿ ಊಟಮಾಡಿಬರಲು ತೀರ್ಮಾನಿಸಿದೆವು.
     ಈಶಾವಾಸ್ಯಮ್ ನಲ್ಲಿ ಸಂಜೆ 6.00 ರಿಂದ 7.00 ರವರಗೆ ಸತ್ಸಂಗ ನಡೆದ ಕೂಡಲೇ ನಾಲ್ಕು ಕಾರುಗಳು ವೃದ್ಧಾಶ್ರಮತ್ತ ಹೊರಟವು. ವೃದ್ಧಾಶ್ರಮದಲ್ಲಿ ಕೆಲವು ಮಕ್ಕಳಿಗೂ  ಆಶ್ರಯ ಕೊಟ್ಟಿದ್ದಾರೆ. ಆ  ಮಕ್ಕಳಂತೂ ಕುಳಿದು ಕುಪ್ಪಳಿಸಿದವು. ಸುಧರ್ಮ ಚೈತನ್ಯರ ಸವಿಯಾದ ಮಾತುಗಳು, ಭಜನೆ, ಮಕ್ಕಳ ಒಡನಾಟದಿಂದ ಎಲ್ಲರೂ ಆನಂದ ಸಾಗರದಲ್ಲಿ ತೇಲಿದೆವು.  'ಅಕ್ಷಯಾ,  ನೀನು ನೂರ್ಕಾಲ ಬಾಳಮ್ಮಾ' ಎಂದು ಎಲ್ಲರೂ ಹರಸುತ್ತಾ ಬಿಂದು ಮತ್ತು  ಅವರ ಪತಿ ರಘು ಅವರ ಉದಾರತನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಭಗವಂತನು  ಅವರ ಕುಟುಂಬಕ್ಕೆ ಆಯುರಾರೋಗ್ಯ ಐಶ್ವರ್ಯವನ್ನು ದಯಪಾಲಿಸಲೆಂದು ಹರಸಿದೆವು. ಅಂತೂ  ಒಂದು ವಿಶೇಷ ಕಾರ್ಯಕ್ರಮವನ್ನು ರೂಪಿಸಿದ ಕೀರ್ತಿ ಕವಿನಾಗರಾಜರಿಗೂ ಮತ್ತು ಅವರ  ಪತ್ನಿ ಶ್ರೀಮತಿ ಭಾರತಿಯವರಿಗೂ ಸಲ್ಲುತ್ತದೆ. ವೇದಸುಧೆಯ ಓದುಗ ಮಿತ್ರರೂ ಕೂಡ  ತಮ್ಮ ಮನೆಯ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಈ ಆಶ್ರಮದಲ್ಲಿ ಆಚರಿಸಬಹುದೆಂದು ತಿಳಿಸುತ್ತಾ ಹೀಗೆ ಮುಂದೆ  ಬರುವ ಎಲ್ಲರಿಗೂ ತನ್ನ ಎಲ್ಲಾ ಸಹಕಾರವನ್ನೂ ನೀಡಲು ವೇದಸುಧೆ ಬಳಗ ಮತ್ತು ಹಾಸನದ ಚಿನ್ಮಯ ಸತ್ಸಂಗವು ಸಿದ್ಧವಿದೆ ಎಂದು ತಿಳಿಸಲು ಸಂತೋಷಿಸುತ್ತೇವೆ.

ಶ್ರೀ ಸುಧರ್ಮ ಚೈತನ್ಯರವರು ಸಾಂದರ್ಭಿಕವಾಗಿ  ಆಡಿದ ಮಾತುಗಳನ್ನು ಇಲ್ಲಿ ಅಲಿಸಬಹುದು: 


                    ವೃದ್ಧಾಶ್ರಮದಲ್ಲಿ ಒಟ್ಟು ಸುಮಾರು ಅರವತ್ತು ಜನ ನಿವಾಸಿಗಳಿದ್ದು  ಒಂದು ದಿನದ ಊಟೋಪಚಾರಕ್ಕೆ ಐದು ಸಾವಿರ ರೂಗಳನ್ನು ನಿಗದಿಪಡಿಸಿರುತ್ತಾರೆ. 

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ಈಶಾವಾಸ್ಯಮ್ ನಲ್ಲಿ ಸತ್ಸಂಗದ ಒಂದು ನೋಟ

ವೃದ್ಧಾಶ್ರಮದ ಬಂಧುಗಳ ನಡುವೆ


ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದ ಬಂಧುಗಳ ನಡುವೆ

ವೃದ್ಧಾಶ್ರಮದಲ್ಲಿರುವ ಮಕ್ಕಳೊಡನೆ

ಬೆಂಗಳೂರಿನಲ್ಲಿರುವ ಮೊಮ್ಮಗಳ ಹುಟ್ಟುಹಬ್ಬವನ್ನು 
 ಹಾಸನದ ವೃದ್ಧಾಶ್ರಮದಲ್ಲಿ ಆಚರಿಸುವಾಗ 
 ಕವಿ ನಾಗರಾಜ್  ತಮ್ಮನ್ನು ತಾವು ಮರೆತಿದ್ದರು.

ವೃದ್ಧಾಶ್ರಮದ ಮಕ್ಕಳೊಡನೆ ಹೆಚ್.ಎಸ್.ರಮೇಶ್


                                          

  

-ಹರಿಹರಪುರ ಶ್ರೀಧರ್.

ಸೋಮವಾರ, ಜುಲೈ 16, 2012

ಆರು ಮಕ್ಕಳ ತಾಯಿ ಬಿನ್ನಾಣಗಿತ್ತಿ


ಆರು ಮಕ್ಕಳ ತಾಯಿ ಬಿನ್ನಾಣಗಿತ್ತಿ
ಚೆಲುವೆ ಮಾಯವ್ವ ಎಂಥ ಮಕ್ಕಳ ಹೆತ್ತಿ | || ಪ || 


ಸುಖವು ಸಿಕ್ಕುವುದೆಂದು ಕುಣಿಸುವನು ಒಬ್ಬ
ವಿವೇಕವನೆ ಮರೆಸಿ ತುಳಿಯುವವನೊಬ್ಬ
ಕೂಡಿಡುವ ಕಟಪವನು ಕಲಿಸುವವನೊಬ್ಬ
ಒಬ್ಬೊಬ್ಬರೇ ಸಾಕು ನರಬಾಳು ಹಾಳವ್ವ || ೧ ||


ನನದೆಂಬ ಭಾವವನು ಮೂಡಿಸುವನೊಬ್ಬ
ಸೊಕ್ಕಿನಿಂ ಮೆರೆಯೆನುತ ಉಬ್ಬಿಸುವನೊಬ್ಬ
ಉರಿವ ಒಡಲಿಗೆ ತುಪ್ಪ ಹಾಕುವನು ಒಬ್ಬ
ಒಬ್ಬೊಬ್ಬರೇ ಸಾಕು ನರಬಾಳು ಗೋಳವ್ವ || ೨ ||


ಅರಿಗಳಾರೆನಿಸಿ ಜಗದಿ ಮೆರೆದಿಹರವ್ವ್ವ
ಒಬ್ಬರಿಗೆ ಒಬ್ಬರು ಜೊತೆಯಾಗಿ ಇಹರವ್ವ
ಶೂರಾಧಿಶೂರರೇ ಮಣ್ಣು ಮುಕ್ಕಿಹರವ್ವ
ಮೋಹಿನಿ ಮಾಯವ್ವ ನಿಷ್ಕರುಣಿ ನೀನವ್ವ || ೩ ||


ಕಾಮ ಕ್ರೋಧಗಳು ಹಾಳು ಮಾಡಿದವವ್ವ
ಮದ ಮಚ್ಚರಗಳು ಚೂರಿ ಹಾಕಿಹವವ್ವ
ಲೋಭ ಮೋಹಗಳು ತುಳಿದಿಹವು ಕಾಣವ್ವ 
ಎಷ್ಟು ಕಾಡುತಿಯವ್ವ ದೇವರೇ ದಿಕ್ಕವ್ವ || ೪ ||
*************
-.ಕವೆಂ.ನಾಗರಾಜ್.

ಬುಧವಾರ, ಜುಲೈ 11, 2012

ಮೂಢ ಉವಾಚ - 85

ಬಯಸಿದರು ಸಾವೆ ಬಯಸದಿದ್ದರು ಸಾವೆ
ಬೇಡವೆಂದರೆ ನೀನು ಬರದಿಹುದೆ ಸಾವು |
ಬೇಡದಿರು ಮನವೆ ಬೇಡದಿಹ ಸಾವ
ಅಡ್ಡದಾರಿಯಲಿ ನುಗ್ಗದಿರು ಮೂಢ || ..293


ಜೀವವಿರುವ ದೇಹದಲ್ಲಿ ದೇವನಿರುವ ಕಾಣು
ಜೀವವಿರದ ದೇಹವದು ಹರಿದ ಬಟ್ಟೆ ತಾನು |
ಸುಟ್ಟರೂ ಹೂತರೂ ಅದಕೆ ತಿಳಿಯದಲ್ಲ
ಸಂಸ್ಕಾರ ಸಿಗಬೇಕು ಮನಕೆ ಮೂಢ || ..294


ಹುಟ್ಟು ಮೊದಲಲ್ಲ ಸಾವು ಕೊನೆಯಲ್ಲ
ಹುಟ್ಟು ಸಾವಿನ ಕೊಂಡಿ ಬದುಕಿನಾ ಬಂಡಿ |
ಹಿಂದಕೋ ಮುಂದಕೋ ಬಂಡಿ ಸಾಗುವುದು
ನಶಿಸಿದರೆ ಏರುವೆ ಹೊಸಬಂಡಿ ಮೂಢ || ..295


ಬಂಡಿಗೊಡೆಯನು ನೀನೆ ಪಯಣಿಗನು ನೀನೆ
ಅವನ ಕರುಣೆಯಿದು ಅಹುದಹುದು ತಾನೆ |
ಗುರಿಯ ಅರಿವಿರಲು ಸಾರ್ಥಕವು ಪಯಣ
ಗುರಿಯಿರದ ಪಯಣ ವ್ಯರ್ಥ ಮೂಢ || ..296
************
-ಕ.ವೆಂ.ನಾಗರಾಜ್.

ಸೋಮವಾರ, ಜುಲೈ 9, 2012

ಅಭ್ಯಾಸ - ದುರಭ್ಯಾಸ


     ಎಂದಿನಂತೆ ಮಂಕ, ಮಡ್ಡಿ, ಮರುಳ, ಮೂಢರು ಸಾಯಂಕಾಲದ ವಾಕಿಂಗ್ ಮುಗಿಸಿ ಕಲ್ಲಿನ ಕಟ್ಟೆಯ ಮೇಲೆ ಕುಳಿತು ಮಾತಿನ ಓಟ ಮುಂದುವರೆಸಿದ್ದರು. ಮಂಕ ಮಡ್ಡಿಯ ಜೇಬಿನ ಕಡೆ ಕಣ್ಣು ಹಾಯಿಸಿದವನು ಕಡಲೆಕಾಯಿ ಮಾರುತ್ತಿದ್ದವನನ್ನು 'ಏಯ್, ಕಡಲೇಕಾಯೀ' ಅಂತ ಕರೆದ. ಅವನು ಬಂದಾಗ 'ಹತ್ತು ರೂಪಾಯಿ ಕಡಲೆಕಾಯಿ ಕೊಡು' ಅಂದ. ಅವನು ಕೊಟ್ಟ ಮೇಲೆ ಜೇಬಿಗೆ ಕೈಹಾಕಿಕೊಂಡು 'ಅಯ್ಯೋ, ಪ್ಯಾಂಟು ಬದಲಾಯಿಸಿದೆ, ಹಳೆಯ ಪ್ಯಾಂಟಿನಲ್ಲಿದ್ದ ದುಡ್ಡನ್ನು ಹಾಕಿಕೊಳ್ಳುವುದನ್ನೇ ಮರೆತೆ' ಅಂದ. ಉಳಿದವರು ಮಿಕಿಮಿಕಿ ಮುಖ ನೋಡಿಕೊಂಡು ಮಡ್ಡಿಯ ಕಡೆ ನೋಡಿದರು. ಮಡ್ಡಿ ದುಡ್ಡು ಕೊಟ್ಟ. ಅಷ್ಟು ಹೊತ್ತಿಗೆ ಮುಠ್ಠಾಳ ಸಹ ಜೊತೆಯಾದ. ಎಲ್ಲರೂ ಕಡಲೆಕಾಯಿಗೆ ಕೈ ಹಾಕಿದರು. 
ಮೂಢ:  ಲೋ, ಮಂಕ, ನೀನು ಹೀಗೆ ಮಾಡ್ತಾ ಇರೋದು ಇದೇ ಮೊದಲಲ್ಲ. ಈ ದುರಭ್ಯಾಸ ಬಿಟ್ಟುಬಿಡು. 
ಮಂಕ:  ನಾನೇನು ಮಾಡಲಿ, ಮರೆವು ಜಾಸ್ತಿ. ಇನ್ನು ಮುಂದೆ ಜೇಬಲ್ಲಿ ದುಡ್ಡು ಇರೋದನ್ನು ನೋಡಿಕೊಂಡು ಕಡಲೇಕಾಯಿಯವನನ್ನು ಕರೀತೀನಿ. ಈ ದುರಭ್ಯಾಸ ಅನ್ನೋದು ಮೆತ್ತನೆ ಕುರ್ಲಾನ್ ಬೆಡ್ ಇದ್ದ ಹಾಗೆ, ಮಲಗಿಕೊಳ್ಳೋದು ಸುಲಭ, ಏಳೋದು ಕಷ್ಟ.
ಮೂಢ:  ದುರಭ್ಯಾಸ ಬಯಸೋರು ನಾವೇ. ಆಮೇಲೆ ದುರಭ್ಯಾಸಗಳು ನಮ್ಮನ್ನೇ ಬಯಸುತ್ತವೆ. ಅವನ್ನು ನಾವು ಗೆಲ್ಲಬೇಕು, ಇಲ್ಲದಿದ್ದರೆ ಅವೇ ನಮ್ಮನ್ನು ಗೆಲ್ಲುತ್ತವೆ.
ಮಡ್ಡಿ:  ಅರ್ಥ ಆಗೋ ಹಾಗೆ ಮಾತನಾಡಿರೋ. ಪೆದ್ದ ಪೆದ್ದಾಗಿ ಮಾತಾಡ್ತೀರಿ. ನಿಮ್ಮ ಜೊತೆ ಸೇರಿಕೊಂಡು ನನ್ನನ್ನೂ ಎಲ್ಲರೂ ಪೆದ್ದ ಅಂತಾರೆ.
ಮರುಳ:  ನೀನು ಪೆದ್ದ ಅಲ್ಲದೇ ಇದ್ದರೆ ನಮಗೆ ಕಡಲೇಕಾಯಿ ಕೊಡಿಸ್ತಾ ಇದ್ಯಾ?
ಮುಠ್ಠಾಳ:  ದುರಭ್ಯಾಸದ ಹಾಗೆ ಒಳ್ಳೆಯ ಅಭ್ಯಾಸ ಸಹ ಕೆಟ್ಟದು ಕಣ್ರೋ. ನೀವೆಲ್ಲಾ ಬುರುಡೆ ಖಾಲಿ ಇದ್ದರೂ ಬುರುಡೆ ಬಿಡೋರು. ನಮ್ಮ ಮನೆಯಲ್ಲಿ ಸೇರಿಕೊಂಡರೆ ನಾನು ತಿಂಡಿ, ಕಾಫಿ ಕೊಡ್ತೀನಿ, ಪಾಪ ಅಂತ. ಇಲ್ಲಿ ಮಡ್ಡಿ ಕಡಲೆಕಾಯಿ ಕೊಡಿಸ್ತಾನೆ. ಈ ಒಳ್ಳೆಯ ಅಭ್ಯಾಸವೂ ದುರಭ್ಯಾಸವೇ ಅಲ್ಲವೇನೋ ಮಡ್ಡಿ? 
ಮಡ್ಡಿ:  ಹೋಗಲಿ ಬಿಡು, ಬದಲಿಗೆ ಬಿಟ್ಟಿ ಉಪದೇಶ ಕೊಡ್ತಾರಲ್ಲಾ! ಏಯ್, ಮೂಢಾ, ನಿನ್ನ ತಮ್ಮ ಬುರುಡೆ ಡಾಕ್ಟರ್ ಇದಾನಲ್ಲಾ, ಅವನ ಹತ್ತಿರ ಟ್ರೀಟ್‌ಮೆಂಟಿಗೆ ಅಂತ ತರಲೆ ಸುದ್ದಿ ಚಾನೆಲ್ಲಿನ ರಾಂಗನಾತ ಹೆಂಡತಿ ಜೊತೆ ಬಂದಿದ್ದನಂತೆ. ಯಾಕಂತೋ?
ಮೂಢ:  ಅವನನ್ನು ಬುರುಡೆ ಡಾಕ್ಟರ್ ಅನ್ನಬೇಡ. ಅವನು ಫೇಮಸ್ ಸೈಕಾಲಾಜಿಸ್ಟು. ಪ್ರತಿ ನಿತ್ಯ ಯಾವಾಗಲೂ ನಿತ್ಯಾ ನಿತ್ಯಾ ನಿತ್ಯಾ ಅಂತಾ ಇರ್ತಾನೆ ಅಂತ ರಾಂಗನಾತನ ಹೆಂಡತಿ ಅವನನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಗೋಳಾಡಿದಳಂತೆ. ಲಿಮ್ಕಾ ರೆಕಾರ್ಡಿಗೆ ಸೇರಿಸಲಿಲ್ಲ ಅಂತ ಅವನಿಗೆ ತಲೆ ಕೆಟ್ಟ ಹಂಗೆ ಆಗಿದೆಯಂತೆ.
ಮಂಕ:  ಲಿಮ್ಕಾ ರೆಕಾರ್ಡಾ? ಯಾಕೆ?
ಮೂಢ:  ಹೂಂ. ಧಾರಾವಾಹಿಗಳು ೫೦೦೦-೬೦೦೦ ಎಪಿಸೋಡುಗಳು ಆಗ್ತಾ ಇರೋದು ಈಗ ಮಾಮೂಲು. ಅಜ್ಜ ನೋಡ್ತಾ ಇದ್ದ ಸೀರಿಯಲ್ ಅನ್ನು ಈಗ ಮೊಮ್ಮಗ ನೋಡ್ತಾ ಇದಾನೆ. ಆದರೆ ನಿತ್ಯಾನಂದನ ಸುದ್ದಿಯನ್ನು ಈರೀತಿ ಸೀರಿಯಲ್ ಆಗಿ ಪ್ರಕಟಿಸುತ್ತಿರುವುದು, ಅದೂ ನಿರಂತರವಾಗಿ ವಿಶೇಷ ಅಂತೆ. ಅಲ್ಲದೆ, ಯಾವುದೇ ಚಾನೆಲ್ಲಿನವರು ಯಾವುದೇ ಸುದ್ದಿಯನ್ನು ಇಷ್ಟು ದೀರ್ಘವಾಗಿ ಪ್ರಕಟಿಸಿಲ್ಲವಂತೆ. ಇದನ್ನು ಲಿಮ್ಕಾ ರೆಕಾರ್ಡಿಗೆ ಸೇರಿಸಲು ಬರೆದಿದ್ದಾರಂತೆ. ಲಿಮ್ಕಾದವರಿಂದ ಏನೂ ಉತ್ತರ ಬಂದಿಲ್ಲವಂತೆ. ಅದಕ್ಕೇ ಅವರಿಗೆ ತಲೆ ಕೆಟ್ಟ ಹಾಗೆ ಆಗಿದೆಯಂತೆ. ರಾಂಗನಾತ ನಿದ್ದೆ ಮಾಡುವಾಗಲೂ ನಿತ್ಯಾ, ನಿತ್ಯಾ ಅಂತ ಕನವರಿಸುತ್ತಾರಂತೆ. 
ಮರುಳ:  ನಿನ್ನ ತಮ್ಮ ಔಷಧಿ ಕೊಟ್ಟನಾ? ಈಗ ಸರಿ ಆದನಾ?
ಮೂಢ: ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕಂತೆ. ರಾಂಗನಾತ 15 ದಿನ ನಿತ್ಯಾನಂದನ ಸೇವೆ ಮಾಡಿಕೊಂಡಿದ್ದು ಬರಲಿ, ಆಮೇಲೆ ಎಲ್ಲಾ ಸರಿಯಾಗುತ್ತೆ ಅಂತ ನನ್ನ ತಮ್ಮ ಹೇಳಿದನಂತೆ.
ಮಡ್ಡಿ:  ಬಿಡ್ರೋ, ದೊಡ್ಡವರ ವಿಷಯ ನಮಗೇಕೆ. ನಮ್ಮದೇ ನಮಗೆ ಸಾಕಷ್ಟು ಇದೆ. ನೋಡು, ಮರುಳ ಎಷ್ಟು ಸಂಭಾವಿತ. ಆದರೆ ಅವನ ಮಗ ದಾರೀಲೇ ಕುಡ್ಕೊಂಡು ಬೀಳ್ತಿರ್ತಾನೆ. ಅವನಿಗೆ ಕುಡಿಯೋದನ್ನು ಯಾರು ಕಲಿಸಿದರೋ ಏನೋ. ಮರುಳ ಪಾಪ, ಒಳಗೆ ಕೊರಗಿದ್ದರೂ ಮೇಲೆ ಹೇಗೆ ನಗುನಗುತ್ತಾ ಇರ್ತಾನೆ! 
ಮೂಢ:  ಹೇಗೆ ಕುಡಿಯಬೇಕು, ಹೇಗೆ ಸಿಗರೇಟು ಸೇದಬೇಕು ಅನ್ನುವುದನ್ನು ಕಲಿಸಕ್ಕೆ ಯಾವುದಾದರೂ ಸ್ಕೂಲ್ ಇದೆಯಾ? ಇಲ್ಲ. ಕುಡಿಯುವುದನ್ನು ಹೇಗೆ ಬಿಡಬೇಕು ಅನ್ನುವುದನ್ನು ಹೇಳಿಕೊಡುವುದಕ್ಕೆ ತುಂಬಾ ಜನ ಇದಾರೆ. ಕೆಟ್ಟ ಅಭ್ಯಾಸ ಕಲಿಯುವುದಕ್ಕೆ ಯಾವ ಸ್ಕೂಲೂ ಬೇಡ, ಗುರುಗಳೂ ಬೇಡ. 
ಮರುಳ:  ಅದು ನಿಜ. ಯಾರೂ ಹೇಳಿಕೊಡದೇ ಇದ್ದರೂ 'ಅಪ್ಪ ಲೂಸಾ, ಅಮ್ಮ ಲೂಸಾ' ಹಾಡು ಕಲಿತು ಪೂರ್ತಿ ಹೇಳ್ತಾರೆ. ಆದರೆ ಹೇಳಿಕೊಟ್ಟರೂ ಸಹ 'ಜಯಭಾರತ ಜನನಿಯ ತನುಜಾತೆ' ಗೀತೆ ಪೂರ್ತಿ ಬಾಯಿಗೆ ಬರಲ್ಲ. ನನ್ನ ಕುಡುಕ ಮಗ ಕುಡಿದು ಹಾಳಾಗಲಿ, ನನಗೇನೂ ಬೇಸರವಿಲ್ಲ, ಆದರೆ ಅವನ ಸಂಸಾರಕ್ಕೂ ನೆಮ್ಮದಿಯಿಲ್ಲವಲ್ಲಾ ಅಂತ ನನಗೆ ಕೊರಗು ಕಣ್ರೋ. 
ಮಂಕ:  ಬೇಜಾರು ಮಾಡಿಕೋ ಬೇಡ. ದೇವರು ಇದ್ದಾನೆ. ಕುಡಿಯೋದು, ಸಿಗರೇಟು ಸೇದೋದು, ಇಂತಹ ದುರಭ್ಯಾಸಗಳು ಅವರನ್ನು ಮಾತ್ರ ಅಲ್ಲ ಅವರನ್ನು ನಂಬಿದವರನ್ನೂ ಹಾಳು ಮಾಡ್ತಾವೆ. ಗೊತ್ತಿಲ್ಲದಂತೆ ಅವರು ಕೆಳಕ್ಕೆ ಬೀಳ್ತಾನೇ ಹೋಗ್ತಾರೆ. ನಾವೂ ಹೇಳಿ ನೋಡ್ತೀವಿ. ಎಲ್ಲಾ ಸರಿಯಾಗುತ್ತೆ. ಯೋಚನೆ ಮಾಡಬೇಡ.
ಮರುಳ:  ನನ್ನ ಮಗ ಏನು ಹೇಳ್ತಾನೆ ಗೊತ್ತಾ? 'ಕುಡಿಯೋದು ನಿಮ್ಮ ದೃಷ್ಟಿಯಲ್ಲಿ ದುರಭ್ಯಾಸ ಇರಬಹುದು, ನನ್ನ ದೃಷ್ಟಿಯಲ್ಲಿ ಅಲ್ಲ. ಕುಡಿಯೋದರಿಂದಲೇ ನಾನು ಸರಿಯಾಗಿರೋದು' ಅಂತಾನೆ. ಹಾಳು ಬಿದ್ದು ಹೋಗಲಿ ಬಿಡು.
ಮುಠ್ಠಾಳ: (ಇದುವರೆವಿಗೂ ಎತ್ತಲೋ ನೋಡುತ್ತಿದ್ದವನು ಈಗ ಮೂಗು ತೂರಿಸಿದ):  ನಿಮಗೆ ಗೊತ್ತಾ? ನನಗೆ ಒಂದು ವಿಷಯ ಗೊತ್ತಾಯಿತು. ಒಳ್ಳೆಯ ಅಭ್ಯಾಸಗಳು ಇವೆಯಲ್ಲಾ, ಅವನ್ನು ಬಿಡುವುದು ಸುಲಭ. ಕೆಟ್ಟ ಅಭ್ಯಾಸಗಳನ್ನು ಬಿಡುವುದು ಕಷ್ಟ.
ಮಡ್ಡಿ:  ಕತ್ತಲೆ ಆಗ್ತಾ ಬಂತು. ಹೋಗೋಣವಾ? ಮೂಢರಾಜಾ, ನಿನ್ನ ಕೊನೆ ಮಾತು ಹೇಳಿಬಿಡು.
ಮೂಢ:  ಈ ಅಭ್ಯಾಸಗಳು, ಕೆಟ್ಟದ್ದೋ, ಒಳ್ಳೆಯದೋ, ನಾವು ಮಾಡಿಕೊಳ್ಳೋದು. ಅವನ್ನು ಹಿಡಿದುಕೊಂಡರೆ ಬಿಡಿಸಿಕೊಳ್ಳೋದು ಕಷ್ಟ. ಅವು ನಮ್ಮ ಕಂಟ್ರೋಲಿನಲ್ಲಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಮುಗಿದೇ ಹೋಯಿತು. ನಿಮ್ಮ ಒಳ್ಳೆಯ ಗುಣಗಳಿಂದ ಕೆಟ್ಟ ಗುಣಗಳನ್ನು ಕಳೆದರೆ ಉಳಿಯುವುದೇ ಜನರು ನಿಮಗೆ ಕೊಡುವ ಬೆಲೆ.
ಮಂಕ:  ನಮ್ಮ ಬೆಲೆ ಎಷ್ಟು ಅಂತ ಆಮೇಲೆ ಲೆಕ್ಕ ಹಾಕೋಣ. ಅಯ್ಯಾ ಮುಠ್ಠಾಳ, ನಮಗೆ ನೀನೇ ಗತಿ. ತ್ರೀ ಬೈ ಫೈವ್ ಕಾಫಿ ಕೊಡಿಸಯ್ಯಾ, ತಂದೆ.
     'ನಿಮ್ಮ ಬೆಲೆ ನನಗೆ ಗೊತ್ತಿಲ್ವ' ಅಂದ ಮುಠ್ಠಾಳ ಎಲ್ಲರನ್ನೂ ಕರೆದುಕೊಂಡು ಕಾಫೀಶಾಪಿಗೆ ಹೊರಟ. 

ಭಾನುವಾರ, ಜುಲೈ 1, 2012

ಪರಮಾತ್ಮನನ್ನು ಪೂಜಿಸುವ ಅಗತ್ಯವಿದೆಯೇ? ಪರಮಾತ್ಮನಿಗೆ ಆತ್ಮನ ಮೇಲೆ ಅಧಿಕಾರವಿದೆಯೇ?


     ದಿನಾಂಕ 13-06-2012ರಂದು  ವೇದಾಧ್ಯಾಯಿ  ಶ್ರೀ ಸುಧಾಕರಶರ್ಮರವರನ್ನು  ನನ್ನ ಕೆಲವು ಸಂಶಯಗಳಿಗೆ ಉತ್ತರ ಪಡೆಯುವ ಸಲುವಾಗಿ ಭೇಟಿ ಮಾಡಿದ್ದೆ. ಆ ಸಂದರ್ಭದಲ್ಲಿ ನಾನು ಕೇಳಿದ್ದ ಒಂದು ಪ್ರಶ್ನೆ ಇದು: 
    "ಶರ್ಮಾಜಿ, ಜೀವಾತ್ಮ, ಪರಮಾತ್ಮ ಮತ್ತು ಜಡ ಪ್ರಕೃತಿ - ಈ ಮೂರೂ ಸಂಗತಿಗಳು ಅನಾದಿ, ಅನಂತ ಮತ್ತು ಶಾಶ್ವತವಾದವುಗಳು ಎಂದು ಹೇಳುತ್ತಾರೆ. ಜೀವಾತ್ಮ ಸ್ವತಃ ಅನಾದಿ, ಅನಂತ ಮತ್ತು ಶಾಶ್ವತವಾಗಿರುವಾಗ ಪರಮಾತ್ಮನನ್ನು ಏಕೆ ಪೂಜಿಸಬೇಕು? ಆ ಪರಮಾತ್ಮನಿಗೆ ಜೀವಾತ್ಮರ ಮೇಲೆ ಯಾವ ರೀತಿಯ ಅಧಿಕಾರವಿದೆ? ಈ ವಿಚಾರದಲ್ಲಿ ಬೆಳಕು ಚೆಲ್ಲುವಿರಾ?"
       ಶರ್ಮರವರು ನೀಡಿದ ಉತ್ತರವನ್ನು ಅವರ ಧ್ವನಿಯಲ್ಲೇ ಕೇಳಿ:

     ವಿಡಿಯೋ ನೋಡುವುದು ಕೆಲವೊಮ್ಮೆ ಪ್ರಯಾಸವಾಗುತ್ತದೆ. ಹರಿಹರಪುರ ಶ್ರೀಧರ್ ಇದನ್ನು ಆಡಿಯೋ ಆಗಿ ಪರಿವರ್ತಿಸಿದ್ದಾರೆ. ಇಗೋ ಕೇಳಿ:






















-ಕ.ವೆಂ.ನಾಗರಾಜ್.

ಸೋಮವಾರ, ಜೂನ್ 25, 2012

ಸಂಧ್ಯಾಕಾಲದಲ್ಲಿರುವವರೊಂದಿಗೆ ಸ್ವಲ್ಪ ಸಮಯ



     ನನ್ನ ಮೊಮ್ಮಗಳು ಚಿ. ಅಕ್ಷಯಳ 6ನೆಯ ವರ್ಷದ ಹುಟ್ಟುಹಬ್ಬವನ್ನು ಕಳೆದ ವಾರ ಬೆಂಗಳೂರಿನ ಮನೆಯಲ್ಲಿ ಸರಳವಾಗಿ ಆಚರಿಸಿದರು. ಆ ಸಂದರ್ಭದಲ್ಲಿ ಯಾವುದಾದರೂ ಸಾಮಾಜಿಕ ಚಟುವಟಿಕೆಗೆ ಧನಸಹಾಯ ಮಾಡಲು ಅಪೇಕ್ಷಿಸಿದ್ದ ಅಳಿಯ ರಾಘವೇಂದ್ರ ಮತ್ತು ಮಗಳು ಬಿಂದು ಮನೆಯ ಸಮೀಪದಲ್ಲಿ ವಿಸ್ತರಣೆಯಾಗುತ್ತಿದ್ದ ದೇವಸ್ಥಾನದ ಕಟ್ಟಡಕ್ಕೆ ಹಣ ನೀಡುವ ಬಗ್ಗೆ ಮಾತನಾಡುತ್ತಿದ್ದರು. ಅದರ ಬದಲು ಯಾವುದಾದರೂ ವೃದ್ಧಾಶ್ರಮದ ನಿವಾಸಿಗಳಿಗೆ ಅವರ ಅಗತ್ಯ ನೋಡಿ ಏನಾದರೂ ಸಹಾಯ ಮಾಡಬಹುದೆಂದು ಕೊಟ್ಟ ಸಲಹೆಯನ್ನು ತಕ್ಷಣ ಒಪ್ಪಿದ ಅವರು ಹಾಸನದಲ್ಲೇ ಇರುವ ವೃದ್ಧಾಶ್ರಮಕ್ಕೆ ಭೇಟಿ ನೀಡಿ ವಿಚಾರಿಸಿ ತಿಳಿಸುವ ಹೊಣೆಯನ್ನು ನನಗೇ ವಹಿಸಿದರು. ಆ ಕಾರಣದಿಂದ ನಾನು ಮಿತ್ರ ಹರಿಹರಪುರ ಶ್ರೀಧರರನ್ನೂ ಕರೆದುಕೊಂಡು ಹಾಸನ ನಗರದ ಜೊರವಲಯದಲ್ಲಿರುವ ಗವೇನಹಳ್ಳಿಯಲ್ಲಿರುವ ವೃದ್ಧಾಶ್ರಮ ಚೈತನ್ಯ ಮಂದಿರಕ್ಕೆ ಭೇಟಿ ನೀಡಿ ಕೆಲವು ಗಂಟೆಗಳ ಕಾಲ ಅಲ್ಲಿದ್ದ ಹಿರಿಯರೊಡನೆ ಕಳೆದೆವು.  
     ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಂಗ ಸಂಸ್ಥೆ ಚೈತನ್ಯ ಮಂದಿರದಲ್ಲಿ ಈಗ 32 ವೃದ್ಧೆಯರು ಮತ್ತು 10 ವೃದ್ಧರು ಆಶ್ರಯ ಪಡೆದಿದ್ದಾರೆ. ಮೊದಲು 13 ವೃದ್ಧರಿದ್ದು ಅವರ ಪೈಕಿ ಮೂವರು ಕಳೆದ 15 ದಿನಗಳ ಅವಧಿಯಲ್ಲಿ ಇಹಲೋಕ ತ್ಯಜಿಸಿದ ವಿಷಯ ತಿಳಿದು ಮನಸ್ಸು ಭಾರವಾಯಿತು. ವೃದ್ಧಾಶ್ರಮದಲ್ಲಿ ಬಡವರಿಗೆ ಉಚಿತವಾಗಿ ಊಟ, ವಸತಿ, ವೈದ್ಯಕೀಯ ಚಿಕಿತ್ಸೆ, ಇತ್ಯಾದಿ ಅಗತ್ಯದ ಅವಶ್ಯಕತೆಗಳನ್ನು ಪೂರೈಸುತ್ತಿದ್ದಾರೆ. ಆರ್ಥಿಕವಾಗಿ ಅನುಕೂಲವಾಗಿದ್ದು, ಅಸಹಾಯಕತೆ ಹಾಗೂ ಅನಿವಾರ್ಯತೆಯ ಕಾರಣ ಇರಬಯಸುವ ವೃದ್ಧ, ವೃದ್ಧೆಯರಿಗೂ ಇಲ್ಲಿ ಸ್ವಲ್ಪ ಹಣವನ್ನು ಮುಂಗಡವಾಗಿ ಕಟ್ಟಿಸಿಕೊಂಡು ಮಾಸಿಕ ರೂ. 1500/- ಅನ್ನು ಊಟೋಪಚಾರದ ವೆಚ್ಚವಾಗಿ ಪಡೆದು ಇರಲು ಅನುಕೂಲ ಕಲ್ಪಿಸಿದ್ದಾರೆ. ಅಂತಹ 4-5 ವೃದ್ಧರೂ ಇಲ್ಲಿದ್ದಾರೆ. ಆರು ಶಿಶುಗಳನ್ನೂ ಅಲ್ಲಿ ಪಾಲಿಸಲಾಗುತ್ತಿದೆ. ಮೂರು ಮಕ್ಕಳು 2-3 ವರ್ಷದವರಾಗಿದ್ದರೆ ಮೂರು ಶಿಶುಗಳು ಇನ್ನೂ ಹಾಲು ಕುಡಿಯುವ ಕೆಲವೇ ತಿಂಗಳುಗಳ ಎಳೆ ಕಂದಮ್ಮಗಳು. ಒಂದು ಶಿಶುವಂತೂ ಜನಿಸಿ ಕೇವಲ 2-3 ದಿನಗಳಾಗಿದ್ದು ಸಕಲೇಶಪುರ ತಾಲ್ಲೂಕು ಹುರುಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾಗಿದ್ದು ಇಲ್ಲಿ ಆಶ್ರಯ ಪಡೆದಿದೆ. ಬೆಳಿಗ್ಗೆ ಮತ್ತು ಸಾಯಂಕಾಲ ಕಾಫಿ, ಟೀ, ಬೆಳಿಗ್ಗೆ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ. ಡಾ. ಗುರುರಾಜ ಹೆಬ್ಬಾರರು ಸಂಸ್ಥೆಯ ಅಧ್ಯಕ್ಷರು ಹಾಗೂ ಬೆನ್ನೆಲುಬಾಗಿದ್ದಾರೆ. ಉತ್ತಮ ಸಹಕಾರಿಗಳು ಅವರೊಡನಿದ್ದಾರೆ. 
     ಗಂಡ ಮತ್ತು ಮಕ್ಕಳು ಇಲ್ಲದ ಕಾರಣ ಅನಿವಾರ್ಯವಾಗಿ ಅಲ್ಲಿರಬೇಕಾಗಿ ಬಂದವರು ಕೆಲವರಾದರೆ, ಕೆಲವರು ಪರಸ್ಪರರಲ್ಲಿನ ಹೊಂದಾಣಿಕೆಯ ಕೊರತೆ, ಅಸಹನಾ ಮನೋಭಾವ, ವೈಯಕ್ತಿಕ ಸ್ವಪ್ರತಿಷ್ಠೆ, ಸ್ವಾಭಿಮಾನ, ಬಡತನ, ಇತ್ಯಾದಿಗಳ ಕಾರಣದಿಂದ ಅಲ್ಲಿರುವುದು ಕೆಲವರನ್ನು ಮಾತನಾಡಿಸಿದಾಗ ತಿಳಿದು ಬಂದ ಸಂಗತಿ. ಹೊಂದಿಕೊಂಡು ಹೋಗದ ಅವರುಗಳ ಸ್ವಭಾವದಿಂದ ವೃದ್ಧಾಶ್ರಮದಲ್ಲೂ ಕಿರಿಕಿರಿಯಾಗುವ ಬಗ್ಗೆ ಸಹ ಗೊತ್ತಾಯಿತು. ಒಬ್ಬ ವೃದ್ಧೆಯನ್ನು ಮಕ್ಕಳ ಬಗ್ಗೆ ಕೇಳಿದಾಗ, "ಮಕ್ಕಳು ಅವ್ರೆ, ಸತ್ತಿಲ್ಲ, ಬದುಕವ್ರೆ" ಎಂದು ಸಿಡಿಮಿಡಿಗೊಂಡಿದ್ದಳು. ಆರು ವರ್ಷಗಳಿಂದ ಇಲ್ಲಿರುವ ಇನ್ನೊಬ್ಬ ವೃದ್ಧೆ ಹಿಂದೆ ಅಂಗಡಿ ನಡೆಸುತ್ತಿದ್ದು, ಆಕೆ ಕಷ್ಟಪಟ್ಟು ಉಳಿಸಿದ್ದ  1ಲಕ್ಷ ರೂಪಾಯಿ ಇತರರ ಪಾಲಾಯಿತೆಂದು ಹಲುಬಿದ್ದಳು. ಹಾಸನ ನಗರದ ಒಬ್ಬ ಪ್ರತಿಷ್ಠಿತ ವ್ಯಕ್ತಿಯ (ಈಗ ದಿವಂಗತ) ಪತ್ನಿ ಸಹ ಪಾವತಿ ಆಧಾರದ ಮೇಲೆ ಇಲ್ಲಿನ ನಿವಾಸಿಯಾಗಿದ್ದಾರೆ. ಅವರ ಮಕ್ಕಳು ಅಮೆರಿಕಾದಲ್ಲಿದ್ದಾರೆ. ವಿಶೇಷವೆಂದರೆ ವೃದ್ಧಾಶ್ರಮದ ಒಂದು ಕೊಠಡಿಯನ್ನು (ಸುಮಾರು 2.00ಲಕ್ಷ ಇರಬಹುದು) ಅವರೇ ಕಟ್ಟಿಸಿಕೊಟ್ಟಿದ್ದಾರೆ. ಸಿರಸಿ, ತಿಪಟೂರು, ಬೆಂಗಳೂರು, ಇತ್ಯಾದಿ ಹಲವಾರು ಊರುಗಳಿಂದ ಬಂದವರೂ ಇಲ್ಲಿದ್ದಾರೆ, ಇಲ್ಲಿನವರೂ ಇದ್ದಾರೆ. ಹೆಚ್ಚಿನವರಿಗೆ ವಿಧವಾ ವೇತನ, ವೃದ್ಧಾಪ್ಯ ವೇತನಗಳು ಬರುತ್ತಿವೆ. ವಿಳಾಸ ಬದಲಾವಣೆ, ಊರಿನಲ್ಲಿಲ್ಲ, ಇತ್ಯಾದಿ ಕಾರಣಗಳಿಂದ ಬರುತ್ತಿದ್ದ ವೇತನ ನಿಂತು ಹೋಗಿದ್ದನ್ನು ಮತ್ತೆ ಬರುವಂತೆ ಮಾಡಲು ಕೆಲವರು ನಮ್ಮನ್ನು ಕೋರಿದರು. ಮತ್ತೊಮ್ಮೆ ಬರುವುದಾಗಿಯೂ, ವಿವರಗಳನ್ನು ಪಡೆದು ಸಂಬಂಧಿಸಿದವರೊಡನೆ ವ್ಯವಹರಿಸುವುದಾಗಿ ತಿಳಿಸಿದೆವು. ಎಲ್ಲರನ್ನೂ ಪ್ರಾರ್ಥನಾ ಮಂದಿರಕ್ಕೆ ಬರುವಂತೆ ಕೋರಿ ಅಲ್ಲಿ ಒಟ್ಟಿಗೆ ಕೆಲವು ಭಜನೆಗಳನ್ನು ಹಾಡಿದೆವು. ಶ್ರೀಧರ್ ಸಹ ಎರಡು ಭಜನೆಗಳನ್ನು ಹೇಳಿಕೊಟ್ಟು ಹೇಳಿಸಿದರು. ವೃದ್ಧಾಶ್ರಮಗಳ ಅಗತ್ಯ ಬಾರದಂತೆ ಹೊಂದಿಕೊಂಡು ಹೋಗುವ ಮನೋಭಾವವನ್ನು ಎಲ್ಲರಿಗೂ ಕರುಣಿಸುವಂತೆ 'ಸನ್ಮತಿ ದೇ, ಹೇ ಭಗವಾನ್' ಎಂದು ಮನಸ್ಸಿನಲ್ಲೇ ಪ್ರಾರ್ಥಿಸಿದೆವು. ಸ್ವಾರ್ಥ ಇಲ್ಲೂ ಬಿಡಲಿಲ್ಲ, 'ನನಗೆ ದೈನ್ಯತೆಯಿಲ್ಲದೆ ಬಾಳುವ ಅವಕಾಶ, ಅನಾಯಾಸದ ಮರಣ ಬರಲಿ' ಎಂದೂ ಕೇಳಿಕೊಂಡೆ.
     ಸ್ನಾನ ಆದ ನಂತರ ತಮ್ಮ ತಮ್ಮ ಇಷ್ಟದ ದೇವರ ಫೋಟೋಗೆ (ತಮ್ಮ ಮಂಚದ ಬಳಿ ಹಾಕಿಕೊಂಡಿರುವುದು) ಮತ್ತು ಪ್ರಾರ್ಥನಾ ಮಂದಿರದಲ್ಲಿರುವ ದೇವರ ಫೋಟೋಗಳಿಗೆ ಪೂಜೆ ಸಲ್ಲಿಸುವವರು ಸಲ್ಲಿಸುತ್ತಾರೆ. ಸಾಯಂಕಾಲ ಎಲ್ಲರೂ ಒಟ್ಟಿಗೆ ಭಜನೆ ಮಾಡುತ್ತಾರೆ. ಬೆಂಗಳೂರಿನ ರುದ್ರಮ್ಮ ಭಜನೆ ಹೇಳಿಕೊಡುತ್ತಾರೆ. ಟಿ.ವಿ. ಇದೆ. ಕೆಲವು ಧಾರಾವಾಹಿಗಳನ್ನು ನೋಡುತ್ತಾರೆ. ಸಮಾನ ಮನಸ್ಕರು ಗುಂಪು ಕಟ್ಟಿಕೊಂಡು ಮಾತನಾಡುತ್ತಾರೆ. ರಾತ್ರಿ ಊಟ ಆದ ನಂತರ ಮಲಗುತ್ತಾರೆ. ಮಕ್ಕಳ ಹುಟ್ಟು ಹಬ್ಬ, ಮದುವೆ, ಇತ್ಯಾದಿ ಶುಭ ಸಂದರ್ಭಗಳಲ್ಲಿ ಇಲ್ಲಿನ ನಿವಾಸಿಗಳಿಗೆ ಊಟ, ತಿಂಡಿಗಾಗಿ ದಾನ ಕೊಡುವವರ ಸಂಖ್ಯೆಯೂ ಕಡಿಮೆಯೇನಿಲ್ಲ. ಇಚ್ಛುಕರು ರೂ. 5000/- ದಾನ ನೀಡಿದರೆ ಆ ದಿನದ ತಿಂಡಿ ಮತ್ತು ಎರಡು ಊಟಗಳ ವ್ಯವಸ್ಥೆಯಾಗುತ್ತದೆ. ಕೇವಲ ಒಂದು ಹೊತ್ತಿನ ತಿಂಡಿಗಾದರೆ ರೂ.1000/-, ಒಂದು ಹೊತ್ತಿನ ಊಟಕ್ಕಾದರೆ ರೂ. 2000/- ದಾನ ಕೊಡಬಹುದಾಗಿರುತ್ತದೆ.  ಕೆಲವು ಹಸುಗಳನ್ನೂ ಇಲ್ಲಿ ಸಾಕಿದ್ದು ನೋಡಿಕೊಳ್ಳಲು ಒಬ್ಬ ಗೋಪಾಲಕ ಇದ್ದಾರೆ. ಇಳಿ ವಯಸ್ಸಿನಲ್ಲಿ ಜೀವನದ ಸಿಹಿಕಹಿಗಳನ್ನು ಉಂಡು ಸೋತಿರುವ ಇಲ್ಲಿನ ಜೀವಗಳಿಗೆ ಅಗತ್ಯವಾಗಿರುವುದು ಆಧ್ಯಾತ್ಮಿಕ ಚಿಂತನೆ ಮತ್ತು ಪ್ರೀತಿಯ ಮಾತುಗಳು. ಆಗಾಗ್ಗೆ ಇಲ್ಲಿ ಸತ್ಸಂಗಗಳನ್ನು ಏರ್ಪಡಿಸುವ ಬಗ್ಗೆ ಶ್ರೀಧರ್ ಮತ್ತು ನಾನು ಮಾತನಾಡಿಕೊಂಡೆವು. ಮಳೆಗಾಲವಾದ್ದರಿಂದ ಮತ್ತು ಮುಂಬರುವ ಚಳಿಗಾಲದ ಕಾರಣದಿಂದ ಅವರುಗಳಿಗೆ ಸ್ವೆಟರ್‌ಗಳನ್ನು ಒದಗಿಸುವುದು ಸೂಕ್ತವೆಂದು ಅನ್ನಿಸಿ ವ್ಯವಸ್ಥೆ ಮಾಡಲು ಮಗಳಿಗೆ ದೂರವಾಣಿ ಕರೆ ಮಾಡಿದೆ. 
-ಕ.ವೆಂ.ನಾಗರಾಜ್.
- - - - - - - - - - - - - - - - - - - - - - - - - -
ವೃದ್ಧಾಶ್ರಮದ ಕೆಲವು ಫೋಟೋಗಳು:










     . 
        



ಗುರುವಾರ, ಜೂನ್ 7, 2012

"ಆಡದ ಮಾತುಗಳು" - ಒಂದು ವಿಚಾರ ಸಂಕಿರಣ



     ಮಂಕ, ಮಡ್ಡಿ, ಮರುಳ, ಮೂಢರು ಒಂದು ನಿಯಮ ಮಾಡಿಕೊಂಡಿದ್ದರು. ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗಲಿ, ಬಿಡಲಿ ವಾರಕ್ಕೊಮ್ಮೆಯಾದರೂ ಮುಠ್ಠಾಳನ ಮನೆಯಲ್ಲಿ ಒಟ್ಟಿಗೆ ಸೇರಿ ಕೆಲವು ಗಂಟೆಗಳಾದರೂ ಕಷ್ಟ-ಸುಖಗಳನ್ನು ವಿನಿಮಯ ಮಾಡಿಕೊಳ್ಳಬೇಕೆಂಬುದೇ ಆ ನಿಯಮ. ಆಗ ಮುಠ್ಠಾಳ ಅವರಿಗೆ ಕಾಫಿ, ತಿಂಡಿ ಒದಗಿಸಬೇಕಾಗಿದ್ದುದೂ ಒಂದು ಅಲಿಖಿತ ನಿಯಮವಾಗಿತ್ತು. ಅವರು ಒಟ್ಟಿಗೆ ಇರುವುದನ್ನು ಕಂಡವರು ಆಡಿಕೊಳ್ಳುತ್ತಿದ್ದರು, 'ಶುರುವಾಯ್ತಪ್ಪಾ ಇವರ ಸತ್ತ ಸಂಗ (ಸತ್ಸಂಗ!)'. ಹಾಗೆ ಸೇರಿದಾಗ ಯಾವುದಾದರೂ ವಿಷಯದ ಮೇಲೆ ಚರ್ಚೆ ಮಾಡುತ್ತಿದ್ದರು. ಹಾಗೆ ಒಂದು ದಿನ ಸೇರಿದಾಗ ಮುಠ್ಠಾಳ ಕೊಟ್ಟ ಬಿಸಿ ಬಿಸಿ ಬೋಂಡಾ ತಿನ್ನುತ್ತಾ ಒಬ್ಬರ ಮುಖ ಒಬ್ಬರು ನೋಡುತ್ತಾ ಕುಳಿತಿದ್ದರು. ಯಾರೂ ಮಾತು ಪ್ರಾರಂಭಿಸದಿದ್ದರಿಂದ ಮಂಕ ಗಂಟಲು ಸರಿ ಮಾಡಿಕೊಂಡು ತಾನೇ ಶುರು ಮಾಡಿದ:
    "ಗೆಳೆಯರೇ, ಈ ವಿಷಯ ನಿಮಗೆ ಮೊದಲು ಹೇಳಿರಲಿಲ್ಲ. ಈಗ ಹೇಳಿಬಿಡುತ್ತೇನೆ. ನಾನು  ದೇವರಲ್ಲಿ ಶಕ್ತಿ ಕೊಡು ಅಂತ ಕೇಳಿದೆ. ಆ ದೇವರು ನನ್ನನ್ನು ದುರ್ಬಲನಾಗಿ ಮಾಡಿಬಿಟ್ಟ, ಏಕೆಂದರೆ ವಿಧೇಯತೆ ಕಲಿಯಲಿ ಅಂತ. ಆರೋಗ್ಯ ಕೊಡು ಎಂದದ್ದಕ್ಕೆ, ಎಡವಟ್ಟು ಮಾಡಿದ, ಏಕೆಂದರೆ ಏನಾದರೂ ಮಾಡಬೇಕು ಅನ್ನುವ ಮನಸ್ಸು ಬರಲಿ ಅಂತ. ಸುಖ ಅನುಭವಿಸಲು ಶ್ರೀಮಂತಿಕೆ ಕೊಡು ಅಂತ ಕೇಳಿದರೆ ಬಡತನ ಕೊಟ್ಟುಬಿಟ್ಟ. ಬುದ್ಧಿವಂತ ಆಗಲಿ ಅಂತ. ಅಧಿಕಾರ ಕೊಡು, ಜನ ನನ್ನನ್ನು ಹೊಗಳಲಿ ಅಂತ ಕೇಳಿದರೆ ಜವಾನನಾಗಿ ಕೆಲಸ ಮಾಡುವಂತೆ ಮಾಡಿದ, ಏಕೆಂದರೆ ನಾನು ದೇವರನ್ನು ನೆನೆಸಿಕೊಳ್ಳುತ್ತಿರಲಿ ಅಂತ. ಎಲ್ಲಾ ವಸ್ತುಗಳನ್ನು ಜೀವನ ಸುಖವಾಗಿಡಲು ಕೊಡಪ್ಪಾ ಅಂತ ಕೇಳಿದೆ,  ಜೀವನ ಕೊಟ್ಟಿದೀನಿ, ಎಲ್ಲಾ ವಸ್ತುಗಳನ್ನು ನೀನೇ ಪಡಕೊಳ್ಳಬಹುದು ಅಂತ ಹೇಳಿದ. ಆಮೇಲೆ ನಾನು ಅವನನ್ನು ಕೇಳಿಕೊಳ್ಳಬೇಕು ಅಂತ  ಇದ್ದೆನೋ ಅದನ್ನು ಕೇಳಿಕೊಳ್ಳಲೇ ಇಲ್ಲ, ಆದರೆ ಆ ದೇವರು ಅವೆಲ್ಲವನ್ನೂ ನನಗೆ ಕೊಟ್ಟ. ನಾನು ಈಗ ಎಲ್ಲರಿಗಿಂತ ಹೆಚ್ಚು ಸುಖಿಯಾಗಿದೀನಿ." 
     'ಅವನು ಸುಖವಾಗಿರುವ ಮುಖ ನೋಡು' ಅಂತ ಮಡ್ಡಿ ಮನಸ್ಸಿನ ಒಳಗೇ ಗೊಣಗಿಕೊಂಡವನು ಮಂಕನಿಗೆ ಕೇಳಿದ: "ಹೌದಪ್ಪಾ, ಅಂಥಾದ್ದೇನು ನೀನು ದೇವರನ್ನು ಕೇಳಿಕೊಳ್ಳದೇ ಇದ್ದದ್ದು?" 
     "ಅದನ್ನು ನೀವು ಕೇಳಬಾರದು, ನಾನು ಹೇಳಲೂಬಾರದು"-ಮಂಕನ ಉತ್ತರ.
     ಇವರ ಮಾತು ಕೇಳುತ್ತಿದ್ದ ಮೂಢ ಮೂಗು ತೂರಿಸಿದ: "ಮಂಕ ಹೇಳೋದು ಒಂದು ರೀತಿಯಲ್ಲಿ ಸರಿ. ಆಡದ ಮಾತುಗಳಿಂದಾಗಿ ಮತ್ತು ಕೇಳದ ಮಾತುಗಳಿಂದಾಗಿ ಜನ ಗೌರವ ಉಳಿಸಿಕೊಂಡಿದ್ದಾರೆ. ಆಡಲಾಗದ, ಆಡಬಾರದ ಮಾತುಗಳು ಅವರ ಒಳಗೇ ಬಂದಿಯಾಗಿರುತ್ತವೆ. ಅಂತಹ ಮಾತುಗಳು ಒಳಗೇ ಉಳಿದರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗೆಂದು ಹೊರಗೆ ಬಂದರೆ ಆಗಲೂ ಕೈಕಾಲು ಅಲ್ಲದಿದ್ದರೂ ಮನಸ್ಸಾದರೂ ಮುರಿಯಬಹುದು.  ಮಾತುಗಳು ಒಳಗೆ ಇರುವವರೆಗೆ ಅದಕ್ಕೆ ನೀವು ಬಾಸ್, ಹೊರಬಿತ್ತೋ ಅವಕ್ಕೆ ನೀವೇ ದಾಸರು. ಮಾತುಗಳನ್ನು ನಾವು ಮುಟ್ಟೋಕಾಗಲ್ಲ. ಆದರೆ ಮಾತುಗಳು ನಮ್ಮನ್ನು ಮುಟ್ಟುತ್ತವೆ. ಮಂಕ ಬುದ್ಧಿವಂತ, ಅದಕ್ಕೇ ಅದೇನು ಅಂತ ಹೇಳ್ತಾ ಇಲ್ಲ. ಒಂದಲ್ಲಾ ಒಂದು ದಿನ ಯಾವುದಾದರೂ ರೀತಿಯಲ್ಲಿ ಹೊರಬರುತ್ತೆ ಬಿಡು. ಎಷ್ಟು ದಿನಾ ಅಂತ ಅದನ್ನು ಒಳಗೇ ಇಟ್ಟುಕೊಂಡು ಒದ್ದಾಡ್ತಾನೆ."
     ಅರ್ಥವಾಗದೆ ಕಣ್ಣು ಕಣ್ಣು ಬಿಟ್ಟು ನೋಡಿದ ಮರುಳ, "ಮಾತು ಆಡಕ್ಕಾಗಲ್ವಾ? ಒಳಗೇ ಇರ್ತಾವಾ? ಹೆಂಗೆ?" ಎಂದಾಗ ಮಡ್ಡಿ, "ಅಯ್ಯೋ, ಮರುಳೆ, ನೀನು ಒಂದು ಸುಂದರ ಹುಡುಗಿ ನೋಡ್ತೀಯ, ಅವಳು ಹೆಂಡತಿಯಾಗಿ ಸಿಕ್ಕರೆ ಅಂತ ಆಸೆ ಪಡ್ತೀಯಾ ಅಂತಿಟ್ಕೋ. ಆ ಹುಡುಗಿ ಕಾರಿನಲ್ಲಿ ಓಡಾಡೋಳು, ದೊಡ್ಡ ಶ್ರೀಮಂತ ಅಪ್ಪ. ನೀನೋ ಅಟ್ಲಾಸ್ ಸೈಕಲ್ ಮಾಲಿಕ.  ನೀನು ಅವರಪ್ಪನ್ನ ಅಥವ ಆ ಹುಡುಗೀನ ನಿನ್ನ ಆಸೆ ಬಗ್ಗೆ ಹೇಳಿಕೊಳ್ಳೋಕೆ ಆಗುತ್ತಾ? ಅದು ನಿನ್ನ ಗಂಟಲ ಕೆಳಗೇ ಉಳಿದುಹೋಗುತ್ತೆ. ಅರ್ಥ ಆಯ್ತಾ? ಇನ್ನೊಂದು ಉದಾಹರಣೆ ಹೇಳಬೇಕು ಅಂದರೆ, ಒಬ್ಬ ಹುಡುಗ ಒಂದು ಹುಡುಗಿಯನ್ನು ಪ್ರೀತಿಸ್ತಿದಾನೆ ಅಂತ ಇಟ್ಕೋ. ಆದರೆ ಅದನ್ನು ಹೇಳೋಕೆ ಅವನಿಗೆ ಧೈರ್ಯ ಇಲ್ಲ, ಸುಮ್ಮನೆ ಇರ್ತಾನೆ. ಆ ಹುಡುಗೀಗೂ ಅದೇ ಕಥೇ ಆಗಿದ್ದು ಅವಳದ್ದೂ ಅದೇ ಪರಿಸ್ಥಿತಿ ಅಂತ ಇಟ್ಕೋ. ಇಬ್ಬರೂ ಸುಮ್ಮನೆ ಇರ್ತಾರೆ. ಒಂದು ದಿನ ಅವರ ಅಪ್ಪ-ಅಮ್ಮಂದಿರು ಅವರುಗಳಿಗೆ ಬೇರೆ ಗಂಡು/ಹೆಣ್ಣು ನೋಡಿ ಮದುವೆ ಮಾಡ್ತಾರೆ. ಆಗ ಅವರ ಒಳಗಿನ ಮಾತುಗಳು ಒಳಗೇ, ಹೊರಗಿನ ಮಾತುಗಳು ಹೊರಗೇ ಇರ್ತಾವೆ. ಮುಗಿದು ಹೋಯಿತು, ಮಾತುಗಳು ಅಲ್ಲೇ ಸಮಾಧಿಯಾಗುತ್ತವೆ" ಎಂದವನೇ ತಾನು ಎಷ್ಟು ಬುದ್ಧಿವಂತ ಎಂಬಂತೆ ಉಳಿದವರ ಕಡೆ ಕಣ್ಣು ಹಾಯಿಸಿದ.  
     ಎಲ್ಲರ ತಟ್ಟೆಗಳಿಗೆ ಮತ್ತಷ್ಟು ಬೋಂಡ ತಂದು ಹಾಕುತ್ತಾ ಮುಠ್ಠಾಳ, "ಹೇಳಕ್ಕಾಗದೇ ಇದ್ರೆ ಏನಾಯ್ತು? ಒಳಗೇ ಇದ್ದರೆ ಇರಲಿ, ಏನಾಗುತ್ತೆ?"  ಬೋಂಡಾದ ಮುಲಾಜಿಗೆ ಉಳಿದವರು ಅವನನ್ನು ಹಂಗಿಸಲಿಲ್ಲ. ಮೂಢ ಹೇಳಿದ, "ಹೇಳದೆ ಇದ್ದರೆ ಆ ಮಾತುಗಳು ಒಳಗೇ ಕುಣೀತಾ ಇರ್ತವೆ. ಹೊರಗೆ ಬರಲು ಚಡಪಡಿಸ್ತಾ ಇರ್ತವೆ. ಆಗ ಅಸಮಾಧಾನ, ಅಸಹನೆ ಉಂಟಾಗಿ ಮನಸ್ಸಿಗೆ ಶಾಂತಿಯೇ ಇರಲ್ಲ. ಎದುರಿಗೆ ಇರುವವರನ್ನು ಹಂಗಿಸುವ ಇಚ್ಛೆ ಒಳಗೇ ಇದ್ದರೂ ಹಂಗಿಸಲಾರದೆ, ಮೂರನೆಯವರ ಎದುರಿಗೆ ಅಪರೋಕ್ಷವಾಗಿ ಬೇರೆ ರೀತಿಯಲ್ಲಿ ಮಾತುಗಳು ಹೊರಗೆ ಬಂದುಬಿಡುತ್ತವೆ. ತಮ್ಮ ಅಸಹನೆ ಸಂಬಂಧಿಸಿದವರಿಗೆ ಗೊತ್ತಾಗಲಿ ಎಂಬಂತೆ ಅವರ ವರ್ತನೆ ಇರುತ್ತದೆ. ಸಂಬಂಧಿಸಿದವರಿಗೆ ಹೇಳಲಾಗದ ಮಾತುಗಳನ್ನು ತಮ್ಮ ವಿಶ್ವಾಸದ ಸ್ನೇಹಿತರಲ್ಲಿ ಹೇಳಿಕೊಂಡು ಹಗುರಾಗುತ್ತಾರೆ. ಒಬ್ಬರಿಂದ ಒಬ್ಬರಿಗೆ ಹೋಗುತ್ತಾ ಆ ಮಾತುಗಳು ಉದ್ದೇಶಿಸಿದವರಿಗೂ ತಲುಪಿ ರಂಪ ರಾಮಾಯಣವೂ ಆಗುತ್ತೆ. ಈ ಆಡಲಾಗದ, ಆಡದೇ ಇರುವ ಮಾತುಗಳು ಯಾರನ್ನೂ ನೆಮ್ಮದಿಯಿಂದ ಇರಲು ಬಿಡುವುದಿಲ್ಲ."
     ಮಂಕ, "ಅನ್ನಿ, ಅನ್ನಿ. ನೀವು ನನ್ನನ್ನೇ ಅಂತಾ ಇರೋದು ಅಂತ ನನಗೆ ಗೊತ್ತು. ಒಂದು ವಿಷಯ ತಿಳ್ಕೊಳ್ಳಿ, ಮಾತುಗಳು ಮತ್ತು ಹೃದಯಗಳ ಬಗ್ಗೆ ಜೋಪಾನವಾಗಿರಬೇಕು. ಮಾತುಗಳನ್ನು ಆಡುವ ಮುನ್ನ ಮತ್ತು ಹೃದಯಗಳು ಒಡೆಯುವ ಮುನ್ನ ಎಚ್ಚರಿಕೆ ಇರಬೇಕು ಅನ್ನುವುದು ನೆನಪಿರಲಿ" ಅಂದ. ಎಲ್ಲರೂ ಮಂಕನ ಮೇಲೆ ಮುಗಿಬಿದ್ದರು. "ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ಳುತ್ತೀಯ? ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಸಿದ್ದಪ್ಪ ಎದೆ ಒಡೆದುಕೊಂಡ ಅಂದ ಹಾಗೆ ಆಯ್ತು ನಿನ್ನ ಮಾತು" ಎಂದರು. ಮಂಕನಿಗೆ ಸಿಟ್ಟು ಬಂದು ಹೇಳಿದ, "ನಾನು ಹೇಳಿದ್ದರಲ್ಲಿ ತಪ್ಪೇನಿದೆ, ನಾವು ಏನು ಯೋಚನೆ ಮಾಡ್ತೀವೋ ಅದರ ಬಗ್ಗೆ ಎಚ್ಚರವಾಗಿರಬೇಕು ಅಂತ ಹೇಳಿದ್ದು. ಏಕೆಂದರೆ ಅವೇ ಮಾತುಗಳಾಗಿ ಹೊರಬರೋದು." "ಆಂ?" ಅಂತ ಎಲ್ಲರೂ ತಲೆ ಕೆರೆದುಕೊಂಡರು. 'ಬಾಯಿ ಬಿಟ್ಟರೆ ಬಣ್ಣಗೇಡು' ಅಂತ ಅವನ ಬಗ್ಗೆ ಆಡಿಕೊಳ್ತಾ ಇದ್ದವರು ಮಂಕ ಈರೀತಿ ಮಾತು ಎಲ್ಲಿ ಕಲಿತ ಅಂತ ಆಶ್ಚರ್ಯಪಟ್ಟರು. 
     "ಆಡಲು ಏನೋ ಇದೆ, ಆದರೆ ಆಡಲಾಗುವುದಿಲ್ಲ ಎಂಬಂತಹ ಜನರಿಂದಲೇ     ಈ ಪ್ರಪಂಚ ತುಂಬಿಹೋಗಿದೆ. ಬುದ್ಧಿವಂತರು ಏನೋ ಹೇಳುತ್ತಾರೆ, ಅವರಿಗೆ ಏನೋ ಹೇಳಲು ಇರುತ್ತದೆ. ದಡ್ಡರೂ ಏನೋ ಹೇಳಬೇಕು ಅಂತಾ ಹೇಳ್ತಾರೆ"-ಮೂಢ ಹೇಳಿದ ಈ ಮಾತು ಯಾರಿಗೂ ಅರ್ಥವಾಗಲಿಲ್ಲ. ಮರುಳ ಕೇಳೇಬಿಟ್ಟ, "ಹಂಗಂದ್ರೆ?" ಮೂಢ ಹೇಳಿದ, "ನಂಗೂ ಸರಿಯಾಗಿ ಗೊತ್ತಿಲ್ಲ, ನಮ್ಮ ಗುರುಗಳು ಮೊನ್ನೆ ಹೇಳಿದರು, ಅದನ್ನೇ ನಿಮಗೆ ಹೇಳಿದೆ."
    ಇಷ್ಟು ಹೊತ್ತು ಸುಮ್ಮನೇ ಇದ್ದ ಮಡ್ಡಿ ಇನ್ನೂ ಸುಮ್ಮನೆ ಇದ್ದರೆ ತನ್ನನ್ನು ದಡ್ಡ ಅನ್ನುತ್ತಾರೆ ಅಂದುಕೊಂಡು ಬಾಯಿಬಿಟ್ಟ, "ಎಲ್ಲರೂ ಯಾಕೆ ಚರ್ಚೆ ಮಾಡುತ್ತಾರೆ ಗೊತ್ತಾ, ದೊಡ್ಡ ಬಾಯಿ ಮಾಡಿ ಬೇರೆಯವರ ಬಾಯಿ ಮುಚ್ಚಿಸುತ್ತಾರೆ ಗೊತ್ತಾ? ತಾವೇ ಬುದ್ಧಿವಂತರು, ತಮಗೇ ಹೆಚ್ಚು ತಿಳಿದಿದೆ, ಉಳಿದವರಿಗಿಂತ ತಾವೇ ಒಳ್ಳೆಯವರು, ತಾವೇ ಹೆಚ್ಚು ಕಷ್ಟಪಟ್ಟವರು, ತಾವೇ ಹೆಚ್ಚು ಅಂತ ತೋರಿಸಿಕೊಳ್ಳೋಕೆ. ತಮ್ಮ ಮಾತು ಕೇಳಿದರೆ ಪ್ರಪಂಚ ಉದ್ಧಾರ ಆಗುತ್ತೆ ಅಂತ ಅವರು ಅಂದುಕೊಳ್ತಾರೆ." ಗಂಟಲು ದೊಡ್ಡದು ಮಾಡಿಕೊಂಡು ವಿಷಯಕ್ಕೆ ಸಂಬಂಧಿಸದಿದ್ದ ಮಾತನಾಡಿದ ಮಡ್ಡಿಯನ್ನು ಎಲ್ಲರೂ ಬಾಯಿಬಿಟ್ಟುಕೊಂಡು ನೋಡಿದರು. ಯಾರಿಂದಲೂ ಪ್ರತಿಕ್ರಿಯೆ ಬರದಿದ್ದರಿಂದ ಮಡ್ಡಿಯ ಮುಖ ದಪ್ಪಗಾಯಿತು. 
     "ಅಪ್ಪಂದಿರಾ, ಇನ್ನು ಬೋಂಡಾ ಇಲ್ಲ, ಮುಗೀತು. ಕಾಫಿ ಕುಡಿದು ಜಾಗ ಖಾಲಿ ಮಾಡಿ. ಅಪ್ಪಾ, ಮೂಢೋತ್ತಮ, ವಂದನಾರ್ಪಣೆ ಮಾಡಿ ಮುಗಿಸಿಬಿಡು" - ಮುಠ್ಠಾಳ ಆರ್ಡರ್ ಮಾಡಿದಾಗ, ಎಲ್ಲರಿಗೂ ಏನೋ ಆಡಬೇಕು ಅನ್ನಿಸಿದರೂ ಆಡದೆ ಸುಮ್ಮನಾದರು. ಮೂಢ ಎಲ್ಲರ ಮುಖವನ್ನೂ ನೋಡುತ್ತಾ ಹೇಳಿದ: "ಗೆಳೆಯರೆ, ಸಂಬಂಧಗಳು ಚೆನ್ನಾಗಿರಬೇಕು, ತಮಗೆ ಕೆಡುಕಾಗಬಾರದು ಅನ್ನುವ ಕಾರಣಕ್ಕೆ ಜನ ತಮ್ಮ ಮನಸ್ಸಿನಲ್ಲಿ ಇರುವುದೇ ಒಂದಾದರೂ ಹೊರಗೆ ಆಡುವುದೇ ಬೇರೆ ತೋರಿಕೆಯ ಮಾತುಗಳು. ಅವುಗಳು ಗಟ್ಟಿ ಮಾತುಗಳಲ್ಲವಾದ್ದರಿಂದ ಅಂತಹ ಮಾತುಗಳ ಪ್ರಭಾವ ಕಡಿಮೆ. ಅವು ತೋರಿಕೆ ಮಾತುಗಳು ಅಂತಾ ಗೊತ್ತಾದಾಗ ಅದನ್ನು ಆಡಿದವರ ಬೆಲೆ ಸಹ ಕಡಿಮೆ ಆಗುತ್ತೆ. ಮನಸ್ಸಿನಲ್ಲಿ ಒಳ್ಳೆಯ ವಿಚಾರಗಳಿದ್ದರೆ ಒಳ್ಳೆಯ ಮಾತುಗಳು ಬರುತ್ತವೆ. ಕೆಟ್ಟ ವಿಚಾರಗಳಿದ್ದರೆ ಆಡಲಾಗದ ಮಾತುಗಳು ಹುಟ್ಟುತ್ತವೆ. ಅದು ಹೆಚ್ಚು ಕಾಟ ಕೊಡುವುದು ಆ ಮಾತುಗಳನ್ನು ಹುಟ್ಟಿಸಿದವರಿಗೇ. ಆದ್ದರಿಂದ ಒಳ್ಳೆಯ ವಿಚಾರ ಮನಸ್ಸಿನಲ್ಲಿ ಬರುವಂತೆ ಮಾಡು ಅಂತ ದೇವರಲ್ಲಿ ಕೇಳಿಕೊಳ್ಳೋಣ. ಸರ್ವಜ್ಞನ ವಚನ ಹೇಳಿ ಮಾತು ಮುಗಿಸುತ್ತೇನೆ.  'ಆಡದೆ ಮಾಡುವನು ರೂಢಿಯೊಳಗುತ್ತಮನು, ಆಡಿ ಮಾಡುವನು ಮಧ್ಯಮ, ಆಡಿಯೂ ಮಾಡದವ ಅಧಮ ಸರ್ವಜ್ಞ'." ಮೂಢ ಮಾತು ಮುಗಿಸುತ್ತಿದ್ದಂತೆಯೇ "ಆಡುವುದಕ್ಕೆ ಆಗದೆ ಇರುವವನು?" ಎಂಬ ಮಾತು ಕೇಳಿಬಂತು. ಎಲ್ಲರೂ ತನ್ನನ್ನು ದುರುಗುಟ್ಟಿ ನೋಡಿದರೂ ನಸುನಗುತ್ತಾ ಇದ್ದ ಮುಠ್ಠಾಳನಿಗೆ ಗೊತ್ತಿತ್ತು, ಕಾಫಿ, ತಿಂಡಿ ಮುಲಾಜಿಗೆ ಯಾರೂ ಏನೂ ಆಡಲಾರರು ಅಂತ!
********************
-ಕ.ವೆಂ.ನಾಗರಾಜ್.